Home / ಕಥೆ / ಜನಪದ / ಗಂಗಮ್ಮ ತಂಗಿ

ಗಂಗಮ್ಮ ತಂಗಿ

ಕೊಂಬಣಸು, ಕೊರಳಹುಲಿಗೆಜ್ಜಿಗಳಿಂದ ನಂದಿಯನ್ನು ಸಿಂಗರಿಸಿ ಶಿವನು ಪ್ರಯಾಣ ಹೊರಡುತ್ತಾನೆ. ಅದೆಲ್ಲಿಗೆ ?

ದಾರಿಯಲ್ಲಿ ಒಂದು ಹಳ್ಳ. ಹಳ್ಳದ ದಂಡೆಯಲ್ಲಿ ಹೂ ಕೊಯ್ಯುತ್ತಿರುವ ರಮಣಿಯನ್ನು ಕಂಡು ಶಿವನು – “ಜಾಣೇ, ನಮ್ಮ ಲಿಂಗಪೂಜೆಗೊಂದು ಹೂ ಕೊಡು” ಎಂದು ಕೇಳಿದನು.

ಆಕೆ ಹೇಳಿದಳು – “ಲಿಂಗಪೂಜೆಗೆಂದರೆ ಕೊಡಮಾಡಬಹುದು. ಆದರೆ ಮನೆಯಲ್ಲಿ ನಮ್ಮವ್ವ ಬಯ್ಯುತ್ತಾಳೆ ; ನಮ್ಮಪ್ಪ ಬಡಿಯುತ್ತಾನೆ.”

“ನಿಮ್ಮವ್ವ ಬಯ್ದರೆ, ನಿಮ್ಮವ್ವ ಬಡಿದರೆ ಗಂಗಾ, ನನ್ನ ಜಡೆಯಲ್ಲಿ ಬಂದು ಬಿಡು” – ಎನ್ನುತ್ತಾನೆ ಶಿವ.

“ಬಂದರೂ ಬರಬಹುದು. ಆದರೆ ಹೇಗೆ ನಂಬಲಿ ? ನಿಮ್ಮ ಮನೆಯಲ್ಲಿ ರಂಭೆಯಿದ್ದಾಳಲ್ಲ !” ಎಂದು ಸಂಕೋಚಪಟ್ಟಳು ಗಂಗಮ್ಮ.

“ನನ್ನಾಣೆ, ನಿನ್ನಾಣೆ ಅಲ್ಲದೆ ಧರಿಸಿದ ಲಿಂಗದಾಣೆ ಮಾಡಿ ಹೇಳುತ್ತೇನೆ. ನನ್ನ ಮನೆಯಲ್ಲಿ ರಂಭೆಯಿಲ್ಲ” ಎಂದು ಶಿವ ಭರವಸೆ ಕೊಡುತ್ತಾನೆ.

“ಬಂದೇನು ? ಆದರೆ ಹೇಗೆ ನಂಬಲಿ ? ನಿನ್ನ ಮನೆಯಲ್ಲಿ ಮಡದಿಯಿದ್ದಾಳಲ್ಲ !” ಗಂಗಮ್ಮ ಬೇರೊಂದು ಸಂಶಯ ತೋರಿದರೆ, ಆಗಲೂ ಶಿವನು – ತನ್ನಾಣೆ, ನಿನ್ನಾಣೆ ಅಲ್ಲದೆ ದೇವರಾಣೆ ಮಾಡಿ ಹೇಳುತ್ತೇನೆ ಮನೆಯಲ್ಲಿ ಮಡದಿಯಿಲ್ಲವೆಂದು, ಹೇಳುತ್ತಾನೆ. ಆಗ ಗಂಗಮ್ಮ ಮೆಲ್ಲನೆ ಶಿವನ ಜಡೆಯಲ್ಲಿ ಅಡಗುವಳು. ಅದನ್ನು ನೋಡಿದ ಗಿಣಿರಾಮನು ಕೂಡಲೇ ಹಾರಿಹೋಗಿ ಗೌರಮ್ಮನಿಗೆ ತಿಳಿಸುತ್ತಾನೆ.

