Home / ಕಥೆ / ಜನಪದ / ನನಗೇನು ಕೊಟ್ಟರು

ನನಗೇನು ಕೊಟ್ಟರು

ಕೈಲಾಸದಲ್ಲಿ ಶಿವಪಾರ್ವತಿಯರು ಸಂತೋಷದಿಂದ ಕುಳಿತು ಸರಸವಾಡುತ್ತಿರುವಾಗ, ಪಾರ್ವತಿ ಕೇಳಿದಳು – “ಶ್ರಾವಣತಿಂಗಳು ಮುಗಿದುಹೋಗಿ ಭಾದ್ರಪದ ಆರಂಭವಾಯಿತು. ನಾಳೆ ನನ್ನ ತವರೂರಿಗೆ ಹೋಗಿ ಬರುವೆ.”

“ಅಲ್ಲಿ ನಿನ್ನ ಸರಿಯರು ಯಾರಿದ್ದಾರೆ ? ಹೊತ್ತು ಹೇಗೆ ಕಳೆಯುವಿ ? ಸರಿಯರು ಯಾರು?” ಎಂದನು ಶಿವ.

“ಸರಿಯರೇತಕೆ ಬೇಕು ? ಮೂರುದಿನ ಮಾತ್ರ ಅಲ್ಲಿದ್ದು ನಿಮ್ಮ ಸೇವೆಗೆ ಮರಳುವೆ.”

ಮೂರುದಿನವೇಕೆ, ಐದು ದಿನ ಇರು. ಏಳುದಿನಗಳವರೆಗೆ ದಾರಿ ಕಾಯುವೆ, ಮತ್ತೇನು? ಆಗ ಸಹ ನೀನು ಬರದಿದ್ದರೆ ಮೀರಿದವಳೆಂದು ಬಗೆದು, ಗಣಪತಿಯೊಡನೆ ಕರೆಯಲು ಬರುವೆನು,” ಎನ್ನುವ ಮಾತಿನಲ್ಲಿ ಶಿವನು ಪಾರ್ವತಿಗೆ ಅಪ್ಪಣೆಯಿತ್ತನು, ತವರು ಮನೆಗೆ ಹೋಗಲಿಕ್ಕೆ.

ತಿರಿದುಣ್ಣುವ ಶಿವನಿಗೆ ಮೂರು ಲೋಕಗಳೆಲ್ಲವೂ ಸ್ವಗೃಹಗಳೇ. ಭಸ್ಮಾಂಗಕೆ ಹೊದಿಕೆಯೆಂದರೆ ಆನೆಯ ತೊಗಲು. ಇನ್ನೇನು ಬೇಕು ಉಪಚಾರ ಶಿವನಿಗೆ?

ಪಾರ್ವತಿಯು ತವರಿನಲ್ಲಿ ನಾಲ್ಕೊಪ್ಪತ್ತು ನಿಂತುಕೊಂಡು ಕೈಲಾಸಕ್ಕೆ ಮರಳಿದಳು. ದುಂಡುಮಲ್ಲಿಗೆ ಹೂವಿನ ದಂಡೆ ತಲೆಯಲ್ಲಿ. ಬಿತ್ತಿದ ಮುತ್ತು ಬೈತಲೆಯಲ್ಲಿ. ಕುಡಿ ಹುಬ್ಬಿನ ಕಳೆಗೆ ಕಂಗಳಲ್ಲಿ ರಂಭೆಯೇ ಹೊಳೆಯುತ್ತಿರಲು, ನಿಂಬೆಯ ಹಣ್ಣಿನಂಥ ಕಾಂತಿಯನ್ನು ಸೂಸುತ್ತ ಬಂದ ಪಾರ್ವತಿಯನ್ನು ಕಂಡು ಶಿವನು ಕೇಳಿದನು –

“ನಿನ್ನ ತವರಿಗೆ ಹೋಗಿ ಬಂದೆಯೊ ? ತವರಿನವರು ಈಗೇನು ಕೊಟ್ಟರು, ಇನ್ನೇನು ಕೊಡುವರು ? ಬೇಗ ಹೇಳು.”

