Home / ಕಥೆ / ಜನಪದ / ಗಂಗಮ್ಮ ತಂಗಿ

ಗಂಗಮ್ಮ ತಂಗಿ

ಕೊಂಬಣಸು, ಕೊರಳಹುಲಿಗೆಜ್ಜಿಗಳಿಂದ ನಂದಿಯನ್ನು ಸಿಂಗರಿಸಿ ಶಿವನು ಪ್ರಯಾಣ ಹೊರಡುತ್ತಾನೆ. ಅದೆಲ್ಲಿಗೆ ?

ದಾರಿಯಲ್ಲಿ ಒಂದು ಹಳ್ಳ. ಹಳ್ಳದ ದಂಡೆಯಲ್ಲಿ ಹೂ ಕೊಯ್ಯುತ್ತಿರುವ ರಮಣಿಯನ್ನು ಕಂಡು ಶಿವನು – “ಜಾಣೇ, ನಮ್ಮ ಲಿಂಗಪೂಜೆಗೊಂದು ಹೂ ಕೊಡು” ಎಂದು ಕೇಳಿದನು.

ಆಕೆ ಹೇಳಿದಳು – “ಲಿಂಗಪೂಜೆಗೆಂದರೆ ಕೊಡಮಾಡಬಹುದು. ಆದರೆ ಮನೆಯಲ್ಲಿ ನಮ್ಮವ್ವ ಬಯ್ಯುತ್ತಾಳೆ ; ನಮ್ಮಪ್ಪ ಬಡಿಯುತ್ತಾನೆ.”

“ನಿಮ್ಮವ್ವ ಬಯ್ದರೆ, ನಿಮ್ಮವ್ವ ಬಡಿದರೆ ಗಂಗಾ, ನನ್ನ ಜಡೆಯಲ್ಲಿ ಬಂದು ಬಿಡು” – ಎನ್ನುತ್ತಾನೆ ಶಿವ.

“ಬಂದರೂ ಬರಬಹುದು. ಆದರೆ ಹೇಗೆ ನಂಬಲಿ ? ನಿಮ್ಮ ಮನೆಯಲ್ಲಿ ರಂಭೆಯಿದ್ದಾಳಲ್ಲ !” ಎಂದು ಸಂಕೋಚಪಟ್ಟಳು ಗಂಗಮ್ಮ.

“ನನ್ನಾಣೆ, ನಿನ್ನಾಣೆ ಅಲ್ಲದೆ ಧರಿಸಿದ ಲಿಂಗದಾಣೆ ಮಾಡಿ ಹೇಳುತ್ತೇನೆ. ನನ್ನ ಮನೆಯಲ್ಲಿ ರಂಭೆಯಿಲ್ಲ” ಎಂದು ಶಿವ ಭರವಸೆ ಕೊಡುತ್ತಾನೆ.

“ಬಂದೇನು ? ಆದರೆ ಹೇಗೆ ನಂಬಲಿ ? ನಿನ್ನ ಮನೆಯಲ್ಲಿ ಮಡದಿಯಿದ್ದಾಳಲ್ಲ !” ಗಂಗಮ್ಮ ಬೇರೊಂದು ಸಂಶಯ ತೋರಿದರೆ, ಆಗಲೂ ಶಿವನು – ತನ್ನಾಣೆ, ನಿನ್ನಾಣೆ ಅಲ್ಲದೆ ದೇವರಾಣೆ ಮಾಡಿ ಹೇಳುತ್ತೇನೆ ಮನೆಯಲ್ಲಿ ಮಡದಿಯಿಲ್ಲವೆಂದು, ಹೇಳುತ್ತಾನೆ. ಆಗ ಗಂಗಮ್ಮ ಮೆಲ್ಲನೆ ಶಿವನ ಜಡೆಯಲ್ಲಿ ಅಡಗುವಳು. ಅದನ್ನು ನೋಡಿದ ಗಿಣಿರಾಮನು ಕೂಡಲೇ ಹಾರಿಹೋಗಿ ಗೌರಮ್ಮನಿಗೆ ತಿಳಿಸುತ್ತಾನೆ.

