Home / ಕಥೆ / ಜನಪದ / ಸಣ್ಣಪೋರ

ಸಣ್ಣಪೋರ

ತೀರ ಸಣ್ಣವ ಇದ್ದಾಗ ಸಣ್ಣಪೋರನ ಲಗ್ನ ಆಗಿತ್ತು. ಲಗ್ನ ಆಗಿದ್ದು ಅವನಿಗೆ ಸಹ ಗೊತ್ತಿರಲಿಲ್ಲ. “ಎಲ್ಲಾರೂ ಅತ್ತೀಮಾವನ ಮನೇಗಿ ಹೋಗತಾರ ನಾನೂಬಿ

ಹೋಗುತೆ” ಅಂದಾಗ “ನಿಂಗ ಖೂನ ಹಿಡಿಯುದಿಲ್ಲ ಮಗಾ” ಎಂದು ಅವ್ವ ಅಂದರೂ ಕೇಳಲಿಲ್ಲ ; ಅಪ್ಪ ಅಂದರೂ ಕೇಳಲಿಲ್ಲ. ಅತ್ತೀಮಾವನ ಮನೇಗಿ ಹೋಗಿ ಮುಟ್ಟಿದ. ಮಾವ ಬಂಕಿನಾಗ ಕೂತಿದ್ದ ; ಅತ್ತಿ ಪಡಸಾಲ್ಯಾಗ ಕುಂತಿದ್ದಳು. ಹೆಂಡತಿ ಅತ್ತೀ ಹಂತ್ಯಾಕ ನಿಂತಿದ್ದಳು. “ಅವ್ವಾ ಯಾರೋ ಬಂದಾರ ಬಾಗಿಲಾಗ” ಎಂತ ಹೆಂಡತಿ ಖೂನ ಹಿಡಿಯಲಾರದೆ ಹೇಳತಾಳ. “ನಿನ್ನ ಗಂಡ ಬಂದಾನ” ಎಂದು ಅವ್ವ ಹೇಳಿ ಮುಗಿಸತಾಳ. ಆದರೆ ಅತ್ತೀನೂ ಬಾ ಅನ್ಲಿಲ್ಲ ; ಮಾವಾನೂ ಬಾ ಅನ್ಲಿಲ್ಲ. ಏಸುದಿನಾ ಆಯ್ತು ಮದುವೆಯಾಗಿ, ಇನ್ನೂ ಯಾಕ ಬಂದಿಲ್ಲಂತ ಇಬ್ಬರಿಗೂ ಸಿಟ್ಟು. ಪೋರ ಕಿಂಡೆ ಬಾಗಿಲಕಡೆ ಹೊಂಟ.

ಕಿಂಡೆ ಬಾಗಿಲ ಹಂತ್ಯಾಕ ನಿಂತ ಹೆಂಡತೀನೂ ಗಂಡನ ಬೆನ್ನು ಹತ್ತಿದಳು. “ಪೋರಿ ಎತ್ತಹೋಯ್ತು” ಅಂತ ತಂದೆ ಕೇಳಿದರ, ಆ ಹುಡುಗನ ಬೆನ್ನು ಹತ್ತಿ ಹೋದಳು – ಎಂದು ತಿಳಿಯಿತು. ತಂದೆತಾಯಿಯರು, ಗಂಡನ ಬೆನ್ನು ಹತ್ತಿ ಮಗಳು ಹೋದರ ಹೋಗಲಿ – ಎಂದರು.

“ನನ್ನ ಹೆಂಡತಿನ್ನ ಕರಕೊಂಡು ಬಂದೀನಿ ನೋಡವ್ವ”

“ಅವರ ಮನ್ಯಾಗ ಉಣ್ಣುತಿನ್ನುದಕ ಬೇಕಾದಷ್ಟು ಒಟ್ಟ್ಯಾದ. ಅದನ್ನು ಬಿಟ್ಟು ನಮ್ಮಲ್ಲ್ಯಾಕ ಕರಕೊಂಡು ಬಂದ್ಯೋ ಮಗ” ಎಂದಳು ತಾಯಿ.

“ನೀವು ಉಂಡಿದ್ದು ನಾನು ಉಣ್ಣುವೆ ; ನೀವು ಉಟ್ಟಿದ್ದು ನಾನು ಉಡುವೆ” ಎಂದು ಸೊಸೆ ಸಮಾಧಾನ ಹೇಳಿದಳು.

