Home / ಕಥೆ / ಜನಪದ / ರಾತ್ರಿರಾಜ

ರಾತ್ರಿರಾಜ

ಭೂಲೋಕದಿಂದ ತನ್ನ ಕಡೆಗೆ ಬಂದ ವಿಪುಲ ಅರ್ಜಿಗಳ ಒಟ್ಟಣೆಯನ್ನು ನೋಡಿ, ಅವುಗಳಿಗೆಲ್ಲ ಉತ್ತರ ಬರೆಯಿಸುತ್ತ ಕುಳಿತುಕೊಳ್ಳುವುದಕ್ಕಿಂತ ಸ್ವತಃ ಭೂಲೋಕಕ್ಕೆ ಹೋಗಿ, ಅಲ್ಲಿಯವರಿಗೆ ಬೇಕಾದ ಪರಿಹಾರವನ್ನು ಒದಗಿಸಿ ಬರುವುದು ಲೇಸೆಂದು ಬಗೆದು ಬ್ರಹ್ಮದೇವನು ತನ್ನ ಸಿಬ್ಬಂದಿಯೊಡನೆ ಪೃಥ್ವಿಗಿಳಿದನು. ಅರ್ಜಿದಾರರಿಗೆ ಕೊಡಬೇಕಾದ ಪರಿಹಾರಗಳನ್ನೂ ಹೊತ್ತುತಂದನು.

ಊರಮುಂದಿನ  ಧರ್ಮಶಾಲೆಯಲ್ಲಿ ಬೀಡುಬಿಟ್ಟು ಊರಲ್ಲೆಲ್ಲ ಡಂಗುರ ಹೊಡಿಸಿದನು. “ಯಾರಾರ ಬೇಡಿಕೆ ಏನೇನಿದೆಯೆಂಬುದನ್ನು ಸಮಕ್ಷಮದಲ್ಲಿ ತಿಳಿಸಿ ಪರಿಹಾರ ಪಡೆಯಬೇಕು” ಎನ್ನುವ ಸುದ್ಧಿ ಕಣ್ಣುಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಊರವರಿಗೆ ತಿಳಿದುಬ೦ತು.

ಮರುದಿನ ಮುಂಜಾನೆ ಧರ್ಮಶಾಲೆಯತ್ತ ಜನರು ಸಾಲುಗಟ್ಟಿ ಸಾಗಿಯೇ ಸಾಗಿದರು. ತಮ್ಮ ಬೇಡಿಕೆಗಳನ್ನು ಬ್ರಹ್ಮದೇವನ ಮುಂದಿಟ್ಟರು. ಬ್ರಷ್ಮದೇವನಾದರೂ ಯಾರನ್ನೂ ಬರಿಗೈಯಿಂದ ಕಳಿಸದೆ, ಕೈಸಡಿಲು ಬಿಟ್ಟು ಕೇಳಿದವರಿಗೆ ತೃಪ್ತಿಯಾಗುವಂತೆ ಅವರವರ ಬೇಡಿಕೆಗಳನ್ನು ಪೂರಯಿಸಿದನು. ಸಂತ್ರಸ್ತರಲ್ಲಿ ಕೆಲವರಿಗೆ ಹೊಲ ಸಿಕ್ಕವು. ಕೆಲವರಿಗೆ ಮನೆ ಸಿಕ್ಕವು. ಹಿಂಡುವ ಎಮ್ಮೆ ಕೆಲವರಿಗೆ, ಹೂಡುವ ಎತ್ತು ಕೆಲವರಿಗೆ ದೊರೆತವು. ಕುದುರೆ ಬೇಡಿದವರಿಗೆ ಕುದುರೆ, ಗಾಡಿ ಬೇಡಿದವರಿಗೆ ಗಾಡಿ, ಪ್ರಾಯ ಬೇಡಿದರೂ ಸಿಕ್ಕಿತು. ಆರೋಗ್ಯ ಬೇಡಿದರೂ ಸಿಕ್ಕಿತು. ಚೆಲುವಿಕೆ – ಆಭರಣಗಳನ್ನೂ ಬ್ರಹ್ಮದೇವನು ಇಲ್ಲೆನ್ನದೆ ಕೊಟ್ಟೇಕೊಟ್ಟನು.

ದೀಪ ಹಚ್ಚುವ ವೇಳೆಯಾಯಿತು. ಬಡ ನೇಕಾರನೊಬ್ಬನು ಧರ್ಮಶಾಲೆಗೆ ಬಂದು, ಬ್ರಹ್ಮದೇವರಿಗೆ ಕೈಮುಗಿದು ನಿಂತನು.

“ಏನು ಬೇಕಾಗಿತ್ತು ನಿನಗೆ” ಎಂದು ಕೇಳಿದನು ಬ್ರಹ್ಮದೇವ.

“ನನಗೆ ಅರಸೊತ್ತಿಗೆಯನ್ನು ಕೊಟ್ಟುಬಿಡಿರಿ” ಎಂದನು ಆ ನೇಕಾರ.

