Home / ಕಥೆ / ಜನಪದ / ಅತ್ತೆಯ ಗೊಂಬೆ

ಅತ್ತೆಯ ಗೊಂಬೆ

ಒಂದೂರಲ್ಲಿ ತಾಯಿಮಗ ಇದ್ದರು. ಮಗನು ದೊಡ್ಡವನಾದ ಬಳಿಕ ಹತ್ತಗಡೆಯವರಲ್ಲಿಯ ಹೆಣ್ಣು ತಂದು ಆತನ ಮದುವೆಮಾಡಿದಳು.

ಗಂಡನ ಮನೆಗೆ ಬಂದ ಬಳಿಕ ಸೊಸೆಯು, ಅತ್ತೆಯ ಸಲಹೆ ಕೇಳದೆ ಯಾವ ಕೆಲಸವನ್ನೂ ಮಾಡುತ್ತಿರಲಿಲ್ಲ. ಅಡಿಗೆಮಾಡುವಾಗ ಎಷ್ಟು, ಹೇಗೆ ಎಂದು ಕೇಳುವಳು, ಹಾಗೆ ಕೇಳದಿದ್ದರೆ ಆಕೆಗೆ ಯಾವ ಕೆಲಸವೂ ಬಗೆಹರಿಯುತ್ತಿರಲಿಲ್ಲ. ಹೀಗೆ ಕೆಲವು ವರ್ಷ ಸಾಗುವಷ್ಟರಲ್ಲಿ ಅಕಸ್ಮಾತ್ತಾಗಿ ಅತ್ತೆ ಯಾವುದೋ ಜಡ್ಡಿನಿಂದ ತೀರಿಕೊಂಡಳು.

ಅತ್ತೆಯ ಅಗಲಿಕೆಯಿಂದ ಸೊಸೆಗೆ ತೀರ ಎಡಚಾಯಿತು. ಯಾರನ್ನು ಕೇಳಬೇಕು, ಏನೆಂದು ಕೇಳಬೇಕು?  ಯಾವ ಕೆಲಸವೂ ಸುಗಮವಾಗಿ ಸಾಗದಂತಾಗಲು ಆಕೆ ಗಂಡನಿಗೆ ಹೇಳಿದಳು ತನ್ನ ತೊಂದರೆಯನ್ನು.  ಗಂಡನು ಬಡಿಗನಿಂದ ಕಟ್ಟಿಗೆಯದೊಂದು ದೊಡ್ಡ ಗೊಂಬೆ ಮಾಡಿಸಿ ತಂದು ಹೆಂಡತಿಯ ಮುಂದೆ ಇಳುಹಿಸಿದನು.

ಆ ಗೊಂಬೆಯನ್ನೇ ಅತ್ತೆಯೆಂದು ಬಗೆದು ಪ್ರತಿಯೊಂದು ಕೆಲಸದಲ್ಲಿ ಆಕೆಯ ಸಲಹೆ ಕೇಳತೊಡಗಿದಳು. ಅನ್ನ ಮಾಡಲೋ ರೊಟ್ಟಿ ಮಾಡಲೋ?  ರೊಟ್ಟಿ ಮಾಡುವುದಾದರೆ ಏಸು ಮಾಡಲಿ? ಅದಕ್ಕೆ ಒಣಗಿಮಾಡಲೋ ಹಸಿಗೆ ಮಾಡಲೋ ಹೀಗೆ ಕೇಳುವಳು.

