Home / ಕಥೆ / ಜನಪದ / ಸೊಂಟನೋವಿಗೆ ಎಣ್ಣೆ ಮಜ್ಜನ

ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು ಹತ್ತಿ ನಡೆಯಿಸತೊಡಗಿದರೆ ಕುದುರೆಯ ಬೆನ್ನು ಬಾಗಿ ಬಿಲ್ಲಾಗುತ್ತಿತ್ತು.

ಕೊರಕಲಮಟ್ಟಿಗೆ ಬರುವುದಕ್ಕೆ ಯಾವ ದಾರಿಯೂ ಅನುಕೂಲವಾಗಿಲ್ಲ. ನಡೆಯುತ್ತಲೇ ಬರಬೇಕು. ಇಲ್ಲವೆ ಕುದುರೆ ಹತ್ತಿ ಬರಬೇಕು. ಜಾಫರಖಾನ ಫೌಜದಾರರು ಕುದುರೆ ಸಾಕಿದ್ದರಿಂದಲೇ ಕೊರಕಲಮಟ್ಟಿಗೆ ಬರಲು ಸಾಧ್ಯವಾಯಿತು.

ಬೆಳಗಾಗುವ ಹೊತ್ತಿಗೆ ಚಾವಡಿ ಮುಂದಿನ ಕುದುರೆಯನ್ನು ಬಿಚ್ಚಿಕೊಂಡು ಓಲೆಕಾರನು ಮುಂದೆ ಸಾಗಿದನು. ಅಗಸೆಯ ಹೊರಗಿರುವ ಹನುಮಪ್ಪನ ಹಾಳು ಗುಡಿಯ ಕಲ್ಲುಡಿಗ್ಗೆಯ ಬಳಿಯಲ್ಲಿ ನಿಲ್ಲಿಸಿದನು. ಏಳುಗೇಣಿನ ಕುದುರೆಯಾದ್ದರಿಂದ ಮೇಲೆ ಹತ್ತುವವರಿಗೆ ಆನುಗಲ್ಲು ಅಥವಾ ಕಟ್ಟೆ ಅವಶ್ಯವಾಗಿ ಬೇಕು.

ಗುಡಿಯ ಮಗ್ಗುಲಿಗೆ ಅಸ್ತವ್ಯಸ್ತವಾಗಿ ಬಿದ್ದ ಕಲ್ಲುಗಳಲ್ಲಿ ಒಂದನ್ನೇರಿ ನಿಂತು ಕುದುರೆಯನ್ನು ಜಿಗಿದು ಹತ್ತಿದರು. ಆ ಇಸಲಿಗೆ ಕಾಲಕೆಳಗಿನ ಕಲ್ಲು ಉರುಳಿಬಿತ್ತು. ಗೌಡ ಓಲೆಕಾರರು ಮಾಡಿದ ಮುಜುರೆಯನ್ನು ಸ್ವೀಕರಿಸುತ್ತ ಫೌಜದಾರರು ಕುದುರೆಯನ್ನು ಓಡಿಸಿದರು.

ಅಂದು ರಾತ್ರಿ ಊರಗೌಡರ ಕನಸಿನಲ್ಲಿ ಹನುಮಪ್ಪನು ಕಾಣಿಸಿಕೊಂಡು ಅವನನ್ನು ಗಟ್ಟಿಯಾಗಿ ಹಿಡಿದನು.

“ಏಕೆ ದೇವಾ, ಕನಸಿನಲ್ಲಿ ದರ್ಶನಕೊಟ್ಟಿರಲ್ಲ” ಎಂದು ವಿನಯದಿಂದ ಗೌಡ ಕೇಳಿದನು.

“ಗೌಡ, ಒಳ್ಳೆಯ ಮಾತಿನಿಂದ ಎಣ್ಣೆ ಮಜ್ಜನ ಮಾಡಿಸುವೆಯೋ ಇಲ್ಲವೋ ನಿನ್ನ ಕುತ್ತಿಗೆ ಹಿಸುಕಲೋ?” ಎಂದನು ಹನುಮಪ್ಪ. “ನನ್ನ ಮೇಲೇಕೆ ಸಿಟ್ಟು ದೇವಾ? ನಾನಾವ ಅಪರಾಧ ಮಾಡಿದೆ?”

“ನನ್ನ ಸೊಂಟ ನೋವಾಗಿದೆ.”

“ಸೊಂಟ ನೋವು ಏಕಾಯಿತು ?” ಗೌಡನ ಪ್ರಶ್ನೆ.

“ಬಂದಿದ್ದನಲ್ಲ ನಿಮ್ಮ ಫೌಜುದಾರ. ತನ್ನೂರಿಗೆ ಹೋಗುವಾಗ ಕುದುರೆ ಹತ್ತುವ ಮು೦ದೆ ನನ್ನ ಮೇಲೆ ಕಾಲಿಟ್ಟು ನೆಗೆದು ಕುದುರೆ ಹತ್ತಿದನು. ಆ ಇಸಲಿಗೆ ಸೊಂಟ ನೋವು ಆಗಿದೆ” ಹನುಮಪ್ಪನ ವಿವರಣೆ.

“ಆ ಫೌಜದಾರನನ್ನು ಬಿಟ್ಟು ನನ್ನನ್ನೇಕೆ ಹಿಡಿದಿರಿ ದೇವಾ?”

“ಯಾರನ್ನು ಹಿಡಿಯಲಿ ? ಫೌಜದಾರನು ನನ್ನ ಭಕ್ತನೇ ? ಭಕ್ತರನ್ನು ಬಿಟ್ಟು ಅನ್ಯರನ್ನು ನಾನೇಕೆ ಹಿಡಿಯಲಿ” ಹನುಮಂತದೇವರ ಸ್ಪಷ್ಟೀಕರಣ. “ಬೆಳಗಾಗುತ್ತಲೆ ಎಣ್ಣಿ ಮಜ್ಜನ ಮಾಡಿಸುತ್ತೇನೆ. ತಾಳು ದೇವ” ಎಂದು ಗೌಡನು ಕಾಲಿಗೆರಗಲು ಹನುಮಪ್ಪನು ಅವನನ್ನು ಬಿಟ್ಟುಕೊಟ್ಟನು.

ಕನಸಿನಲ್ಲಿ ಮಾತುಕೊಟ್ಟ ಪ್ರಕಾರ ಗೌಡನು, ಮಗಿ ಎಣ್ಣೆ ತರಿಸಿ ಹನುಮಪ್ಪ ದೇವರಿಗೆ ಎಣ್ಣೆ ಮಜ್ಜನ ಮಾಡಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...