“ತೀವ್ರ ಏಕೆ ಬರಲಿಲ್ಲ ನೀನು ?”

“ಮಗ್ಗದ ಮೇಲಿನ ಸೀರೆ ನೆಯ್ದು ಮುಗಿಸ್ಲಬೇಕಾಗಿತ್ತು. ಆದ್ದರಿಂದ ತಡವಾಯಿತು” ಎಂದು ನೇಕಾರನು ಕೈತಿಕ್ಕುತ್ತ ನುಡಿದು ಮುಗಿಸಿದನು.

“ನಾನು ಕೊಡಬೇಕಾದ ಅರಸೊತ್ತಿಗೆಗಳೆಲ್ಲ ತೀರಿಹೋದವು. ಮತ್ತೇನಾದರು ಕೇಳಿಕೋ ಕೊಡುವೆನು.”

“ನನಗೆ ಅರಸೂತ್ತಿಗೆಯೇ ಬೇಕಾಗಿತ್ತು” ನೇಕಾರನು ತಡವರಿಸುತ್ತ ಹೇಳಿದನು.  ಬ್ರಹ್ಮದೇವನು ಕೆಲಹೊತ್ತು ವಿಚಾರಮಗ್ನನಾಗಿ ಆ ಬಳಿಕ ಹೇಳಿದನು –

“ರಾತ್ರಿರಾಜನಾಗುವೆಯಾ ?”

“ಆಗಲಿ. ಎಂಥದೇ ಆಗಲಿ. ರಾಜನಾದರೆ ಸಾಕು. ಕೊಟ್ಟುಬಿಡಿರಿ” ಎಂದು ಹಿರಿಹಿಗ್ಗಿನಲ್ಲಿ ಕೇಳಿದನು.

“ಕೊಟ್ಟಿದೆ ಹೋಗು” ಎಂದನು ಬ್ರಹ್ಮದೇವ.

*     *     *

ಹಳ್ಳಿಯ ಬಯಲಾಟದ ಮೇಳದವರು ಪ್ರತಿಯೊಂದು ಆಟದಲ್ಲಿ ಆ ನೇಕಾರನಿಗೇ ರಾಜನ ಸೋಗು ಕೊಡತೊಡಗಿದರು. ಬಡ ನೇಕಾರನು ದುಡಿದು ದುಡಿದು ಬಡಕಲಾಗಿದ್ದನು. ಗಲ್ಲಗಳೆಲ್ಲ ಕರಗಿ ದವಡಿಗೆ ಹತ್ತಿದ್ದವು. ಕಣ್ಣು ಒಳಸೇರಿದ್ದವು. ಅವು ಅಸಹ್ಯವಾಗಿ ಕಾಣಿಸಬಾರದೆಂದು ನೇಕಾರನು ಕಣ್ಣಿಗೆ ಬಣ್ಣದ ಕನ್ನಡಕ ಧರಿಸುವನು. ಗಲ್ಲಮೀಸೆ ಹಚ್ಚಿಕೊಳ್ಳುವನು. ಅದಕ್ಕಾಗಿ ಮೇಳದವರು ಬಣ್ಣದ ಕೋಣೆಯಲ್ಲಿ ಹರಕಲಾದ ಒಂದು ಉಣ್ಣೆಯ ಝಾನ (ಥಡಿ) ತಂದಿಟ್ಟರು. ಬಟ್ಟಲಲ್ಲಿ ಅರೆದ ಅಂಟು ನೆನೆಯಿಟ್ಟರು.

ಪ್ರತಿಯೊಂದು ಸೋಗು ರಂಗಸ್ಥಳಕ್ಕೆ ಕುಣಿಯುತ್ತಲೇ ಬರುವದು. “ಝೆಂತತ ಝಣತ ಕಡಕಡ ಝೇಂತತ ಝಣತ| ತಯಾ ತೋಮ್ಲದರಿನಲಾ” ಎಂದು ತಿಲ್ಲಾಣವಾಡುವುದು ವಾಡಿಕೆಯಾಗಿದೆ. ಆದರೆ ಅದಕ್ಕೆ ಅರ್ಥವೇನು, ಯಾರಿಗೂ ತಿಳಿಯದು.

“ಝಾನ್ ತಾ | ಕಡಕಡ್ಡು ತಾ |
ಜಿಗಿತಾ | ಝಾನತಾ
ತಗೊಂಡು ಬರಲಿಲ್ಲ ಲಾ”

ಎನ್ನುವುದೇ ಆ ವೀರಾವೇಶದ ರಾಜನ ವೀರವಾಣಿ.

ಬ್ರಹ್ಮದೇವರಿತ್ತ ವರಪ್ರಸಾದದಿಂದ ನೇಕಾರನು ರಾತ್ರಿರಾಜನಾಗುತ್ತಲೇ ಬಂದನು. ಅವನ ಆ ವತನವನ್ನು ಯಾರೂ ಕಸಿದುಕೊಳ್ಳುವಂತಿಲ್ಲ. ರಾತ್ರಿರಾಜ ಅವನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...