ಸೊಸೆ ಒಮ್ಮೆ ನೆರೆಹಳ್ಳಿಯ ಸಂತೆಗೆ ಹೊರಟು ನಿಂತು . “ಸಂತೆಗೆ ಬರುವಿಯೇನು ಅತ್ತೇ?” ಎಂದು ಕೇಳಿದಳು. ಅದಕ್ಕೆ ಉತ್ತರ ಬರದಿರಲು.  “ನಡೆಯಲಿಕ್ಕಾಗುವುದಿಲ್ಲ. ಏನು ಬರಲಿ ಅನ್ನುವಿಯಾ?  ನಾನು ನಿನ್ನನ್ನು ಬುಟ್ಟಿಯಲ್ಲಿ ಕುಳ್ಳರಿಸಿಕೊಂಡು ಹೋಗುವೆನು ಬರುವೆಯಾ? ಹಾಗಾದರೆ ನಡೆ” ಎಂದು ಬುಟ್ಟಿಯನ್ನು ಹೊತ್ತುಕೊಂಡು ಸಂತೆಯೂರಿಗೆ ಹೋದಳು. ಗೊಂಬೆಯ ಬುಟ್ಟಿಯನ್ನು ಹೊತ್ತುಕೊಂಡು ಸಂತೆಮಾಡಲಿಕ್ಕಾಗದು ಎಂದು ಅದನ್ನು ಹನುಮಂತ ದೇವರ ಗುಡಿಯಲ್ಲಿಳುಹಿ ತಾನು ಸಂತೆಯೊಳಗೆ ಹೋದಳು.  ಹನುಮಂತ ದೇವರ ಗುಡಿಗೆ ಬಂದ ಭಕ್ತರು ಬುಟ್ಟಿಯೊಳಗಿನ ಗೊಂಬೆಯನ್ನು ಕಂಡು, ಇದೂ ಒಂದು ದೇವರೆಂದು ತಾವು ತಂದ ಅಕ್ಕಿ, ಬೇಳೆ ಮುಂತಾದವುಗಳನ್ನು ಅದರ ಮುಂದೆಯೂ ಹಾಕಿ ಹಾಕಿ ಹೋದರು. ಸಂಜೆ ಇಳಿಹೊತ್ತಿಗೆ ಸೊಸೆ ಸಂತೆಮಾಡಿಕೊಂಡು ಗುಡಿಗೆ ಬಂದು ನೋಡುತ್ತಾಳೆ.  ಅಕ್ಕಿ ಬೇಳೆಗಳು ಎರಡೆರಡು ಸೇರಿನಷ್ಟು ಸುರಿದಿವೆ. “ಅಕ್ಕಿ ಬೇಳೆಯ ಸಂತೆ ಮಾಡಿದೆಯಾ ಅತ್ತೇ?” ಎನ್ನುತ್ತ ಅವನ್ನೆಲ್ಲ ಒಂದು ಅರಿವೆಯಲ್ಲಿ ಕಟ್ಟಿಕೊಂಡು, ಅತ್ತೆಗೊಂಬೆಯ ಬುಟ್ಟಿ ಹೊತ್ತು ಊರಹಾದಿ ಹಿಡಿದಳು.

ಮರುದಿನ ಊರಲ್ಲೆಲ್ಲ ಸುದ್ದಿ. ಸತ್ತ ಅತ್ತೆಯಗೊಂಬೆ ಸೊಸೆಗೆ ಅಕ್ಕಿಬೇಳೆಯ ಸಂತೆಮಾಡಿಕೊಟ್ಟಿತಂತೆ. ಆಶ್ಚರ್ಯವಲ್ಲವೇ ?

ಮುಂದಿನ ಸಂತೆಗೂ ಅತ್ತೆಯನ್ನು ಕರೆದೊಯ್ದಳು ಸೊಸೆ. ಸಂತೆಯೊಳಗಿನ ಕೆಲಸ ತೀರಿಸಿಕೊಂಡು ಊರಿಗೆ ಹೊರಡಬೇಕೆನ್ನುವಷ್ಟರಲ್ಲಿ ಹೊತ್ತು ಮುಳುಗಿತು. ಆದ್ದರಿಂದ ಸೊಸೆ ಅಂದಿನ ರಾತ್ರಿಯನ್ನು ಹನುಮಂತದೇವರ ಗುಡಿಯಲ್ಲಿಯೇ ಕಳೆದು, ಬೆಳಗಿಗೆ ತನ್ನೂರಿಗೆ ಹೊರಡಬೇಕೆಂದು ಯೋಚಿಸಿದಳು.

