Home / ಕಥೆ / ಜನಪದ / ನನಗೇನು ಕೊಟ್ಟರು

ನನಗೇನು ಕೊಟ್ಟರು

ಕೈಲಾಸದಲ್ಲಿ ಶಿವಪಾರ್ವತಿಯರು ಸಂತೋಷದಿಂದ ಕುಳಿತು ಸರಸವಾಡುತ್ತಿರುವಾಗ, ಪಾರ್ವತಿ ಕೇಳಿದಳು – “ಶ್ರಾವಣತಿಂಗಳು ಮುಗಿದುಹೋಗಿ ಭಾದ್ರಪದ ಆರಂಭವಾಯಿತು. ನಾಳೆ ನನ್ನ ತವರೂರಿಗೆ ಹೋಗಿ ಬರುವೆ.”

“ಅಲ್ಲಿ ನಿನ್ನ ಸರಿಯರು ಯಾರಿದ್ದಾರೆ ? ಹೊತ್ತು ಹೇಗೆ ಕಳೆಯುವಿ ? ಸರಿಯರು ಯಾರು?” ಎಂದನು ಶಿವ.

“ಸರಿಯರೇತಕೆ ಬೇಕು ? ಮೂರುದಿನ ಮಾತ್ರ ಅಲ್ಲಿದ್ದು ನಿಮ್ಮ ಸೇವೆಗೆ ಮರಳುವೆ.”

ಮೂರುದಿನವೇಕೆ, ಐದು ದಿನ ಇರು. ಏಳುದಿನಗಳವರೆಗೆ ದಾರಿ ಕಾಯುವೆ, ಮತ್ತೇನು? ಆಗ ಸಹ ನೀನು ಬರದಿದ್ದರೆ ಮೀರಿದವಳೆಂದು ಬಗೆದು, ಗಣಪತಿಯೊಡನೆ ಕರೆಯಲು ಬರುವೆನು,” ಎನ್ನುವ ಮಾತಿನಲ್ಲಿ ಶಿವನು ಪಾರ್ವತಿಗೆ ಅಪ್ಪಣೆಯಿತ್ತನು, ತವರು ಮನೆಗೆ ಹೋಗಲಿಕ್ಕೆ.

ತಿರಿದುಣ್ಣುವ ಶಿವನಿಗೆ ಮೂರು ಲೋಕಗಳೆಲ್ಲವೂ ಸ್ವಗೃಹಗಳೇ. ಭಸ್ಮಾಂಗಕೆ ಹೊದಿಕೆಯೆಂದರೆ ಆನೆಯ ತೊಗಲು. ಇನ್ನೇನು ಬೇಕು ಉಪಚಾರ ಶಿವನಿಗೆ?

ಪಾರ್ವತಿಯು ತವರಿನಲ್ಲಿ ನಾಲ್ಕೊಪ್ಪತ್ತು ನಿಂತುಕೊಂಡು ಕೈಲಾಸಕ್ಕೆ ಮರಳಿದಳು. ದುಂಡುಮಲ್ಲಿಗೆ ಹೂವಿನ ದಂಡೆ ತಲೆಯಲ್ಲಿ. ಬಿತ್ತಿದ ಮುತ್ತು ಬೈತಲೆಯಲ್ಲಿ. ಕುಡಿ ಹುಬ್ಬಿನ ಕಳೆಗೆ ಕಂಗಳಲ್ಲಿ ರಂಭೆಯೇ ಹೊಳೆಯುತ್ತಿರಲು, ನಿಂಬೆಯ ಹಣ್ಣಿನಂಥ ಕಾಂತಿಯನ್ನು ಸೂಸುತ್ತ ಬಂದ ಪಾರ್ವತಿಯನ್ನು ಕಂಡು ಶಿವನು ಕೇಳಿದನು –

“ನಿನ್ನ ತವರಿಗೆ ಹೋಗಿ ಬಂದೆಯೊ ? ತವರಿನವರು ಈಗೇನು ಕೊಟ್ಟರು, ಇನ್ನೇನು ಕೊಡುವರು ? ಬೇಗ ಹೇಳು.”

