Home / ಕವನ / ಕವಿತೆ / ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವ

ಮುಳುಗುತಿಹ ನೇಸರನು ಮುದಿಸಿಂಹನಂತಾಗಿ
ಪಶ್ಚಿಮಾದ್ರಿಯ ಗವಿಯ ಸೇರುತಿಹನು;
ತನ್ನ ಸರ್ವಾಧಿಕಾರತ್ವ ಕೊನೆಗೊಳ್ಳುತಿರೆ
ಲೋಗರೆಡೆ ಕೆಕ್ಕರಿಸಿ ನೋಡುತಿಹನು.

ಸಂಜೆ ಕಕ್ಕರಮಬ್ಬು ಗಗನ ಸಿಂಹಾಸನದಿ
ಕಪ್ಪು ಬಾವುಟವೆತ್ತಿ ತೋರಿಸಿಹುದು;
ಪಕ್ಷಿಸಂಕುಲ ಕೆಲೆದು ಬಿಡುಗಡೆಯ ಹಿಗ್ಗಿನಲಿ
ಹಾಡಿ ಜಯಜಯಕಾರ ಗೈಯುತಿಹುದು.

ಹಗಲ ಉರಿವಿಸಿಲ ಸಾಮ್ರಾಜ್ಯಶಾಹಿಯು ಉರುಳಿ
ಪಡುವ ಕಡಲಿನ ಹಡಗವೇರುತಿರಲು
ಸಂಧ್ಯಾಸಮೀರನದೊ ಸ್ವಾತಂತ್ರ್‍ಯಸಂದೇಶ
ಹೊತ್ತು ನಾಲ್ದೆಸೆಗಳಲಿ ಹರಡುತಿಹನು.

ಬಿತ್ತರದ ಬಾನಿನಲಿ ಮತ್ತೆ ಜನತಾ ರಾಜ್ಯ
ಮೆರೆಯುತಿದೆ ಚಿಕ್ಕೆಯ ಪ್ರಜಾಪ್ರಭುತ್ವ:
ವ್ಯಕ್ತಿಶಕ್ತಿಯ ಗುಣವಿಕಾಸ ಪ್ರಕಾಶದಲಿ
ಜಗವ ಬೆಳಗುವುದದರ ಮೂಲತತ್ವ.

ಆಕಾಶಗಂಗೆ ಶಾಸನ ಸಭೆಯನೇರ್ಪಡಿಸಿ
ಮಂತ್ರಿಮಂಡಲವನ್ನು ನಿರ್ಮಿಸಿಹುದು;
ಬುಧ ಬೃಹಸ್ಪತಿ ಶುಕ್ರ ಶನಿ ಮಂಗಳಾದ್ಯರನು
ವಿವಿಧ ಮಂತ್ರಿಗಳಾಗಿ ನೇಮಿಸಿಹುದು.

ಕೃತ್ತಿಕೆಯು ಮೃಗಶಿರವು ಸಪ್ತರ್ಷಿ ಮಂಡಲವು
ರಾಜಕೀಯದ ಪಕ್ಷಪಂಗಡವೆನೆ
ದಕ್ಷಿಣೋತ್ತರ ಧ್ರುವದ ರಾಯಭಾರಿತ್ವದಲಿ
ಮುಖ್ಯಮಂತ್ರಿಯು ಚಂದ್ರನಾಗಿರುವನೆ?

ಬಿಡುಗಡೆಯ ಸೌಭಾಗ್ಯ ಪಡೆದ ಬಾನಿನೊಳಿಂತು
ಶಾಂತಿ ಸಮದರ್ಶಿತ್ವ ತಂಪಿನಿರುಳು
ಬಡವ ಬಲ್ಲಿದರೆನದೆ ಸಮತೆಯಲಿ ತಣಿಸಿಹುದು
ಸರ್ವರಿಗು ಸಮಪಾಲು ಬೆಳದಿಂಗಳು.

***

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...