ಆ ವಾರ್ತೆಯನ್ನು ಕೇಳಿ, ಮಲಗಿಕೊಂಡಿದ್ದ ಗೌರಮ್ಮನು ಮೈ ಮುರಿದುಕೊಂಡು ಎದ್ದು ಗಿಂಡಿಯೊಳಗಿನ ತಣ್ಣೀರಿನಿಂದ ಮುಖ ತೊಳೆದುಕೊಂಡವಳೇ ತನ್ನಣ್ಣನ ಅರಮನೆಗೆ ಹೋದಳು.

ಎಂದೂ ಬಾರದ ಗೌರಮ್ಮ ಇಂದು ಏತಕ್ಕಾಗಿ ಬಂದಳೆಂದು ಬಗೆಯುತ್ತ ಅಣ್ಣನು. ಆಕೆಗೆ ಕುಳಿತುಕೊಳ್ಳಲು ಮಣಿ ಚೌಕಿ ಕೊಡಿರೆಂದು ಮಡದಿಗೆ ಹೇಳುತ್ತಾನೆ.

“ನಾನು ಕುಳಿತುಕೊಳ್ಳಲೂ ಬಂದಿಲ್ಲ. ನಿಂತುಕೊಳ್ಳಲೂ ಬಂದಿಲ್ಲ. ನಾನೊಂದು ಕನಸು ಹೇಳಲು ಬಂದಿದ್ದೇನೆ. ಕೆರೆಯ ಮೇಲೆ ಕೆರೆಹುಟ್ಟಿ, ಕೆರೆಯ ಮೇಲೆ ಮರ ಹುಟ್ಟಿ, ಮರದ ಮೇಲೆ ಒಬ್ಬಾತನು ಬಲೆಹಾಕಿದ್ದಾನೆ” ಎನ್ನುತ್ತಾಳೆ ಗೌರಮ್ಮ.

ಒಗಟಿನಂಥ ಈ ಕನಸು ಅಣ್ಣನಿಗೆ ತಿಳಿದಂತೆ ತೋರಲಿಲ್ಲ. ಅದನ್ನು ಗೌರಮ್ಮ ಸ್ಪಷ್ಟಗೊಳಿಸಿದಳು – ಕೆರೆ ಅಂದರೆ ಶಿವರಾಯ. ಮರ ಅಂದರೆ ಜಡೆ, ಬಲೆಯೆಂದರೆ ಒಳಗಿನ ಶ್ರೀಗಂಗೆ.

“ದೇಶವನ್ನೇ ಆಳುವವರಿಗೆ ಹೆಂಡರು ಏಸು ಜನರಿದ್ದರೇನು ? ನಿನಗೇಕೆ ಆ ಚಿಂತೆ” ಎಂದು ಅಣ್ಣನು ತೀರ್ಪು ಹೇಳಿದನು.

ಆ ಮಾತು ಕೇಳಿ ಗೌರಮ್ಮ ಕಿಡಿಕಿಡಿಯಾದಳು. ಕಿಡಿಚೆಂಡೇ ಆದಳು. ಎಡಹಿ ಬೆರಳಿಗೆ ನೋವಾದುದನ್ನೂ ಲೆಕ್ಕಿಸದೆ ತನ್ನ ಅರಮನೆಯತ್ತ ಸಾಗಿದಳು.

ಶಿವನು ಒಂದೂರಿನಿಂದ ಯತಿಯ ವೇಷದಲ್ಲಿ ಬಂದು, ಗೌರಿಗೆ ನೀರು ಬೇಡುತ್ತಾನೆ. ಒಂದು ಗಿಂಡಿ ಬೇಡಿದರೆ, ಆಕೆ ಎರಡು ಗಿಂಡಿ ನೀರು ಕೊಡುತ್ತಾಳೆ. ಅದನು ಕಂಡು ಶಿವನು – “ನಿನಗೆ ಪುರುಷರು ಇಬ್ಬರೇನೇ ?” ಎಂದು ಚೇಷ್ಟೆಮಾಡುತ್ತಾನೆ.

“ಅಯ್ಯಯ್ಯೋ ಶಿವನೇ, ಅಣಕದ ಮಾತೇಕೆ ? ಕೆಂಜೆಡೆಯ ಮಣಿಮಕುಟದಲ್ಲಿರುವ ಸಿರಿಗಂಗೆಗೊಂದು ಗಿಂಡಿ, ನಿನಗೊಂದು ಗಿಂಡಿ” ಅನ್ನುತ್ತಾಳೆ ಗೌರಮ್ಮ.

