Home / ಕವನ / ಕವಿತೆ / ಪ್ರತಿಜ್ಞೆ

ಪ್ರತಿಜ್ಞೆ

ಸ್ವಚ್ಛಂದ ಛಂದದಲ್ಲಿ
ಜಲಕ್ರೀಡಾವೃತ್ತದಲ್ಲಿ
ಅನುದಿನವು ತೆರೆಗಳು ಹಿಡಿವ ತಾಳಲಯದಲ್ಲಿ
ಗೀತವನೊರೆದೆನೆಂದು ಗೀಳ್‌ ಮಾಡಬೇಡ!
ಸಮುದ್ರವ ಸೆರೆಹಿಡಿದವರುಂಟೆ?

ಬಾವಿಯ ತೋಡಿ ಮುನ್ನೀರ ಬತ್ತಿಸಬಹುದೆ?
ಅಬ್ಜ ಶಬ್ದಗಳ ಪ್ರಾರಬ್ಧದಲ್ಲಿ ಸಹ
ಮಹಾಬ್ಧಿಯ ಕಣವೊಂದು ಸೆರೆಸಿಕ್ಕದಯ್ಯ!
ಕೊಡದಿರು ಶರಧಿಗೆ ಷಟ್ಟದಿಯ ದೀಕ್ಷೆಯನು!

ನೀರುನೀರಾಗಿ ಬೆಳಗು.
ನಾದಮಯವಾಗು ಹೊರಗು ಒಳಗು.
ಹಿಗ್ಗುಹಿಗ್ಗಾಗಿ ಹರಿ, ತಗ್ಗುತಗ್ಗಾಗಿ ಸರಿ.
ತೆರೆತೆರೆಯಾಗಿ ತೆರೆದರೆ
ನೊರೆನೊರೆಯಾಗಿ ಹರಿದೀತು.
ಉಕ್ಕಲಿ-ಚಿಮ್ಮಲಿ ಸಮುದ್ರದ ಸ್ವಾತಂತ್ರ್ಯ!
ಮಿಕ್ಕಲಿ-ಮೀರಲಿ ಮುನ್ನೀರ ನಿರ್ವಯಲು.
ಜರ್ಜರವಾದುದೆಲ್ಲ ಮುಳುಗಿ ಹೋಗಲಿ,- ಜಲಸಮಾಧಿಯಲ್ಲಿ.
ಹೊಸದೆಲ್ಲ ಹುಟ್ಟಿ ಬರಲಿ-ಹೃದಯದಾಳದಲ್ಲಿ!

ಬೇಡಯ್ಯ! ಬಂಧಗಳ ಬಂದಿವಾಸ;
ಬರೆದದ್ದೇ ಬ೦ಧುರವಾಗಬಹುದು.
ಸಾಕಯ್ಯ! ವೃತ್ತಗಳಾವರ್ತ:
ನಿನ್ನ ಮಣಿತವಿರಲಿ ಸಮುದ್ರದ ಕುಣಿತದಂತೆ!
ತರಂಗತ್ತರಂಗಗಳನೊಳಕೊಂಡ
ನವರಂಗ ವಾರಿಧಿಯಂತೆ

ವೃತ್ತಬಂಧಗಳು ಸಂಧಿಸಿ ಬಂದ
ಸಮುದ್ರವಾಗು, ಕವಿಯೆ!
ಕವಿಗಳ ಸಮುದ್ರಗುಪ್ತನಾಗು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...