Home / ಕಥೆ / ಜನಪದ / ಹೆಂಡತಿಗೆ ಹೊಡೆಯಬೇಕೆನ್ನುವ ರಾಜ

ಹೆಂಡತಿಗೆ ಹೊಡೆಯಬೇಕೆನ್ನುವ ರಾಜ

ಇಬ್ಬರು ಗಂಡ ಹೆಂಡತಿ ಇದ್ದರು. ಅವರಿಗೆ ಒಬ್ಬಾಕೆ ಮಗಳು ಮಾತ್ರ ಇದ್ದಳು. ಅಪ್ಪ ಹೊಲಕ್ಕೆ ಹೋಗಿದ್ದಾನೆ; ತಾಯಿ ಹೊರಕ್ಕೆ ಹೋಗಿದ್ದಾಳೆ;  ಮಗಳು ಹೊರಕಡಿಗೆ ಹೊರಟಳು. ಹಾದಿಯಲ್ಲೊಂದು ಮನೆ.  ಮನೆಯಲ್ಲಿ ಗಂಡನಾದವನು ಹೆಂಡತಿಗೆ ಹೊಡೆಯುತ್ತಿದ್ದನು. ಮೂರುದಿನಕ್ಕೊಮ್ಮೆ ಗಂಡ ಯಾಕೆ ಹೊಡೆಯುತ್ತಾನೆ? “ಯಾರು ತಿಂತಾರವ್ವ ಹೀಂಗ ದಿನಾಲು ಏಟು.  ಏನು ತಪ್ಪಮಾಡ್ಯಾಳೋ ಯಾನೋ” ಎನ್ನುತ್ತಾಳೆ ಆ ಮಗಳು. ಅಷ್ಟರಲ್ಲಿ-

ರಾಜ ಮತ್ತು ಪ್ರಧಾನಿ ಇಬ್ಬರೂ ವಾಯುಸೇವನೆಗೆ ಹೊರಟಿದ್ದರು.  ಪ್ರಧಾನಿಯು, ರಾಜನಿಗೆ ಸಲಹೆ ಕೊಡುತ್ತಾನೆ . “ಈ ಹೆಣ್ಣುಮಗಳು ಚಪಲ ಕಾಣಿಸುತ್ತಾಳೆ. ಇವಳನ್ನು ಮಾತಾಡಿಸಿ ನೋಡೋಣ.”

ಆ ಹೆಣ್ಣು ಮಗಳಿಗೆ ರಾಜನು ಕೇಳುತ್ತಾನೆ – “ಮಗಾ  ನಿಮ್ಮಪ್ಪ ನಿಮ್ಮವ್ವ ಎಲ್ಲಿ ಹೋಗಿದ್ದಾರೆ?,’

ಆಕೆ ಮರು ನುಡಿಯುತ್ತಾಳೆ . “ಅಪ್ಪ ಮುಳ್ಳಿನ ಗಿಡಕ್ಕೆ ಮುಳ್ಳುಹಚ್ಚಲು ಹೋಗಿದ್ದಾನೆ.  ಖಂಡದೊಳಗಿನ ಖಂಡ ತೆಗೆಯಲು ಅವ್ವ ಹೋಗಿದ್ದಾಳೆ.”

“ಯಾವಾಗ ಬರುತ್ತಾರೆ?”

“ಹೊತ್ತು ಮುಳಗಿದ ಬಳಿಕ ಬರುತ್ತಾರೆ.”

ವಿಷಯ ಗೊತ್ತಾಯಿತು. ಅವರು ಬಂದ ಬಳಿಕ ಕೇಳೋಣ ಎಂದು ರಾಜ ಹಾಗೂ ಪ್ರಧಾನಿ ಮಾತಾಡಿಕೊಂಡರು.

ತಾನು ಬದನೀಗಿಡಕ್ಕೆ ಮುಳ್ಳು ಹಚ್ಚಲು ಹೋಗಿದ್ದೇನೆಂದು ತಂದೆ ಹೇಳಿದನು.  ಹಡೆಯಲಾರದೆ ನಿಂತ ಹೆಂಗುಸಿಗೆ ಹಡೆಯುವಂತೆ ಮಾಡಲು ಹೋಗಿದ್ದೆನೆಂದು ತಾಯಿ ಹೇಳಿದಳು.

ಆ ಹುಡಿಗೆಯ ಮಾತಿನ ಕುಶಲತೆಯನ್ನು ರಾಜನು ಮೆಚ್ಚುವನು.  ಅವಳನ್ನು ಮದುವೆಯಾಗಬೇಕೆಂದು ನಿರ್ಧರಿಸುತ್ತಾನೆ. ಮಗಳು ಸುಖದಲ್ಲಿ ಬೀಳುವಳೆಂದು ಅಪ್ಪನು ಮಗಳನ್ನು ರಾಜನಿಗೆ ಕೊಟ್ಟು ಲಗ್ನ ಮಾಡುತ್ತಾನೆ.

