Home / ಕಥೆ / ಜನಪದ / ಶಿವಪಾರ್ವತಿಯರ ಸೋಲು

ಶಿವಪಾರ್ವತಿಯರ ಸೋಲು

ಕುರುಬ ಬೀರನು ಕುರಿ ಕಾಯುತ್ತ ಒಂದು ಹಳ್ಳದ ದಂಡೆಗೆ ಬಂದನು. ಅಲ್ಲಿಯ ನೀರು ನೆರಳು ನೋಡಿ, ಕುರುಬನು ತನ್ನ ಕುರಿಗಳಿಗೆ ದಡ್ಡಿಹಾಕಲು ತಕ್ಕ ಸ್ಥಳವೆಂದು ಬಗೆದನು. ಅದರಂತೆ ದಡ್ಡಿಹಾಕಲು ತೊಡಗಿದನು.

ಅಷ್ಟರಲ್ಲಿ ಅತ್ತಕಡೆಯಿಂದ ಶಿವಪಾರ್ವತಿ ಬಂದರು. “ಇಲ್ಲೇಕೆ ದಡ್ಡಿ” ಎಂದು ಕೇಳಿದರು.

“ಅದಕ್ಕೇನೂ ಆಗುವದಿಲ್ಲ” ಎಂದನು ಬೀರನು.

“ಮಳೆ ಆಗಿಬಿಟ್ಟರೆ ಹಳ್ಳಕೊಳ್ಳ ತುಂಬಿ ಬರುವದಿಲ್ಲವೇ?” ಎಂದು ಶಿವ ಪಾರ್ವತಿ ಕೇಳಿದರು.

“ಮಳೆ ಹೋಯಿತು ತನ್ನ ನಾಡಿಗೆ ಮೂರು ತಿಂಗಳು” ಎಂದು ಬೀರನು ಅವರಿಗೆ ಮರುನುಡಿದನು.

ಶಿವಪಾರ್ವತಿಯರು ಅಲ್ಲಿ ನಿಲ್ಲದೆ ಹೋಗಿಬಿಟ್ಟರು. ಅವರು ನೇರವಾಗಿ ವರುಣನ ಲೋಕಕ್ಕೆ ತೆರಳಿ – “ಈಗಲೇ ಮಳೆರಾಯನನ್ನು ಕಳಿಸಿಕೊಡು” ಎಂದು ಹೇಳಿದರು.

“ಮಳೆರಾಯನನ್ನು ಬೇರೆ ನಾಡಿಗೆ ಕಳಿಸಿದ್ದೇನೆ. ಅವನು ಬರುವುದು ಮೂರು ತಿಂಗಳು ಕಳೆದ ಬಳಿಕ” ಎಂದು ವರುಣನು ತಿಳಿಸಿದನು.

ಆ ಮಾತು ಕೇಳಿ ಶಿವಪಾರ್ವತಿಯರ ಮುಖ ಬಾಡಿಹೋದವು. ಮರುನುಡಿಯದೆ ಅವರು ಕೈಲಾಸಕ್ಕೆ ಹೊರಟುಹೋದರು.

ಬೀರನ ದಡ್ಡಿ ಹಳ್ಳದಲ್ಲಿ. ಅವನ ಕುರಿಗಳು ಹಳ್ಳದ ದಂಡೆಯಲ್ಲಿ ಬೀಡುಬಿಟ್ಟು ತಂಗಿದವು. ಹಳ್ಳದ ದಡದಲ್ಲಿ ಬೆಳೆದು ನಿಂತ ಹುಲ್ಲು ಮೇದು ಹಳ್ಳದ ನೀರು ಕುಡಿಯುತ್ತ ಮೂರು ತಿಂಗಳು ಕಳೆದವು.

ಆ ಸಂದರ್ಭದಲ್ಲಿ ಅತ್ತ ಕಡೆಯಿಂದ ಶಿವಪಾರ್ವತಿಯರು ಬಂದರು. ಕೇಳಿದರು – “ಬೀರಾ, ದಡ್ಡಿ ಕಿತ್ತಿದೆಯಲ್ಲ ! ಯಾಕೆ ?” “ಮಳೆರಾಜ ಬಂದಿರುವನಲ್ಲವೇ ನಮ್ಮ ನಾಡಿಗೆ” ಇದು ಬೀರನ ಮರುನುಡಿ. “ಎಷ್ಟು ಸೊಕ್ಕು ಈ ಕುರುಬನಿಗೆ ? ಮಳೆ ಬರುವದೆಂದು ಸ್ಪಷ್ಟವಾಗಿ ಹೇಳುತ್ತಿರುವನಲ್ಲ! ಏತರ ಮೇಲಿಂದ ಹೇಳುತ್ತಾನೆ ಹೀಗೆ ?” ಎಂದು ಶಿವಪಾರ್ವತಿ ತಮ್ಮತಮ್ಮಲ್ಲಿಯೇ ಅಂದುಕೊಂಡು, ನೇರವಾಗಿ ದೇವಲೋಕಕ್ಕೆ ನಡೆದರು. ಅಲ್ಲಿ ವರುಣನ ಬಳಿಗೆ ಹೋಗಿ ಹೇಳಿದರು – “ಮಳೆರಾಯನನ್ನು ಮರಳಿ ಕರೆಯಿಸು.”

ವರುಣ ಬಿನ್ನಯಿಸಿದನು – “ಆ ಹೊತ್ತು ನೀವು ಸೂಚಿಸಿದಂತೆ ಆತನನ್ನು ಇಂದೇ ಅತ್ತಕಡೆ ಕಳಿಸಿದ್ದೇನೆ. ಮೋಡಗಳು ಮುಂದೆ ಮುಂದೆ, ಸಿಡಿಲು ಮಿಂಚುಗಳು ಹಿಂದೆ ಹಿಂದೆ ಹೋಗಿವೆ. ನನ್ನ ಕೈಯಲ್ಲಿ ಏನಿದೆ ? ಕೊಟ್ಟ ಹುಕುಮು ಅವರ ಕೈಯಲ್ಲಿದೆ.”

ಆ ಮಾತು ಕೇಳಿ ಶಿವಪಾರ್ವತಿಯರು ಅಂದುಕೊಂಡರು – “ನಾವಿಂದು ಕುರುಬನಿಗೆ ಸೋತೆವು.”
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...