ಸರಿರಾತ್ರಿಯ ಹೊತ್ತಿಗೆ ಊರೊಳಗೆ ಯಾರ ಮನೆಯಲ್ಲಿಯೋ ಕಳವು ಮಾಡಿಕೊಂಡು ನಾಲ್ವರು ಕಳ್ಳರು ದ್ರವ್ಯವನ್ನು ಹಂಚುಪಾಲು ಮಾಡಿಕೊಳ್ಳಬೇಕೆಂದು ಹನುಮಂತದೇವರ ಗುಡಿಯನ್ನು ಹೊಕ್ಕರು. ಆ ಸುಳುಹಿಗೆ ಸೊಸೆ ಎಚ್ಚೆತ್ತು.  “ಅಯ್ಯೋ ಅತ್ತೇ” ಎನ್ನುತ್ತ  ಓಡಿಹೋದಳು. ಕಳ್ಳರು ಮುಂದೆ ಹೋಗಿ ನೋಡುವಷ್ಟರಲ್ಲಿ ಕಟ್ಟಿಗೆಯ ಗೊಂಬೆ. ಇದು ಚೇಡಿಯ ಗೊಂಬೆಯಾದ್ದರಿಂದ ನಮ್ಮ ಕಳ್ಳತನ ಹೊರಗೆಡವುತ್ತದೆ. ಆದ್ದರಿಂದ ಸಮಾಧಾನಪಡಿಸಬೇಕು   ಮೊದಲು ಎಂದು ಅದರ ಮುಂದೆ, ಪ್ರತಿಯೊಬ್ಬರು ಬೊಗಸೆಬೊಗಸೆ ರೂಪಾಯಿ ಸುರಿದು ಓಡಿಹೋದರು.

ತನ್ನತ್ತೆಯನ್ನು ಮರೆತುಹೋದೆನೆಂದು ಅರಿವಾಗಿ ಸೊಸೆ ಹೊರಳಿ ಗುಡಿಗೆ ಬಂದು ನೋಡುತ್ತಾಳೆ. ಅತ್ತೆಯ ಗೊಂಬೆಯ ಮುಂದೆ ರೂಪಾಯಿಗಳ ಡಿಗ್ಗೆ.  ಅವನ್ನೆಲ್ಲ ಜೋಕೆಯಿಂದ ಕಟ್ಟಿಕೊಂಡು ಬೆಳಗು ಮುಂಜಾನೆ ತನ್ನೂರಿಗೆ ಹೊರಟು ಹೋದಳು.

ನಾಲ್ಕಾರು ದಿನ ಕಳೆಯುವಷ್ಟರಲ್ಲಿ ಅತ್ತೆಯ ಗೊಂಬೆಯ ಪುಣ್ಯದಿಂದ ಅವರು ಸ್ಥಿತಿವಂತರಾದರೆಂದು ಕೇರಿಯವರಿಗೆಲ್ಲ ಗೊತ್ತಾಯಿತು. ಬಂದುಬಂದು ಕೇಳತೊಡಗಿದರು – ಸತ್ಯಸಂಗತಿ ಏನೆಂದು. ಸೊಸೆಯು ಹೇಳಿಬಿಟ್ಟಳು ಘಟಿಸಿದ ಸಂಗತಿಯನ್ನೆಲ್ಲ.

ಅದನ್ನೆಲ್ಲ ಕೇಳಿಕೊಂಡು ಇನ್ನೊಂದು ಮನೆಯ ಸೊಸೆಯು ತನ್ನ ಗಂಡನಿಗೆ ದುಂಬಾಲಬಿದ್ದು, ಅತ್ತೆಯ ಗೊಂಬೆಯನ್ನು ಮಾಡಿಸಿ ತರಿಸಿದಳು.  ಅಡಿಗೆಮನೆಯಲ್ಲಿರಿಸಿದಳು. ಕ್ಷಣಕ್ಷಣಕ್ಕೂ ಸಲಹೆ ಕೇಳುವಳು. ಕೊನೆಗೆ ಗೊಂಬೆಯನ್ನೆತ್ತಿಕೊಂಡು ನೆರೆಹಳ್ಳಿಯ ಸಂತೆಗೂ. ಹೊರಟಳು. ಸಂತೆಯಲ್ಲಿ ಅಷ್ಟೊಂದು ಕೆಲಸವಿಲ್ಲದಿದ್ದರೂ ಹೊತ್ತು ಮುಳುಗಿಸಿದಳು. ಅಂದಿನ ರಾತ್ರಿ ಅದೇ ಊರಲ್ಲಿ ಕಳೆಯಬೇಕಲ್ಲವೆ?

