Home / ಕಥೆ / ಜನಪದ / ಕೊರವಂಜಿಯ ಕಲೆ

ಕೊರವಂಜಿಯ ಕಲೆ

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು.

ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗನನ್ನು ಕೇಳಿಕೊಂಡಳು . “ನನ್ನ ಸೊಸೆ ಬಾಳೆಗಿಂತ ಚಲುವೆಯಾಗಿದ್ದಾಳೆ. ಒಂದು ಸಾರೆ ಮನೆಗೆ ಬಂದು ಮುಖ ತೋರಿಸು.”

“ಬಾಳೆಗಿಂತ ಚಲುವೆಯಾದರೆ ಭಾವಿಯಲ್ಲಿ ನುಗಿಸು. ಇಲ್ಲವೆ ಉಟ್ಟಬಟ್ಟಿ ಕಳಕೊಂಡು ತವರುಮನೆಗೆ ಕಳಿಸು.  ನಾನು ನನಗೆ ತಿಳಿದಂತೆ ವರ್ತಿಸುವೆನು” ಎಂಬುದು ಮಗನ ಮರುನುಡಿ.

ಇನ್ನೊಂದು ಸಾರೆ, ಮಗನು ನಿಂಬಿಯ ಬನದಲ್ಲಿ ಚೆಂಡಾಡುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗಿ . “ನಿಂಬೆಗಿಂತ ನನ್ನ ಸೊಸೆ ಚೆಲುವೆಯಾಗಿದ್ದಾಳೆ ಒಂದೇ ಸಲ ಮನೆಗೆ ಬಂದು ಮೊಗದೋರು” ಎಂದು ಅಂಗಲಾಚಿದಳು.

ಕಟ್ಟಿಗೆ ಮುರಿದು ಕೈಗೆ ಕೊಟ್ಟಂತೆ ಮಗನು ಮರುನುಡಿದನು . “ನಿಂಬೆಗಿಂತ ಚೆಲುವೆಯಾಗಿದ್ದರೆ ಆಕೆಯನ್ನು ಬಾವಿಗೆ ನೂಕು. ಇಲ್ಲವೆ ಕಟ್ಟಿದ ಕರಿಮಣಿಯನ್ನು ಹರಕೊಂಡು ತವರುಮನೆಗೆ ಹಚ್ಚಗೊಡು.  ನಾನು ನನಗೆ ತಿಳಿದಂತೆ ಮಾಡುವೆನು.”

ತಾಯಿ ನಿರಾಶಳಾಗಿ ಮನೆಗೆ ಬಂದು ಸೊಸೆಗೆ ಹೇಳಿದಳು . “ಅಣ್ಣನ ಮಗಳೆಂದು ಹೆಮ್ಮೆಯಿಂದ ನಿನ್ನನ್ನು ತಂದುಕೊಂಡರೆ ಮಗನು ಮಾತೇ ಕೇಳದಾಗಿದ್ದಾನೆ. ಸೊಸೆಮುದ್ದೇ, ಹೋಗಿ ಬಿಡವ್ವ ನಿನ್ನ ತವರುಮನೆಗೆ.”

“ಯಾರು ಅಣ್ಣ, ಯಾರು ತಮ್ಮ? ತಾಯಿ ಯಾರು ತಂದೆ ಯಾರು?  ಅಣ್ಣನ ಮದುವೆ ಹೆಂಡಿರಾರು ಅತ್ತೆ? ತವರು ಮನೆಗೆ ಹೋಗಲಾರೆ ಒಂದು, ಹೊನ್ನು ಖರ್ಚುಮಾಡಿ ಮದುವೆ ಮಾಡಿದಿ; ಈಗ ಎರಡು ಹೊನ್ನು ಖರ್ಚುಮಾಡಿ ನನಗೆ ಕೊರವಂಜಿ ಬುಟ್ಟಿ ಕೊಂಡುಕೊಡು. ಅತ್ತೇ, ಗಂಡನನ್ನು ನೋಡಿ ಬರುವೆ. ಆತನ ರಂಡೆಯನ್ನು ನೋಡಿ ಬರುವೆ” ಎಂದಳು ಸೂಸೆ.

ಹೊರಮೈಗೆ ಮುತ್ತು ಹಚ್ಚಿ, ಒಳಮೈಗ ಮಾಣಿಕಹಚ್ಚಿ ಕೋದ ಬುಟ್ಟಿಯನ್ನು ಅತ್ತೆ ಆ ಕೂಡಲೇ ತಂದಿಟ್ಟಳು. ಸೊಸೆಯು ಅದನ್ನು ತಲೆಯಮೇಲೆ ಹೊತ್ತು ಕಾಲಲ್ಲಿ ಚೆಪ್ಪಲಿ ಮೆಟ್ಟಿಕೊಂಡು ತನ್ನ ರಾಯರಿರುವ ರಾಜಪಟ್ಟಣದ ದಾರಿ ಕೇಳುತ್ತ ನಡೆದಳು –

“ದನ ಕಾಯುವ ಅಣ್ಣಗಳಿರಾ, ದನಕಾಯುವ ತಮ್ಮಗಳಿರಾ, ನಮ್ಮ ರಾಯರಿರುವ ರಾಜಪಟ್ಟಣದ ದಾರಿಯಾವುದು?”

