Home / ಲೇಖನ / ಇತರೆ / ಸಂಜೆ ಬಂದಾಗ ಹೊಳೆಯುತ್ತಿರಬೇಕು ಸಿಂಕು-ಹೊರ ದುಡಿಮೆಯ ಯುವ ಮಹಿಳೆಯ ಅಭಿಲಾಷೆ

ಸಂಜೆ ಬಂದಾಗ ಹೊಳೆಯುತ್ತಿರಬೇಕು ಸಿಂಕು-ಹೊರ ದುಡಿಮೆಯ ಯುವ ಮಹಿಳೆಯ ಅಭಿಲಾಷೆ

ಸಂಜೆ ನಾನು ಬಂದಾಗ /ಹೊಳೆಯುತ್ತಿರಬೇಕು ಸಿಂಕು/
ಒಂದೂ ಪಾತ್ರೆಯಿಲ್ಲದೇ
ಬಿದ್ದಿರದೇ ಹಾಸಿಗೆಯ ಮೇಲೆ ಒಂದು ವಸ್ತ್ರ/
ಎಲ್ಲವನ್ನೂ ಒಗೆದು ಒಣಹಾಕಿ/ಮನೆಯೆಲ್ಲ ವ್ಯಾಕ್ಯೂಮ್ ಮಾಡಿ/
ಒಂದು ಹನಿ ಬಿದ್ದಿರದೇ ಕಾಮೋಡಿನ ಗೋಲದ ಮೇಲೆ/
ಬಾತ್ ರೂಮು ಕ್ಲೀನಾಗಿ ನಳನಳಿಸುತ್ತಿರಬೇಕು…”
ಆಗ ಮಾತ್ರ ನಾನು/ ಹೊಚ್ಚಗೆ ಮಿಂದು ಬಂದು/
ರುಚಿ ಅಡುಗೆಯ ಮಾಡಿ/ತಿನ್ನಿಸಬಲ್ಲೇ ನಿನಗೆ ಮುದ್ದು ಮಾಡುತ್ತ. ಎನ್ನುತ್ತಾರೆ ಯುವ ಕವಯತ್ರಿ ಕಾವ್ಯಾ ಕಡಮೆ ನಾಗರಕಟ್ಟೆ ತಮ್ಮ ಜೀನ್ಸ್ ತೊಟ್ಟ ದೇವರು ಎಂಬ ಕವನ ಸಂಕಲನದ ಒಂದು ಕವನ.

