Home / ಕಥೆ / ಜನಪದ / ರಾತ್ರಿರಾಜ

ರಾತ್ರಿರಾಜ

ಭೂಲೋಕದಿಂದ ತನ್ನ ಕಡೆಗೆ ಬಂದ ವಿಪುಲ ಅರ್ಜಿಗಳ ಒಟ್ಟಣೆಯನ್ನು ನೋಡಿ, ಅವುಗಳಿಗೆಲ್ಲ ಉತ್ತರ ಬರೆಯಿಸುತ್ತ ಕುಳಿತುಕೊಳ್ಳುವುದಕ್ಕಿಂತ ಸ್ವತಃ ಭೂಲೋಕಕ್ಕೆ ಹೋಗಿ, ಅಲ್ಲಿಯವರಿಗೆ ಬೇಕಾದ ಪರಿಹಾರವನ್ನು ಒದಗಿಸಿ ಬರುವುದು ಲೇಸೆಂದು ಬಗೆದು ಬ್ರಹ್ಮದೇವನು ತನ್ನ ಸಿಬ್ಬಂದಿಯೊಡನೆ ಪೃಥ್ವಿಗಿಳಿದನು. ಅರ್ಜಿದಾರರಿಗೆ ಕೊಡಬೇಕಾದ ಪರಿಹಾರಗಳನ್ನೂ ಹೊತ್ತುತಂದನು.

ಊರಮುಂದಿನ  ಧರ್ಮಶಾಲೆಯಲ್ಲಿ ಬೀಡುಬಿಟ್ಟು ಊರಲ್ಲೆಲ್ಲ ಡಂಗುರ ಹೊಡಿಸಿದನು. “ಯಾರಾರ ಬೇಡಿಕೆ ಏನೇನಿದೆಯೆಂಬುದನ್ನು ಸಮಕ್ಷಮದಲ್ಲಿ ತಿಳಿಸಿ ಪರಿಹಾರ ಪಡೆಯಬೇಕು” ಎನ್ನುವ ಸುದ್ಧಿ ಕಣ್ಣುಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಊರವರಿಗೆ ತಿಳಿದುಬ೦ತು.

ಮರುದಿನ ಮುಂಜಾನೆ ಧರ್ಮಶಾಲೆಯತ್ತ ಜನರು ಸಾಲುಗಟ್ಟಿ ಸಾಗಿಯೇ ಸಾಗಿದರು. ತಮ್ಮ ಬೇಡಿಕೆಗಳನ್ನು ಬ್ರಹ್ಮದೇವನ ಮುಂದಿಟ್ಟರು. ಬ್ರಷ್ಮದೇವನಾದರೂ ಯಾರನ್ನೂ ಬರಿಗೈಯಿಂದ ಕಳಿಸದೆ, ಕೈಸಡಿಲು ಬಿಟ್ಟು ಕೇಳಿದವರಿಗೆ ತೃಪ್ತಿಯಾಗುವಂತೆ ಅವರವರ ಬೇಡಿಕೆಗಳನ್ನು ಪೂರಯಿಸಿದನು. ಸಂತ್ರಸ್ತರಲ್ಲಿ ಕೆಲವರಿಗೆ ಹೊಲ ಸಿಕ್ಕವು. ಕೆಲವರಿಗೆ ಮನೆ ಸಿಕ್ಕವು. ಹಿಂಡುವ ಎಮ್ಮೆ ಕೆಲವರಿಗೆ, ಹೂಡುವ ಎತ್ತು ಕೆಲವರಿಗೆ ದೊರೆತವು. ಕುದುರೆ ಬೇಡಿದವರಿಗೆ ಕುದುರೆ, ಗಾಡಿ ಬೇಡಿದವರಿಗೆ ಗಾಡಿ, ಪ್ರಾಯ ಬೇಡಿದರೂ ಸಿಕ್ಕಿತು. ಆರೋಗ್ಯ ಬೇಡಿದರೂ ಸಿಕ್ಕಿತು. ಚೆಲುವಿಕೆ – ಆಭರಣಗಳನ್ನೂ ಬ್ರಹ್ಮದೇವನು ಇಲ್ಲೆನ್ನದೆ ಕೊಟ್ಟೇಕೊಟ್ಟನು.

ದೀಪ ಹಚ್ಚುವ ವೇಳೆಯಾಯಿತು. ಬಡ ನೇಕಾರನೊಬ್ಬನು ಧರ್ಮಶಾಲೆಗೆ ಬಂದು, ಬ್ರಹ್ಮದೇವರಿಗೆ ಕೈಮುಗಿದು ನಿಂತನು.

“ಏನು ಬೇಕಾಗಿತ್ತು ನಿನಗೆ” ಎಂದು ಕೇಳಿದನು ಬ್ರಹ್ಮದೇವ.

“ನನಗೆ ಅರಸೊತ್ತಿಗೆಯನ್ನು ಕೊಟ್ಟುಬಿಡಿರಿ” ಎಂದನು ಆ ನೇಕಾರ.