ರಾಜನು ಹೊಸ ಹೆಂಡತಿಯನ್ನು ಕರಕೊಂಡು ತನ್ನ ಮನೆಗೆ ಹೋಗುತ್ತಾನೆ.  ಆ ಬಳಿಕ ಹೆಂಡತಿಗೆ ಹೇಳುತ್ತಾನೆ. . “ನಾವು ಬೇಟೆಯಾಡಲು ಎಕ್ಕೀಹಳ್ಳಿಗೆ ಹೋಗುವೆವು.  ನಾವು ಬರುವಷ್ಟರಲ್ಲಿ ಹನ್ನೆರಡು ಮೊಟ್ಟೆ ನಡೆಯುವ ಭಾರಂಗ ಭಾವಿನ್ನು ಅಗಿಸಬೇಕು. ಜವೆ, ಮೆಂತಿ ಬೆಳೆಯುವ ತೋಟ ತಯಾರಮಾಡಬೇಕು. ಈಗ ಮಲ್ಲಿಗೆ ಹೂವಿನ ಸರವನ್ನು ನಿನ್ನ ಕೊರಳಲ್ಲಿ ಹಾಕುತ್ತೇನೆ.  ಅದು ಬಾಡಲಾರದಂತೆ ನೋಡಿಕೊಳ್ಳಬೇಕು.  ಅಲ್ಲಿಗೆ ನಾ ಬರುವಷ್ಟರಲ್ಲಿ ಒಂದು ಮಗಾ ತಯಾರು ಮಾಡಬೇಕು.”

ರಾಜನು ಬೇಟಿಯಾಡುವುದಕ್ಕೆ ಹೊರಟುಹೋದನು.

ಹೆಂಡತಿ ಕೈಯೊಳಗಿನ ದುಡ್ಡು ಖರ್ಚುಮಾಡಿ ಭಾರಂಗ ಭಾವಿ ಅಗಿಸಿದಳು.  ಮೊಟ್ಟೆ ಹೊಡಿಸಿ ತೋಟ ತಯಾರಿಸಿದಳು.

ಗಂಡಸಿನ ವೇಷತೊಟ್ಟು ಹೊರಬಿದ್ದಳು. ಒಂದೂರು ದಾಟಿ ಸಾಗಿದಾಗ ಅಲ್ಲಿಯ ರಾಜನ ಮಗಳು ಮಾಡಿದ ಶಪಥವನ್ನು ಕೇಳಿದಳು. ಏನೆಂದರೆ ಹರಿಯುವ ನೀರ ಮೇಲಿಂದ ಕುದುರೆ ಹಾರಿಸಬೇಕು. ಕುದುರೆಗೆ ನೀರು ತಟ್ಟಬಾರದು.  ಅಂಥವರನ್ನು ತಾನು ಲಗ್ನವಾಗುತ್ತೇನೆ. ಗಂಡು ವೇಷದಲ್ಲಿದ್ದ ಆ ಹೆಣ್ಣು ಮಗಳು
ನದಿಯ ಮೇಲಿಂದ ಕುದುರೆಯನ್ನು ಹಾರಿಸಿದಳು, ಚಬಕಿಯಿಂದ ಹೊಡೆದು, ಅದನ್ನು ಕಂಡು ರಾಜನ ಮಗಳು ಲಗ್ನ ಮಾಡಿಕೊಳ್ಳಲು ಮುಂದೆ ಬಂದಳು.

ಪಂಥ ಗೆದ್ದಿದ್ದಕ್ಕಾಗಿ ಪಂಥದ ವೀಳೆ ಎತ್ತಲಾಯಿತು.  ಆದರೆ ಸದ್ಯಕ್ಕೆ ತನ್ನದೊಂದು ವ್ರತವಿದೆಯೆಂದೂ ಈಗ ಲಗ್ನವಾಗಲಾರೆನೆಂದೂ ಪುರುಷ ವೇಷದಲ್ಲಿರುವ ಹೆಣ್ಣು ಮಗಳು ಹೇಳಿದಳು. ಆದ್ದರಿಂದ ತಲವಾರದೊಂದಿಗೆ ಲಗ್ನ ಮಾಡಿಕೊಳ್ಳುವುದು ನಿರ್ಧಾರವಾಯಿತು. ಹಾದಿಗೆ ಹಂದರ ಹಾಕಿ, ಬೀದಿಗೆ ಛಳಿ ಕೊಟ್ಟು ಲಗ್ನವನ್ನು ಸಡಗರದಿಂದ ಮಾಡಿದರು. ರಾಜನ ಮಗಳನ್ನು ಕರಕೊಂಡು ಮುಂದೆ ಹೊರಟಳು.