ಆಧುನಿಕತೆಯಲ್ಲಿ ದೈನಂದಿನ ಜೀವನ ಇಂದಿಗೆ ಯಾಂತ್ರಿಕವಾಗುತ್ತಿದೆ. ಹೊಸ ಜೀವನ ಶೈಲಿ ಹಳೆಯ ಬದುಕಿನ ವಿನ್ಯಾಸಕ್ಕೆ ಸಡ್ಡು ಹೊಡೆದು ನಿಂತಿದೆ. ಬದಲಾವಣೆಯ ಗಾಳಿ ಎಲ್ಲ ಕಡೆಯೂ ಇರುವಾಗಲೂ ಹೆಂಗಸಿನ ಮನೆಗೆಲಸದ ಹೊಣೆ ಮಾತ್ರ ಬದಲಾಗಿಲ್ಲ. ಅದೊಮ್ಮೆ ಅದಲು ಬದಲಾಗಬಾರದೇಕೆ? ಹೀಗೆಲ್ಲ ಯೋಚಿಸುವ ಎಳೆ ಹೆಣ್ಮನಗಳು ಆ ಕನಸು ಹೊತ್ತು ನಿಂತಿವೆ. ಹೊರ ದುಡಿಮೆಯಿಂದ ಸಂಜೆ ಹೈರಾಣಾಗಿ ಮನೆಗೆ ಬರುತ್ತಲೂ ಬೆಳಿಗ್ಗೆ ಕೆಲಸಕ್ಕೆ ಹೋಗುವ ತುರಾತುರಿಯಲ್ಲಿ ಬಿಟ್ಟು ಬಿಸಾಡಿ ಹೋದ ಪಾತ್ರೆ ಪಗಡ ಕಸ ರಾಶಿಗಳು ಕಣ್ಣುಕುಕ್ಕುತ್ತವೆ. ತೊಳೆಯದೇ ಹೋದ ಸಿಂಕು ಕೆಂಪಗಾಗಿರುತ್ತದೆ. ಅಲ್ಲಿ ಇಲ್ಲಿ ಮಂಚ ಹಾಸಿಗೆ ಮೇಲೆ ಹಾಗೇ ಬಿಟ್ಟು ಹೋದ ಬಟ್ಟೆಗಳು ಅಣಕಿಸುತ್ತವೆ. ತೊಳೆಯಲಿಟ್ಟ ಬಟ್ಟೆ, ಮಲೀನಗೊಂಡ ಒರೆಸದ ನೆಲ, ಬಿಡಿಸಿಡದ ತರಕಾರಿ ಎಲ್ಲವೂ ಹೆಣ್ಣಿನದೇ ಕೆಲಸ ಎಂಬ ಗಂಡಿನ ಉದಾಸೀನಕ್ಕೆ ಮೈ ಕೆರಳುತ್ತದೆ. ಆದಾಗ್ಯೂ ಒಂದು ಆಶಾವಾದದಿಂದಲೆ ಬದುಕು ಸಹ್ಯವಾಗುತ್ತದೆ. ಎಂದಾದರೊಂದು ದಿನ ಇವೆಲ್ಲವನ್ನು ಗಂಡು ಮಾಡಿಟ್ಟರೆ ಹೆಣ್ಣಿನ ಸಂಪೂರ್‍ಣ ಪ್ರೀತಿಯೂಟ ಪತಿಯಾದವನಿಗೆ ಸಲ್ಲುವುದು.

ಕವಯತ್ರಿ ಆಧುನಿಕ ಪ್ರಜ್ಞೆಯುಳ್ಳವಳು. ಹೊರಪ್ರಪಂಚದಲ್ಲೂ ಗಂಡಿಗೆ ಸಮನಾಗಿ ದುಡಿವ ಹೆಣ್ಣು ಮನೆಗೆ ಬರುತ್ತಲೂ ರಾಶಿರಾಶಿಯಾಗಿ ಬಿದ್ದಿರುವ ಮನೆಗೆಲಸಗಳ ನೆನೆದು ಹೈರಾಣಾಗುತ್ತಾಳೆ. ಮುಂಜಾನೆಯ ಪಾತ್ರೆಪಗಡಗಳೆಲ್ಲ ಇವಳಿಗಾಗೇ ಕಾಯುತ್ತಿರುತ್ತವೆ. ವಿವಾಹದೊಂದಿಗೆ ತಾಳಿ ಕುತ್ತಿಗೆಗೆ ಬೀಳುತ್ತಲೂ ಮನೆವಾಳ್ತೆಯ ಹೊಣೆಯೂ ಹೆಗಲೇರುತ್ತದೆ. ಆಗ ಹೆಣ್ಣಿನ ಮನಸ್ಸು ಈ ರೀತಿಯನ್ನು ಆಶಿಸುವುದು ತಪ್ಪಲ್ಲ. ಹಾಗಿದ್ದೂ ಸಮಾಜ ವ್ಯವಸ್ಥೆಯಲ್ಲಿ ಈಗಾಗಲೇ ಬೇರು ಬಿಟ್ಟಿರುವ ಮನೆಯ ದೇಖರೇಖಿಯ ಹೊಣೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದು. ಒಂದೊಮ್ಮೆ ಪತಿಯಾದವ ತಾನು ಬರುವವರೆಗೆ ಮನೆಯ ಒಪ್ಪ ಓರಣಗೊಳಿಸಿ ಮನೆ ನಳನಳಿಸುತ್ತಿರುವಂತೆ ಮಾಡಿ ಸಹಕರಿಸಿದರೆ ಎಂಬ ಗಾಳಿಗೋಪುರ ಕಟ್ಟುತ್ತಾರೆ ಕವಯತ್ರಿ. ತನ್ನ ಪ್ರೀತಿಯ ಜೊತೆ ರುಚಿಯಡುಗೆಯ ಮಾಡಿ ಬಡಿಸುವ ಹಂಬಲವನ್ನು ಹೊಂದಾಣಿಕೆಯ ಬದುಕಿನ ತತ್ವವನ್ನು ಕವನ ಬಿಂಬಿಸುತ್ತದೆ.

