Home / ಕಥೆ / ಜನಪದ / ಗರತಿ ಸಂಗವ್ವ

ಗರತಿ ಸಂಗವ್ವ

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು ಕಂಡು ಎದ್ದು ಬಂದು ಕೇಳಿದನು –
“ಹತ್ತೂರು ಕೊಡುತ್ತೇನೆ, ಮುಖತೋರಿಸು.”

“ಹತ್ತೂರು ಕೊಟ್ಟರೂ ನನ್ನ ನತ್ತಿನ ಬೆಲೆಯಾಗುವುದಿಲ್ಲ.  ಅತ್ತೆಯ ಹೊಟ್ಟೆಯಲ್ಲಿ ಹುಟ್ಟಿದವನು ಪ್ರತ್ಯಕ್ಷ ಅರ್ಜುನನೇ ಆಗಿದ್ದಾನೆ. ಆತನ ಕಾಲಕೆರವಿನ ಬೆಲೆ ನಿನಗಿಲ್ಲ” ಎಂದು ಖಂಡತುಂಡವಾಗಿ ನುಡಿದಳು ಸಂಗಮ್ಮ.  ಆದರೇನು, ಹಸಿದ ಹುಲಿಯನ್ನು ಕೆಣಕಿದೆನಲ್ಲ ಎಂದು ಎದೆಗುದಿ ಉಂಟಾಗದೆ ಇರಲಿಲ್ಲ ಆಕೆಗೆ.

ಹೊಳೆಗೆ ಹೇಗೆ ಹೋದಳೋ ನೀರು ಹೇಗೆ ತುಂಬಿದಳೋ ಆಕೆಗೆ ತಿಳಿಯಲಿಲ್ಲ. ತುಂಬಿದ ಕೊಡವನ್ನು ತಲೆಯಮೇಲೆ ಹೊತ್ತುದೇ ತಡ, ಗಾಳಿವೇಗದಿಂದ ಬಂದು ಮನೆಯನ್ನು ಸೇರಿದಳು. ಹೊಟ್ಟೆಯಲ್ಲಿ ಸಾಸಿವೆಯೆಣ್ಣೆ ಕಲೆಸುತ್ತಿತ್ತು.

ಮನೆಗೆ ಬಂದು ನೀರುಕೊಡವನ್ನು ಇಳುಹಿದವಳೇ ತಲೆಕಟ್ಟಿಕೊಂಡು ಸಂಗವ್ವ ಮಲಗಿಯೇಬಿಟ್ಟಳು.

ಕೆಲಸಕ್ಕೆ ಹೋದ ಮಾವಯ್ಯನು ಮನೆಗೆ ಬಂದು, ಸಂಗವ್ವ ಮಲಗಿದ್ದನ್ನು ಕಂಡನು. ತಲೆದಿಂಬಿನ ಬಳಿ ನಿಂತುಕೊಂಡು – “ಯಾಕೆ ಸಂಗಮ್ಮ ಮಲಗಿರುವೆಯಲ್ಲ” ಎಂದನು.

“ಕೈನೋವು, ಕಾಲುನೋವು. ವಿಚಿತ್ರವಾದ ಹಲವು ನೋವು ಮಾವಯ್ಯ.  ಸಾಯುತ್ತೇನೆ, ನೋವು ತಾಳಲಾಸಲ್ಲ – ತವರವರಿಗೆ ಹೇಳಿಕಳಿಸಿರಿ” ವಿನಯದಿಂದ ಸಂಗವ್ವ ನುಡಿದಳು.

ಕೈಹಿಡಿದ ಪತಿದೇವರು ಹೊರಗಿನಿಂದ ಬಂದು ಮಂಚದ ಬಳಿ ನಿಂತು ಕೇಳುತ್ತಾನೆ – “ಯಾಕೆ, ಮಲಗಿಕೊಂಡೆ ಕೆಳದಿ ?”

ಏನು ಹೇಳಲಿ, ಸಂದುಸಂದಿನ ನೋವು. ಸೂಜಿಯೂರುವಸ್ಟು ಸಹ ಸ್ಥಳ ನೋವಿಲ್ಲದಿಲ್ಲ. ಸಾಯುತ್ತೇನೆ ನನ್ನ ದೊರೆಯೇ ಹೆಚ್ಚಿನ ನೋವು !

ಹಾದಿಬೀದಿ ಉಡುಗಿಸಿ, ಹಾಲಿನ ಚಳಿಕೊಡಿರಿ. ಹಾದಿಯಲ್ಲಿ ನಿಂತವರೆಲ್ಲ ಬದಿಗಾಗಿರಿ. ಸಂಗಮ್ಮನ ತಾಯಿ ಅಳುತ್ತ ಬರುತ್ತಿದ್ದಾಳೆ.

ತಿಪ್ಪೆಯನ್ನು ಉಡುಗಿಸಿರಿ, ತುಪ್ಪದ ಚಳಿಕೊಡಿರಿ. ತಿಪ್ಪೆಯೊಳಗಿನ ಮಂದಿಯೆಲ್ಲ ಬದಿಗಾಗಿರಿ. ಸಂಗಮ್ಮನ ತಂದೆ ಅಳುತ್ತ ಬರುತ್ತಿದ್ದಾನೆ.

ಸಂಜ್ಞೆಯಿಂದ ತಾಯಿತಂದೆಗಳನ್ನು ಹತ್ತಿರಕ್ಕೆ ಕರೆದು ಕಿವಿಯಲ್ಲಿ ಹೇಳಿದಳು – ತಾನು ಹೇಳಬೇಕಾದುದನ್ನು. ಆ ಜೀವಬಿಟ್ಟು ಮೃತ್ಯುವನ್ನು ಗೆದ್ದಳು. ಮುಗಿಲ ದಾರಿಯಲ್ಲಿ ನಿಂತು ಕಿತ್ತೂರದೊರೆಯನ್ನು ಈಡಾಡಿದಳು.

ತಲೆಯಲ್ಲಿ ಚಂಡುಹೂವಿನ ದಂಡೆಯಿಂದ ಶೋಭಿಸುತ್ತಿರುವ ಸಂಗಮ್ಮನನ್ನು ಬಾಳೆಯ ಬನದಲ್ಲಿ ಬಯತಿರಿಸಿದರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...