Home / ಕಥೆ / ಜನಪದ / ಒಂದು ಹಾಡು ಒಂದು ಕಥೆ

ಒಂದು ಹಾಡು ಒಂದು ಕಥೆ

ಒಂದೂರಿನಲ್ಲಿ ಒಬ್ಬ ಗೃಹಿಣಿಯಿದ್ದಳು. ಆಕೆಗೆ ಒಂದು ಕಥೆ ಗೊತ್ತಿತ್ತು.  ಒಂದು ಹಾಡು ಬರುತ್ತಿತ್ತು. ಆದರೆ ಅವಳು ತನಗೆ ಗೊತ್ತಿದ್ದ ಕಥೆಯನ್ನು
ಯಾರಮುಂದೆಯೂ ಹೇಳಿದವಳಲ್ಲ. ತಾನು ಕಲಿತ ಹಾಡನ್ನು ಯಾರಮುಂದೆಯೂ ಹಾಡಿದವಳಲ್ಲ.

ಆಕೆಯ ಮನಸ್ಸಿನಲ್ಲಿ ಸೆರೆಸಿಕ್ಕಿ ಆ ಕಥೆ ಆ ಹಾಡು ಅಲ್ಲಿಂದ ಕಾಲ್ತೆಗೆದು ಓಡಿ ಹೋಗಬೇಕೆಂದು ಮಾಡಿದವು. ಅಲ್ಲಿ ನಿಲ್ಲುವುದೇ ಬೇಡವಾಗಿತ್ತು ಅವುಗಳಿಗೆ. ಯಾವ ಬಗೆಯಿಂದ ಹೊರಬೀಳಬೇಕು – ಎಂದು ಯೋಚಿಸಿ ಕಡೆಗೆ ಕಥೆಯು ಹೊರಬಿದ್ದು ಅಂಗಳದಲ್ಲಿ ಎರಡು ಬೂಟುಗಳಾಗಿ ಕುಳಿತಿತು. ಹಾಡು ಒಂದು ಕೋಟು ಆಗಿ ಗೂಟಿಗೆ ನೇತು ಬಿದ್ದಿತು.

ಆ ಗೃಹಿಣಿಯ ಪತಿಯು ಮನೆಗೆ ಬಂದಾಗ ಅಂಗಳದೊಳಗಿನ ಬೂಟುಗಳನ್ನೂ ಗೂಟಕ್ಕೆ ತೂಗಬಿದ್ದ ಕೋಟನ್ನೂ ಕಂಡು ಹೆಂಡತಿಗೆ ಕೇಳಿದನು – “ಯಾರು ಬಂದಿದ್ದಾರೆ ಮನೆಗೆ?”

“ಯಾರೂ ಬಂದಿಲ್ಲವಲ್ಲ!” ಎಂದಳು ಹೆಂಡತಿ.

“ಹಾಗಾದರೆ ಈ ಬೂಟು ಈ ಕೋಟು ಯಾರವು?” ಪತಿಯ ಪ್ರಶ್ನೆ.

“ನನಗೂ ತಿಳಿಯದು” ಎಂದು ಸತಿ ಹೇಳಿದ ಉತ್ತರದಿಂದ ಗಂಡನಿಗೆ ಸಮಾಧಾನವೆನಿಸಲಿಲ್ಲ. ಸಂಶಯವೇ ಹುಟ್ಟಿಕೊಂಡಿತು. ಅದರಿಂದ ಅವರ ಮಾತುಕತೆಗಳಲ್ಲಿ ವಿರಸವು ಮೊಳೆಯಿತು. ವಿರಸವು ಕದನವಾಗಿ ಪರಿಣಮಿಸಿತು.  ಗಂಡನು ಹೆಂಡತಿಯ ಮೇಲೆ ಮುನಿಸಾಗಿ, ತನ್ನ ಕಂಬಳಿಯನ್ನು ತೆಗೆದುಕೊಂಡವನೇ ಹೊರಬಿದ್ದು ಹನುಮಂತ ದೇವರ ಗುಡಿಗೆ ಮಲಗಲು ಹೋದನು.

ಗೃಹಿಣಿಗೇನೂ ತಿಳಿಯಲಿಲ್ಲ. ಮನೆಯಲ್ಲಿ ಒಬ್ಬಳೇ ಅಡ್ಡಾದಳು. ನಿದ್ರೆಯೇ ಬರಲೊಲ್ಲದು. ಅದೇ ಚಿಂತೆ; ಅದೇ ವಿಚಾರ, ತಿರುತಿರುಗಿ ಬಂದು ನಿಲ್ಲುವದು. ಆ ಬೂಟು ಆ ಕೋಟು ಯಾರವು ? ಬಹಳ ಹೊತ್ತಿನ ಮೇಲೆ ಬೇಸತ್ತು ದೀಪವನ್ನಾರಿಸಿ ಮಲಗಿಕೊಂಡಳು.