“ಅಬ್ಬರಣೆ ಸಾಕು. ಎಡೆಮಾಡು ಗೌರೀ” ಎಂದು ಶಿವನು ಹೇಳಿದರೆ, ಎರಡು ಎಡೆಗಳು ಸಿದ್ಧವಾಗಿ ಬರುತ್ತವೆ. ಆಗಲೂ ಶಿವನು ಚೇಷ್ಟೆಮಾಡುತ್ತಾನೆ – “ನಿನಗೆ ಇಬ್ಬರೇನೆ ಪುರುಷರು ಗೌರಿ” ಎಂದು. ಗೌರಮ್ಮ ಮತ್ತೆ ಮುಂಚಿನ ಉತ್ತರವನ್ನೇ ಕೊಡುತ್ತಾಳೆ – “ನಿನಗೊಂದು ಎಡೆ, ಜತೆಯಲ್ಲಿರುವ ಸಿರಿಗಂಗೆಗೊಂದು ಎಡೆ.”

ಶಿವನು ತುಂಬ ದಿಗಿಲುಗೊಂಡು – “ಗಂಗೀನ ತಂದರೆ ತಂಗೀನ ತಂದಂತೆ. ಲಿಂಗ ಮುಟ್ಟಿ ಹೇಳುತ್ತೇನೆ ; ಕೆಂಡಮುಟ್ಟಿ ಹೇಳುತ್ತೇನೆ” ಎಂದು ಕ್ರಿಯೆಗೆ ಸಿದ್ಧನಾಗುತ್ತಾನೆ.

ಗೌರಮ್ಮ ಬೇರೊಂದು ಹಂಚಿಕೆ ತೆಗೆಯುತ್ತಾಳೆ. ಬೆಳ್ಳಿಯ ಬಟ್ಟಲಲ್ಲಿ ಎಳ್ಳೆಣ್ಣೆ ತೆಗೆದು ತಂದು ಶಿವನ ಜಡೆಯನ್ನು ಹೂಸಲು ಆರಂಭಿಸುತ್ತಾಳೆ. ಗೌರಮ್ಮನು ತಲೆಯಿಂದ ಸೊಂಟಿನತ್ತ ಎಣ್ಣೆಹೂಸುತ್ತ ಬರಲು, ಗಂಗೆ ಅದಕ್ಕಿಂತ ಕೆಳಗಡೆಗೆ ಸರಿಯುವಳು. ಗೌರಿಯೂ ಅಲ್ಲಿಯೂ ಎಣ್ಣೆ ಹೊಸತೊಡಗಲು, ಗಂಗೆಯು ಅನಿವಾರ್ಯವಾಗಿ ನೆಲಕ್ಕಿಳಿದು ಹೊಳೆಯಾಗಿ ಹರಿದು ಹೋಗುತ್ತಾಳೆ.

ಗಂಗೆ ಹೋದ ಮರುದಿನವೇ ಗೌರಮ್ಮ ರಜಸ್ವಲೆ ಆಗುತ್ತಾಳೆ. ಮೈದೊಳೆಯಲು ನೀರಿಲ್ಲದಾಗುತ್ತದೆ. ಶಿವನು ಚೇಷ್ಟೆಯಿಂದ ಹಾಲಿನ ಕೊಡವನ್ನು ಕಳಿಸುತ್ತಾನೆ ಗೌರಮ್ಮನ ಕಡೆಗೆ. “ಹಾಲಿನಿಂದ ಮಿಂದರೆ ಮುಡಚಟ್ಟು ಹೋಗುವದೇ? ತಂಗಿ ಗಂಗಮ್ಮನನ್ನು ಕಳಿಸಿರಿ” ಎನ್ನಲು, ಶಿವನು ಬೇಕೆಂದೇ ತುಪ್ಪದ ಕೊಡವನ್ನು ಕಳಿಸುವನು. “ತುಪ್ಪಿನಲ್ಲಿ ಮಿಂದರೆ ಮೈಲಿಗೆ ಕಳೆಯುವುದೇ? ದಯಮಾಡಿ ತಂಗಿ ಗಂಗಮ್ಮನನ್ನು ಕಳಿಸಿರಿ” ಎ೦ದು ಗೌರಮ್ಮ ಅಂಗಲಾಚಲು ಶಿವನು `ಆಗಲಿ’ ಎಂದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...