ದನಗಾಹಿಗಳು ಹೇಳಿಕೊಟ್ಟರು – “ಬಾಳೆ ಬನದ ಬಲಕ್ಕೆ ನಿಂಬೆ ಬನದ ಎಡಕ್ಕೆ ನಾಗಸಂಪಿಗೆಯ ನಡುವೆ ಹಸಿರು ಸೀರೆಯುಟ್ಟು, ಹಸಿರು ಕುಪ್ಪಸ ತೊಟ್ಟು, ಹಸಿರು ಸೆರಗ ಮರೆಮಾಡಿಕೊಂಡು ಎದುರು ಬರುತ್ತಿರುವ ತನ್ನಂಥ ಹರದಿಯರನ್ನು ಬಲಗೊಂಡಳು.  ಅದರಂತೆ ಕೆಂಪುಸೀರೆಯುಟ್ಟು, ಕೆಂಪು ಕುಪ್ಪಸ ತೊಟ್ಟು, ಕೆಂಪು ಸೆರಗು ಮರೆಮಾಡಿಕೊಂಡು ಎದುರು ಬರುತ್ತಿರುವ ಹರದಿಯರನ್ನೂ ಬಲಗೊಂಡಳು. ಬೀದಿಯಲ್ಲಿ ಸಾಗಿದ ಆನೆಗಳ ಮುಂದೆ, ಆನೆಮರಿಗಳ ಮುಂದೆ, ಆನೆಯನ್ನೇರುವ ಚದುರಮನ್ನೆಯರ ಮಗಳು ರಾಜಬೀದಿಯಲ್ಲಿ ಹೊರಟಳು.  ಒಂಟೆಗಳ ಮುಂದೆ, ಒಂಟೆಗಳನ್ನೇರುವ ಭಂಟಮನ್ನೆಯರ ಮಗಳು ರಾಜಬೀದಿಯಲ್ಲಿ ಸಾಗಿದಳು.

“ಕಾಲಲ್ಲಿ ಕಂಚಿನಪಿಲ್ಲೆ, ಕಿವಿಯಲ್ಲಿ ಹಿತ್ತಾಳೆಯ ಓಲೆ, ಸರಪಳಿ ಗಂಟಿಸರದಾಳಿ ಧರಿಸಿದ ನೀನು ಯಾವನಾಡಿನ ಕೊರವೆ” ಎಂದು ಕೇಳಿದನು ಒಬ್ಬ ತರುಣ.

“ನಾನು ಈ ನಾಡ ಕೊರವಿಯೂ ಅಲ್ಲ ; ಆ ನಾಡ ಕೊರವಿಯೂ ಅಲ್ಲ.  ದೇವಲೋಕದ ಕೊರವೆ. ಜಾಣ, ನಾನು ದೇವರು ಹೇಳುತ್ತೇನೆ ಕೇಳು-ಸೂಳೆಯರು ನಿನ್ನನ್ನು ಮೋಡಿಮಾಡಿ ಹೊಡೆಯುತ್ತಾರೆ” ಎ೦ದಳು ಕೊರವಿ.

“ಮಡದಿಯನ್ನು ಬಿಟ್ಟು ಹನ್ನೆರಡುವರುಷ ಆಯ್ತು ಕೊರವೀ. ಮಡದಿಯನ್ನು ಕೂಡಿಸು. ಕೈಮುಗಿಯುತ್ತೇನೆ ; ನಿನ್ನ ಕಾಲು ಬೀಳುತ್ತೇನೆ. ಅಷ್ಟು ಮಾಡಿದರೆ ನಿನ್ನನ್ನು ಕರೆತಂದು ಸೀರೆ ಕುಪ್ಪಸ ಉಡುಗೊರೆ ಕೊಡುತ್ತೇನೆ” ಎಂದನು ಆ ಜಾಣ.

“ನನ್ನ ಕಾಲ ಬೀಳುವುದಕ್ಕೆ, ನನ್ನ ಕೈಮುಗಿಯುವುದಕ್ಕೆ ಯಾರಿಗೆ ಯಾವ ತಪ್ಪು ಮಾಡಿರುವಿರಿ ಮಾರಾಯರೇ?  ಹೋಗೋಣ ನಡೆಯಿರಿ” ಎಂದು
ಕೊರವಿ ನುಡಿದು, ಆತನ ದಿಗಿಲನ್ನೆಲ್ಲ ಬಯಲು ಮಾಡಿದಳು.

ಗಂಡಹೆಂಡಿರು ಕೂಡಿಕೊಂಡು ಸಡಗರದಿಂದ ತಮ್ಮೂರ ಹಾದಿ ಹಿಡಿದರು. ಹಿ೦ದೆ ಆ ರಂಡಿ – ಸೂಳೆ ಬೆನ್ನುಹತ್ತಿದ್ದನ್ನು ಕಂಡು, ಆಕೆಯನ್ನು ಹಿಂದಕ್ಕೆ ಹೊಡೆದು ಹಾಕಿದರು.

“ಆರು ವರುಷ ತಿರುಗಿ ಅರಸನನ್ನು ತಂದಿದ್ದೇನೆ ಅತ್ತೇ, ಹೊರಗಡೆ ಬಾ.  ನಿನ್ನ ಮಗನನ್ನು ಒಳಗಡೆ ಕರೆದುಕೋ” ಎಂದು ಸೊಸೆಯು ಕೂಗಿದಾಗ ಅತ್ತೆಗಾದ ಆನಂದಕ್ಕೆ ಅಳತೆಯಿದೆಯೆ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...