Home / ಕಥೆ / ಜನಪದ / ಗಂಗಮ್ಮ ತಂಗಿ

ಗಂಗಮ್ಮ ತಂಗಿ

ಕೊಂಬಣಸು, ಕೊರಳಹುಲಿಗೆಜ್ಜಿಗಳಿಂದ ನಂದಿಯನ್ನು ಸಿಂಗರಿಸಿ ಶಿವನು ಪ್ರಯಾಣ ಹೊರಡುತ್ತಾನೆ. ಅದೆಲ್ಲಿಗೆ ?

ದಾರಿಯಲ್ಲಿ ಒಂದು ಹಳ್ಳ. ಹಳ್ಳದ ದಂಡೆಯಲ್ಲಿ ಹೂ ಕೊಯ್ಯುತ್ತಿರುವ ರಮಣಿಯನ್ನು ಕಂಡು ಶಿವನು – “ಜಾಣೇ, ನಮ್ಮ ಲಿಂಗಪೂಜೆಗೊಂದು ಹೂ ಕೊಡು” ಎಂದು ಕೇಳಿದನು.

ಆಕೆ ಹೇಳಿದಳು – “ಲಿಂಗಪೂಜೆಗೆಂದರೆ ಕೊಡಮಾಡಬಹುದು. ಆದರೆ ಮನೆಯಲ್ಲಿ ನಮ್ಮವ್ವ ಬಯ್ಯುತ್ತಾಳೆ ; ನಮ್ಮಪ್ಪ ಬಡಿಯುತ್ತಾನೆ.”

“ನಿಮ್ಮವ್ವ ಬಯ್ದರೆ, ನಿಮ್ಮವ್ವ ಬಡಿದರೆ ಗಂಗಾ, ನನ್ನ ಜಡೆಯಲ್ಲಿ ಬಂದು ಬಿಡು” – ಎನ್ನುತ್ತಾನೆ ಶಿವ.

“ಬಂದರೂ ಬರಬಹುದು. ಆದರೆ ಹೇಗೆ ನಂಬಲಿ ? ನಿಮ್ಮ ಮನೆಯಲ್ಲಿ ರಂಭೆಯಿದ್ದಾಳಲ್ಲ !” ಎಂದು ಸಂಕೋಚಪಟ್ಟಳು ಗಂಗಮ್ಮ.

“ನನ್ನಾಣೆ, ನಿನ್ನಾಣೆ ಅಲ್ಲದೆ ಧರಿಸಿದ ಲಿಂಗದಾಣೆ ಮಾಡಿ ಹೇಳುತ್ತೇನೆ. ನನ್ನ ಮನೆಯಲ್ಲಿ ರಂಭೆಯಿಲ್ಲ” ಎಂದು ಶಿವ ಭರವಸೆ ಕೊಡುತ್ತಾನೆ.

“ಬಂದೇನು ? ಆದರೆ ಹೇಗೆ ನಂಬಲಿ ? ನಿನ್ನ ಮನೆಯಲ್ಲಿ ಮಡದಿಯಿದ್ದಾಳಲ್ಲ !” ಗಂಗಮ್ಮ ಬೇರೊಂದು ಸಂಶಯ ತೋರಿದರೆ, ಆಗಲೂ ಶಿವನು – ತನ್ನಾಣೆ, ನಿನ್ನಾಣೆ ಅಲ್ಲದೆ ದೇವರಾಣೆ ಮಾಡಿ ಹೇಳುತ್ತೇನೆ ಮನೆಯಲ್ಲಿ ಮಡದಿಯಿಲ್ಲವೆಂದು, ಹೇಳುತ್ತಾನೆ. ಆಗ ಗಂಗಮ್ಮ ಮೆಲ್ಲನೆ ಶಿವನ ಜಡೆಯಲ್ಲಿ ಅಡಗುವಳು. ಅದನ್ನು ನೋಡಿದ ಗಿಣಿರಾಮನು ಕೂಡಲೇ ಹಾರಿಹೋಗಿ ಗೌರಮ್ಮನಿಗೆ ತಿಳಿಸುತ್ತಾನೆ.

