Home / ಕಥೆ / ಜನಪದ / ನನಗೇನು ಕೊಟ್ಟರು

ನನಗೇನು ಕೊಟ್ಟರು

ಕೈಲಾಸದಲ್ಲಿ ಶಿವಪಾರ್ವತಿಯರು ಸಂತೋಷದಿಂದ ಕುಳಿತು ಸರಸವಾಡುತ್ತಿರುವಾಗ, ಪಾರ್ವತಿ ಕೇಳಿದಳು – “ಶ್ರಾವಣತಿಂಗಳು ಮುಗಿದುಹೋಗಿ ಭಾದ್ರಪದ ಆರಂಭವಾಯಿತು. ನಾಳೆ ನನ್ನ ತವರೂರಿಗೆ ಹೋಗಿ ಬರುವೆ.”

“ಅಲ್ಲಿ ನಿನ್ನ ಸರಿಯರು ಯಾರಿದ್ದಾರೆ ? ಹೊತ್ತು ಹೇಗೆ ಕಳೆಯುವಿ ? ಸರಿಯರು ಯಾರು?” ಎಂದನು ಶಿವ.

“ಸರಿಯರೇತಕೆ ಬೇಕು ? ಮೂರುದಿನ ಮಾತ್ರ ಅಲ್ಲಿದ್ದು ನಿಮ್ಮ ಸೇವೆಗೆ ಮರಳುವೆ.”

ಮೂರುದಿನವೇಕೆ, ಐದು ದಿನ ಇರು. ಏಳುದಿನಗಳವರೆಗೆ ದಾರಿ ಕಾಯುವೆ, ಮತ್ತೇನು? ಆಗ ಸಹ ನೀನು ಬರದಿದ್ದರೆ ಮೀರಿದವಳೆಂದು ಬಗೆದು, ಗಣಪತಿಯೊಡನೆ ಕರೆಯಲು ಬರುವೆನು,” ಎನ್ನುವ ಮಾತಿನಲ್ಲಿ ಶಿವನು ಪಾರ್ವತಿಗೆ ಅಪ್ಪಣೆಯಿತ್ತನು, ತವರು ಮನೆಗೆ ಹೋಗಲಿಕ್ಕೆ.

ತಿರಿದುಣ್ಣುವ ಶಿವನಿಗೆ ಮೂರು ಲೋಕಗಳೆಲ್ಲವೂ ಸ್ವಗೃಹಗಳೇ. ಭಸ್ಮಾಂಗಕೆ ಹೊದಿಕೆಯೆಂದರೆ ಆನೆಯ ತೊಗಲು. ಇನ್ನೇನು ಬೇಕು ಉಪಚಾರ ಶಿವನಿಗೆ?

ಪಾರ್ವತಿಯು ತವರಿನಲ್ಲಿ ನಾಲ್ಕೊಪ್ಪತ್ತು ನಿಂತುಕೊಂಡು ಕೈಲಾಸಕ್ಕೆ ಮರಳಿದಳು. ದುಂಡುಮಲ್ಲಿಗೆ ಹೂವಿನ ದಂಡೆ ತಲೆಯಲ್ಲಿ. ಬಿತ್ತಿದ ಮುತ್ತು ಬೈತಲೆಯಲ್ಲಿ. ಕುಡಿ ಹುಬ್ಬಿನ ಕಳೆಗೆ ಕಂಗಳಲ್ಲಿ ರಂಭೆಯೇ ಹೊಳೆಯುತ್ತಿರಲು, ನಿಂಬೆಯ ಹಣ್ಣಿನಂಥ ಕಾಂತಿಯನ್ನು ಸೂಸುತ್ತ ಬಂದ ಪಾರ್ವತಿಯನ್ನು ಕಂಡು ಶಿವನು ಕೇಳಿದನು –

“ನಿನ್ನ ತವರಿಗೆ ಹೋಗಿ ಬಂದೆಯೊ ? ತವರಿನವರು ಈಗೇನು ಕೊಟ್ಟರು, ಇನ್ನೇನು ಕೊಡುವರು ? ಬೇಗ ಹೇಳು.”

