Home / ಕವನ / ಕವಿತೆ / ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣ ತೆತ್ತವಳೆ,  ಚಿಲುಕದಮೇಲೆ
ಮುಂಗೈಯನೂರಿ ನಿಂತವಳೆ,
ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ
ಒಂದೆ ಹೂವನು ಮುಡಿದವಳೆ,
ಒಂದೊಂದೆ ಬಳೆಯ ತೊಟ್ಟವಳೆ, ಈ ಮನೆಯೊಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ಹತ್ತಿದ ದೀಪ
ಮಂಕಾಗಿ ತೋರಿ ನಿಂತವಳೆ,
ಸಂತೆಗೆ ಹೋಗಿ ಬರಿಗೈಲೆ ಬಂದೆಯ, ಪಾಪ !-
ಚಿಂತೆ, ಏತರ ಚಿಂತೆ, ನಿನಗೆ?

ನಿನಗಾವ ಚಿಂತೆ ಚಿಕ್ಕವಳೆ, ಚಿನ್ನದ ಬಳೆಗೆ
ಒಪ್ಪುವ ತುಂಬುಗೈಯವಳೆ !
ಗಾಳಿಯ ಸುಳಿಗೆ ಹೂವಾದ ಮಲ್ಲಿಗೆಯರಳೆ,
ಬಂಡಿಯ ದನಿಗೆ ಬೆಚ್ಚುವಳೆ !-

ನಿನಗಾವ ಚಿಂತೆ, ಚಿಕ್ಕವಳೆ, ತುಂಬಿದ ಮನೆಗೆ
ಘನವಾಗಿ ಬಂದ ಗುಣದವಳೆ,
ನುಡಿದೊಂದು ಮಾತು ಸಾಕೆನುವ ಇನಿದನಿಯವಳೆ,
ತಲೆತಗ್ಗಿ ನಾಚಿ ನಡೆಯುವಳೆ?

ಮಳೆ ಬಿದ್ದು, ಕೆರೆ ತುಂಬಿ ನೀರು! ಮಿಂಚುವ ನೀರು,
ಬರಿ ನೀರೆ? ಥೇಟು ಪನ್ನೀರು !
ಅತ್ತಿತ್ತ ನೆಲ ಹೂವ ತೇರು; ಅಲ್ಲಿಗೆ ಬಾನು
ಇದ್ದೀತು ಒಂದೆರಡು ಮಾರು !

ಮನೆಗಿಂತ ಬಾನು ಎತ್ತರವೆ? ಆದರೆ ಏನು?
ಬಾನಿಗೆ ತಾರೆ ಹತ್ತಿರವೆ?
ಏನಂಥ ಬೆಟ್ಟ ಹೊತ್ತಿರುವೆ? ಸುಮ್ಮನೆ ನೀನು
ಸೊಂಪಾಗಿ ನಿಲುವುದುತ್ತರವೆ ?

ತೋಟದ ಮೇಲೆಲ್ಲ ತೆಂಗು; ತೆಂಗಿನ ಮೇಲೆ
ತೆರೆದ ಹೊಂಬಾಳೆಯ ರಂಗು!
ಗೊನೆ ಬಿಟ್ಟ ರಸಬಾಳೆ ಕಂದು; ಹಣ್ಣಿನ ಮೇಲೆ
ಹುದುಗಿತ್ತು ಗಿಣಿಯೊಂದು ಬಂದು.

ವೀಣೆಗೆ ತಂತಿಯ ಚೆಂತೆ; ತಂತಿಗೆ ತನ್ನ
ಹುಡುಕುವ ಬೆರಳಿನ ಚಿಂತೆ ;
ಬೆರಳಿಗೆ ಉಂಗುರದ ಚಿಂತೆ ; ಚಿಂತೆಗೆ ತನ್ನ
ಮಡಿಲ ತುಂಬುವುದೊಂದೆ ಚಿಂತೆ.

ಇಲ್ಲದ ಸಲ್ಲದ ಚಿಂತೆ ; ಅದು ಬಂದಂತೆ
ಹೋದೀತು ಇರಲೊಂದು ಗಳಿಗೆ !
ಸಂಶಯ ನನಗಿಲ್ಲ, ಚೆಲುವೆ; ಚೆಲುವಿಗೆ ಚಿಂತೆ;
ಚಿಂತೆಯಿಲ್ಲದ ಚೆಲುವು ಚೆಲುವೆ ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...