ಆ ವಾರ್ತೆಯನ್ನು ಕೇಳಿ, ಮಲಗಿಕೊಂಡಿದ್ದ ಗೌರಮ್ಮನು ಮೈ ಮುರಿದುಕೊಂಡು ಎದ್ದು ಗಿಂಡಿಯೊಳಗಿನ ತಣ್ಣೀರಿನಿಂದ ಮುಖ ತೊಳೆದುಕೊಂಡವಳೇ ತನ್ನಣ್ಣನ ಅರಮನೆಗೆ ಹೋದಳು.

ಎಂದೂ ಬಾರದ ಗೌರಮ್ಮ ಇಂದು ಏತಕ್ಕಾಗಿ ಬಂದಳೆಂದು ಬಗೆಯುತ್ತ ಅಣ್ಣನು. ಆಕೆಗೆ ಕುಳಿತುಕೊಳ್ಳಲು ಮಣಿ ಚೌಕಿ ಕೊಡಿರೆಂದು ಮಡದಿಗೆ ಹೇಳುತ್ತಾನೆ.

“ನಾನು ಕುಳಿತುಕೊಳ್ಳಲೂ ಬಂದಿಲ್ಲ. ನಿಂತುಕೊಳ್ಳಲೂ ಬಂದಿಲ್ಲ. ನಾನೊಂದು ಕನಸು ಹೇಳಲು ಬಂದಿದ್ದೇನೆ. ಕೆರೆಯ ಮೇಲೆ ಕೆರೆಹುಟ್ಟಿ, ಕೆರೆಯ ಮೇಲೆ ಮರ ಹುಟ್ಟಿ, ಮರದ ಮೇಲೆ ಒಬ್ಬಾತನು ಬಲೆಹಾಕಿದ್ದಾನೆ” ಎನ್ನುತ್ತಾಳೆ ಗೌರಮ್ಮ.

ಒಗಟಿನಂಥ ಈ ಕನಸು ಅಣ್ಣನಿಗೆ ತಿಳಿದಂತೆ ತೋರಲಿಲ್ಲ. ಅದನ್ನು ಗೌರಮ್ಮ ಸ್ಪಷ್ಟಗೊಳಿಸಿದಳು – ಕೆರೆ ಅಂದರೆ ಶಿವರಾಯ. ಮರ ಅಂದರೆ ಜಡೆ, ಬಲೆಯೆಂದರೆ ಒಳಗಿನ ಶ್ರೀಗಂಗೆ.

“ದೇಶವನ್ನೇ ಆಳುವವರಿಗೆ ಹೆಂಡರು ಏಸು ಜನರಿದ್ದರೇನು ? ನಿನಗೇಕೆ ಆ ಚಿಂತೆ” ಎಂದು ಅಣ್ಣನು ತೀರ್ಪು ಹೇಳಿದನು.

ಆ ಮಾತು ಕೇಳಿ ಗೌರಮ್ಮ ಕಿಡಿಕಿಡಿಯಾದಳು. ಕಿಡಿಚೆಂಡೇ ಆದಳು. ಎಡಹಿ ಬೆರಳಿಗೆ ನೋವಾದುದನ್ನೂ ಲೆಕ್ಕಿಸದೆ ತನ್ನ ಅರಮನೆಯತ್ತ ಸಾಗಿದಳು.

ಶಿವನು ಒಂದೂರಿನಿಂದ ಯತಿಯ ವೇಷದಲ್ಲಿ ಬಂದು, ಗೌರಿಗೆ ನೀರು ಬೇಡುತ್ತಾನೆ. ಒಂದು ಗಿಂಡಿ ಬೇಡಿದರೆ, ಆಕೆ ಎರಡು ಗಿಂಡಿ ನೀರು ಕೊಡುತ್ತಾಳೆ. ಅದನು ಕಂಡು ಶಿವನು – “ನಿನಗೆ ಪುರುಷರು ಇಬ್ಬರೇನೇ ?” ಎಂದು ಚೇಷ್ಟೆಮಾಡುತ್ತಾನೆ.

“ಅಯ್ಯಯ್ಯೋ ಶಿವನೇ, ಅಣಕದ ಮಾತೇಕೆ ? ಕೆಂಜೆಡೆಯ ಮಣಿಮಕುಟದಲ್ಲಿರುವ ಸಿರಿಗಂಗೆಗೊಂದು ಗಿಂಡಿ, ನಿನಗೊಂದು ಗಿಂಡಿ” ಅನ್ನುತ್ತಾಳೆ ಗೌರಮ್ಮ.

