Home / ಕಥೆ / ಜನಪದ / ಅಭೇದಾ

ಅಭೇದಾ

ತಾಯಿತಂದಿಗಳಿಗೆ ಇಬ್ಬರು ಮಕ್ಕಳು- ಗಂಡೊಂದು ಹೆಣ್ಣೊಂದು.

ಜಂಗಮನೊಬ್ಬ ಭಿಕ್ಷಾಕ್ಕ ಬಂದ – “ನಿಮ್ಮ ಮಗಳೀಗಿ ಸಾಡೇ ಸಾತಿ ಆದ. ಅದ್ರಿಂದ ನಿಮಗೂ ಸುಖ ಇಲ್ಲ- ಅವಳಿಗೂ ಸುಖ ಇಲ್ಲ. ಆಕೀಗಿ ದೂರಮಾಡಬೇಕು. ಅಂದರ ಯಾರಿಗೂ ದುಃಖ ಇಲ್ಲ” ಎಂದು ಹೇಳಿದ-

ಮಗಳಿಗೆ ದೂರಮಾಡಲು ತಾಯಿಯ ಮನಸ್ಸು ಒಪ್ಪಲಿಲ್ಲ. ಅದಕ್ಕಾಗಿ ತಾಯಿತಂದೀನೇ ಹನ್ನೆರಡು ವರುಷದವರೆಗೆ ದೂರ ಹೋದರು- ಮನೆಯಾಗ ಮಗಳೂಬ್ಬಳೇ ಉಳಿದಳು. ನಿತ್ಯ ದೇವರ ಪೂಜಿಮಾಡಬೇಕು, ಭಜನಿ ಕೀರ್ತನಿ ಮಾಡಬೇಕು – ಹೀಗೆ ದಿನ ಕಳೆದಳು. ಜಂಗಮ ಮನಿಯಾಗೇ ಉಳಿದ.  ಅವನೀಗಿ ದಿನಾ ಊಟಕ್ಕ ಮಾಡಿ ನೀಡಬೇಕು. ಬಳಿಕ ಭಜನೀ ಮಾಡಕೋತ ಖೋಲ್ಯಾಗ ಒಬ್ಬಳೇ ಕೂಡಲಿಕ್ಕೆ ಹತ್ತಿದಳು- “ಏನು ದಿನಾ ಭಜನೀ ಹಚ್ಚೀದಿ” ಎಂದು ಜಂಗಮ ಕಿಟಿ ಕಿಟಿ ಕೊಡಲಿಕ್ಕೆ ಹತ್ತಿದ. ಒಂದು ದಿನ ಅವಳ ಮೈಮ್ಯಾಗ ಏರಿಹೋದಾಗ ಆಕಿ ಖೋಲ್ಯಾಗ ಕುಂತವಳು ಬಾಗಿಲ ಹಾಕೊಂಡು ಕುಂತೇ ಬಿಟ್ಟಳು- ಎಷ್ಟು ಬಾಗಿಲ ಬಡಿದರೂ ತಗೀಲೇ ಇಲ್ಲ- ನೀರುಬೇಡ, ನಿಡಿಬೇಡ ಎಂದು ಕೂತುಬಿಟ್ಟಳು.  ಜಂಗಮ ಅವಳ ತಾಯಿತಂದಿಗೊಳಿಗೆ ಪತ್ರಬರೆದು ತಿಳಿಸಿದ – ಅಭೇದಾಳನೀತಿ ಸರಿಯಾಗಿಲ್ಲೆಂದು.

ತಂಗೀಗಿ ಹೋಗಿ ಕಡಿದು ಬಾ ಎಂದು ಆವ್ವ-ಅಪ್ಪ ಮಗನೀಗಿ ಕಳಿಸಿದರು.  “ಅಭೇದಾ” ಎಂದು ಬಾಗಿಲ ಮು೦ದ ನಿಂತು ಒದರಿದ. ಅಣ್ಣ ಬಂದಾನೆಂದು ತಿಳಿದು ಬಾಗಿಲು ತೆಗೆದು ಹೊರಗೆ ಬಂದಳು- “ತಾಯಿಗೆ ಜಡ್ಡಾಗಿ ಮಲಗಿದ್ದಾಳೆಂದು”, ಸವಿ ಮಾತು ಹೇಳಿ ಕರಕೊಂಡು ಹೊಂಟು ಅಡವ್ಯಾಗ ತಲವಾರ ತೆಗೆದು ಹೊಡೆದರೂ ಅಭೇದಾಳಿಗೆ ತಗುಲಲಿಲ್ಲ. ಗುಂಡಿನಿಂದ ಹೊಡೆದರೂ ಬಡೀಲಿಲ್ಲ. ತಂಗ್ಯಾ, ನಿನಗೆ ನನ್ನಿಂದ ಹೊಡೆಯುವದಾಗೂದಿಲ್ಲ.  ನಿನಗೆ ಜೀವದಾನ ಮಾಡುತೀನು ಎಂದು ಹೇಳಿ, ಆಕೀಗಿ ಒಂದು ಆಲದ ಗಿಡದ ಕೆಳಗೆ ಬಿಟ್ಟು ಹೊಂಟುಹೋದ. ಅಭೇದಾ ಮಾತ್ರ ಆಲದಗಿಡದ ತೊಪ್ಪಲ ತಿಂದು ಇರಲಿಕ್ಕೆ ಹತ್ತಿದಳು- ಮೈ ಮ್ಯಾಗಿನ ಬಟ್ಟೆಯೆಲ್ದಾ ಚೂರಾಗಿ ಹೋದವು- ಅದಕ್ಕಾಗಿ ಎಲೆಯಾಗ ಮಾನಾ ಮುಚ್ಚಗೊಂಡು ಕುಂತುಬಿಟ್ಟಳು.  ದೇವರ ಭಜನಿ ಪ್ರಾರ್ಥನಾ ಸುರು ಇಟ್ಟಳು.