ನಾಲ್ಕಾರು ತಿಂಗಳು ಹೋಗಟ್ಲೆ ಸೊಸೆ ಮೈನೆರೆದಳು. ಊರಾಗ ಯಾರ ಮನ್ಯಾಗ ಶೋಭಾನ ಆಗುತ್ತಲೇ ಪಟೇಲನ ಮನೆಗೆ ಹೆಣ್ಣುಮಗಳಿಗೆ ಕಳಿಸಬೇಕು – ಹೀಂಗ ಅಲ್ಲಿ ಪದ್ಧತಿಯಿತ್ತು. ಅತ್ತಿ ಅನ್ನ ಉಂಬಲ್ದೆ ಹೋದಳು; ನೀರು ಕುಡ್ಯಲ್ದೆ ಹೋದಳು. ಮಾರಿ ಸಣ್ಣದು ಮಾಡಿಕೊಂಡು ಕುಂತಳು. – “ಏನು ಬಂದಿದ್ದು ಬರಲಿ, ನಾ ಎದುರಿಸಲಿಕ್ಕೆ ತಯಾರಿದ್ದೀನಿ. ಬಂದದ್ದು ತಗೊಳ್ಳಾಕ ಮುಸ್ತಾದ ಇದ್ದೀನಿ” ಎಂದಳು ಸೊಸಿ.

“ಪಟೇಲನ ಮನೀಗಿ ಶೋಭಾನ ಆದ ಹುಡುಗಿ ಹೋಗಬೇಕೆನ್ನುವುದು ನಮ್ಮೂರ ಪದ್ಧತಿ ಆದ. ಅದಕ್ಕ ಹೇಂಗ ಮಾಡಬೇಕೇನ್ನೂದು ತಿಪಲ ಬಿದ್ದಾದ” ಎಂದಾಳು ಅತ್ತಿ.

ಸೊಸಿ ಚಿಂತಿ ಮಾಡಲ್ದೆ ಆರತಿ ಹಿಡಕೊಂಡು ಶೋಭಾನ ಆದ ಸೀರಿ ಉಟಕೊಂಡು ಹೋದಳು. ಪಟೇಲ ಬಂಕಿನೊಳಗೆ ನಿಂತಿದ್ದ. ಪಡಸಾಲ್ಯಾಗ ಹೋಗಿ ನಿಂತು ಸೊಸಿ ಕೇಳ್ತಾಳ – “ಯಾಕರಿ ಎಪ್ಪಾ, ನಮಗ್ಯಾಕ ಕರೆಸೀರಿ ?”

“ನನಗೆ ಅಪ್ಪ ಅಂತ ಕರೆದಳು. ನಾ ಈಗ ಇವಳಿಗೆ ಅಪ್ಪ ಆದೆ. ಇನ್ನ ಬ್ಯಾರೆ ಇಚಾರನೇ ಮಾಡೂದು ಬ್ಯಾಡ” ಎಂದು ಇಚಾರಿಸಿ – “ಬಡವರಿದ್ದೀರಿ. ಸೀರಿ ಉಡಿಸಿ ಕಳಿಸಬೇಕೆಂದು ಮಾಡಿದ್ದೆ. ಸೀರಿ ಉಡಿಸಿ ಉಡಿಯಕ್ಕಿ ಹೊಯ್ದು ಕಳಿಸಿಕೊಡುತೀನಿ ಮಗಾ” ಎಂದ.

“ಎಪ್ಪಾ, ನಾ ಒಂದ ಮಾತ ಹೇಳತೀನಿ” ಅಂದಳು ಸೊಸಿ.

“ಅದೇನು ಮಾತವ್ವ, ಖುಲಾಸ ಹೇಳಿಬಿಡು” ಎಂದು ಪಟೇಲ ಹೇಳಿದ.

“ಹೇಂಗೂ ದೀಪಾವಳಿ ಹೊಂಟಾದ. ಒಬ್ಬರೂ ಮನ್ಯಾಗ ತುಂಬಿದ ಕೊಡ ಇಕ್ಕಬಾರದು. ದೀಪ ಇಡಬಾರದು. ನೀ ಹೀಂಗ ಡಂಗುರ ಸಾರಿದರ ಜನ ನೀ ಹೇಳಿದಂಗ ಕೇಳತಾದ.”

