Home / ಕಥೆ / ಜನಪದ / ನನಗೇನು ಕೊಟ್ಟರು

ನನಗೇನು ಕೊಟ್ಟರು

ಕೈಲಾಸದಲ್ಲಿ ಶಿವಪಾರ್ವತಿಯರು ಸಂತೋಷದಿಂದ ಕುಳಿತು ಸರಸವಾಡುತ್ತಿರುವಾಗ, ಪಾರ್ವತಿ ಕೇಳಿದಳು – “ಶ್ರಾವಣತಿಂಗಳು ಮುಗಿದುಹೋಗಿ ಭಾದ್ರಪದ ಆರಂಭವಾಯಿತು. ನಾಳೆ ನನ್ನ ತವರೂರಿಗೆ ಹೋಗಿ ಬರುವೆ.”

“ಅಲ್ಲಿ ನಿನ್ನ ಸರಿಯರು ಯಾರಿದ್ದಾರೆ ? ಹೊತ್ತು ಹೇಗೆ ಕಳೆಯುವಿ ? ಸರಿಯರು ಯಾರು?” ಎಂದನು ಶಿವ.

“ಸರಿಯರೇತಕೆ ಬೇಕು ? ಮೂರುದಿನ ಮಾತ್ರ ಅಲ್ಲಿದ್ದು ನಿಮ್ಮ ಸೇವೆಗೆ ಮರಳುವೆ.”

ಮೂರುದಿನವೇಕೆ, ಐದು ದಿನ ಇರು. ಏಳುದಿನಗಳವರೆಗೆ ದಾರಿ ಕಾಯುವೆ, ಮತ್ತೇನು? ಆಗ ಸಹ ನೀನು ಬರದಿದ್ದರೆ ಮೀರಿದವಳೆಂದು ಬಗೆದು, ಗಣಪತಿಯೊಡನೆ ಕರೆಯಲು ಬರುವೆನು,” ಎನ್ನುವ ಮಾತಿನಲ್ಲಿ ಶಿವನು ಪಾರ್ವತಿಗೆ ಅಪ್ಪಣೆಯಿತ್ತನು, ತವರು ಮನೆಗೆ ಹೋಗಲಿಕ್ಕೆ.

ತಿರಿದುಣ್ಣುವ ಶಿವನಿಗೆ ಮೂರು ಲೋಕಗಳೆಲ್ಲವೂ ಸ್ವಗೃಹಗಳೇ. ಭಸ್ಮಾಂಗಕೆ ಹೊದಿಕೆಯೆಂದರೆ ಆನೆಯ ತೊಗಲು. ಇನ್ನೇನು ಬೇಕು ಉಪಚಾರ ಶಿವನಿಗೆ?

ಪಾರ್ವತಿಯು ತವರಿನಲ್ಲಿ ನಾಲ್ಕೊಪ್ಪತ್ತು ನಿಂತುಕೊಂಡು ಕೈಲಾಸಕ್ಕೆ ಮರಳಿದಳು. ದುಂಡುಮಲ್ಲಿಗೆ ಹೂವಿನ ದಂಡೆ ತಲೆಯಲ್ಲಿ. ಬಿತ್ತಿದ ಮುತ್ತು ಬೈತಲೆಯಲ್ಲಿ. ಕುಡಿ ಹುಬ್ಬಿನ ಕಳೆಗೆ ಕಂಗಳಲ್ಲಿ ರಂಭೆಯೇ ಹೊಳೆಯುತ್ತಿರಲು, ನಿಂಬೆಯ ಹಣ್ಣಿನಂಥ ಕಾಂತಿಯನ್ನು ಸೂಸುತ್ತ ಬಂದ ಪಾರ್ವತಿಯನ್ನು ಕಂಡು ಶಿವನು ಕೇಳಿದನು –

“ನಿನ್ನ ತವರಿಗೆ ಹೋಗಿ ಬಂದೆಯೊ ? ತವರಿನವರು ಈಗೇನು ಕೊಟ್ಟರು, ಇನ್ನೇನು ಕೊಡುವರು ? ಬೇಗ ಹೇಳು.”

