Home / ಕಥೆ / ಜನಪದ / ಶಾಲಿನ ಚಿಂತೆ

ಶಾಲಿನ ಚಿಂತೆ

ಚಳಿಗಾಲದ ಒಂದು ಮುಂಬೆಳಗಿನಲ್ಲಿ ಶಿವಪಾರ್ವತಿಯರು ಜೊತೆಯಾಗಿ ಕೈಲಾಸದಿಂದ ಹೊರಬಿದ್ದರು. ಅಡ್ಡಾಡಿಕೊಂಡು “ಬರುವುದೇ ಅವರ ಉದ್ದೇಶವಾಗಿತ್ತು. ಹಿಮಾಲಯದ ಬೆಟ್ಟಗಳನ್ನಿಳಿದು ಸಾನು ಪ್ರದೇಶಕ್ಕೆ ಬಂದರು. ಅಲ್ಲಲ್ಲಿ ಒಕ್ಕಲಿಗರ ವಸತಿಗಳು ಕಾಣಿಸತೊಡಗಿದವು. ಅವೆಷ್ಟೋ ಹೊಲಗಳಲ್ಲಿ ಒಲೆಗುಣಿಯ ಉರಿಯು ಎದ್ದು ಕಾಣಿಸಿತು. ಹಕ್ಕಿ ಪಕ್ಷಿಗಳ ಉಲುಹು ಇನ್ನೂ ಕುಗ್ಗಿಯೇ ಇತ್ತು. ಆ ಎಲ್ಲ ದೃಶ್ಯಗಳನ್ನು ಕಂಡು ಆನಂದಿಸುತ್ತ ಸಾಗಿದ್ದರು ಆ ದೇವದಂಪತಿಗಳು.

“ಅ ನೋಡಿರಿ. ಆ ಹೊಲದವನು ಹೇಗೆ ಮಲಗಿದ್ದಾನೆ ಮುದುಡೆಯಾಗಿ. ಮೈಮೇಲೆ ಹೊದೆದುಕೊಂಡ ಕಂಬಳಿ ಸವೆದು ಪಿಂಜಾಳಿಯಾಗಿದೆ. ಅಂಥ ಹರಕು ಕೋರಿಯಿಂದ ಚಳಿಯ ಬಾಧೆ ಹೇಗೆ ಪರಿಹಾರವಾದೀತು? ಪಾಪ!” ಎಂದು ಬೊಟ್ಟು ಮಾಡಿ ಶಿವನಿಗೆ ಮಲಗಿಕೊಂಡವನ ದ್ಯಶ್ಯವನ್ನು ಪಾರ್ವತಿ ತೋರಿಸಿದಳು. ಆ ಮಾತಿಗೆ ಶಿವನು ನಸುನಕ್ಕು ಕನಿಕರವನ್ನು ತೋರ್ಪಡಿಸಿ ಮುಂದೆ ಸಾಗಿದನು. “ಇಲ್ಲಿ ನೋಡಿರಿ. ಇವನೂ ಮಲಗಿದ್ದಾನೆ.  ಹೊದೆದದ್ದು ಹೊಸಶಾಲು ಕಾಣಿಸುತ್ತದೆ. ಶಾಲಿನ ಒ೦ದು ಸೆರಗು ಕಾಲಕೆಳಗೆ, ಇನ್ನೊಂದು ಸೆರಗು ತಲೆಕೆಳಗೆ ಹಾಕಿ ಜೇಟು ಕೊಟ್ಟು ಮಲಗಿದ್ದಾನೆ. ನಿಶ್ಚಿಂತ ಪುರುಷನೇ  ಕಾಣಿಸುತ್ತದೆ” ಎಂದಳು ಪಾರ್ವತಿ.

ಆ ದೃಶ್ಯವನ್ನು ಕಂಡು ಶಿವನು – “ಅಹುದಲ್ಲವೇ” ಎಂದುಸುರಿ ಮುಂದಡಿಯಿರಿಸಿದನು. ಮುಂಜಾವಿನ ತಿರುಗಾಟವನ್ನು ಮುಗಿಸಿಕೊಂಡು ಆ ದೇವದಂಪತಿಗಳು ಕೈಲಾಸವನ್ನು ತಲುಪಿದರು. ಶಿವನು ಮೈಮೇಲಿನ ಬಟ್ಟೆಯನ್ನು ಕಳಚುತ್ತಿರುವಾಗಲೇ ಸೇವಕನನ್ನು ಕರೆದು – “ಆ ದೇವಾಂಗಪತಿಯನ್ನು ಕೂಡಲೇ ಬರಹೇಳು” ಎಂದು ಆಜ್ಞಾಪಿಸಿದನು.

ಪಾರ್ವತಿಯು ಒಳಮನೆಯನ್ನು ಪ್ರವೇಶಿಸಿ ತನ್ನ ಮುಂದಿನ ಕೆಲಸಕ್ಕೆ ಅಣಿಯಾದಳು. ಅಷ್ಟರಲ್ಲಿ ದೇವಾಂಗಪತಿ ಬಂದವನೇ ಶಿವನ ಪಾದಕ್ಕೆ ಹಣೆಹಚ್ಚಿ ವಂದಿಸಿದನು. “ದೇವರು ಕರೆಸಿದ್ದೇಕೆ” ಎಂದು ಕೈಮುಗಿದು ಕೇಳಿದನು.

