Home / ಕಥೆ / ಜನಪದ / ಸೊಂಟನೋವಿಗೆ ಎಣ್ಣೆ ಮಜ್ಜನ

ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು ಹತ್ತಿ ನಡೆಯಿಸತೊಡಗಿದರೆ ಕುದುರೆಯ ಬೆನ್ನು ಬಾಗಿ ಬಿಲ್ಲಾಗುತ್ತಿತ್ತು.

ಕೊರಕಲಮಟ್ಟಿಗೆ ಬರುವುದಕ್ಕೆ ಯಾವ ದಾರಿಯೂ ಅನುಕೂಲವಾಗಿಲ್ಲ. ನಡೆಯುತ್ತಲೇ ಬರಬೇಕು. ಇಲ್ಲವೆ ಕುದುರೆ ಹತ್ತಿ ಬರಬೇಕು. ಜಾಫರಖಾನ ಫೌಜದಾರರು ಕುದುರೆ ಸಾಕಿದ್ದರಿಂದಲೇ ಕೊರಕಲಮಟ್ಟಿಗೆ ಬರಲು ಸಾಧ್ಯವಾಯಿತು.

ಬೆಳಗಾಗುವ ಹೊತ್ತಿಗೆ ಚಾವಡಿ ಮುಂದಿನ ಕುದುರೆಯನ್ನು ಬಿಚ್ಚಿಕೊಂಡು ಓಲೆಕಾರನು ಮುಂದೆ ಸಾಗಿದನು. ಅಗಸೆಯ ಹೊರಗಿರುವ ಹನುಮಪ್ಪನ ಹಾಳು ಗುಡಿಯ ಕಲ್ಲುಡಿಗ್ಗೆಯ ಬಳಿಯಲ್ಲಿ ನಿಲ್ಲಿಸಿದನು. ಏಳುಗೇಣಿನ ಕುದುರೆಯಾದ್ದರಿಂದ ಮೇಲೆ ಹತ್ತುವವರಿಗೆ ಆನುಗಲ್ಲು ಅಥವಾ ಕಟ್ಟೆ ಅವಶ್ಯವಾಗಿ ಬೇಕು.

ಗುಡಿಯ ಮಗ್ಗುಲಿಗೆ ಅಸ್ತವ್ಯಸ್ತವಾಗಿ ಬಿದ್ದ ಕಲ್ಲುಗಳಲ್ಲಿ ಒಂದನ್ನೇರಿ ನಿಂತು ಕುದುರೆಯನ್ನು ಜಿಗಿದು ಹತ್ತಿದರು. ಆ ಇಸಲಿಗೆ ಕಾಲಕೆಳಗಿನ ಕಲ್ಲು ಉರುಳಿಬಿತ್ತು. ಗೌಡ ಓಲೆಕಾರರು ಮಾಡಿದ ಮುಜುರೆಯನ್ನು ಸ್ವೀಕರಿಸುತ್ತ ಫೌಜದಾರರು ಕುದುರೆಯನ್ನು ಓಡಿಸಿದರು.

ಅಂದು ರಾತ್ರಿ ಊರಗೌಡರ ಕನಸಿನಲ್ಲಿ ಹನುಮಪ್ಪನು ಕಾಣಿಸಿಕೊಂಡು ಅವನನ್ನು ಗಟ್ಟಿಯಾಗಿ ಹಿಡಿದನು.

“ಏಕೆ ದೇವಾ, ಕನಸಿನಲ್ಲಿ ದರ್ಶನಕೊಟ್ಟಿರಲ್ಲ” ಎಂದು ವಿನಯದಿಂದ ಗೌಡ ಕೇಳಿದನು.

“ಗೌಡ, ಒಳ್ಳೆಯ ಮಾತಿನಿಂದ ಎಣ್ಣೆ ಮಜ್ಜನ ಮಾಡಿಸುವೆಯೋ ಇಲ್ಲವೋ ನಿನ್ನ ಕುತ್ತಿಗೆ ಹಿಸುಕಲೋ?” ಎಂದನು ಹನುಮಪ್ಪ. “ನನ್ನ ಮೇಲೇಕೆ ಸಿಟ್ಟು ದೇವಾ? ನಾನಾವ ಅಪರಾಧ ಮಾಡಿದೆ?”

“ನನ್ನ ಸೊಂಟ ನೋವಾಗಿದೆ.”

“ಸೊಂಟ ನೋವು ಏಕಾಯಿತು ?” ಗೌಡನ ಪ್ರಶ್ನೆ.

“ಬಂದಿದ್ದನಲ್ಲ ನಿಮ್ಮ ಫೌಜುದಾರ. ತನ್ನೂರಿಗೆ ಹೋಗುವಾಗ ಕುದುರೆ ಹತ್ತುವ ಮು೦ದೆ ನನ್ನ ಮೇಲೆ ಕಾಲಿಟ್ಟು ನೆಗೆದು ಕುದುರೆ ಹತ್ತಿದನು. ಆ ಇಸಲಿಗೆ ಸೊಂಟ ನೋವು ಆಗಿದೆ” ಹನುಮಪ್ಪನ ವಿವರಣೆ.

“ಆ ಫೌಜದಾರನನ್ನು ಬಿಟ್ಟು ನನ್ನನ್ನೇಕೆ ಹಿಡಿದಿರಿ ದೇವಾ?”

“ಯಾರನ್ನು ಹಿಡಿಯಲಿ ? ಫೌಜದಾರನು ನನ್ನ ಭಕ್ತನೇ ? ಭಕ್ತರನ್ನು ಬಿಟ್ಟು ಅನ್ಯರನ್ನು ನಾನೇಕೆ ಹಿಡಿಯಲಿ” ಹನುಮಂತದೇವರ ಸ್ಪಷ್ಟೀಕರಣ. “ಬೆಳಗಾಗುತ್ತಲೆ ಎಣ್ಣಿ ಮಜ್ಜನ ಮಾಡಿಸುತ್ತೇನೆ. ತಾಳು ದೇವ” ಎಂದು ಗೌಡನು ಕಾಲಿಗೆರಗಲು ಹನುಮಪ್ಪನು ಅವನನ್ನು ಬಿಟ್ಟುಕೊಟ್ಟನು.

ಕನಸಿನಲ್ಲಿ ಮಾತುಕೊಟ್ಟ ಪ್ರಕಾರ ಗೌಡನು, ಮಗಿ ಎಣ್ಣೆ ತರಿಸಿ ಹನುಮಪ್ಪ ದೇವರಿಗೆ ಎಣ್ಣೆ ಮಜ್ಜನ ಮಾಡಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...