“ಅಬ್ಬರಣೆ ಸಾಕು. ಎಡೆಮಾಡು ಗೌರೀ” ಎಂದು ಶಿವನು ಹೇಳಿದರೆ, ಎರಡು ಎಡೆಗಳು ಸಿದ್ಧವಾಗಿ ಬರುತ್ತವೆ. ಆಗಲೂ ಶಿವನು ಚೇಷ್ಟೆಮಾಡುತ್ತಾನೆ – “ನಿನಗೆ ಇಬ್ಬರೇನೆ ಪುರುಷರು ಗೌರಿ” ಎಂದು. ಗೌರಮ್ಮ ಮತ್ತೆ ಮುಂಚಿನ ಉತ್ತರವನ್ನೇ ಕೊಡುತ್ತಾಳೆ – “ನಿನಗೊಂದು ಎಡೆ, ಜತೆಯಲ್ಲಿರುವ ಸಿರಿಗಂಗೆಗೊಂದು ಎಡೆ.”

ಶಿವನು ತುಂಬ ದಿಗಿಲುಗೊಂಡು – “ಗಂಗೀನ ತಂದರೆ ತಂಗೀನ ತಂದಂತೆ. ಲಿಂಗ ಮುಟ್ಟಿ ಹೇಳುತ್ತೇನೆ ; ಕೆಂಡಮುಟ್ಟಿ ಹೇಳುತ್ತೇನೆ” ಎಂದು ಕ್ರಿಯೆಗೆ ಸಿದ್ಧನಾಗುತ್ತಾನೆ.

ಗೌರಮ್ಮ ಬೇರೊಂದು ಹಂಚಿಕೆ ತೆಗೆಯುತ್ತಾಳೆ. ಬೆಳ್ಳಿಯ ಬಟ್ಟಲಲ್ಲಿ ಎಳ್ಳೆಣ್ಣೆ ತೆಗೆದು ತಂದು ಶಿವನ ಜಡೆಯನ್ನು ಹೂಸಲು ಆರಂಭಿಸುತ್ತಾಳೆ. ಗೌರಮ್ಮನು ತಲೆಯಿಂದ ಸೊಂಟಿನತ್ತ ಎಣ್ಣೆಹೂಸುತ್ತ ಬರಲು, ಗಂಗೆ ಅದಕ್ಕಿಂತ ಕೆಳಗಡೆಗೆ ಸರಿಯುವಳು. ಗೌರಿಯೂ ಅಲ್ಲಿಯೂ ಎಣ್ಣೆ ಹೊಸತೊಡಗಲು, ಗಂಗೆಯು ಅನಿವಾರ್ಯವಾಗಿ ನೆಲಕ್ಕಿಳಿದು ಹೊಳೆಯಾಗಿ ಹರಿದು ಹೋಗುತ್ತಾಳೆ.

ಗಂಗೆ ಹೋದ ಮರುದಿನವೇ ಗೌರಮ್ಮ ರಜಸ್ವಲೆ ಆಗುತ್ತಾಳೆ. ಮೈದೊಳೆಯಲು ನೀರಿಲ್ಲದಾಗುತ್ತದೆ. ಶಿವನು ಚೇಷ್ಟೆಯಿಂದ ಹಾಲಿನ ಕೊಡವನ್ನು ಕಳಿಸುತ್ತಾನೆ ಗೌರಮ್ಮನ ಕಡೆಗೆ. “ಹಾಲಿನಿಂದ ಮಿಂದರೆ ಮುಡಚಟ್ಟು ಹೋಗುವದೇ? ತಂಗಿ ಗಂಗಮ್ಮನನ್ನು ಕಳಿಸಿರಿ” ಎನ್ನಲು, ಶಿವನು ಬೇಕೆಂದೇ ತುಪ್ಪದ ಕೊಡವನ್ನು ಕಳಿಸುವನು. “ತುಪ್ಪಿನಲ್ಲಿ ಮಿಂದರೆ ಮೈಲಿಗೆ ಕಳೆಯುವುದೇ? ದಯಮಾಡಿ ತಂಗಿ ಗಂಗಮ್ಮನನ್ನು ಕಳಿಸಿರಿ” ಎ೦ದು ಗೌರಮ್ಮ ಅಂಗಲಾಚಲು ಶಿವನು `ಆಗಲಿ’ ಎಂದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...