Home / ಕಥೆ / ಜನಪದ / ಶಾಲಿನ ಚಿಂತೆ

ಶಾಲಿನ ಚಿಂತೆ

ಚಳಿಗಾಲದ ಒಂದು ಮುಂಬೆಳಗಿನಲ್ಲಿ ಶಿವಪಾರ್ವತಿಯರು ಜೊತೆಯಾಗಿ ಕೈಲಾಸದಿಂದ ಹೊರಬಿದ್ದರು. ಅಡ್ಡಾಡಿಕೊಂಡು “ಬರುವುದೇ ಅವರ ಉದ್ದೇಶವಾಗಿತ್ತು. ಹಿಮಾಲಯದ ಬೆಟ್ಟಗಳನ್ನಿಳಿದು ಸಾನು ಪ್ರದೇಶಕ್ಕೆ ಬಂದರು. ಅಲ್ಲಲ್ಲಿ ಒಕ್ಕಲಿಗರ ವಸತಿಗಳು ಕಾಣಿಸತೊಡಗಿದವು. ಅವೆಷ್ಟೋ ಹೊಲಗಳಲ್ಲಿ ಒಲೆಗುಣಿಯ ಉರಿಯು ಎದ್ದು ಕಾಣಿಸಿತು. ಹಕ್ಕಿ ಪಕ್ಷಿಗಳ ಉಲುಹು ಇನ್ನೂ ಕುಗ್ಗಿಯೇ ಇತ್ತು. ಆ ಎಲ್ಲ ದೃಶ್ಯಗಳನ್ನು ಕಂಡು ಆನಂದಿಸುತ್ತ ಸಾಗಿದ್ದರು ಆ ದೇವದಂಪತಿಗಳು.

“ಅ ನೋಡಿರಿ. ಆ ಹೊಲದವನು ಹೇಗೆ ಮಲಗಿದ್ದಾನೆ ಮುದುಡೆಯಾಗಿ. ಮೈಮೇಲೆ ಹೊದೆದುಕೊಂಡ ಕಂಬಳಿ ಸವೆದು ಪಿಂಜಾಳಿಯಾಗಿದೆ. ಅಂಥ ಹರಕು ಕೋರಿಯಿಂದ ಚಳಿಯ ಬಾಧೆ ಹೇಗೆ ಪರಿಹಾರವಾದೀತು? ಪಾಪ!” ಎಂದು ಬೊಟ್ಟು ಮಾಡಿ ಶಿವನಿಗೆ ಮಲಗಿಕೊಂಡವನ ದ್ಯಶ್ಯವನ್ನು ಪಾರ್ವತಿ ತೋರಿಸಿದಳು. ಆ ಮಾತಿಗೆ ಶಿವನು ನಸುನಕ್ಕು ಕನಿಕರವನ್ನು ತೋರ್ಪಡಿಸಿ ಮುಂದೆ ಸಾಗಿದನು. “ಇಲ್ಲಿ ನೋಡಿರಿ. ಇವನೂ ಮಲಗಿದ್ದಾನೆ.  ಹೊದೆದದ್ದು ಹೊಸಶಾಲು ಕಾಣಿಸುತ್ತದೆ. ಶಾಲಿನ ಒ೦ದು ಸೆರಗು ಕಾಲಕೆಳಗೆ, ಇನ್ನೊಂದು ಸೆರಗು ತಲೆಕೆಳಗೆ ಹಾಕಿ ಜೇಟು ಕೊಟ್ಟು ಮಲಗಿದ್ದಾನೆ. ನಿಶ್ಚಿಂತ ಪುರುಷನೇ  ಕಾಣಿಸುತ್ತದೆ” ಎಂದಳು ಪಾರ್ವತಿ.

ಆ ದೃಶ್ಯವನ್ನು ಕಂಡು ಶಿವನು – “ಅಹುದಲ್ಲವೇ” ಎಂದುಸುರಿ ಮುಂದಡಿಯಿರಿಸಿದನು. ಮುಂಜಾವಿನ ತಿರುಗಾಟವನ್ನು ಮುಗಿಸಿಕೊಂಡು ಆ ದೇವದಂಪತಿಗಳು ಕೈಲಾಸವನ್ನು ತಲುಪಿದರು. ಶಿವನು ಮೈಮೇಲಿನ ಬಟ್ಟೆಯನ್ನು ಕಳಚುತ್ತಿರುವಾಗಲೇ ಸೇವಕನನ್ನು ಕರೆದು – “ಆ ದೇವಾಂಗಪತಿಯನ್ನು ಕೂಡಲೇ ಬರಹೇಳು” ಎಂದು ಆಜ್ಞಾಪಿಸಿದನು.

ಪಾರ್ವತಿಯು ಒಳಮನೆಯನ್ನು ಪ್ರವೇಶಿಸಿ ತನ್ನ ಮುಂದಿನ ಕೆಲಸಕ್ಕೆ ಅಣಿಯಾದಳು. ಅಷ್ಟರಲ್ಲಿ ದೇವಾಂಗಪತಿ ಬಂದವನೇ ಶಿವನ ಪಾದಕ್ಕೆ ಹಣೆಹಚ್ಚಿ ವಂದಿಸಿದನು. “ದೇವರು ಕರೆಸಿದ್ದೇಕೆ” ಎಂದು ಕೈಮುಗಿದು ಕೇಳಿದನು.

