Home / ಕಥೆ / ಜನಪದ / ಶಿವಪಾರ್ವತಿಯರ ಸೋಲು

ಶಿವಪಾರ್ವತಿಯರ ಸೋಲು

ಕುರುಬ ಬೀರನು ಕುರಿ ಕಾಯುತ್ತ ಒಂದು ಹಳ್ಳದ ದಂಡೆಗೆ ಬಂದನು. ಅಲ್ಲಿಯ ನೀರು ನೆರಳು ನೋಡಿ, ಕುರುಬನು ತನ್ನ ಕುರಿಗಳಿಗೆ ದಡ್ಡಿಹಾಕಲು ತಕ್ಕ ಸ್ಥಳವೆಂದು ಬಗೆದನು. ಅದರಂತೆ ದಡ್ಡಿಹಾಕಲು ತೊಡಗಿದನು.

ಅಷ್ಟರಲ್ಲಿ ಅತ್ತಕಡೆಯಿಂದ ಶಿವಪಾರ್ವತಿ ಬಂದರು. “ಇಲ್ಲೇಕೆ ದಡ್ಡಿ” ಎಂದು ಕೇಳಿದರು.

“ಅದಕ್ಕೇನೂ ಆಗುವದಿಲ್ಲ” ಎಂದನು ಬೀರನು.

“ಮಳೆ ಆಗಿಬಿಟ್ಟರೆ ಹಳ್ಳಕೊಳ್ಳ ತುಂಬಿ ಬರುವದಿಲ್ಲವೇ?” ಎಂದು ಶಿವ ಪಾರ್ವತಿ ಕೇಳಿದರು.

“ಮಳೆ ಹೋಯಿತು ತನ್ನ ನಾಡಿಗೆ ಮೂರು ತಿಂಗಳು” ಎಂದು ಬೀರನು ಅವರಿಗೆ ಮರುನುಡಿದನು.

ಶಿವಪಾರ್ವತಿಯರು ಅಲ್ಲಿ ನಿಲ್ಲದೆ ಹೋಗಿಬಿಟ್ಟರು. ಅವರು ನೇರವಾಗಿ ವರುಣನ ಲೋಕಕ್ಕೆ ತೆರಳಿ – “ಈಗಲೇ ಮಳೆರಾಯನನ್ನು ಕಳಿಸಿಕೊಡು” ಎಂದು ಹೇಳಿದರು.

“ಮಳೆರಾಯನನ್ನು ಬೇರೆ ನಾಡಿಗೆ ಕಳಿಸಿದ್ದೇನೆ. ಅವನು ಬರುವುದು ಮೂರು ತಿಂಗಳು ಕಳೆದ ಬಳಿಕ” ಎಂದು ವರುಣನು ತಿಳಿಸಿದನು.

ಆ ಮಾತು ಕೇಳಿ ಶಿವಪಾರ್ವತಿಯರ ಮುಖ ಬಾಡಿಹೋದವು. ಮರುನುಡಿಯದೆ ಅವರು ಕೈಲಾಸಕ್ಕೆ ಹೊರಟುಹೋದರು.

ಬೀರನ ದಡ್ಡಿ ಹಳ್ಳದಲ್ಲಿ. ಅವನ ಕುರಿಗಳು ಹಳ್ಳದ ದಂಡೆಯಲ್ಲಿ ಬೀಡುಬಿಟ್ಟು ತಂಗಿದವು. ಹಳ್ಳದ ದಡದಲ್ಲಿ ಬೆಳೆದು ನಿಂತ ಹುಲ್ಲು ಮೇದು ಹಳ್ಳದ ನೀರು ಕುಡಿಯುತ್ತ ಮೂರು ತಿಂಗಳು ಕಳೆದವು.

ಆ ಸಂದರ್ಭದಲ್ಲಿ ಅತ್ತ ಕಡೆಯಿಂದ ಶಿವಪಾರ್ವತಿಯರು ಬಂದರು. ಕೇಳಿದರು – “ಬೀರಾ, ದಡ್ಡಿ ಕಿತ್ತಿದೆಯಲ್ಲ ! ಯಾಕೆ ?” “ಮಳೆರಾಜ ಬಂದಿರುವನಲ್ಲವೇ ನಮ್ಮ ನಾಡಿಗೆ” ಇದು ಬೀರನ ಮರುನುಡಿ. “ಎಷ್ಟು ಸೊಕ್ಕು ಈ ಕುರುಬನಿಗೆ ? ಮಳೆ ಬರುವದೆಂದು ಸ್ಪಷ್ಟವಾಗಿ ಹೇಳುತ್ತಿರುವನಲ್ಲ! ಏತರ ಮೇಲಿಂದ ಹೇಳುತ್ತಾನೆ ಹೀಗೆ ?” ಎಂದು ಶಿವಪಾರ್ವತಿ ತಮ್ಮತಮ್ಮಲ್ಲಿಯೇ ಅಂದುಕೊಂಡು, ನೇರವಾಗಿ ದೇವಲೋಕಕ್ಕೆ ನಡೆದರು. ಅಲ್ಲಿ ವರುಣನ ಬಳಿಗೆ ಹೋಗಿ ಹೇಳಿದರು – “ಮಳೆರಾಯನನ್ನು ಮರಳಿ ಕರೆಯಿಸು.”

ವರುಣ ಬಿನ್ನಯಿಸಿದನು – “ಆ ಹೊತ್ತು ನೀವು ಸೂಚಿಸಿದಂತೆ ಆತನನ್ನು ಇಂದೇ ಅತ್ತಕಡೆ ಕಳಿಸಿದ್ದೇನೆ. ಮೋಡಗಳು ಮುಂದೆ ಮುಂದೆ, ಸಿಡಿಲು ಮಿಂಚುಗಳು ಹಿಂದೆ ಹಿಂದೆ ಹೋಗಿವೆ. ನನ್ನ ಕೈಯಲ್ಲಿ ಏನಿದೆ ? ಕೊಟ್ಟ ಹುಕುಮು ಅವರ ಕೈಯಲ್ಲಿದೆ.”

ಆ ಮಾತು ಕೇಳಿ ಶಿವಪಾರ್ವತಿಯರು ಅಂದುಕೊಂಡರು – “ನಾವಿಂದು ಕುರುಬನಿಗೆ ಸೋತೆವು.”
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...