Home / ಕವನ / ಕವಿತೆ / ಪ್ರತಿಜ್ಞೆ

ಪ್ರತಿಜ್ಞೆ

ಸ್ವಚ್ಛಂದ ಛಂದದಲ್ಲಿ
ಜಲಕ್ರೀಡಾವೃತ್ತದಲ್ಲಿ
ಅನುದಿನವು ತೆರೆಗಳು ಹಿಡಿವ ತಾಳಲಯದಲ್ಲಿ
ಗೀತವನೊರೆದೆನೆಂದು ಗೀಳ್‌ ಮಾಡಬೇಡ!
ಸಮುದ್ರವ ಸೆರೆಹಿಡಿದವರುಂಟೆ?

ಬಾವಿಯ ತೋಡಿ ಮುನ್ನೀರ ಬತ್ತಿಸಬಹುದೆ?
ಅಬ್ಜ ಶಬ್ದಗಳ ಪ್ರಾರಬ್ಧದಲ್ಲಿ ಸಹ
ಮಹಾಬ್ಧಿಯ ಕಣವೊಂದು ಸೆರೆಸಿಕ್ಕದಯ್ಯ!
ಕೊಡದಿರು ಶರಧಿಗೆ ಷಟ್ಟದಿಯ ದೀಕ್ಷೆಯನು!

ನೀರುನೀರಾಗಿ ಬೆಳಗು.
ನಾದಮಯವಾಗು ಹೊರಗು ಒಳಗು.
ಹಿಗ್ಗುಹಿಗ್ಗಾಗಿ ಹರಿ, ತಗ್ಗುತಗ್ಗಾಗಿ ಸರಿ.
ತೆರೆತೆರೆಯಾಗಿ ತೆರೆದರೆ
ನೊರೆನೊರೆಯಾಗಿ ಹರಿದೀತು.
ಉಕ್ಕಲಿ-ಚಿಮ್ಮಲಿ ಸಮುದ್ರದ ಸ್ವಾತಂತ್ರ್ಯ!
ಮಿಕ್ಕಲಿ-ಮೀರಲಿ ಮುನ್ನೀರ ನಿರ್ವಯಲು.
ಜರ್ಜರವಾದುದೆಲ್ಲ ಮುಳುಗಿ ಹೋಗಲಿ,- ಜಲಸಮಾಧಿಯಲ್ಲಿ.
ಹೊಸದೆಲ್ಲ ಹುಟ್ಟಿ ಬರಲಿ-ಹೃದಯದಾಳದಲ್ಲಿ!

ಬೇಡಯ್ಯ! ಬಂಧಗಳ ಬಂದಿವಾಸ;
ಬರೆದದ್ದೇ ಬ೦ಧುರವಾಗಬಹುದು.
ಸಾಕಯ್ಯ! ವೃತ್ತಗಳಾವರ್ತ:
ನಿನ್ನ ಮಣಿತವಿರಲಿ ಸಮುದ್ರದ ಕುಣಿತದಂತೆ!
ತರಂಗತ್ತರಂಗಗಳನೊಳಕೊಂಡ
ನವರಂಗ ವಾರಿಧಿಯಂತೆ

ವೃತ್ತಬಂಧಗಳು ಸಂಧಿಸಿ ಬಂದ
ಸಮುದ್ರವಾಗು, ಕವಿಯೆ!
ಕವಿಗಳ ಸಮುದ್ರಗುಪ್ತನಾಗು!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...