ಆ ಊರೊಳಗಿನ ಹಣತಿಗಳೆಲ್ಲ ರಾತ್ರಿಯನ್ನು ಕಳೆಯಲು ಹನುಮಂತ ದೇವರ ಗುಡಿಗೆ ತೆರಳುವುದು ವಾಡಿಕೆಯಾಗಿತ್ತು. ಎಲ್ಲ ಮನೆಗಳಿಂದ ಹಣತಿಗಳು ಬಂದು ಬಂದು ನೆರೆದವು. ಬಹಳ ತಡಮಾಡಿ ಒಂದು ಹಣತಿ ಬಂದಿತು.  ಅದಕ್ಕೆ ಉಳಿದ ಹಣತಿಗಳೆಲ್ಲ ಕೇಳಿದವು – “ಇಷ್ಟೇಕೆ ತಡ ಬರಲಿಕ್ಕೆ ?”

“ನಮ್ಮ ಮನೆಯಲ್ಲಿ ಗಂಡಹೆಂಡರು ಜಗಳಾಡುತ್ತ ಕುಳಿತಿದ್ದರಿಂದ ರಾತ್ರಿಯಾಯಿತು” ಎಂದಿತು ಆ ಹಣತಿ.

“ಏಕೆ ಜಗಳಾಡಿದರು ಆ ಗಂಡಹೆಂಡಿರು ?”

“ಗಂಡನಿಲ್ಲದಾಗ ಅವರ ಮನೆಯಂಗಳಕ್ಕೆ ಜೋಡು ಬೂಟುಗಳು ಪಡಸಾಲೆಯ ಗೂಟಿಗೆ ಒಂದು ಕೋಟು ಬಂದಿದ್ದವು. ಅವು ಯಾರವು ಎಂದು ಗಂಡ ಕೇಳಿದರೆ, ನನಗೆ ಗೊತ್ತಿಲ್ಲವೆಂದು ಹೆಂಡತಿ ಹೇಳಿದಳು. ಅದಕ್ಕಾಗಿ ಜಗಳಾಡಿದರು” ಎಂದಿತು ಹಣತಿ.

“ಹಾಗಾದರೆ ಆ ಬೂಟು ಕೋಟು ಎಲ್ಲಿಂದ ಬಂದವು ?”

“ನಮ್ಮ ಮನೆಯೊಡತಿಗೆ ಒಂದು ಕಥೆ, ಒಂದು ಹಾಡು ಗೊತ್ತಿದೆ. ಎಷ್ಟು ಚಾಲುವರೆದರೂ ತಾನು ಕಲಿತ ಕಥೆ ಹೇಳಿದವಳಲ್ಲ.  ತನ್ನ ಹಾಡು ಅಂದು ತೋರಿಸಿದವಳಲ್ಲ. ಸೆರೆಸಿಕ್ಕ ಆ ಕಥೆ ಹಾಡುಗಳು ಬೂಟುಕೋಟುಗಳಾಗಿ ಹೊರಬಿದ್ದಿವೆ. ಅದು ಆಕೆಗೆ ಗೊತ್ತಾಗಿಲ್ಲ.”

ಆ ಹಣತಿಯ ವಿವರಣೆಯನ್ನೆಲ್ಲ ಕಂಬಳಿ ಮುಸುಕಿನಲ್ಲಿಯೇ ಕೇಳಿದ ಆ ಗಂಡನ ಸಂಶಯವೆಲ್ಲ ನಿವಾರಣೆ ಆಯ್ತು.  ನಿಶ್ಚಿಂತೆಯಿಂದ ಮಲಗಿ ನಿದ್ದೆಮಾಡಿ ಮುಂಜಾನೆ ಮನೆಗೆ ಹೋದನು. ಕಥೆ ಹಾಡಿನ ಸುದ್ದಿ ತೆಗೆದು ಹೆಂಡತಿಗೆ ಮಾತಾಡಿಸಿ ನೋಡಿದನು. ಆದರೆ ಆಕೆಗೆ ಬರುತ್ತಿದ್ದ ಕಥೆ ಹಾಡು ಎರಡೂ ಮರೆತುಹೋದವೆಂದು ತಿಳಿಯಿತು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...