“ತೀವ್ರ ಏಕೆ ಬರಲಿಲ್ಲ ನೀನು ?”

“ಮಗ್ಗದ ಮೇಲಿನ ಸೀರೆ ನೆಯ್ದು ಮುಗಿಸ್ಲಬೇಕಾಗಿತ್ತು. ಆದ್ದರಿಂದ ತಡವಾಯಿತು” ಎಂದು ನೇಕಾರನು ಕೈತಿಕ್ಕುತ್ತ ನುಡಿದು ಮುಗಿಸಿದನು.

“ನಾನು ಕೊಡಬೇಕಾದ ಅರಸೊತ್ತಿಗೆಗಳೆಲ್ಲ ತೀರಿಹೋದವು. ಮತ್ತೇನಾದರು ಕೇಳಿಕೋ ಕೊಡುವೆನು.”

“ನನಗೆ ಅರಸೂತ್ತಿಗೆಯೇ ಬೇಕಾಗಿತ್ತು” ನೇಕಾರನು ತಡವರಿಸುತ್ತ ಹೇಳಿದನು.  ಬ್ರಹ್ಮದೇವನು ಕೆಲಹೊತ್ತು ವಿಚಾರಮಗ್ನನಾಗಿ ಆ ಬಳಿಕ ಹೇಳಿದನು –

“ರಾತ್ರಿರಾಜನಾಗುವೆಯಾ ?”

“ಆಗಲಿ. ಎಂಥದೇ ಆಗಲಿ. ರಾಜನಾದರೆ ಸಾಕು. ಕೊಟ್ಟುಬಿಡಿರಿ” ಎಂದು ಹಿರಿಹಿಗ್ಗಿನಲ್ಲಿ ಕೇಳಿದನು.

“ಕೊಟ್ಟಿದೆ ಹೋಗು” ಎಂದನು ಬ್ರಹ್ಮದೇವ.

*     *     *

ಹಳ್ಳಿಯ ಬಯಲಾಟದ ಮೇಳದವರು ಪ್ರತಿಯೊಂದು ಆಟದಲ್ಲಿ ಆ ನೇಕಾರನಿಗೇ ರಾಜನ ಸೋಗು ಕೊಡತೊಡಗಿದರು. ಬಡ ನೇಕಾರನು ದುಡಿದು ದುಡಿದು ಬಡಕಲಾಗಿದ್ದನು. ಗಲ್ಲಗಳೆಲ್ಲ ಕರಗಿ ದವಡಿಗೆ ಹತ್ತಿದ್ದವು. ಕಣ್ಣು ಒಳಸೇರಿದ್ದವು. ಅವು ಅಸಹ್ಯವಾಗಿ ಕಾಣಿಸಬಾರದೆಂದು ನೇಕಾರನು ಕಣ್ಣಿಗೆ ಬಣ್ಣದ ಕನ್ನಡಕ ಧರಿಸುವನು. ಗಲ್ಲಮೀಸೆ ಹಚ್ಚಿಕೊಳ್ಳುವನು. ಅದಕ್ಕಾಗಿ ಮೇಳದವರು ಬಣ್ಣದ ಕೋಣೆಯಲ್ಲಿ ಹರಕಲಾದ ಒಂದು ಉಣ್ಣೆಯ ಝಾನ (ಥಡಿ) ತಂದಿಟ್ಟರು. ಬಟ್ಟಲಲ್ಲಿ ಅರೆದ ಅಂಟು ನೆನೆಯಿಟ್ಟರು.

ಪ್ರತಿಯೊಂದು ಸೋಗು ರಂಗಸ್ಥಳಕ್ಕೆ ಕುಣಿಯುತ್ತಲೇ ಬರುವದು. “ಝೆಂತತ ಝಣತ ಕಡಕಡ ಝೇಂತತ ಝಣತ| ತಯಾ ತೋಮ್ಲದರಿನಲಾ” ಎಂದು ತಿಲ್ಲಾಣವಾಡುವುದು ವಾಡಿಕೆಯಾಗಿದೆ. ಆದರೆ ಅದಕ್ಕೆ ಅರ್ಥವೇನು, ಯಾರಿಗೂ ತಿಳಿಯದು.

“ಝಾನ್ ತಾ | ಕಡಕಡ್ಡು ತಾ |
ಜಿಗಿತಾ | ಝಾನತಾ
ತಗೊಂಡು ಬರಲಿಲ್ಲ ಲಾ”

ಎನ್ನುವುದೇ ಆ ವೀರಾವೇಶದ ರಾಜನ ವೀರವಾಣಿ.

ಬ್ರಹ್ಮದೇವರಿತ್ತ ವರಪ್ರಸಾದದಿಂದ ನೇಕಾರನು ರಾತ್ರಿರಾಜನಾಗುತ್ತಲೇ ಬಂದನು. ಅವನ ಆ ವತನವನ್ನು ಯಾರೂ ಕಸಿದುಕೊಳ್ಳುವಂತಿಲ್ಲ. ರಾತ್ರಿರಾಜ ಅವನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...