Home / ಕವನ / ಕವಿತೆ / ಸಂದ್ಯಾ-ಸೂಕ್ತ

ಸಂದ್ಯಾ-ಸೂಕ್ತ

ಇ೦ದು ಸಂಜೆಯ ನಿಟ್ಟು ನಿಟ್ಟಿಗೆ
ಬೆಳೆದು ನಿಂತಿದೆ ಸಂಪದ
ಹಕ್ಕಿ ಹಾರಿದ ಹಾಗೆ ಹರಿಯಿತು
ಮನದಿ ಊರಿದ ಆ ಪದ

ಚೆಂಗುಲಾಬಿಯ ಬನವು ಅರಳಿದೆ
ನೋಡು ಬಾನಿನ ದಂಡೆಗೆ
ಪ್ರಾಣ ಶುಕವೇ ಕ್ಷುಬ್ಧವಾಯಿತು
ಬಂತು ಕಣ್ಣಿನ ಕಿಂಡಿಗೆ

ಸ್ವರ್ಗಲೋಕದ ಸ್ವರ್ಣ ದ್ವಾರವು
ತೆರೆಯಿತೆನುವೊಲು ಅರೆಚಣ
ಸಂಜೆಗೆಂಪಿನ ಸುಮನ ಕಾಂತಿಗೆ
ತುಂಬ ಹೊತ್ತಿತು ಪಡುವಣ.

ನೋವು ನರಳಿಕೆಯಿಂದ ನವೆದಿಹ
ಜಗದ ಕೊರಳಿಗೆ ತಾಯಿತ
ಸುತ್ತಿಕೊಂಡಿದೆ ಸಂಜೆಗೆಂಪಿನ
ಮುತ್ತು ಮಾಲೆಯು ಮಂತ್ರಿತ

ದೇವ ಮಮತೆಯ ಕೈಯು ಚಾಚಿತು
ತಂಪು ಗಾಳಿಯ ಸುಳಿಯಲಿ
ಬೆಂದ ಹಣೆಗಳ ಬೇಗೆ ಸವರಿತು
ಶಾಂತಿಯೆರಚಿತು ಎದೆಯಲಿ.

ಮಡದಿ ಮಕ್ಕಳ ಮಮತೆ ನುಡಿಸಿತು
ಹಕ್ಕಿಯುಲಿಯುವ ಚಿಲಿಪಿಲಿ
ಕಿರಣ ಶಿಶುಗಳ ಚರಣ ಕಿಂಕಿಣಿ
ನಾದ ತುಂಬಿತು ಜಗದಲಿ

ಜಗದ ಬಗೆವಟ ಹರಡಿ ನಿಂತಿತು
ಟೊಂಗೆ ಟೊಂಗೆಯು ಕೊನರಿತು
ಗಾಳಿಗಡಲಿನ ತೆರೆಗೆ ನೌಕೆಯ
ಹಾಗೆ ಉಯ್ಯಲೆಯಾಡಿತು.

ಕಾಲದಿಕ್ತಟ ದಾಟಿ ಸೇರಿತು
ನೆನಹು ಹಕ್ಕಿಯ ಸಂಕುಲ.
ಕಳೆದ ಸತ್ವ ವಿಭೂತಿ ನೆರೆಯಿತೊ
ಎನ್ನು ವೊಲು ತಾರಾಕುಲ

ಮೋಡ ನೀಡದಿ ಚಿಕ್ಕೆ ಹಕ್ಕಿಯ
ತುಂಬಿ ತುಳುಕುವ ಪಿಕರುತಿ
ಕಾಲವೀಣೆಯು ಮಿಡಿಯ ತೊಡಗಿತೊ
ದೇವ ವಾಣಿಯ ಆ ಶೃತಿ

ಸಪ್ತ ಋಷಿಗಳ ವೇದ ವಾಣಿಯು
ಉಸುರಿತಾ ಗಾಯತ್ರಿಯ
ಯಮನ ಜಯಿಸಿದ ಸತ್ವ ಹೊಮ್ಮಿತು
ಕರಿಯಿತಾ ಸಾವಿತ್ರಿಯ

ವ್ಯಾಸ ವಾಲ್ಮೀಕಿಯರ ಪ್ರತಿಭೆಯ
ಗಂಗೆ ಬಾನೊಳು ಹರಿಯಿತು
ಧರ್ಮ ಭೀಮರ ರಾಮ ಹನುಮರ
ವೀರ ತೇಜವು ಚಿಮುಕಿತು.

ಕ್ರಿಸ್ತ ನೇರಿದ ಶಿಲುಬೆಯಿಂದಲಿ
ಸುರಿದ ರಕ್ತದ ಹನಿಯಲಿ
ಸಾವನರಿಯದ ಸೊಲ್ಲು ಗುಡುಗಿತು
ಚಿಕ್ಕೆ ಚಿಕ್ಕೆಯ ಎಡೆಯಲಿ

ಬುದ್ಧ ಬೋಧಿಯು ಮತ್ತೆ ಚಿಗುರಿತು
ಜಿನನ ವಾಣಿಯು ಅರಳಿತು
ಸೋತು ಸರಿದಿಹ ತತ್ವವೇತ್ತರ
ಶಬ್ದ ಸೌಷ್ಠವ ಕೊನರಿತು.

“ಬೆಂದು ಬಳಲಿದ ಜಗದ ಜೀವವೆ,
ಏಳು ಕುಡಿಯಲು ಸಿಡಿಲನು
ಮರೆತ ಮಾತಿನ ಹಣ್ಣು ಹಂಪಲ-
ದಿಂದ ತುಂಬಾ ಮಡಿಲನು

ಏಕೆ ಅಶುಭದ ಹೊಲೆಗೆ ಆಳುಕುವೆ
ಸಾವಿನಲಿ ನೀ ಬಾಳುವೆ
ಅಮೃತ ಪುತ್ರರ ಪಿತಗೆ ಭಯವೆ
ನೀನೆ ಎಂದಿಗು ಆಳುವೆ”

ಕಾಲಸಾಗರ ಕೆರಳಿ ಕೆದರಿತು
ನಾದ ಹೊಮ್ಮಿತು ತೆರೆತೆರೆ
ಹಾಲ ಸಾಗರ ನಂದ ಕಂದನು
ನೋಡು ನಕ್ಕನು ಜಗದೊರೆ

“ಕ್ಲೈಬೃಂ ಮಾಸ್ಮಗುಮಃ ಪ್ರಾಣೀ
ಸಲ್ಲದಿದು ನಿನಗೆಂದಿಗು
ಕುರುಕ್ಷೇತ್ರವಿದು ಧರ್ಮಕ್ಷೇತ್ರವು
ಉಂಟು ಕೊನೆಯಾ ಸಾವಿಗು.”
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...