ಹೌದು. ಆರ್‍ಥಿಕ ಸ್ವಾತಂತ್ರ್ಯಕ್ಕಾಗಿ ನೌಕರಿ ಮಾಡುವ ಇಂದಿನ ಹೆಣ್ಣಿನ ಬದುಕು ಸದಾ ಜವಾಬ್ದಾರಿಗಳ ಕಾಲುವೆಯಲ್ಲಿಯೇ ಹರಿಯುತ್ತಿರುತ್ತದೆ. ಹೊರ ದುಡಿಮೆಯಲ್ಲಿ ಬಸವಳಿದು ಬರುವ ಉದ್ಯೋಗಸ್ಥ ಮಹಿಳೆಯ ಅಂತರ್‍ಗತ ಅಭಿಲಾಷೆಗೆ ಈ ಮೇಲಿನ ಕವನ ಒಂದು ಉದಾಹರಣೆ. ಆಧುನಿಕ ಜಗತ್ತಿನಲ್ಲಿ ಕುಟುಂಬದ ಸುಸ್ಥಿರ ಆರ್‍ಥಿಕತೆಗೆ ಗಂಡ ಹೆಂಡಿರಿಬ್ಬರೂ ದುಡಿಯುವ ಅನಿವಾರ್‍ಯತೆ ಬೆಳೆಯುತ್ತಿದೆ. ಹಿಂದೆಲ್ಲಾ ಬರೀಯ ಪಟ್ಟಣಗಳಲ್ಲಿ ಈ ಪರಿಸ್ಥಿತಿ ಇದ್ದರೆ ಇಂದು ಅದು ಬಹುಮಟ್ಟಿಗೆ ಹಳ್ಳಿಗಳಲ್ಲೂ ಕಾಣುವ ಸಹಜ ಸಂಗತಿ. ಆದರೆ ಹೊರಗೆ ದುಡಿವ ಗಂಡಿಗೆ ಮನೆಯ ಮೇಲುಸ್ತುವಾರಿಯ ಕೆಲಸ ಬಿಟ್ಟರೆ, ಉಳಿದ ಅ ದಿಂದ ಳ ವರೆಗಿನ ಎಲ್ಲ ಕೆಲಸಗಳು ಜವಾಬ್ದಾರಿಗಳು ಮನೆಯ ಹೆಂಗಸಿನ ಹೆಗಲ ಮೇಲೆ ಬಿದ್ದಿರುತ್ತವೆ. ಮನೆ ಗೆಲಸಕ್ಕೆ ಆಳು ಕಾಳುಗಳಿದ್ದಾಗಲೂ ಇದು ಕಡಿಮೆ ಏನೂ ಇರುವುದಿಲ್ಲ. ಕೆಲಸದವರಿಗೆ ಹೇಳಿ ಮಾಡಿಸುವ ಇಲ್ಲ ತಾನೇ ಮಾಡುವ ಅನಿವಾರ್ಯತೆ ಆಕೆಯದು.

