Home / ಕಥೆ / ಜನಪದ / ಶಾಲಿನ ಚಿಂತೆ

ಶಾಲಿನ ಚಿಂತೆ

ಚಳಿಗಾಲದ ಒಂದು ಮುಂಬೆಳಗಿನಲ್ಲಿ ಶಿವಪಾರ್ವತಿಯರು ಜೊತೆಯಾಗಿ ಕೈಲಾಸದಿಂದ ಹೊರಬಿದ್ದರು. ಅಡ್ಡಾಡಿಕೊಂಡು “ಬರುವುದೇ ಅವರ ಉದ್ದೇಶವಾಗಿತ್ತು. ಹಿಮಾಲಯದ ಬೆಟ್ಟಗಳನ್ನಿಳಿದು ಸಾನು ಪ್ರದೇಶಕ್ಕೆ ಬಂದರು. ಅಲ್ಲಲ್ಲಿ ಒಕ್ಕಲಿಗರ ವಸತಿಗಳು ಕಾಣಿಸತೊಡಗಿದವು. ಅವೆಷ್ಟೋ ಹೊಲಗಳಲ್ಲಿ ಒಲೆಗುಣಿಯ ಉರಿಯು ಎದ್ದು ಕಾಣಿಸಿತು. ಹಕ್ಕಿ ಪಕ್ಷಿಗಳ ಉಲುಹು ಇನ್ನೂ ಕುಗ್ಗಿಯೇ ಇತ್ತು. ಆ ಎಲ್ಲ ದೃಶ್ಯಗಳನ್ನು ಕಂಡು ಆನಂದಿಸುತ್ತ ಸಾಗಿದ್ದರು ಆ ದೇವದಂಪತಿಗಳು.

“ಅ ನೋಡಿರಿ. ಆ ಹೊಲದವನು ಹೇಗೆ ಮಲಗಿದ್ದಾನೆ ಮುದುಡೆಯಾಗಿ. ಮೈಮೇಲೆ ಹೊದೆದುಕೊಂಡ ಕಂಬಳಿ ಸವೆದು ಪಿಂಜಾಳಿಯಾಗಿದೆ. ಅಂಥ ಹರಕು ಕೋರಿಯಿಂದ ಚಳಿಯ ಬಾಧೆ ಹೇಗೆ ಪರಿಹಾರವಾದೀತು? ಪಾಪ!” ಎಂದು ಬೊಟ್ಟು ಮಾಡಿ ಶಿವನಿಗೆ ಮಲಗಿಕೊಂಡವನ ದ್ಯಶ್ಯವನ್ನು ಪಾರ್ವತಿ ತೋರಿಸಿದಳು. ಆ ಮಾತಿಗೆ ಶಿವನು ನಸುನಕ್ಕು ಕನಿಕರವನ್ನು ತೋರ್ಪಡಿಸಿ ಮುಂದೆ ಸಾಗಿದನು. “ಇಲ್ಲಿ ನೋಡಿರಿ. ಇವನೂ ಮಲಗಿದ್ದಾನೆ.  ಹೊದೆದದ್ದು ಹೊಸಶಾಲು ಕಾಣಿಸುತ್ತದೆ. ಶಾಲಿನ ಒ೦ದು ಸೆರಗು ಕಾಲಕೆಳಗೆ, ಇನ್ನೊಂದು ಸೆರಗು ತಲೆಕೆಳಗೆ ಹಾಕಿ ಜೇಟು ಕೊಟ್ಟು ಮಲಗಿದ್ದಾನೆ. ನಿಶ್ಚಿಂತ ಪುರುಷನೇ  ಕಾಣಿಸುತ್ತದೆ” ಎಂದಳು ಪಾರ್ವತಿ.

ಆ ದೃಶ್ಯವನ್ನು ಕಂಡು ಶಿವನು – “ಅಹುದಲ್ಲವೇ” ಎಂದುಸುರಿ ಮುಂದಡಿಯಿರಿಸಿದನು. ಮುಂಜಾವಿನ ತಿರುಗಾಟವನ್ನು ಮುಗಿಸಿಕೊಂಡು ಆ ದೇವದಂಪತಿಗಳು ಕೈಲಾಸವನ್ನು ತಲುಪಿದರು. ಶಿವನು ಮೈಮೇಲಿನ ಬಟ್ಟೆಯನ್ನು ಕಳಚುತ್ತಿರುವಾಗಲೇ ಸೇವಕನನ್ನು ಕರೆದು – “ಆ ದೇವಾಂಗಪತಿಯನ್ನು ಕೂಡಲೇ ಬರಹೇಳು” ಎಂದು ಆಜ್ಞಾಪಿಸಿದನು.

ಪಾರ್ವತಿಯು ಒಳಮನೆಯನ್ನು ಪ್ರವೇಶಿಸಿ ತನ್ನ ಮುಂದಿನ ಕೆಲಸಕ್ಕೆ ಅಣಿಯಾದಳು. ಅಷ್ಟರಲ್ಲಿ ದೇವಾಂಗಪತಿ ಬಂದವನೇ ಶಿವನ ಪಾದಕ್ಕೆ ಹಣೆಹಚ್ಚಿ ವಂದಿಸಿದನು. “ದೇವರು ಕರೆಸಿದ್ದೇಕೆ” ಎಂದು ಕೈಮುಗಿದು ಕೇಳಿದನು.