ಒಂದು ದಿನ ರಾಜ ಮತ್ತು ಪ್ರಧಾನಿ ಇಬ್ಬರೂ ಅಡವ್ಯಾಗಿಂದು ಹಾಯ್ದು ಹೊಂಟಿದ್ದರು. ಭಜನೀ ಕೇಳಿದರು. ಗಿಡದಾಗ ಯಾರು ಇದ್ದಾರ ಎಂದು ವಿಚಾರ ಮಾಡಲಿಕ್ಕಾಗಿ ತೊಪ್ಪಲ ಧರಿಸಿದ ಹೆಣ್ಣುಮಗಳು ಕಣ್ಣೀಗಿ ಬಿದ್ದಳು.  ರಾಜಾ ಬೀಸಿ ಒಗೆದ ಶಾಲು ಉಟಗೊಂಡು ಅಭೇದಾ, ಕೆಳಗೆ ಇಳಿದು ಬಂದಳು.  ಅವಳ ರೂಪ ನೋಡಿ ರಾಜಾ ಮಳ್ಳಾಗಿ ಬಿಟ್ಟ. ರಾಜಾನ ಜೊತಿಗಿ ಅವಳದು ಲಗ್ನವಾಗಿ ಬಿಟ್ಟಿತು.  ಮುಂದೆ ವರ್ಷ ತುಂಬಿ ಒಂದು ಹೆಣ್ಣು ಕೂಸಿಗೆ ಜನ್ಮ ಕೊಟ್ಟಳು.  ಮುಂದೆ ನಾಲ್ಕು  ವರ್ಷದಾಗ ಒಂದು ಗಂಡು ಕೂಸೂ ಹುಟ್ಟಿತು.  ಎರಡೂ ಕೂಸುಗಳು ಪಾಟಿ ಪುಸ್ತಕ ಬೇಡಿ ಅಳಲಿಕ್ಕ ಹತ್ತಿದವು. ತಾನೂ ಸಣ್ಣಾಕಿ ಇದ್ದಾಗ ತಾಯಿ ತಂದೀಗಿ ಸಾಮಾನ ಬೇಡಿ ಅತ್ತ ನೆನಪಾಯಿತು. ಅದರಂಗ ಈಗ ತಾಯಿ ತಂದೀ ನೆನಪು ತಗಿದು ಅತ್ತಳು- ರಾಜಾ ಅಂತಾನ – “ಮನಸೀಗಿ ರಂಜಯಾಕ ಮಾಡಕೋತಿ. ನಿಮ್ಮ ಅವ್ವ ಅಪ್ಪ ಇದ್ದ ಠಿಕಾಣೀ ಹೇಳು. ಹೋಗಾಣು”- ಎಂದನು.