ಮನೆಯ ಸ್ವಚ್ಛತೆಯ ವಿಚಾರ ಬಂದಾಗಲೂ ಸಮಾಜದ ಕಣ್ಣು ಹೆಣ್ಣನ್ನೆ ಬೊಟ್ಟು ಮಾಡಿ ತೋರುವುದು. ಮನೆಯ ಒಪ್ಪ ಓರಣಗೊಳಿಸುವ ಜವಾಬ್ದಾರಿ ಆಕೆಯದ್ದು ಎಂಬುದು ಅಲಿಖಿತ ಕಾನೂನು ಇದ್ದಂತೆ. ಅದೇ ಮನೆಯ ಸದಸ್ಯನಾದ ಗಂಡು ತನ್ನ ಬಟ್ಟೆ ಬರೆಗಳ ಮನಬಂದಂತೆ ಎಸೆದು ಹೋದರೂ ಅವೆಲ್ಲವನ್ನೂ ನೀಟಾಗಿ ತೊಳೆದು, ಇಲ್ಲ ತೊಳೆಯಿಸಿ, ಜೋಡಿಸಿ ಇಡುವ ಕೆಲಸ ಹೆಣ್ಣು ಮಾಡಬೇಕು. ಇರುವ ಮನೆ ಕಂಗೊಳಿಸಬೇಕೆಂದಾದಲ್ಲಿ ಆಕೆ ತನ್ನ ತನ್ನ ದೈಹಿಕ ನೋವು ದೌರ್‍ಬಲ್ಯಗಳ ಜೊತೆ ರಾಜಿ ಮಾಡಿಕೊಳ್ಳುತ್ತಲೇ ಹೊರ ದುಡಿಮೆಯನ್ನು ನಿಭಾಯಿಸುತ್ತಿರಬೇಕು.

ಹಾಗಾದರೆ ಇವುಗಳನ್ನೆಲ್ಲಾ ಗಂಡು ಮಾಡಿದರೆ ತಪ್ಪೇ? ಇಂದಿಗೆ ಈ ಪ್ರಶ್ನೆ ಕೇಳಿದರೆ ಉತ್ತರ ಇಲ್ಲ ಎನ್ನುವ ಪುರುಷರೂ ಮನೆಯಲ್ಲಿ ಆ ಕೆಲಸ ಮಾಡಲು ಒಪ್ಪಲಾರರು. ತಮ್ಮಿಂದಾಗದ ಕೆಲಸವೆಂದು ಕೈಚೆಲ್ಲಿ ಕೂತು ಜಾಣತನ ಮೆರೆಯುವರು. ಮನೆಯ ಮುಂದಿನ ಅಂಗಳ ಗುಡಿಸಿ ನೀರು ಚಿಮುಕಿಸಿ ರಂಗೋಲಿಯಿಡುವುದು ಸುಂದರವಾದ ಸಾಂಪ್ರದಾಯಿಕ ಬದುಕಿನ ಚಿತ್ರಣ. ಆದರೆ ಅದನ್ನು ಹೆಣ್ಣೆ ಮಾಡಬೇಕೆಂಬ ಕಟ್ಟಳೆ ಎಷ್ಟು ಸರಿ? ಪುರುಷನೆಂಬ ಭಾವ ಈ ಕೆಲಸ ಮಾಡಲು ಪ್ರೇರೇಪಿಸಲಾರದು.
ಅಲ್ಲೊಬ್ಬ ಇಲ್ಲೊಬ್ಬ ಮುಂಜಾನೆ ಎದ್ದು ಮನೆಯಂಗಳದ ಕಸ ಗುಡಿಸುವ ಪುರುಷ ಮಹಾನುಭಾವರ ನಾನು ಕಂಡಿದ್ದಿದೆ. ಆದರೆ ಅವರ ಕೆಲಸವನ್ನು ನೋಡಿ ಆಡಿಕೊಳ್ಳುವ ಅಲ್ಪಮತಿ ಹೆಣ್ಣುಗಳನ್ನು ಕಂಡಿದ್ದಿದೆ. ಇವರಾದರೋ ಸಮ ಬದುಕಿನ ಸಹ ಬಾಂಧವ್ಯದ ಅರ್‍ಥ ತಿಳಿಯದ ಗಾವಿಲೆಯರು. ತುಳಿಸಿಕೊಳ್ಳುವುದರಲ್ಲಿಯೇ ಖುಷಿಪಡುವ ಸಾಧ್ವಿಗಳು. ಈ ಬದುಕಿನ ಕಟ್ಟಳೆಗಳೇ ಆಭರಣವೆಂದು ತಿಳಿದು ಅಲಂಕರಿಸಿಕೊಳ್ಳುವವರು, ಕಣ್ಣೀರಿನ್ನು ಕುಡಿದು ಬದುಕುತ್ತಲೇ ಸೋಗಿನ ನಗುವನ್ನು ತೋರುವ ಸೋಗಲಾತಿಯರು.