“ಒಂದು ಶಾಲು ಬೇಕಾಗಿದೆ. ದಡೂತಿ ಶಾಲು. ಉದ್ದ – ಅಗಲು – ತಾಳಿಕೆ – ಬಣ್ಣ ಇವಾವಕ್ಕೂ ಕುಂದು ಇರಬಾರದು ; ಬರಬಾರದು. ಒ೦ದು ವಾರ ಮಾತ್ರ ನಿನಗೆ ಅವಕಾಶ. ಮು೦ದಿನ ವಾರದೊಳಗಾಗಿ ನನ್ನ ಶಾಲು ನನ್ನ ಕೈಗೆ ಬರಬೇಕು” ಎಂದು ಸ್ಪಷ್ಟಪಡಿಸುವ ಶಿವನ ಮಾತುಗಳನ್ನು ಕೇಳಿ, ಪಾರ್ವತಿಗೆ ಅತ್ಯಂತ ಹರ್ಷವಾಯ್ತು.

“ಶಿವನು ಕರುಣಾಶಾಲಿ. ಅದನ್ನು ಅವನಿಗೆ ಇನ್ನಾರೂ ಹೇಳಿಕೊಡುವ ಕಾರಣವೇ ಇಲ್ಲ” ಎಂದುಕೊಳ್ಳುತ್ತ ಹೊರಗೆ ಓಡಿಬಂದು, ಕೈಜೋಡಿಸಿ ಶಿವನಿಗಂದಳು – “ಕರುಣಾಕರನೆಂಬ ಹೆಸರು ತಮಗೇ ಸಲ್ಲುವದು. ಪಾಪ! ಪಿಂಜಾಳಿಯಾದ ಕಂಬಳಿಯನ್ನು ಹೊದೆದು, ಚಳಿಯನ್ನು ತಡೆಯಲಾರದೆ ಮುದುಡೆಯಾಗಿ ಬಿದ್ದ ಆ  ಪ್ರಾಣಿಯ ಸಲುವಾಗಿ ನಾನೇ ತಮ್ಮಲ್ಲಿ ಬಿನ್ನಯಿಸಿಕೊಳ್ಳಬೇಕೆಂದು ಯೋಚಿಸಿದ್ದೆ. ಬಹಳ ಒಳ್ಳೆಯ ಕೆಲಸಮಾಡಿದಿರಿ. ಶಾಲು ನೆಯ್ದು ತರಲು ದೇವಾಂಗ ಪತಿಗೆ ಹೇಳಿದ್ದು ತುಂಬಾ ಸಂತಸದ ವಿಷಯ.”

“ಛೇ ಛೇ ಛೇ ! ತಪ್ಪು ತಿಳಿದುಕೊಂಡಿರುವಿ ಪಾರ್ವತಿ. ನಾನು ಶಾಲು ಹೇಳಿದ್ದು ಅವನ ಸಲುವಾಗಿ ಅಲ್ಲ. ಪಿಂಜಾಳಿ ಕಂಬಳಿ ಹೊದೆದು ಜೋಕೆಯಿಂದ ಮಲಗಿಕೊಂಡವನು ತನ್ನ ಅ ಹೊದಿಕೆಯಲ್ಲಿ ಇನ್ನೂ ಮೂರು ಚಳಿಗಾಲಗಳನ್ನು ಕಳೆಯುತ್ತಾನೆ. ಅವನ ಚಿಂತೆ ನನಗಿಲ್ಲ. ಹಿ೦ದುಗಡೆ ನಾವು ನೋಡಿದೆವಲ್ಲ, ಆ ಹೊಸ ಶಾಲು ಹೊದ್ದು ಜೀಟುಕೊಟ್ಟು ಮಲಗಿದವನನ್ನು, ಇನ್ನು ಒಂದೇವಾರ ಕಳೆಯುವುದರಲ್ಲಿ ಅವನು ತನ್ನ ಶಾಲನ್ನು ಹರಿದು ಚಲ್ಲುತ್ತಾನೆ. ಅವನ ಸಲುವಾಗಿ ಚಿಂತೆಯಾಗಿದ್ದರಿಂದ, ನಿಂತಕಾಲಮೇಲೆ ದೇವಾಂಗ ಪತಿಯನ್ನು ಕರೆಸಿ, ಶಾಲು – ದಢೂತಿ ಶಾಲು ನೆಯ್ದು ತರಲು ಹೇಳಬೇಕಾಯಿತು, ಹಾಗೂ ಎಂಟು ದಿನಗಳಲ್ಲಿ ಸಿದ್ಧಗೊಳಿಸಿ ತರಬೇಕೆಂದು” ಎಂದು ಶಿವನು ಪಡಿನುಡಿದನು.

ಶಿವನ ವಿಚಾರಸರಣಿಯನ್ನು ಕೇಳಿ ಪಾರ್ವತಿಯು ಅಚ್ಚರಿಗೊಂಡಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್