“ಒಂದು ಶಾಲು ಬೇಕಾಗಿದೆ. ದಡೂತಿ ಶಾಲು. ಉದ್ದ – ಅಗಲು – ತಾಳಿಕೆ – ಬಣ್ಣ ಇವಾವಕ್ಕೂ ಕುಂದು ಇರಬಾರದು ; ಬರಬಾರದು. ಒ೦ದು ವಾರ ಮಾತ್ರ ನಿನಗೆ ಅವಕಾಶ. ಮು೦ದಿನ ವಾರದೊಳಗಾಗಿ ನನ್ನ ಶಾಲು ನನ್ನ ಕೈಗೆ ಬರಬೇಕು” ಎಂದು ಸ್ಪಷ್ಟಪಡಿಸುವ ಶಿವನ ಮಾತುಗಳನ್ನು ಕೇಳಿ, ಪಾರ್ವತಿಗೆ ಅತ್ಯಂತ ಹರ್ಷವಾಯ್ತು.

“ಶಿವನು ಕರುಣಾಶಾಲಿ. ಅದನ್ನು ಅವನಿಗೆ ಇನ್ನಾರೂ ಹೇಳಿಕೊಡುವ ಕಾರಣವೇ ಇಲ್ಲ” ಎಂದುಕೊಳ್ಳುತ್ತ ಹೊರಗೆ ಓಡಿಬಂದು, ಕೈಜೋಡಿಸಿ ಶಿವನಿಗಂದಳು – “ಕರುಣಾಕರನೆಂಬ ಹೆಸರು ತಮಗೇ ಸಲ್ಲುವದು. ಪಾಪ! ಪಿಂಜಾಳಿಯಾದ ಕಂಬಳಿಯನ್ನು ಹೊದೆದು, ಚಳಿಯನ್ನು ತಡೆಯಲಾರದೆ ಮುದುಡೆಯಾಗಿ ಬಿದ್ದ ಆ  ಪ್ರಾಣಿಯ ಸಲುವಾಗಿ ನಾನೇ ತಮ್ಮಲ್ಲಿ ಬಿನ್ನಯಿಸಿಕೊಳ್ಳಬೇಕೆಂದು ಯೋಚಿಸಿದ್ದೆ. ಬಹಳ ಒಳ್ಳೆಯ ಕೆಲಸಮಾಡಿದಿರಿ. ಶಾಲು ನೆಯ್ದು ತರಲು ದೇವಾಂಗ ಪತಿಗೆ ಹೇಳಿದ್ದು ತುಂಬಾ ಸಂತಸದ ವಿಷಯ.”

“ಛೇ ಛೇ ಛೇ ! ತಪ್ಪು ತಿಳಿದುಕೊಂಡಿರುವಿ ಪಾರ್ವತಿ. ನಾನು ಶಾಲು ಹೇಳಿದ್ದು ಅವನ ಸಲುವಾಗಿ ಅಲ್ಲ. ಪಿಂಜಾಳಿ ಕಂಬಳಿ ಹೊದೆದು ಜೋಕೆಯಿಂದ ಮಲಗಿಕೊಂಡವನು ತನ್ನ ಅ ಹೊದಿಕೆಯಲ್ಲಿ ಇನ್ನೂ ಮೂರು ಚಳಿಗಾಲಗಳನ್ನು ಕಳೆಯುತ್ತಾನೆ. ಅವನ ಚಿಂತೆ ನನಗಿಲ್ಲ. ಹಿ೦ದುಗಡೆ ನಾವು ನೋಡಿದೆವಲ್ಲ, ಆ ಹೊಸ ಶಾಲು ಹೊದ್ದು ಜೀಟುಕೊಟ್ಟು ಮಲಗಿದವನನ್ನು, ಇನ್ನು ಒಂದೇವಾರ ಕಳೆಯುವುದರಲ್ಲಿ ಅವನು ತನ್ನ ಶಾಲನ್ನು ಹರಿದು ಚಲ್ಲುತ್ತಾನೆ. ಅವನ ಸಲುವಾಗಿ ಚಿಂತೆಯಾಗಿದ್ದರಿಂದ, ನಿಂತಕಾಲಮೇಲೆ ದೇವಾಂಗ ಪತಿಯನ್ನು ಕರೆಸಿ, ಶಾಲು – ದಢೂತಿ ಶಾಲು ನೆಯ್ದು ತರಲು ಹೇಳಬೇಕಾಯಿತು, ಹಾಗೂ ಎಂಟು ದಿನಗಳಲ್ಲಿ ಸಿದ್ಧಗೊಳಿಸಿ ತರಬೇಕೆಂದು” ಎಂದು ಶಿವನು ಪಡಿನುಡಿದನು.

ಶಿವನ ವಿಚಾರಸರಣಿಯನ್ನು ಕೇಳಿ ಪಾರ್ವತಿಯು ಅಚ್ಚರಿಗೊಂಡಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...