ಹಾದಿಬಿಟ್ಟು ತುಸು ಒಳಗಿರುವ ಗಿಡವನ್ನೇರಿ ಕುಳಿತು ರಾತ್ರಿ ಕಳೆಯುವದಕ್ಕೆ ನಿಶ್ಚಯಿಸಿದಳು. ಸರಿರಾತ್ರಿಯ ಹೊತ್ತಿಗೆ ಆ ಗಿಡದ ಕೆಳಗೆ ಅದೇ ಕಳ್ಳರು ಬಂದು ತಮ್ಮ ಹಂಚುಪಾಲಿನ ಕೆಲಸದಲ್ಲಿ ತೊಡಗಿದರು. ಅದನ್ನು ಕಂಡು ಗಿಡವೇರಿ ಕುಳಿತವಳ ಕೈಕಾಲು ಥರಥರಿಸತೊಡಗಿದವು. ಕೈಯೊಳಗಿನ ಗೊಂಬೆಯನ್ನು ಬಿಟ್ಟು ಬಿಟ್ಟಳು. ಅದು ಕೆಳಗೆ ಆ ಕಳ್ಳರ ಮುಂದೆಯೇ ಬಿತ್ತು. ಏನೆಂದು ನೋಡುವಷ್ಟರಲ್ಲಿ ಗೊಂಬೆ. ಕಳೆದವಾರವೂ ಇಂಥದೇ ಗೊಂಬೆ ತಮ್ಮನ್ನು ಹೆದರಿಸಿತೆಂದು ನೆನೆಸಿದರು. ಈ ಸಾರೆಯೂ ಗೊಂಬೆ ಬೆನ್ನಹತ್ತಬೇಕೇ ಕೈ ತೊಳಕೊಂಡು ಎನ್ನುತ್ತ, ಅದು ಎಲ್ಲಿಂದ ಬಿತ್ತೆಂದು ಶೋಧಮಾಡಲು ಗಿಡದ ಮೇಲೆ ದೃಷ್ಟಿಹಾಯಿಸುವಷ್ಟರಲ್ಲಿ ಅವರ ಕಣ್ಣಿಗೆ ಒಬ್ಬ ಹೆಂಗಸು ಕಾಣಿಸಿದಳು. “ಮರ್ಯದೆಯಿಂದ ಕೆಳಗಿಳಿದು ಬಾ” ಎಂದು ಹೇಳಲು ಆಕೆ ನಡುಗುತ್ತ ಗಿಡದಿಂದ ಕೆಳಗಿಳಿದು ಬಂದಳು. ಕಳ್ಳರು ಆಕೆಯ ಬಳಿಯಲ್ಲಿರುವ ಸಂತೆಯ ಗಂಟುಗಳನ್ನೆಲ್ಲ ಕಸುಗೊಂಡು, ಗೆಬ್ಬೆಗೆರಡು ಏಟುಕೊಟ್ಟು “ಹೋಗಿನ್ನು” ಎಂದರು.

ಆಕೆ ತಾನು ಆಶೆಪಟ್ಟು ಮಾಡಿದ ತಗಲು ಪರಾಮರಿಕೆಗಾಗಿ ಪಶ್ಚಾತ್ತಾಪಪಟ್ಟು ಗಲ್ಲಗಲ್ಲ ಬಡಿದುಕೊಳ್ಳುತ್ತ ತನ್ನೂರಿಗೆ ಹೋಗಿ ಯಾವ ಸುದ್ದಿಯನ್ನೂ ಹೊರಹಾಕದೆ ಮಿಡುಕುತ್ತ ಕುಳಿತಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...