ಆ ವಾರ್ತೆಯನ್ನು ಕೇಳಿ, ಮಲಗಿಕೊಂಡಿದ್ದ ಗೌರಮ್ಮನು ಮೈ ಮುರಿದುಕೊಂಡು ಎದ್ದು ಗಿಂಡಿಯೊಳಗಿನ ತಣ್ಣೀರಿನಿಂದ ಮುಖ ತೊಳೆದುಕೊಂಡವಳೇ ತನ್ನಣ್ಣನ ಅರಮನೆಗೆ ಹೋದಳು.

ಎಂದೂ ಬಾರದ ಗೌರಮ್ಮ ಇಂದು ಏತಕ್ಕಾಗಿ ಬಂದಳೆಂದು ಬಗೆಯುತ್ತ ಅಣ್ಣನು. ಆಕೆಗೆ ಕುಳಿತುಕೊಳ್ಳಲು ಮಣಿ ಚೌಕಿ ಕೊಡಿರೆಂದು ಮಡದಿಗೆ ಹೇಳುತ್ತಾನೆ.

“ನಾನು ಕುಳಿತುಕೊಳ್ಳಲೂ ಬಂದಿಲ್ಲ. ನಿಂತುಕೊಳ್ಳಲೂ ಬಂದಿಲ್ಲ. ನಾನೊಂದು ಕನಸು ಹೇಳಲು ಬಂದಿದ್ದೇನೆ. ಕೆರೆಯ ಮೇಲೆ ಕೆರೆಹುಟ್ಟಿ, ಕೆರೆಯ ಮೇಲೆ ಮರ ಹುಟ್ಟಿ, ಮರದ ಮೇಲೆ ಒಬ್ಬಾತನು ಬಲೆಹಾಕಿದ್ದಾನೆ” ಎನ್ನುತ್ತಾಳೆ ಗೌರಮ್ಮ.

ಒಗಟಿನಂಥ ಈ ಕನಸು ಅಣ್ಣನಿಗೆ ತಿಳಿದಂತೆ ತೋರಲಿಲ್ಲ. ಅದನ್ನು ಗೌರಮ್ಮ ಸ್ಪಷ್ಟಗೊಳಿಸಿದಳು – ಕೆರೆ ಅಂದರೆ ಶಿವರಾಯ. ಮರ ಅಂದರೆ ಜಡೆ, ಬಲೆಯೆಂದರೆ ಒಳಗಿನ ಶ್ರೀಗಂಗೆ.

“ದೇಶವನ್ನೇ ಆಳುವವರಿಗೆ ಹೆಂಡರು ಏಸು ಜನರಿದ್ದರೇನು ? ನಿನಗೇಕೆ ಆ ಚಿಂತೆ” ಎಂದು ಅಣ್ಣನು ತೀರ್ಪು ಹೇಳಿದನು.

ಆ ಮಾತು ಕೇಳಿ ಗೌರಮ್ಮ ಕಿಡಿಕಿಡಿಯಾದಳು. ಕಿಡಿಚೆಂಡೇ ಆದಳು. ಎಡಹಿ ಬೆರಳಿಗೆ ನೋವಾದುದನ್ನೂ ಲೆಕ್ಕಿಸದೆ ತನ್ನ ಅರಮನೆಯತ್ತ ಸಾಗಿದಳು.

ಶಿವನು ಒಂದೂರಿನಿಂದ ಯತಿಯ ವೇಷದಲ್ಲಿ ಬಂದು, ಗೌರಿಗೆ ನೀರು ಬೇಡುತ್ತಾನೆ. ಒಂದು ಗಿಂಡಿ ಬೇಡಿದರೆ, ಆಕೆ ಎರಡು ಗಿಂಡಿ ನೀರು ಕೊಡುತ್ತಾಳೆ. ಅದನು ಕಂಡು ಶಿವನು – “ನಿನಗೆ ಪುರುಷರು ಇಬ್ಬರೇನೇ ?” ಎಂದು ಚೇಷ್ಟೆಮಾಡುತ್ತಾನೆ.

“ಅಯ್ಯಯ್ಯೋ ಶಿವನೇ, ಅಣಕದ ಮಾತೇಕೆ ? ಕೆಂಜೆಡೆಯ ಮಣಿಮಕುಟದಲ್ಲಿರುವ ಸಿರಿಗಂಗೆಗೊಂದು ಗಿಂಡಿ, ನಿನಗೊಂದು ಗಿಂಡಿ” ಅನ್ನುತ್ತಾಳೆ ಗೌರಮ್ಮ.

