Home / ಕಥೆ / ಜನಪದ / ನನಗೇನು ಕೊಟ್ಟರು

ನನಗೇನು ಕೊಟ್ಟರು

ಕೈಲಾಸದಲ್ಲಿ ಶಿವಪಾರ್ವತಿಯರು ಸಂತೋಷದಿಂದ ಕುಳಿತು ಸರಸವಾಡುತ್ತಿರುವಾಗ, ಪಾರ್ವತಿ ಕೇಳಿದಳು – “ಶ್ರಾವಣತಿಂಗಳು ಮುಗಿದುಹೋಗಿ ಭಾದ್ರಪದ ಆರಂಭವಾಯಿತು. ನಾಳೆ ನನ್ನ ತವರೂರಿಗೆ ಹೋಗಿ ಬರುವೆ.”

“ಅಲ್ಲಿ ನಿನ್ನ ಸರಿಯರು ಯಾರಿದ್ದಾರೆ ? ಹೊತ್ತು ಹೇಗೆ ಕಳೆಯುವಿ ? ಸರಿಯರು ಯಾರು?” ಎಂದನು ಶಿವ.

“ಸರಿಯರೇತಕೆ ಬೇಕು ? ಮೂರುದಿನ ಮಾತ್ರ ಅಲ್ಲಿದ್ದು ನಿಮ್ಮ ಸೇವೆಗೆ ಮರಳುವೆ.”

ಮೂರುದಿನವೇಕೆ, ಐದು ದಿನ ಇರು. ಏಳುದಿನಗಳವರೆಗೆ ದಾರಿ ಕಾಯುವೆ, ಮತ್ತೇನು? ಆಗ ಸಹ ನೀನು ಬರದಿದ್ದರೆ ಮೀರಿದವಳೆಂದು ಬಗೆದು, ಗಣಪತಿಯೊಡನೆ ಕರೆಯಲು ಬರುವೆನು,” ಎನ್ನುವ ಮಾತಿನಲ್ಲಿ ಶಿವನು ಪಾರ್ವತಿಗೆ ಅಪ್ಪಣೆಯಿತ್ತನು, ತವರು ಮನೆಗೆ ಹೋಗಲಿಕ್ಕೆ.

ತಿರಿದುಣ್ಣುವ ಶಿವನಿಗೆ ಮೂರು ಲೋಕಗಳೆಲ್ಲವೂ ಸ್ವಗೃಹಗಳೇ. ಭಸ್ಮಾಂಗಕೆ ಹೊದಿಕೆಯೆಂದರೆ ಆನೆಯ ತೊಗಲು. ಇನ್ನೇನು ಬೇಕು ಉಪಚಾರ ಶಿವನಿಗೆ?

ಪಾರ್ವತಿಯು ತವರಿನಲ್ಲಿ ನಾಲ್ಕೊಪ್ಪತ್ತು ನಿಂತುಕೊಂಡು ಕೈಲಾಸಕ್ಕೆ ಮರಳಿದಳು. ದುಂಡುಮಲ್ಲಿಗೆ ಹೂವಿನ ದಂಡೆ ತಲೆಯಲ್ಲಿ. ಬಿತ್ತಿದ ಮುತ್ತು ಬೈತಲೆಯಲ್ಲಿ. ಕುಡಿ ಹುಬ್ಬಿನ ಕಳೆಗೆ ಕಂಗಳಲ್ಲಿ ರಂಭೆಯೇ ಹೊಳೆಯುತ್ತಿರಲು, ನಿಂಬೆಯ ಹಣ್ಣಿನಂಥ ಕಾಂತಿಯನ್ನು ಸೂಸುತ್ತ ಬಂದ ಪಾರ್ವತಿಯನ್ನು ಕಂಡು ಶಿವನು ಕೇಳಿದನು –

“ನಿನ್ನ ತವರಿಗೆ ಹೋಗಿ ಬಂದೆಯೊ ? ತವರಿನವರು ಈಗೇನು ಕೊಟ್ಟರು, ಇನ್ನೇನು ಕೊಡುವರು ? ಬೇಗ ಹೇಳು.”