ದಂಡು ಸಮೇತ ಸೇನಾಪತಿ ಪಟ್ಟಣಕ್ಕ ಹೋದಳು. ನಡುವೆ ಹಾದ್ಯಾಗ ಒಂದು ಕಡೀ ವಸತಿ ಆಯ್ತು. ಢೇರೆ ಹೊಡೆದು ಅಡಿಗಿ ಅಂಬಲಿ ಎಲ್ಲಾ ಆಯ್ತು. ಅಭೇದಾ ಮತ್ತೆ ಭಜನೀ ಚಾಲೂಮಾಡಿದಳು. ಪ್ರಧಾನೀಗಿ ರಾಣಿ ಮ್ಯಾಗ ಮನಸ್ಸಾಗಿತ್ತು- ಭಜನಿ ಸಾಕು ಎಂದು ರಾಣೀಗಿ ಒತ್ತಾಯಮಾಡಿದ. ಅವನ ಮನಸ್ಸನಾಗಿಂದು ತಿಳಿದು ರಾಣಿ, ಮಕ್ಕಳ ಜೊತೆ ಕೂಡಿ ಬಾವ್ಯಾಗ ಸಿಡಿದಳು.  ಬಾ ಅಂತ ಎಷ್ಟು ಬೇಡಿಕೊಂಡರೂ ರಾಣಿಯೇನೂ ಜಪ್ ಅನ್ನಿಲ್ಲ. ಸಿಡಿಯ ಮ್ಯಾಗ ಹೋಗಿ ಕುಂತಳು. “ನಾವೆಲ್ಲಿ ಹೋಗಾರಿ” ಎಂದು ಪ್ರಧಾನಿ ಚಿಂತಿಮಾಡಿದ.  ರಾಣಿ ಅವ್ವ-ಅಪ್ಪನ ಮನೀಗಿ ಹೋಗ್ಯಾಳ ಎಂದು ಹೇಳಲು ಎಲ್ಲಾ ಸೇವಕರೀಗಿ ತಾಕೀತು ಮಾಡಿದ. ಖರೇ ಹೇಳುವ ಭರದಾಗ ಮಾತ್ರ ಅವಳಿಗಿ ಅಲ್ಲೇ ಅಡಿವ್ಯಾಗ ಬಿಟ್ಟು ತಿರುಗಿ ಅರಮನಿಗಿ ಹೋದರು.

ಈಕಡಿ ಅಭೇದಾ ಮಾತ್ರ ಭಾವಿಯಾಗಿಂದು ಹೊಂಟು ಬಂದು, ಗವಾರಿ ದನಾ ಕಾಯುವನ ಕೇಳ್ತಾಳ – “”ನೀನಾರು” ಎಂದು.

“ನನಗ ನೀ ಮಾಡಿಕೊಂತಿಯೇನು ?”

“ನಾ ಮಾಡಿಕೊಂತೀನಿ. ಆದರ ನೀ ಉಟ್ಟ ಬಟ್ಟೀ ಕೊಡಬೇಕು. ನಾ ರಾತ್ರಿ ಬಂದು ಗುಡ್ಯಾಗ ಮಿಲಾಸಬೇಕು” ಎಂದು ವಚನಕೊಟ್ಟಳು.

ಅಭೇದಾ ದನ ಕಾಯುವನ ಬಟ್ಟೀ ತಗೊಂಡು, ಕ್ಯಾವಿ ಬಣ್ಣದ ನೀರಾಗ ಎದ್ದಿದಳು. ಗ೦ಡಸರದು ಜುಬ್ಬಾ ಹಾಕೊಂಡು ಸೇನಾಪತಿ ಪಟ್ಟಣಕ ಹೊಂಟಳು. ಭಜನಿ ಕೀರ್ತನ ಹಾಡಕೋತ. ಊರಾಗ ಹೊಂಟಾಗ ಜನ ಭಕ್ತೀಲೆ ಅಡ್ಡಬಿತ್ತು.  ಅಂದು ಸೇನಾಪತಿ ಪಟ್ಟಣದಾಗ ಅಭೇದಾ ಕೀರ್ತನ ಹೇಳಿದಳು.

ರಾಜಾ ಹೇಣತೀಗಿ ಹುಡುಕಲಿಕ್ಕ ಬಂದ. ಗವಾರಿ ದನ ಕಾಯುವವ ಪ್ರಧಾನಿ ಬಂದರು. ಗುಡ್ಡದೊಳಗಿನ ಜಂಗಮ ಬಂದ. ತಾಯಿ ತಂದೀನೂ ಬ೦ದರು. ಅವರೆಲ್ಲರ ಮುಂದೆ ಅಭೇದಾ ತನ್ನ ಕತೀನೇ ಕೀರ್ತನೆ ಮಾಡಿ ಹೇಳಿದಳು. ಅವರೆಲ್ಲ ಕೇಳಿದರು. ಕೀರ್ತನಾ ಮುಗಿಸಿ ಭಜನೀ ಮಾಡಕೋತ ಕುಂತಾಗ ತಾಯಿ ಮಗಳ ಖೂನಾ ಹಿಡಿದಳು. ರಾಜಾ ಅಭೇದಾಳ ಕತಿಕೇಳಿ ಖೂನಾ ಹಿಡಿದ. ಆಗ ಅಭೇದಾ ಸಾಧೂರ ಬಟ್ಟೀ ತಗಿದು ತನ್ನ ಪರಿಚಯ ಹೇಳಿದಳು. ಎಲ್ಲರೂ ಮುಂದ ಸುಖದಿಂದ ಇದ್ದರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...