ಇನ್ನು ಪತಿಪತ್ನಿಯರ ಬದುಕಿನ ರಸನಿಮಿಷಗಳಿಗೆ ಸಾಕ್ಷಿಯಾಗಿ ಬಂದ ಕುಡಿಗಳು ತಂದೆಯ ಹೆಸರು ಹೊತ್ತೆ ಗುರುತಿಸಲ್ಪಡುತ್ತವೆ. ಮನೆಯ ಸಜ್ಜುಗೊಳಿಸಿ ಕುಡಿಗೆ ತನ್ನ ಗರ್‍ಭವ ಸಜ್ಜುಗೊಳಿಸಿ ಎಲ್ಲಕ್ಕೂ ತನ್ನ ಶ್ರಮ, ಸಮಯ, ಬದುಕನ್ನೆ ತ್ಯಾಗ ಮಾಡುವ ಸ್ತ್ರೀಗೆ ಸಮಾಜ ನೀಡುವ ಬಳುವಳಿ ಏನು? ತ್ಯಾಗ ಶ್ರಮ ಸಹನೆ ಮುಂತಾದವುಗಳಿಗೆ ಹೆಣ್ಣನ್ನು ಸಂಕೇತವಾಗಿಸಿ, ಅಧಿಕಾರ ಹೆಸರು ಗದ್ದುಗೆಗಳಿಗೆ ಬಾಧ್ಯಸ್ಥನಾಗುವ ಯಜಮಾನನಾಗುವ ಪುರುಷನ ಗುಣ ತಾರತಮ್ಯದ ಸ್ವಭಾವ ಇಂದಿನ ಯುವ ಸ್ತ್ರೀ ಮನಸ್ಸುಗಳನ್ನು ಜಾಗೃತಗೊಳಿಸುತ್ತಿದೆ. ಹಾಗಾಗಿ ಯುವ ಪೀಳಿಗೆ ಕಾವ್ಯಾರಂತೆ ಯೋಚಿಸುವುದು ತಪ್ಪಲ್ಲ.

ಇನ್ನು ಇದೆಲ್ಲ ಬದಲಾಗಬೇಕೆಂದರೆ ಸಹಚರರ ಬೆಂಬಲಬೇಕು. ಅವರಲ್ಲಿ ಮಾನವ್ಯದ ಗುಣ ಮಿಳಿತವಾಗಿರಬೇಕು. ಪುರುಷನೆಂಬ ಕೊಂಬು ಚೂರಿಯಂತಿರಬಾರದು. ಬದುಕು ಹೊಂದಾಣಿಕೆ. ಬದಲಾವಣೆ ಜಗದ ನಿಯಮ. ಸಹಕಾರ ಸಹಾಯ ಸಹಧರ್‍ಮತೆ ಸಮವರ್‍ತತೆ ಸುಂದರ ಕುಟುಂಬ ಹಾಗೂ ಸಮಾಜವನ್ನು ಕಟ್ಟಬಲ್ಲದು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...