Home / ಕವನ / ಕವಿತೆ / ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು ತಾವರೆಯ ತೆನೆಯಾಗಿ
ಹೂವಾಗಲಿಲ್ಲ ಕೆಂಪಾಗಿ.
ಸಾವಿನಲಿ ಶಾಂತಿ ಉರುಳಿತ್ತು ತಲೆಕೆಳಗಾಗಿ
ಆ ಎಲ್ಲ ನೋವು ತಂಪಾಗಿ.

ನೀರಿಗೆ ಬಿದ್ದ ಹೆಣ್ಣು ಒಂದೇ ಮುಳುಗು ಮುಳುಗಿ
ಕಂಡಿತ್ತು ಸಾವಿನ ಯುಗಾದಿ.
ಸುತ್ತೆಲ್ಲ ಕಿತ್ತು ಬಿದ್ದಿತ್ತು ಆಸೆಯ ಜೋಲಿ
ತೆರೆದಿತ್ತು ಹುಡಿಮಣ್ಣು ಹಾದಿ.

ನೀರಿಗೆ ಬಿದ್ದ ಹೆಣ್ಣು ಯಾರಿಗೂ ಹೇಳದೆಯೆ
ಆಗಿತ್ತು ಕೆರೆಗೆ ಆಹುತಿ.
ಹಾಲ ಕಾಣದ ಬದುಕು ಕುಡಿದಿತ್ತು ಕೆರೆಯನೆ;
ಅಲ್ಲಿತ್ತು ಅದರ ಸದ್ಗತಿ.

ಗಂಡ ಬಂದನು ಕಡೆಗೆ ನಡೆಬಂದ ಕಂಬದೊಲು;
ಹತ್ತು ಜನ ಅಲ್ಲೆ ಒದಗಿದರು.
ಬೆಂಕಿ ಹೆಣವನು ನುಂಗಿ ಬೆಂಬೂದಿಯಾಗಿರಲು,
ಉಳಿದವರು ಊರ ಸೇರಿದರು.

ನೀರು ಮುಗಿಸಿದ ಕಥೆಗೆ ಬೆಂಕಿ ಮಂಗಳ ಹಾಡಿ
ನಡೆದಿತ್ತು ದೈವ ಸಂಕಲ್ಪ.
ಇಂಥ ಬಾಳಿಗೆ ಸಾವೆ ನಂದನದ ಕೆರೆ-ಕೋಡಿ;
ಮಸಣದಲಿ ಮಾತ್ರ ಸುಖತಲ್ಪ.

ಹೆಣ್ಣು ಸತ್ತಳು ಏಕೆ? ನೆರೆಯ ನಿರ್ಭಾಗ್ಯರಿಗೆ
ಸಂಶಯದ ಮೇಲೆ ಸಂಶಯ.
ಕಾರಣದ ಬಂಗಾರ ಬೇಟೆ ಫಲಿಸದೆ ಕಡೆಗೆ
ಸತ್ತವಳ ಮೇಲೆ ಸಂಶಯ.

ಕಯ್ಯಾರ ಕೆರೆಗೆ ತಳ್ಳಿದನೆ ಮಡೆದಿಯನಿವನು?
ನ್ಯಾಯದಲಿ ತೀರ್ಪು: ನಿರ್ದೋಷಿ.
ಗದ್ದಲದ ಗಡಸು ನಾಲಗೆಯ ಗಂಡಲ್ಲಿವನು;
ಊರು ಕಂಡಂತೆ ಮಿತಭಾಷಿ.

ಸತ್ತವಳ ಮೇಲೆ ಸಂಶಯ -ಊರಿಗಿವನಂಥ
ಮಾದರಿಯ ಗಂಡ ಆಭರಣ.
ಸತ್ತವಳು ಇಳಿದು ಸತ್ಯವನೊದರುವಂತಿಲ್ಲ ;
ಸಂಗತಿಗೆ ಮೌನದಾವರಣ.

ನೀರಿಗೆ ಬಿದ್ದ ಹೆಣ್ಣ ಗಂಡನ ಹಣೆಯ ಮೇಲೆ
ಬಿಡುಗಡೆಯ ನಿರ್ಭಯದ ತಿಲಕ.
ಎದೆಯಲಿ ಏನೊ ಎಂತೊ, ತೋರುವ ಮುಖದ ಮೇಲೆ
ಎಷ್ಟೊಂದು ನೋವು, ನಾಟಕ!

ಸತ್ತಳು ಏಕೆ ಹೆಣ್ಣು (ಊರಿಗೆ ಇಲ್ಲ ಕಣ್ಣು):
ಅಂತು ಕೇಳಿದವನೊಬ್ಬ ಕುಂಟ.
ಸತ್ತರೆ ಏನು ನಷ್ಟ? ಕಾದಿದೆ ಬೇರೆ ಹೆಣ್ಣು;
ಇಂತು ಹೇಳಿದನೊಬ್ಬ ನಂಟ.

ಕನಿಕರದಿಂದ ಬಂದ ಕುರಿಯೊಂದು ನುಡಿದಿತ್ತು :
ಮುಂಗಿದಿತ್ತು ಹೆಣ್ಣ ಹಣೆ-ಬರಹ.
ಮಾನವ ಜನ್ಮಧಾರಿ ನರಿಯೊಂದು ನಕ್ಕಿತ್ತು :
ನೀರಿಗೆ ಜಾರಿ ಬಿದ್ದ ವಿಷಯ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...