ಎಕ್ಕೆಹಳ್ಳಿಯನ್ನು ತಲುಪಿದಳು. ಅಲ್ಲಿ ಪಾತರನಾಚು ನಡೆದಿದೆಯೆಂದು ಕೇಳಿ, ನೆಟ್ಟಗೆ ಪಾತರದವರ ಮನೆಗೆ ಹೋದಳು. ದಾಸಿಯರಿಗೆ ಹೇಳಿ ಸೀರೆ ಸಜ್ಜುಮಾಡಿಕೊಂಡಳು. ಬೇಟೆಯಾಡಲು ಹೋದ ರಾಜನ ಎದುರಿಗೆ ನಾಚು ಮಾಡಿದಳು. ರಾಜನು ಹೆಂಡತಿಯನ್ನು ಗುರುತಿಸಲಿಲ್ಲ. ರಾಜನ ಮನಸ್ಸು ಮಾತ್ರ ಅವಳ ಮೇಲೆ ಕುಳಿತಿತು.  ರಾಜನ ಸಂಗಡ ಅಂದಿನ ರಾತ್ರಿ ಕಳೆದಳು.  ಬೆಳಗಾಗುತ್ತಲೆ ರಾಜನ ಕೈಯೊಳಗಿನ ಉಂಗುರ ಮತ್ತು ಶಾಲು ಇಸಗೊಂಡಳು. ಅಲ್ಲದೆ ಒಂದು ಚೀಟಿಯನ್ನೂ ಬರೆಯಿಸಿಕೊಂಡಳು. ಎರಡು ರಾತ್ರಿ ಕಳೆದು ಆಕೆ ಹೋಗಿಬಿಟ್ಟಳು.

ರಾಜಧಾನಿಗೆ ಬಂದಳು. ಅಷ್ಟರಲ್ಲಿ ಭಾರಂಗ ಭಾವಿ ತಯಾರಾಗಿದೆ. ರಾಜನ ಮಗಳನ್ನು ಒಳಗೆ ಕರೆದು ಸೀರೆಯುಟ್ಟು ನುಡಿಯುತ್ತಾಳೆ . “ತಂಗೀ, ಇದೆಲ್ಲ ನಮ್ಮದೇ. ಹಿಂದಿನಿಂದ ನಿನ್ನ ಗಂಡ ಹೊರಟಿದ್ದಾನೆ. ನೀ ಏನೂ ಕಾಳಜಿ ಮಾಡಬೇಡ.”

ಮುಂದೆ ಬಯಕೆ ಕಾಡಹತ್ತಿ ಒಂಬತ್ತು ತಿಂಗಳು ಒಂಬತ್ತು ದಿನಕ್ಕೆ ಗಂಡು ಮಗುವಿಗೆ ಜನ್ಮವಿತ್ತಳು.

ರಾಜ ಬರುತ್ತಾನೆ. ಹೆಂಡತಿಯನ್ನು ಯಾವಾಗ ಹೊಡೆಯಲಿ ಎಂದು ವಿಚಾರಿಸುತ್ತಾನೆ.  ತಾನು ಬರುವಷ್ಟರಲ್ಲಿ ಭಾರಂಗ ಭಾವಿ ತಯಾರಾಗಿದೆ.  ಅರಮನೆಗೆ ಬರುತ್ತಾನೆ. “ನೀರು ಕುಡಿಯಿರಿ” ಎಂದು ಹೆಂಡತಿ  ಸ್ವಾಗತಿಸುತ್ತಾಳೆ.  ಬಗಲಲ್ಲಿ ಕೂಸು ಇದೆ.  ಕೊರಳೊಳಗಿನ ಹೂವಿನ ಸರ ಬಾಡಿಲ್ಲ.

“ಮಗಾ ಎಲ್ಲಿಯದು”, ಎಂದು ಹೆಂಡತಿಗೆ ಕೇಳಿದರೆ ಆಕೆ ಉಂಗುರ, ಶಾಲು ಮತ್ತು ಚೀಟಿ ತೋರಿಸುತ್ತಾಳೆ.  ರಾಜನ ಸಿಟ್ಟೆಲ್ಲ ಇಳಿಯುತ್ತದೆ.  ತಾನು ಕೇಳಿದಂತೆ ಮೊಟ್ಟೆಯಿದೆ;  ತೋಟವಿದೆ. ಮೇಲೆ ಮಗನೂ ಹುಟ್ಟಿದ್ದಾನೆ. ಇಷ್ಟಾದ ಬಳಿಕ ಹೊಸ ರಾಜಕುಮಾರಿಯೂ ಬಂದಿದ್ದಾಳೆ.

ಈ ಎಲ್ಲ ಐಶ್ವರ್ಯವನ್ನು ನೋಡಿ ರಾಜನಿಗೆ ಸುಖವೆನಿಸಿತು. ಹೆಂಡತಿಯನ್ನು ಹೊಡೆಯುವ ವಿಚಾರವನ್ನು ಬಿಟ್ಟುಕೊಟ್ಟನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...