Home / ಕಥೆ / ಜನಪದ / ಸೊಂಟನೋವಿಗೆ ಎಣ್ಣೆ ಮಜ್ಜನ

ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು ಹತ್ತಿ ನಡೆಯಿಸತೊಡಗಿದರೆ ಕುದುರೆಯ ಬೆನ್ನು ಬಾಗಿ ಬಿಲ್ಲಾಗುತ್ತಿತ್ತು.

ಕೊರಕಲಮಟ್ಟಿಗೆ ಬರುವುದಕ್ಕೆ ಯಾವ ದಾರಿಯೂ ಅನುಕೂಲವಾಗಿಲ್ಲ. ನಡೆಯುತ್ತಲೇ ಬರಬೇಕು. ಇಲ್ಲವೆ ಕುದುರೆ ಹತ್ತಿ ಬರಬೇಕು. ಜಾಫರಖಾನ ಫೌಜದಾರರು ಕುದುರೆ ಸಾಕಿದ್ದರಿಂದಲೇ ಕೊರಕಲಮಟ್ಟಿಗೆ ಬರಲು ಸಾಧ್ಯವಾಯಿತು.

ಬೆಳಗಾಗುವ ಹೊತ್ತಿಗೆ ಚಾವಡಿ ಮುಂದಿನ ಕುದುರೆಯನ್ನು ಬಿಚ್ಚಿಕೊಂಡು ಓಲೆಕಾರನು ಮುಂದೆ ಸಾಗಿದನು. ಅಗಸೆಯ ಹೊರಗಿರುವ ಹನುಮಪ್ಪನ ಹಾಳು ಗುಡಿಯ ಕಲ್ಲುಡಿಗ್ಗೆಯ ಬಳಿಯಲ್ಲಿ ನಿಲ್ಲಿಸಿದನು. ಏಳುಗೇಣಿನ ಕುದುರೆಯಾದ್ದರಿಂದ ಮೇಲೆ ಹತ್ತುವವರಿಗೆ ಆನುಗಲ್ಲು ಅಥವಾ ಕಟ್ಟೆ ಅವಶ್ಯವಾಗಿ ಬೇಕು.

ಗುಡಿಯ ಮಗ್ಗುಲಿಗೆ ಅಸ್ತವ್ಯಸ್ತವಾಗಿ ಬಿದ್ದ ಕಲ್ಲುಗಳಲ್ಲಿ ಒಂದನ್ನೇರಿ ನಿಂತು ಕುದುರೆಯನ್ನು ಜಿಗಿದು ಹತ್ತಿದರು. ಆ ಇಸಲಿಗೆ ಕಾಲಕೆಳಗಿನ ಕಲ್ಲು ಉರುಳಿಬಿತ್ತು. ಗೌಡ ಓಲೆಕಾರರು ಮಾಡಿದ ಮುಜುರೆಯನ್ನು ಸ್ವೀಕರಿಸುತ್ತ ಫೌಜದಾರರು ಕುದುರೆಯನ್ನು ಓಡಿಸಿದರು.

ಅಂದು ರಾತ್ರಿ ಊರಗೌಡರ ಕನಸಿನಲ್ಲಿ ಹನುಮಪ್ಪನು ಕಾಣಿಸಿಕೊಂಡು ಅವನನ್ನು ಗಟ್ಟಿಯಾಗಿ ಹಿಡಿದನು.

“ಏಕೆ ದೇವಾ, ಕನಸಿನಲ್ಲಿ ದರ್ಶನಕೊಟ್ಟಿರಲ್ಲ” ಎಂದು ವಿನಯದಿಂದ ಗೌಡ ಕೇಳಿದನು.

“ಗೌಡ, ಒಳ್ಳೆಯ ಮಾತಿನಿಂದ ಎಣ್ಣೆ ಮಜ್ಜನ ಮಾಡಿಸುವೆಯೋ ಇಲ್ಲವೋ ನಿನ್ನ ಕುತ್ತಿಗೆ ಹಿಸುಕಲೋ?” ಎಂದನು ಹನುಮಪ್ಪ. “ನನ್ನ ಮೇಲೇಕೆ ಸಿಟ್ಟು ದೇವಾ? ನಾನಾವ ಅಪರಾಧ ಮಾಡಿದೆ?”

“ನನ್ನ ಸೊಂಟ ನೋವಾಗಿದೆ.”

“ಸೊಂಟ ನೋವು ಏಕಾಯಿತು ?” ಗೌಡನ ಪ್ರಶ್ನೆ.

“ಬಂದಿದ್ದನಲ್ಲ ನಿಮ್ಮ ಫೌಜುದಾರ. ತನ್ನೂರಿಗೆ ಹೋಗುವಾಗ ಕುದುರೆ ಹತ್ತುವ ಮು೦ದೆ ನನ್ನ ಮೇಲೆ ಕಾಲಿಟ್ಟು ನೆಗೆದು ಕುದುರೆ ಹತ್ತಿದನು. ಆ ಇಸಲಿಗೆ ಸೊಂಟ ನೋವು ಆಗಿದೆ” ಹನುಮಪ್ಪನ ವಿವರಣೆ.

“ಆ ಫೌಜದಾರನನ್ನು ಬಿಟ್ಟು ನನ್ನನ್ನೇಕೆ ಹಿಡಿದಿರಿ ದೇವಾ?”

“ಯಾರನ್ನು ಹಿಡಿಯಲಿ ? ಫೌಜದಾರನು ನನ್ನ ಭಕ್ತನೇ ? ಭಕ್ತರನ್ನು ಬಿಟ್ಟು ಅನ್ಯರನ್ನು ನಾನೇಕೆ ಹಿಡಿಯಲಿ” ಹನುಮಂತದೇವರ ಸ್ಪಷ್ಟೀಕರಣ. “ಬೆಳಗಾಗುತ್ತಲೆ ಎಣ್ಣಿ ಮಜ್ಜನ ಮಾಡಿಸುತ್ತೇನೆ. ತಾಳು ದೇವ” ಎಂದು ಗೌಡನು ಕಾಲಿಗೆರಗಲು ಹನುಮಪ್ಪನು ಅವನನ್ನು ಬಿಟ್ಟುಕೊಟ್ಟನು.

ಕನಸಿನಲ್ಲಿ ಮಾತುಕೊಟ್ಟ ಪ್ರಕಾರ ಗೌಡನು, ಮಗಿ ಎಣ್ಣೆ ತರಿಸಿ ಹನುಮಪ್ಪ ದೇವರಿಗೆ ಎಣ್ಣೆ ಮಜ್ಜನ ಮಾಡಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...