“ತಂದೆ ಗಿರಿರಾಯ ಕಡುಬಡವ, ಮುದುಕ ಬೇರೆ. ಏನು ಕೊಟ್ಟಾನು ? ಬರಿಗೈಯಲ್ಲಿ ಕಳಿಸಬಾರದೆಂದು ಕೊಪ್ಪರಿಗೆ ಹಣ, ಎಪ್ಪತ್ತು ಆನೆ ಕುದುರೆ ಕೊಟ್ಟನು. ಜತನವಾಗಿರಿಸಿಕೋ ಎಂದು ಬಂಗಾರದ ಕೊಡ ಕೊಟ್ಟನು. ನಮ್ಮವರು ಬಡದರು ಇನ್ನೇನು ಕೊಡುವರು ? ಆರು ಹೇರು ಸಣ್ಣಕ್ಕಿ, ಆರು ಹೇರು ಅರಿಸಿಣ, ಆರು ಹೇರು ಅಡಕೆ, ಒಂದು ಖಂಡಗ ಬೆಲ್ಲ, ಆರು ಕೊಳಗ ಮೆಣಸು, ನೂರು ತೆಂಗಿನ ಕಾಯಿ ಕೊಟ್ಟರಲ್ಲದೆ ಇನ್ನೇನು ಕೊಟ್ಟಾರು ಬಡವರು? ಐದು ಹರಿವಾಣ, ಐದು ಸಮೆ, ಐದು ತಪ್ಪೇಲಿ, ಹದಿನಾಲ್ಕು ತಂಬಿಗೆ, ಐದು ಬಿಂದಿಗೆ, ನಾಲ್ಕು ತಂಬಿಗೆ ಸುವಾಸಿಕ ಎಣ್ಣೆ, ಹೆಚ್ಚಿಗೇನು ಕೊಡುವರು, ಮೊದಲೇ ಬಡವರು.”

ಪಟ್ಟೇಸೀರೆ, ಬಣ್ಣದ ಸೀರೆ, ಸಕಲಾತಿ ಶಾಲು, ರತ್ನಗಂಬಳಿ, ಪಟ್ಟಮಂಚ ಅಲ್ಲದೆ ಹಿಂಡು ಆಕಳು ಹದಿನೆಂಟು, ಕಾಲಾಳು ನೂರು ಜನ, ಕರೆವ ಎಮ್ಮೆ ಎಂಟು, ಕರುಗಳೆಂಟು, ಅವುಗಳ ಹಾಲು ಕರೆದು ಕಾಸಿಕೊಡುವ ದಾಸಿಯರನ್ನೂ ಕೊಟ್ಟರು. ಇನ್ನೇನು ಕೊಡುವರು?

“ಕೆಂಪು ಅರಿಸಿನ, ಕಸ್ತೂರಿ, ಕುಂಕುಮ, ಕುಪ್ಪಸ, ಗಿಣಿ ಮೊದಲಾದವುಗಳನ್ನಿತ್ತು, ಮುತ್ತೈದೆಯರು ಸೇಸೆದಳೆದು ಉಡಿಯಕ್ಕಿ ಹಾಕಿ ಕಳಿಸಿದರು. ಹೆಚ್ಚು ಏನು ಕೊಟ್ಟಾರು ಬಡವರು?”

ಕಡುಬಡವನಾದ ಗಿರಿರಾಯನು ಮಗಳಿಗೆ ಕೊಟ್ಟ ವಸ್ತು ಒಡವೆಗಳ ಹೆಸರುಗೆಳನ್ನೆಲ್ಲ ಒಮ್ಮೆ ಹೇಳಿ ಮುಗಿಸಿದಳು ಪಾರ್ವತಿ. ಅದನ್ನು ಕೇಳಿ ಆತುರದಿಂದ ಶಿವನು ನುಡಿದನು – “ಅಕ್ಕರೆಯ ಮಗಳೆಂದು ನಿನಗೆ ಇಷ್ಟೆಲ್ಲ ಕೊಟ್ಟರು. ನನಗೇನಾದರೂ ಒಂದಿಷ್ಟು ಕೊಡಲಿಲ್ಲವೇ?”

ಪಾರ್ವತಿಯೂ ತಡಮಾಡದೆ ಮರುನುಡಿದಳು – “ಇಷ್ಟೆಲ್ಲವನ್ನೂ ನನಗಿತ್ತು ತವರವರು ನನ್ನನ್ನೇ ನಿಮಗಿತ್ತರು.”

ಅದನ್ನು ಕೇಳಿ ಶಿವನ ಮನಸ್ಸಿಗೆ ಅದೆಷ್ಟು ಹರ್ಷವಾಗಿರಬೇಕು?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...