“ತಂದೆ ಗಿರಿರಾಯ ಕಡುಬಡವ, ಮುದುಕ ಬೇರೆ. ಏನು ಕೊಟ್ಟಾನು ? ಬರಿಗೈಯಲ್ಲಿ ಕಳಿಸಬಾರದೆಂದು ಕೊಪ್ಪರಿಗೆ ಹಣ, ಎಪ್ಪತ್ತು ಆನೆ ಕುದುರೆ ಕೊಟ್ಟನು. ಜತನವಾಗಿರಿಸಿಕೋ ಎಂದು ಬಂಗಾರದ ಕೊಡ ಕೊಟ್ಟನು. ನಮ್ಮವರು ಬಡದರು ಇನ್ನೇನು ಕೊಡುವರು ? ಆರು ಹೇರು ಸಣ್ಣಕ್ಕಿ, ಆರು ಹೇರು ಅರಿಸಿಣ, ಆರು ಹೇರು ಅಡಕೆ, ಒಂದು ಖಂಡಗ ಬೆಲ್ಲ, ಆರು ಕೊಳಗ ಮೆಣಸು, ನೂರು ತೆಂಗಿನ ಕಾಯಿ ಕೊಟ್ಟರಲ್ಲದೆ ಇನ್ನೇನು ಕೊಟ್ಟಾರು ಬಡವರು? ಐದು ಹರಿವಾಣ, ಐದು ಸಮೆ, ಐದು ತಪ್ಪೇಲಿ, ಹದಿನಾಲ್ಕು ತಂಬಿಗೆ, ಐದು ಬಿಂದಿಗೆ, ನಾಲ್ಕು ತಂಬಿಗೆ ಸುವಾಸಿಕ ಎಣ್ಣೆ, ಹೆಚ್ಚಿಗೇನು ಕೊಡುವರು, ಮೊದಲೇ ಬಡವರು.”

ಪಟ್ಟೇಸೀರೆ, ಬಣ್ಣದ ಸೀರೆ, ಸಕಲಾತಿ ಶಾಲು, ರತ್ನಗಂಬಳಿ, ಪಟ್ಟಮಂಚ ಅಲ್ಲದೆ ಹಿಂಡು ಆಕಳು ಹದಿನೆಂಟು, ಕಾಲಾಳು ನೂರು ಜನ, ಕರೆವ ಎಮ್ಮೆ ಎಂಟು, ಕರುಗಳೆಂಟು, ಅವುಗಳ ಹಾಲು ಕರೆದು ಕಾಸಿಕೊಡುವ ದಾಸಿಯರನ್ನೂ ಕೊಟ್ಟರು. ಇನ್ನೇನು ಕೊಡುವರು?

“ಕೆಂಪು ಅರಿಸಿನ, ಕಸ್ತೂರಿ, ಕುಂಕುಮ, ಕುಪ್ಪಸ, ಗಿಣಿ ಮೊದಲಾದವುಗಳನ್ನಿತ್ತು, ಮುತ್ತೈದೆಯರು ಸೇಸೆದಳೆದು ಉಡಿಯಕ್ಕಿ ಹಾಕಿ ಕಳಿಸಿದರು. ಹೆಚ್ಚು ಏನು ಕೊಟ್ಟಾರು ಬಡವರು?”

ಕಡುಬಡವನಾದ ಗಿರಿರಾಯನು ಮಗಳಿಗೆ ಕೊಟ್ಟ ವಸ್ತು ಒಡವೆಗಳ ಹೆಸರುಗೆಳನ್ನೆಲ್ಲ ಒಮ್ಮೆ ಹೇಳಿ ಮುಗಿಸಿದಳು ಪಾರ್ವತಿ. ಅದನ್ನು ಕೇಳಿ ಆತುರದಿಂದ ಶಿವನು ನುಡಿದನು – “ಅಕ್ಕರೆಯ ಮಗಳೆಂದು ನಿನಗೆ ಇಷ್ಟೆಲ್ಲ ಕೊಟ್ಟರು. ನನಗೇನಾದರೂ ಒಂದಿಷ್ಟು ಕೊಡಲಿಲ್ಲವೇ?”

ಪಾರ್ವತಿಯೂ ತಡಮಾಡದೆ ಮರುನುಡಿದಳು – “ಇಷ್ಟೆಲ್ಲವನ್ನೂ ನನಗಿತ್ತು ತವರವರು ನನ್ನನ್ನೇ ನಿಮಗಿತ್ತರು.”

ಅದನ್ನು ಕೇಳಿ ಶಿವನ ಮನಸ್ಸಿಗೆ ಅದೆಷ್ಟು ಹರ್ಷವಾಗಿರಬೇಕು?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...