Home / ಕಥೆ / ಜನಪದ / ಸೊಂಟನೋವಿಗೆ ಎಣ್ಣೆ ಮಜ್ಜನ

ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು ಹತ್ತಿ ನಡೆಯಿಸತೊಡಗಿದರೆ ಕುದುರೆಯ ಬೆನ್ನು ಬಾಗಿ ಬಿಲ್ಲಾಗುತ್ತಿತ್ತು.

ಕೊರಕಲಮಟ್ಟಿಗೆ ಬರುವುದಕ್ಕೆ ಯಾವ ದಾರಿಯೂ ಅನುಕೂಲವಾಗಿಲ್ಲ. ನಡೆಯುತ್ತಲೇ ಬರಬೇಕು. ಇಲ್ಲವೆ ಕುದುರೆ ಹತ್ತಿ ಬರಬೇಕು. ಜಾಫರಖಾನ ಫೌಜದಾರರು ಕುದುರೆ ಸಾಕಿದ್ದರಿಂದಲೇ ಕೊರಕಲಮಟ್ಟಿಗೆ ಬರಲು ಸಾಧ್ಯವಾಯಿತು.

ಬೆಳಗಾಗುವ ಹೊತ್ತಿಗೆ ಚಾವಡಿ ಮುಂದಿನ ಕುದುರೆಯನ್ನು ಬಿಚ್ಚಿಕೊಂಡು ಓಲೆಕಾರನು ಮುಂದೆ ಸಾಗಿದನು. ಅಗಸೆಯ ಹೊರಗಿರುವ ಹನುಮಪ್ಪನ ಹಾಳು ಗುಡಿಯ ಕಲ್ಲುಡಿಗ್ಗೆಯ ಬಳಿಯಲ್ಲಿ ನಿಲ್ಲಿಸಿದನು. ಏಳುಗೇಣಿನ ಕುದುರೆಯಾದ್ದರಿಂದ ಮೇಲೆ ಹತ್ತುವವರಿಗೆ ಆನುಗಲ್ಲು ಅಥವಾ ಕಟ್ಟೆ ಅವಶ್ಯವಾಗಿ ಬೇಕು.

ಗುಡಿಯ ಮಗ್ಗುಲಿಗೆ ಅಸ್ತವ್ಯಸ್ತವಾಗಿ ಬಿದ್ದ ಕಲ್ಲುಗಳಲ್ಲಿ ಒಂದನ್ನೇರಿ ನಿಂತು ಕುದುರೆಯನ್ನು ಜಿಗಿದು ಹತ್ತಿದರು. ಆ ಇಸಲಿಗೆ ಕಾಲಕೆಳಗಿನ ಕಲ್ಲು ಉರುಳಿಬಿತ್ತು. ಗೌಡ ಓಲೆಕಾರರು ಮಾಡಿದ ಮುಜುರೆಯನ್ನು ಸ್ವೀಕರಿಸುತ್ತ ಫೌಜದಾರರು ಕುದುರೆಯನ್ನು ಓಡಿಸಿದರು.

ಅಂದು ರಾತ್ರಿ ಊರಗೌಡರ ಕನಸಿನಲ್ಲಿ ಹನುಮಪ್ಪನು ಕಾಣಿಸಿಕೊಂಡು ಅವನನ್ನು ಗಟ್ಟಿಯಾಗಿ ಹಿಡಿದನು.

“ಏಕೆ ದೇವಾ, ಕನಸಿನಲ್ಲಿ ದರ್ಶನಕೊಟ್ಟಿರಲ್ಲ” ಎಂದು ವಿನಯದಿಂದ ಗೌಡ ಕೇಳಿದನು.

“ಗೌಡ, ಒಳ್ಳೆಯ ಮಾತಿನಿಂದ ಎಣ್ಣೆ ಮಜ್ಜನ ಮಾಡಿಸುವೆಯೋ ಇಲ್ಲವೋ ನಿನ್ನ ಕುತ್ತಿಗೆ ಹಿಸುಕಲೋ?” ಎಂದನು ಹನುಮಪ್ಪ. “ನನ್ನ ಮೇಲೇಕೆ ಸಿಟ್ಟು ದೇವಾ? ನಾನಾವ ಅಪರಾಧ ಮಾಡಿದೆ?”

“ನನ್ನ ಸೊಂಟ ನೋವಾಗಿದೆ.”

“ಸೊಂಟ ನೋವು ಏಕಾಯಿತು ?” ಗೌಡನ ಪ್ರಶ್ನೆ.

“ಬಂದಿದ್ದನಲ್ಲ ನಿಮ್ಮ ಫೌಜುದಾರ. ತನ್ನೂರಿಗೆ ಹೋಗುವಾಗ ಕುದುರೆ ಹತ್ತುವ ಮು೦ದೆ ನನ್ನ ಮೇಲೆ ಕಾಲಿಟ್ಟು ನೆಗೆದು ಕುದುರೆ ಹತ್ತಿದನು. ಆ ಇಸಲಿಗೆ ಸೊಂಟ ನೋವು ಆಗಿದೆ” ಹನುಮಪ್ಪನ ವಿವರಣೆ.

“ಆ ಫೌಜದಾರನನ್ನು ಬಿಟ್ಟು ನನ್ನನ್ನೇಕೆ ಹಿಡಿದಿರಿ ದೇವಾ?”

“ಯಾರನ್ನು ಹಿಡಿಯಲಿ ? ಫೌಜದಾರನು ನನ್ನ ಭಕ್ತನೇ ? ಭಕ್ತರನ್ನು ಬಿಟ್ಟು ಅನ್ಯರನ್ನು ನಾನೇಕೆ ಹಿಡಿಯಲಿ” ಹನುಮಂತದೇವರ ಸ್ಪಷ್ಟೀಕರಣ. “ಬೆಳಗಾಗುತ್ತಲೆ ಎಣ್ಣಿ ಮಜ್ಜನ ಮಾಡಿಸುತ್ತೇನೆ. ತಾಳು ದೇವ” ಎಂದು ಗೌಡನು ಕಾಲಿಗೆರಗಲು ಹನುಮಪ್ಪನು ಅವನನ್ನು ಬಿಟ್ಟುಕೊಟ್ಟನು.

ಕನಸಿನಲ್ಲಿ ಮಾತುಕೊಟ್ಟ ಪ್ರಕಾರ ಗೌಡನು, ಮಗಿ ಎಣ್ಣೆ ತರಿಸಿ ಹನುಮಪ್ಪ ದೇವರಿಗೆ ಎಣ್ಣೆ ಮಜ್ಜನ ಮಾಡಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...