“ತಂದೆ ಗಿರಿರಾಯ ಕಡುಬಡವ, ಮುದುಕ ಬೇರೆ. ಏನು ಕೊಟ್ಟಾನು ? ಬರಿಗೈಯಲ್ಲಿ ಕಳಿಸಬಾರದೆಂದು ಕೊಪ್ಪರಿಗೆ ಹಣ, ಎಪ್ಪತ್ತು ಆನೆ ಕುದುರೆ ಕೊಟ್ಟನು. ಜತನವಾಗಿರಿಸಿಕೋ ಎಂದು ಬಂಗಾರದ ಕೊಡ ಕೊಟ್ಟನು. ನಮ್ಮವರು ಬಡದರು ಇನ್ನೇನು ಕೊಡುವರು ? ಆರು ಹೇರು ಸಣ್ಣಕ್ಕಿ, ಆರು ಹೇರು ಅರಿಸಿಣ, ಆರು ಹೇರು ಅಡಕೆ, ಒಂದು ಖಂಡಗ ಬೆಲ್ಲ, ಆರು ಕೊಳಗ ಮೆಣಸು, ನೂರು ತೆಂಗಿನ ಕಾಯಿ ಕೊಟ್ಟರಲ್ಲದೆ ಇನ್ನೇನು ಕೊಟ್ಟಾರು ಬಡವರು? ಐದು ಹರಿವಾಣ, ಐದು ಸಮೆ, ಐದು ತಪ್ಪೇಲಿ, ಹದಿನಾಲ್ಕು ತಂಬಿಗೆ, ಐದು ಬಿಂದಿಗೆ, ನಾಲ್ಕು ತಂಬಿಗೆ ಸುವಾಸಿಕ ಎಣ್ಣೆ, ಹೆಚ್ಚಿಗೇನು ಕೊಡುವರು, ಮೊದಲೇ ಬಡವರು.”

ಪಟ್ಟೇಸೀರೆ, ಬಣ್ಣದ ಸೀರೆ, ಸಕಲಾತಿ ಶಾಲು, ರತ್ನಗಂಬಳಿ, ಪಟ್ಟಮಂಚ ಅಲ್ಲದೆ ಹಿಂಡು ಆಕಳು ಹದಿನೆಂಟು, ಕಾಲಾಳು ನೂರು ಜನ, ಕರೆವ ಎಮ್ಮೆ ಎಂಟು, ಕರುಗಳೆಂಟು, ಅವುಗಳ ಹಾಲು ಕರೆದು ಕಾಸಿಕೊಡುವ ದಾಸಿಯರನ್ನೂ ಕೊಟ್ಟರು. ಇನ್ನೇನು ಕೊಡುವರು?

“ಕೆಂಪು ಅರಿಸಿನ, ಕಸ್ತೂರಿ, ಕುಂಕುಮ, ಕುಪ್ಪಸ, ಗಿಣಿ ಮೊದಲಾದವುಗಳನ್ನಿತ್ತು, ಮುತ್ತೈದೆಯರು ಸೇಸೆದಳೆದು ಉಡಿಯಕ್ಕಿ ಹಾಕಿ ಕಳಿಸಿದರು. ಹೆಚ್ಚು ಏನು ಕೊಟ್ಟಾರು ಬಡವರು?”

ಕಡುಬಡವನಾದ ಗಿರಿರಾಯನು ಮಗಳಿಗೆ ಕೊಟ್ಟ ವಸ್ತು ಒಡವೆಗಳ ಹೆಸರುಗೆಳನ್ನೆಲ್ಲ ಒಮ್ಮೆ ಹೇಳಿ ಮುಗಿಸಿದಳು ಪಾರ್ವತಿ. ಅದನ್ನು ಕೇಳಿ ಆತುರದಿಂದ ಶಿವನು ನುಡಿದನು – “ಅಕ್ಕರೆಯ ಮಗಳೆಂದು ನಿನಗೆ ಇಷ್ಟೆಲ್ಲ ಕೊಟ್ಟರು. ನನಗೇನಾದರೂ ಒಂದಿಷ್ಟು ಕೊಡಲಿಲ್ಲವೇ?”

ಪಾರ್ವತಿಯೂ ತಡಮಾಡದೆ ಮರುನುಡಿದಳು – “ಇಷ್ಟೆಲ್ಲವನ್ನೂ ನನಗಿತ್ತು ತವರವರು ನನ್ನನ್ನೇ ನಿಮಗಿತ್ತರು.”

ಅದನ್ನು ಕೇಳಿ ಶಿವನ ಮನಸ್ಸಿಗೆ ಅದೆಷ್ಟು ಹರ್ಷವಾಗಿರಬೇಕು?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...