“ಒಂದು ಶಾಲು ಬೇಕಾಗಿದೆ. ದಡೂತಿ ಶಾಲು. ಉದ್ದ – ಅಗಲು – ತಾಳಿಕೆ – ಬಣ್ಣ ಇವಾವಕ್ಕೂ ಕುಂದು ಇರಬಾರದು ; ಬರಬಾರದು. ಒ೦ದು ವಾರ ಮಾತ್ರ ನಿನಗೆ ಅವಕಾಶ. ಮು೦ದಿನ ವಾರದೊಳಗಾಗಿ ನನ್ನ ಶಾಲು ನನ್ನ ಕೈಗೆ ಬರಬೇಕು” ಎಂದು ಸ್ಪಷ್ಟಪಡಿಸುವ ಶಿವನ ಮಾತುಗಳನ್ನು ಕೇಳಿ, ಪಾರ್ವತಿಗೆ ಅತ್ಯಂತ ಹರ್ಷವಾಯ್ತು.

“ಶಿವನು ಕರುಣಾಶಾಲಿ. ಅದನ್ನು ಅವನಿಗೆ ಇನ್ನಾರೂ ಹೇಳಿಕೊಡುವ ಕಾರಣವೇ ಇಲ್ಲ” ಎಂದುಕೊಳ್ಳುತ್ತ ಹೊರಗೆ ಓಡಿಬಂದು, ಕೈಜೋಡಿಸಿ ಶಿವನಿಗಂದಳು – “ಕರುಣಾಕರನೆಂಬ ಹೆಸರು ತಮಗೇ ಸಲ್ಲುವದು. ಪಾಪ! ಪಿಂಜಾಳಿಯಾದ ಕಂಬಳಿಯನ್ನು ಹೊದೆದು, ಚಳಿಯನ್ನು ತಡೆಯಲಾರದೆ ಮುದುಡೆಯಾಗಿ ಬಿದ್ದ ಆ  ಪ್ರಾಣಿಯ ಸಲುವಾಗಿ ನಾನೇ ತಮ್ಮಲ್ಲಿ ಬಿನ್ನಯಿಸಿಕೊಳ್ಳಬೇಕೆಂದು ಯೋಚಿಸಿದ್ದೆ. ಬಹಳ ಒಳ್ಳೆಯ ಕೆಲಸಮಾಡಿದಿರಿ. ಶಾಲು ನೆಯ್ದು ತರಲು ದೇವಾಂಗ ಪತಿಗೆ ಹೇಳಿದ್ದು ತುಂಬಾ ಸಂತಸದ ವಿಷಯ.”

“ಛೇ ಛೇ ಛೇ ! ತಪ್ಪು ತಿಳಿದುಕೊಂಡಿರುವಿ ಪಾರ್ವತಿ. ನಾನು ಶಾಲು ಹೇಳಿದ್ದು ಅವನ ಸಲುವಾಗಿ ಅಲ್ಲ. ಪಿಂಜಾಳಿ ಕಂಬಳಿ ಹೊದೆದು ಜೋಕೆಯಿಂದ ಮಲಗಿಕೊಂಡವನು ತನ್ನ ಅ ಹೊದಿಕೆಯಲ್ಲಿ ಇನ್ನೂ ಮೂರು ಚಳಿಗಾಲಗಳನ್ನು ಕಳೆಯುತ್ತಾನೆ. ಅವನ ಚಿಂತೆ ನನಗಿಲ್ಲ. ಹಿ೦ದುಗಡೆ ನಾವು ನೋಡಿದೆವಲ್ಲ, ಆ ಹೊಸ ಶಾಲು ಹೊದ್ದು ಜೀಟುಕೊಟ್ಟು ಮಲಗಿದವನನ್ನು, ಇನ್ನು ಒಂದೇವಾರ ಕಳೆಯುವುದರಲ್ಲಿ ಅವನು ತನ್ನ ಶಾಲನ್ನು ಹರಿದು ಚಲ್ಲುತ್ತಾನೆ. ಅವನ ಸಲುವಾಗಿ ಚಿಂತೆಯಾಗಿದ್ದರಿಂದ, ನಿಂತಕಾಲಮೇಲೆ ದೇವಾಂಗ ಪತಿಯನ್ನು ಕರೆಸಿ, ಶಾಲು – ದಢೂತಿ ಶಾಲು ನೆಯ್ದು ತರಲು ಹೇಳಬೇಕಾಯಿತು, ಹಾಗೂ ಎಂಟು ದಿನಗಳಲ್ಲಿ ಸಿದ್ಧಗೊಳಿಸಿ ತರಬೇಕೆಂದು” ಎಂದು ಶಿವನು ಪಡಿನುಡಿದನು.

ಶಿವನ ವಿಚಾರಸರಣಿಯನ್ನು ಕೇಳಿ ಪಾರ್ವತಿಯು ಅಚ್ಚರಿಗೊಂಡಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...