ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು ಹತ್ತಿ ನಡೆಯಿಸತೊಡಗಿದರೆ ಕುದುರೆಯ ಬೆನ್ನು ಬಾಗಿ ಬಿಲ್ಲಾಗುತ್ತಿತ್ತು.

ಕೊರಕಲಮಟ್ಟಿಗೆ ಬರುವುದಕ್ಕೆ ಯಾವ ದಾರಿಯೂ ಅನುಕೂಲವಾಗಿಲ್ಲ. ನಡೆಯುತ್ತಲೇ ಬರಬೇಕು. ಇಲ್ಲವೆ ಕುದುರೆ ಹತ್ತಿ ಬರಬೇಕು. ಜಾಫರಖಾನ ಫೌಜದಾರರು ಕುದುರೆ ಸಾಕಿದ್ದರಿಂದಲೇ ಕೊರಕಲಮಟ್ಟಿಗೆ ಬರಲು ಸಾಧ್ಯವಾಯಿತು.

ಬೆಳಗಾಗುವ ಹೊತ್ತಿಗೆ ಚಾವಡಿ ಮುಂದಿನ ಕುದುರೆಯನ್ನು ಬಿಚ್ಚಿಕೊಂಡು ಓಲೆಕಾರನು ಮುಂದೆ ಸಾಗಿದನು. ಅಗಸೆಯ ಹೊರಗಿರುವ ಹನುಮಪ್ಪನ ಹಾಳು ಗುಡಿಯ ಕಲ್ಲುಡಿಗ್ಗೆಯ ಬಳಿಯಲ್ಲಿ ನಿಲ್ಲಿಸಿದನು. ಏಳುಗೇಣಿನ ಕುದುರೆಯಾದ್ದರಿಂದ ಮೇಲೆ ಹತ್ತುವವರಿಗೆ ಆನುಗಲ್ಲು ಅಥವಾ ಕಟ್ಟೆ ಅವಶ್ಯವಾಗಿ ಬೇಕು.

ಗುಡಿಯ ಮಗ್ಗುಲಿಗೆ ಅಸ್ತವ್ಯಸ್ತವಾಗಿ ಬಿದ್ದ ಕಲ್ಲುಗಳಲ್ಲಿ ಒಂದನ್ನೇರಿ ನಿಂತು ಕುದುರೆಯನ್ನು ಜಿಗಿದು ಹತ್ತಿದರು. ಆ ಇಸಲಿಗೆ ಕಾಲಕೆಳಗಿನ ಕಲ್ಲು ಉರುಳಿಬಿತ್ತು. ಗೌಡ ಓಲೆಕಾರರು ಮಾಡಿದ ಮುಜುರೆಯನ್ನು ಸ್ವೀಕರಿಸುತ್ತ ಫೌಜದಾರರು ಕುದುರೆಯನ್ನು ಓಡಿಸಿದರು.

ಅಂದು ರಾತ್ರಿ ಊರಗೌಡರ ಕನಸಿನಲ್ಲಿ ಹನುಮಪ್ಪನು ಕಾಣಿಸಿಕೊಂಡು ಅವನನ್ನು ಗಟ್ಟಿಯಾಗಿ ಹಿಡಿದನು.

“ಏಕೆ ದೇವಾ, ಕನಸಿನಲ್ಲಿ ದರ್ಶನಕೊಟ್ಟಿರಲ್ಲ” ಎಂದು ವಿನಯದಿಂದ ಗೌಡ ಕೇಳಿದನು.

“ಗೌಡ, ಒಳ್ಳೆಯ ಮಾತಿನಿಂದ ಎಣ್ಣೆ ಮಜ್ಜನ ಮಾಡಿಸುವೆಯೋ ಇಲ್ಲವೋ ನಿನ್ನ ಕುತ್ತಿಗೆ ಹಿಸುಕಲೋ?” ಎಂದನು ಹನುಮಪ್ಪ. “ನನ್ನ ಮೇಲೇಕೆ ಸಿಟ್ಟು ದೇವಾ? ನಾನಾವ ಅಪರಾಧ ಮಾಡಿದೆ?”

“ನನ್ನ ಸೊಂಟ ನೋವಾಗಿದೆ.”

“ಸೊಂಟ ನೋವು ಏಕಾಯಿತು ?” ಗೌಡನ ಪ್ರಶ್ನೆ.

“ಬಂದಿದ್ದನಲ್ಲ ನಿಮ್ಮ ಫೌಜುದಾರ. ತನ್ನೂರಿಗೆ ಹೋಗುವಾಗ ಕುದುರೆ ಹತ್ತುವ ಮು೦ದೆ ನನ್ನ ಮೇಲೆ ಕಾಲಿಟ್ಟು ನೆಗೆದು ಕುದುರೆ ಹತ್ತಿದನು. ಆ ಇಸಲಿಗೆ ಸೊಂಟ ನೋವು ಆಗಿದೆ” ಹನುಮಪ್ಪನ ವಿವರಣೆ.

“ಆ ಫೌಜದಾರನನ್ನು ಬಿಟ್ಟು ನನ್ನನ್ನೇಕೆ ಹಿಡಿದಿರಿ ದೇವಾ?”

“ಯಾರನ್ನು ಹಿಡಿಯಲಿ ? ಫೌಜದಾರನು ನನ್ನ ಭಕ್ತನೇ ? ಭಕ್ತರನ್ನು ಬಿಟ್ಟು ಅನ್ಯರನ್ನು ನಾನೇಕೆ ಹಿಡಿಯಲಿ” ಹನುಮಂತದೇವರ ಸ್ಪಷ್ಟೀಕರಣ. “ಬೆಳಗಾಗುತ್ತಲೆ ಎಣ್ಣಿ ಮಜ್ಜನ ಮಾಡಿಸುತ್ತೇನೆ. ತಾಳು ದೇವ” ಎಂದು ಗೌಡನು ಕಾಲಿಗೆರಗಲು ಹನುಮಪ್ಪನು ಅವನನ್ನು ಬಿಟ್ಟುಕೊಟ್ಟನು.

ಕನಸಿನಲ್ಲಿ ಮಾತುಕೊಟ್ಟ ಪ್ರಕಾರ ಗೌಡನು, ಮಗಿ ಎಣ್ಣೆ ತರಿಸಿ ಹನುಮಪ್ಪ ದೇವರಿಗೆ ಎಣ್ಣೆ ಮಜ್ಜನ ಮಾಡಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೭೩
Next post ಸಂಧಿ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…