ಬೇಬಿ

ಬೇಬಿ ವಸಂತನ ಸುದ್ದಿಯಲ್ಲದೆ ಇನ್ನಾರ ಸುದ್ದಿಯನ್ನೂ ಬರೆಯಬೇಡ ಎಂದು ಹೇಳಿದ್ದೀಯಾ. ಅವನ ವಿಷಯವನ್ನೇ ಬರೆಯುತ್ತೇನೆ.

ಬೇಬಿ ನಿಲ್ಲುತ್ತಾನೆ; ಬೇಬಿ ಕೂತುಕೊಳ್ಳುತ್ತಾನೆ; ಬೇಬಿ ಮಲಗುತ್ತಾನೆ. ಬೇಬಿ ನಗುತ್ತಾನೆ; ಬೇಬಿ ಅಳುತ್ತಾನೆ ಬೇಬಿ ನಿದ್ರೆ ಮಾಡುತ್ತಾನೆ; ಬೇಬಿ ನಿದ್ರೆ ಮಾಡುವದಿಲ್ಲ. ಬೇಬಿಗೆ ನಾಲ್ಕು ಹಲ್ಲುಗಳಿವೆ; ನಾಲ್ಕೇ ಹಲ್ಲುಗಳಾದರೂ ದಿನಕ್ಕೆ ಆರು ಗ್ಲೆಕ್ಸೋ ಬಿಸ್ಕತ್ತುಗಳನ್ನು ತಿನ್ನುತ್ತಾನೆ; ಅದು ಸಾಲದೆಂತ ಅಳುತ್ತಾನೆ. ಬೇಬಿ ಹಿಡಿಯದೇ ನಿಲ್ಲುತ್ತಾನೆ. ನಾನು ಬರೆಯುತ್ತಾ ಕೂತರೆ ನನ್ನ ಬೆನ್ನ ಮೇಲೆ ಹತ್ತುತ್ತಾನೆ. ನನ್ನ ಕಿವಿಗಳನ್ನು ಕಚ್ಚುತ್ತಾನೆ; ನನ್ನ ಕಿವಿಗಳನ್ನು ಕಚ್ಚಿ ಗಾಯಮಾಡಿದ್ದಾನೆ. ಭಾರತಿಯ ಜಡೆಯನ್ನು ಹಿಡಿದು ಎಳೆಯುತ್ತಾನೆ. ಊಟ ಮಾಡುವಾಗ ಎಲೆಯನ್ನು ಹಿಡಿಯಲು ಬರುತ್ತಾನೆ. ಬೆಂಕಿಯನ್ನು ಎಳೆಯಲು ಪ್ರಯತ್ನ ಮಾಡುತ್ತಾನೆ. ನನ್ನನ್ನು ಕೇಳದೆಯೇ ಅಂಗಳಕ್ಕೆ ಓಡಿ ಹೋಗುತ್ತಾನೆ. ಬಟ್ಟೆಯನ್ನು ಕೊಳೆ ಮಾಡಿಕೊಳ್ಳುತ್ತಾನೆ. ಹೆದರಿಸಿದರೆ ನಗುತ್ತಾ ಮೈಮೇಲೆ ಹತ್ತುತ್ತಾನೆ. ಬಿಳಿ ಬಟ್ಟೆಯವರನ್ನು ಕಂಡರೆ, ನೀನೆಂತ ಅವರ ಹತ್ತಿರ ಓಡುತ್ತಾನೆ. ನಾನೆರಡು ಡೆಹಿಲಿಯಾ ಗಿಡಗಳನ್ನು ಬೆಳೆಸಿಕೊಂಡಿದ್ದೇನೆ; ಅವುಗಳನ್ನು ಹೋಗಿ ಕೀಳುತ್ತಾನೆ.

ಮೇಜಿನ ಮೇಲೆ ಒಂದು ಪಾತ್ರೆಯಲ್ಲಿ ಹೂವಿಟ್ಟಿದ್ದೆ. ಮೇಜಿನ ಬಟ್ಟೆಯನ್ನು ಬೇಬಿ ಎಳೆದ. ಹೂವಿನ ಸಮೇತ ಪಾತ್ರೆ ಕೆಳಗೆ ಬಿತ್ತು. ನೆಲವೆಲ್ಲಾ ಗಾಜಿನ ಚೂರು, ಅವುಗಳ ಮಧ್ಯೆ ಅಲ್ಲೊಂದು ಇಲ್ಲೊಂದು ಹೂವು, ಬಿದ್ದ ಹೂಗಳನ್ನು ತೆಗೆದು ತಿನ್ನಲು ಸುರುಮಾಡಿದ. ಆಫೀಸಿಗೆ ಹೋಗಿ ಮೇಜಿನಡಿಯಲ್ಲಿ ಕೂತುಕೊಳ್ಳುತ್ತಾನೆ; ಕೆಳಗೇನಾದರೂ ಇದ್ದರೆ ಅದನ್ನು ಹರಿದುಹಾಕುತ್ತಾನೆ; ಸೇಫಿನ ಬಾಗಿಲನ್ನು ಹಿಡಿದು ತೆಗೆಯಲು ಪ್ರಯತ್ನಿಸುತ್ತಾನೆ. ಸೀತಾ ರಾಮನ ಪಂಚೆಯನ್ನು ಹಿಂದುಗಡೆಯಿಂದ ಹೋಗಿ ಎಳೆಯುತ್ತಾನೆ. ನನಗೆ ಹೇಳದೆಯೆ ಮೀನಾಕ್ಷಿಯ ಜೊತೆಯಲ್ಲಿ ಅವಳ ಮನೆಗೆ ಹೋಗಿಬಿಡುತ್ತಾನೆ.

ಮೀಯಿಸುವಾಗ ಎದ್ದು ಕೂತುಕೊಂಡು ಚೊಂಬನ್ನು ಕಿತ್ತುಕೊಳ್ಳುತ್ತಾನೆ. ಸಾಬೂನನ್ನು ಬಾಯಲ್ಲಿಟ್ಟುಕೊಳ್ಳುತ್ತಾನೆ. ಮೈಯನ್ನು ಉಜ್ಜಲು ಬಿಡುವದಿಲ್ಲ; ಬಲಾತ್ಕಾರದಿಂದ ಉಜ್ಜಿದರೆ ಬಹಳ ಅಳುತ್ತಾನೆ. ವಿಶ್ವನಾಥನು ಓದುತ್ತಿದ್ದರೆ ಅವನ ಪುಸ್ತಕ ಕಿತ್ತುಕೊಂಡು ಹರಿಯುತ್ತಾನೆ. ನಾನು ಪಾತ್ರೆಯಲ್ಲಿ ನೀರಿಟ್ಟುಕೊಂಡಿದ್ದರೆ ಅದನ್ನು ಚೆಲ್ಲುತ್ತಾನೆ.

ಬೇಬಿ ಸುದ್ದಿ ಬರೆಯುವದಾದರೆ ಒಂದು ಪುಸ್ತಕ ತುಂಬಾ ಬರೆದರೂ ಮುಗಿಯುವದಿಲ್ಲ. ಇನ್ನೊಂದು ಸಾರಿ ಬರೆಯುತ್ತೇನೆ.

ನಿನ್ನ
ಗೌರಮ್ಮ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...