“ತಂದೆ ಗಿರಿರಾಯ ಕಡುಬಡವ, ಮುದುಕ ಬೇರೆ. ಏನು ಕೊಟ್ಟಾನು ? ಬರಿಗೈಯಲ್ಲಿ ಕಳಿಸಬಾರದೆಂದು ಕೊಪ್ಪರಿಗೆ ಹಣ, ಎಪ್ಪತ್ತು ಆನೆ ಕುದುರೆ ಕೊಟ್ಟನು. ಜತನವಾಗಿರಿಸಿಕೋ ಎಂದು ಬಂಗಾರದ ಕೊಡ ಕೊಟ್ಟನು. ನಮ್ಮವರು ಬಡದರು ಇನ್ನೇನು ಕೊಡುವರು ? ಆರು ಹೇರು ಸಣ್ಣಕ್ಕಿ, ಆರು ಹೇರು ಅರಿಸಿಣ, ಆರು ಹೇರು ಅಡಕೆ, ಒಂದು ಖಂಡಗ ಬೆಲ್ಲ, ಆರು ಕೊಳಗ ಮೆಣಸು, ನೂರು ತೆಂಗಿನ ಕಾಯಿ ಕೊಟ್ಟರಲ್ಲದೆ ಇನ್ನೇನು ಕೊಟ್ಟಾರು ಬಡವರು? ಐದು ಹರಿವಾಣ, ಐದು ಸಮೆ, ಐದು ತಪ್ಪೇಲಿ, ಹದಿನಾಲ್ಕು ತಂಬಿಗೆ, ಐದು ಬಿಂದಿಗೆ, ನಾಲ್ಕು ತಂಬಿಗೆ ಸುವಾಸಿಕ ಎಣ್ಣೆ, ಹೆಚ್ಚಿಗೇನು ಕೊಡುವರು, ಮೊದಲೇ ಬಡವರು.”

ಪಟ್ಟೇಸೀರೆ, ಬಣ್ಣದ ಸೀರೆ, ಸಕಲಾತಿ ಶಾಲು, ರತ್ನಗಂಬಳಿ, ಪಟ್ಟಮಂಚ ಅಲ್ಲದೆ ಹಿಂಡು ಆಕಳು ಹದಿನೆಂಟು, ಕಾಲಾಳು ನೂರು ಜನ, ಕರೆವ ಎಮ್ಮೆ ಎಂಟು, ಕರುಗಳೆಂಟು, ಅವುಗಳ ಹಾಲು ಕರೆದು ಕಾಸಿಕೊಡುವ ದಾಸಿಯರನ್ನೂ ಕೊಟ್ಟರು. ಇನ್ನೇನು ಕೊಡುವರು?

“ಕೆಂಪು ಅರಿಸಿನ, ಕಸ್ತೂರಿ, ಕುಂಕುಮ, ಕುಪ್ಪಸ, ಗಿಣಿ ಮೊದಲಾದವುಗಳನ್ನಿತ್ತು, ಮುತ್ತೈದೆಯರು ಸೇಸೆದಳೆದು ಉಡಿಯಕ್ಕಿ ಹಾಕಿ ಕಳಿಸಿದರು. ಹೆಚ್ಚು ಏನು ಕೊಟ್ಟಾರು ಬಡವರು?”

ಕಡುಬಡವನಾದ ಗಿರಿರಾಯನು ಮಗಳಿಗೆ ಕೊಟ್ಟ ವಸ್ತು ಒಡವೆಗಳ ಹೆಸರುಗೆಳನ್ನೆಲ್ಲ ಒಮ್ಮೆ ಹೇಳಿ ಮುಗಿಸಿದಳು ಪಾರ್ವತಿ. ಅದನ್ನು ಕೇಳಿ ಆತುರದಿಂದ ಶಿವನು ನುಡಿದನು – “ಅಕ್ಕರೆಯ ಮಗಳೆಂದು ನಿನಗೆ ಇಷ್ಟೆಲ್ಲ ಕೊಟ್ಟರು. ನನಗೇನಾದರೂ ಒಂದಿಷ್ಟು ಕೊಡಲಿಲ್ಲವೇ?”

ಪಾರ್ವತಿಯೂ ತಡಮಾಡದೆ ಮರುನುಡಿದಳು – “ಇಷ್ಟೆಲ್ಲವನ್ನೂ ನನಗಿತ್ತು ತವರವರು ನನ್ನನ್ನೇ ನಿಮಗಿತ್ತರು.”

ಅದನ್ನು ಕೇಳಿ ಶಿವನ ಮನಸ್ಸಿಗೆ ಅದೆಷ್ಟು ಹರ್ಷವಾಗಿರಬೇಕು?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...