“ಅಬ್ಬರಣೆ ಸಾಕು. ಎಡೆಮಾಡು ಗೌರೀ” ಎಂದು ಶಿವನು ಹೇಳಿದರೆ, ಎರಡು ಎಡೆಗಳು ಸಿದ್ಧವಾಗಿ ಬರುತ್ತವೆ. ಆಗಲೂ ಶಿವನು ಚೇಷ್ಟೆಮಾಡುತ್ತಾನೆ – “ನಿನಗೆ ಇಬ್ಬರೇನೆ ಪುರುಷರು ಗೌರಿ” ಎಂದು. ಗೌರಮ್ಮ ಮತ್ತೆ ಮುಂಚಿನ ಉತ್ತರವನ್ನೇ ಕೊಡುತ್ತಾಳೆ – “ನಿನಗೊಂದು ಎಡೆ, ಜತೆಯಲ್ಲಿರುವ ಸಿರಿಗಂಗೆಗೊಂದು ಎಡೆ.”

ಶಿವನು ತುಂಬ ದಿಗಿಲುಗೊಂಡು – “ಗಂಗೀನ ತಂದರೆ ತಂಗೀನ ತಂದಂತೆ. ಲಿಂಗ ಮುಟ್ಟಿ ಹೇಳುತ್ತೇನೆ ; ಕೆಂಡಮುಟ್ಟಿ ಹೇಳುತ್ತೇನೆ” ಎಂದು ಕ್ರಿಯೆಗೆ ಸಿದ್ಧನಾಗುತ್ತಾನೆ.

ಗೌರಮ್ಮ ಬೇರೊಂದು ಹಂಚಿಕೆ ತೆಗೆಯುತ್ತಾಳೆ. ಬೆಳ್ಳಿಯ ಬಟ್ಟಲಲ್ಲಿ ಎಳ್ಳೆಣ್ಣೆ ತೆಗೆದು ತಂದು ಶಿವನ ಜಡೆಯನ್ನು ಹೂಸಲು ಆರಂಭಿಸುತ್ತಾಳೆ. ಗೌರಮ್ಮನು ತಲೆಯಿಂದ ಸೊಂಟಿನತ್ತ ಎಣ್ಣೆಹೂಸುತ್ತ ಬರಲು, ಗಂಗೆ ಅದಕ್ಕಿಂತ ಕೆಳಗಡೆಗೆ ಸರಿಯುವಳು. ಗೌರಿಯೂ ಅಲ್ಲಿಯೂ ಎಣ್ಣೆ ಹೊಸತೊಡಗಲು, ಗಂಗೆಯು ಅನಿವಾರ್ಯವಾಗಿ ನೆಲಕ್ಕಿಳಿದು ಹೊಳೆಯಾಗಿ ಹರಿದು ಹೋಗುತ್ತಾಳೆ.

ಗಂಗೆ ಹೋದ ಮರುದಿನವೇ ಗೌರಮ್ಮ ರಜಸ್ವಲೆ ಆಗುತ್ತಾಳೆ. ಮೈದೊಳೆಯಲು ನೀರಿಲ್ಲದಾಗುತ್ತದೆ. ಶಿವನು ಚೇಷ್ಟೆಯಿಂದ ಹಾಲಿನ ಕೊಡವನ್ನು ಕಳಿಸುತ್ತಾನೆ ಗೌರಮ್ಮನ ಕಡೆಗೆ. “ಹಾಲಿನಿಂದ ಮಿಂದರೆ ಮುಡಚಟ್ಟು ಹೋಗುವದೇ? ತಂಗಿ ಗಂಗಮ್ಮನನ್ನು ಕಳಿಸಿರಿ” ಎನ್ನಲು, ಶಿವನು ಬೇಕೆಂದೇ ತುಪ್ಪದ ಕೊಡವನ್ನು ಕಳಿಸುವನು. “ತುಪ್ಪಿನಲ್ಲಿ ಮಿಂದರೆ ಮೈಲಿಗೆ ಕಳೆಯುವುದೇ? ದಯಮಾಡಿ ತಂಗಿ ಗಂಗಮ್ಮನನ್ನು ಕಳಿಸಿರಿ” ಎ೦ದು ಗೌರಮ್ಮ ಅಂಗಲಾಚಲು ಶಿವನು `ಆಗಲಿ’ ಎಂದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...