ಪಟೇಲ ಅದರಂಗ ಡಂಗುರ ಸಾರಿಸಿದ. ಸೊಸಿಗಿ ಉಡಿಯಕ್ಕಿ ಇಕ್ಕಿ ಕಳಿಸಿದ. ನಾಲ್ಕೈದು ದಿನದಾಗ ದೀವಳಿಗೆ ಬಂತು. ದೀಪ ಇಕ್ಕಬೇಡ ಅಂತ ಪಟೇಲ ಹೇಳಿದಂತೆ ಊರವರು ಬಿಟ್ಟರ ಸೊಸೆ ಮನೇತುಂಬಾ – ಮಾಡತುಂಬಾ ದೀಪ ಹಚ್ಚಿಟ್ಟಳು. ಒಲಿಯೊಳಗೆ ಬೆಂಕಿಮಾಡಿಟ್ಟಳು. ಲಕ್ಷ್ಮೀತಾಯಿ ಊರತುಂಬಾ ತಿರುತಿರುಗಿ ಬಂದಳು. ಊರೆಲ್ಲ ಕತ್ತಲೆ ಕಂಕಾಳ ಆಗಿತ್ತು. ಸಣ್ಣ ಪೋರನ ಮನೆಯಾಗ ದೀಪ ಇರುವದು ಕಂಡು ಅಲ್ಲೇ ಬಂದಳು. “ತಟ್ಟೀ ತೆರೆ” ಅಂತ ಲಕ್ಷ್ಮೀತಾಯಿ ಅಂದಳು.

“ನೀನು ಯಾರು ಇದ್ದೀ” ಎಂದು ಸೊಸಿ ಕೇಳಿದಳು. “ನಾ ಲಕ್ಷ್ಮಿ ಇದ್ದೀನಿ. ಜಲ್ದೀ ತಟ್ಟೀ ತಗಿ ಮಗಾ” ಎಂದಳು. “ಲಕ್ಷ್ಮಿ ಇದ್ದರ ಚೆಂದ ಆಯ್ತು ಯಾಕ ಹೊಂಟೀದಿ ? ಇರುವಲ್ಲೆ ಇದ್ದರ ಮಾತ್ರ ತಟ್ಟೀ ತಗೀತೀನಿ” ಎಂದಳು. “ಊರವರಲ್ಲಿ ದೀಪ ಇಲ್ಲ. ಅದಕ್ಕ ನಿನ್ನಲ್ಲಿ ಬಂದೀನು.” “ನೀನು ಎಂದೆಂದಿಗೂ ಹೋಗದಿದ್ದರ ತಟ್ಟೀತಗೀತೀನು.” ಲಕ್ಷ್ಮಿಯಿಂದ ವಚನ ತಕ್ಕೊಂಡು ಮನಿಪ್ರವೇಶಮಾಡಗೊಟ್ಟಳು. ಲಕ್ಷ್ಮೀ ದೇವರ ಮನ್ಯಾಗ ಹೊಕ್ಕು ಅಲ್ಲಿ ಮಾಯವಾದಳು. ಹಾಲುಕ್ಕುವಂತೆ ಮನೆ ಸಿರಿ ತುಂಬಿತು. ಸಂಪತ್ತು ತುಳುಕಾಡಿತು.

ಸೊಸೆಗೆ ತಾಯಿತಂದೆಗಳಿಗೆ ಮಗಳನ್ನು ನೋಡಬೇಕೆಂಬ ಇಚ್ಛೆಯಾಯಿತು. ಅಷ್ಟರಾಗೇ ಮಗಳು ತವರೂರಿಗೂ ಗಂಡನೂರಿಗೂ ನಡುವೆ ಸಾಲಾಗಿ ಗಿಡ ಹಚ್ಚಿಸಿದಳು. ಹಾದಿಯಲ್ಲೆಲ್ಲ ನೆರಳಾಯಿತು. ಬಾವಿ ಹೊಡಿಸಿದಳು. ಬೀದಿಯಲ್ಲೆಲ್ಲಾ ನೀರಾಯ್ತು. ತಾಯಿತಂದೆ ಬಂದು ನೋಡಿದರು, ಮನೆಯಲ್ಲಿ ಅನಾಜ ಬೇಕಾದಷ್ಟು ಅದ. ಸಂದುಕ ತುಂಬಾ ಪೈಸಾ ಅದ. ಇದನ್ನೆಲ್ಲ ನೋಡಿ ತಾಯಿತಂದಿ ಹಿರಿಹಿರಿ ಹಿಗ್ಗು ಪಟ್ಟರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...