“ತಂದೆ ಗಿರಿರಾಯ ಕಡುಬಡವ, ಮುದುಕ ಬೇರೆ. ಏನು ಕೊಟ್ಟಾನು ? ಬರಿಗೈಯಲ್ಲಿ ಕಳಿಸಬಾರದೆಂದು ಕೊಪ್ಪರಿಗೆ ಹಣ, ಎಪ್ಪತ್ತು ಆನೆ ಕುದುರೆ ಕೊಟ್ಟನು. ಜತನವಾಗಿರಿಸಿಕೋ ಎಂದು ಬಂಗಾರದ ಕೊಡ ಕೊಟ್ಟನು. ನಮ್ಮವರು ಬಡದರು ಇನ್ನೇನು ಕೊಡುವರು ? ಆರು ಹೇರು ಸಣ್ಣಕ್ಕಿ, ಆರು ಹೇರು ಅರಿಸಿಣ, ಆರು ಹೇರು ಅಡಕೆ, ಒಂದು ಖಂಡಗ ಬೆಲ್ಲ, ಆರು ಕೊಳಗ ಮೆಣಸು, ನೂರು ತೆಂಗಿನ ಕಾಯಿ ಕೊಟ್ಟರಲ್ಲದೆ ಇನ್ನೇನು ಕೊಟ್ಟಾರು ಬಡವರು? ಐದು ಹರಿವಾಣ, ಐದು ಸಮೆ, ಐದು ತಪ್ಪೇಲಿ, ಹದಿನಾಲ್ಕು ತಂಬಿಗೆ, ಐದು ಬಿಂದಿಗೆ, ನಾಲ್ಕು ತಂಬಿಗೆ ಸುವಾಸಿಕ ಎಣ್ಣೆ, ಹೆಚ್ಚಿಗೇನು ಕೊಡುವರು, ಮೊದಲೇ ಬಡವರು.”

ಪಟ್ಟೇಸೀರೆ, ಬಣ್ಣದ ಸೀರೆ, ಸಕಲಾತಿ ಶಾಲು, ರತ್ನಗಂಬಳಿ, ಪಟ್ಟಮಂಚ ಅಲ್ಲದೆ ಹಿಂಡು ಆಕಳು ಹದಿನೆಂಟು, ಕಾಲಾಳು ನೂರು ಜನ, ಕರೆವ ಎಮ್ಮೆ ಎಂಟು, ಕರುಗಳೆಂಟು, ಅವುಗಳ ಹಾಲು ಕರೆದು ಕಾಸಿಕೊಡುವ ದಾಸಿಯರನ್ನೂ ಕೊಟ್ಟರು. ಇನ್ನೇನು ಕೊಡುವರು?

“ಕೆಂಪು ಅರಿಸಿನ, ಕಸ್ತೂರಿ, ಕುಂಕುಮ, ಕುಪ್ಪಸ, ಗಿಣಿ ಮೊದಲಾದವುಗಳನ್ನಿತ್ತು, ಮುತ್ತೈದೆಯರು ಸೇಸೆದಳೆದು ಉಡಿಯಕ್ಕಿ ಹಾಕಿ ಕಳಿಸಿದರು. ಹೆಚ್ಚು ಏನು ಕೊಟ್ಟಾರು ಬಡವರು?”

ಕಡುಬಡವನಾದ ಗಿರಿರಾಯನು ಮಗಳಿಗೆ ಕೊಟ್ಟ ವಸ್ತು ಒಡವೆಗಳ ಹೆಸರುಗೆಳನ್ನೆಲ್ಲ ಒಮ್ಮೆ ಹೇಳಿ ಮುಗಿಸಿದಳು ಪಾರ್ವತಿ. ಅದನ್ನು ಕೇಳಿ ಆತುರದಿಂದ ಶಿವನು ನುಡಿದನು – “ಅಕ್ಕರೆಯ ಮಗಳೆಂದು ನಿನಗೆ ಇಷ್ಟೆಲ್ಲ ಕೊಟ್ಟರು. ನನಗೇನಾದರೂ ಒಂದಿಷ್ಟು ಕೊಡಲಿಲ್ಲವೇ?”

ಪಾರ್ವತಿಯೂ ತಡಮಾಡದೆ ಮರುನುಡಿದಳು – “ಇಷ್ಟೆಲ್ಲವನ್ನೂ ನನಗಿತ್ತು ತವರವರು ನನ್ನನ್ನೇ ನಿಮಗಿತ್ತರು.”

ಅದನ್ನು ಕೇಳಿ ಶಿವನ ಮನಸ್ಸಿಗೆ ಅದೆಷ್ಟು ಹರ್ಷವಾಗಿರಬೇಕು?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...