Home / ಕಥೆ / ಜನಪದ / ತಂಗಿಗೊಬ್ಬ ಅಕ್ಕ

ತಂಗಿಗೊಬ್ಬ ಅಕ್ಕ

ಒಂದಾನೊಂದು ಊರಲ್ಲಿ ಅಕ್ಕ ತಮ್ಮ ಇದ್ದರು. ಅಕ್ಕನ ಗ೦ಡ ತೀರಿಕೊಂಡಿದ್ದನು. ಆಕೆಗೊ೦ದು ಹೆಣ್ಣು ಮಗು ಇತ್ತು. ತಾಯಿತಂದೆಗಳು ತಮ್ಮನು ಚಿಕ್ಕವನಿರುವಾಗಲೇ ದೇಹವಿಟ್ಟಿದ್ದರು. ಅವನಿಗೆ ಅಕ್ಕನೇ ಹತ್ತಗಡೆಯವಳು. ಹೀಗೆ ದಿನ ಕಳೆಯುವಷ್ಟರಲ್ಲಿ ಅಕ್ಕನೂ ಅಗಲಿ ಹೋದಳು. ಚಿಕ್ಕವಳಾದ ಅಕ್ಕನ ಮಗಳನ್ನು ತಮ್ಮನು ಜೋಪಾನಮಾಡುವುದು ಅನಿವಾರ್ಯವಾಯಿತು.

ಸೋದರಸೊಸೆಯು ಆರೆಂಟು ವರುಷಗಳಲ್ಲಿ ದೊಡ್ಡವಳಾಗಲು ಅವಳನ್ನು ತಾನೇ ಲಗ್ನವಾದನು. ಅಂದಿನಿಂದ ಅವರು ಗಂಡಹೆಂಡಿರಾಗಿ ಸಂತೋಷದಿಂದ
ಇರತೊಡಗಿದರು. ಚೆಲುವೆಯಾದ ಹೆಂಡತಿಯು ಮನೆಯಲ್ಲಿಯೇ ಉಳಿದುಕೊಂಡು ತನ್ನ ಕೆಲಸದಲ್ಲಿಯೇ ತೊಡಗುವಳು. ಆದರೂ ನೆರೆಮನೆಯ ಕಾಮಣ್ಣನೊಬ್ಬನು ಆಕೆಯನ್ನು ಕದ್ದುಗಣ್ಣಿನಿಂದ ಎಂದೋ ನೋಡಿ ಚಂಚಲಚಿತ್ತನಾದನು. ಏನಾದರೂ ನೆವ ಮುಂದೆ ಮಾಡಿಕೊಂಡು ಆ ಚೆಲುವೆಯನ್ನು ಹೊಂಚುಹಾಕಿದನು. ಆಕೆಯ ಗಂಡನು ಮನೆಯಲ್ಲಿಲ್ಲದ ಸಂಧಿಸಾಧಿಸಿ ಬೆಲೆಯುಳ್ಳ ಒಂದು ಸೀರೆಯನ್ನು ಬಗಲಲ್ಲಿ ಹಿಡಿದುಕೊಂಡು ಅವರ ಮನೆಯನ್ನು ಪ್ರವೇಶಿಸಿದನು. ಆದರೆ ಆಕೆಯನ್ನು ಮಾತನಾಡಿಸಲು ಧೈರ್ಯವಾಗದೆ, ಆಕೆಯ ಗಂಡನು ಬಂದುಗಿಂದರೆ ತನ್ನ ಗತಿಯೇನೆಂದು ಹೆದರಿ, ತಾನು ತಂದ ಸೀರೆಯನ್ನು ನಿಲುವುಗಣೆಯ ಮೇಲೆ ಹಾಕಿ ಅಲ್ಲಿಂದ ಕಾಲು ಕಿತ್ತಿದನು.

ಗಂಡನು ಮನೆಗೆ ಬರುವುದೇ ತಡ, ಮೊದಲು ನಿಲವುಗಣೆಯ ಮೇಲಿನ ಸೀರೆ ಆತನ ಕಣ್ಣಿಗೆ ಬಿತ್ತು. ಹೆಂಡತಿಯನ್ನು ಕರೆದು ಕೇಳಿದನು – “ಇದೆಲ್ಲಿಯ ಸೀರೆ ?”

“ನನ್ನಕ್ಕ ಕಳಿಸಿದ ಸೀರೆ” ಎಂದಳು.

“ನನಗೆ ಗೊತ್ತಿಲ್ಲದ ಅಕ್ಕ ನಿನಗಾರಿದ್ದಾಳೆ ?” ಎಂದು ಅನುಮಾನ ತೋರಿದನು ಗಂಡ.

“ಒಡಹುಟ್ಟಿದ ಅಕ್ಕನಲ್ಲವಾದರೂ ನಡೆಪಥದ ಅಕ್ಕ ಇದ್ದಾಳೆ ದೂರಿನ ಊರಲ್ಲಿ.”

ಅದೇ ಅನುಮಾನದಲ್ಲಿ ಗಂಡ ಕೇಳಿದನು – “ಆಕೆಯನ್ನು ನನಗೆ ತೋರಿಸುವಿಯಾ ?”

“ಆಕೆಯ ಊರಿಗೆ ನಾಳೆಯೇ ಹೊರಡೋಣ” ಎಂದು ಎಲ್ಲಿಲ್ಲದ ಧೈರ್ಯದಿಂದ ಹೆಂಡತಿ ಹೇಳಲು ಗಂಡನು ಪ್ರಯಾಣಕ್ಕೆ ಅಣಿಗೊಳಿಸಿದನು.

ಹೆಂಡತಿ ದಾರಿಯ ರೊಟ್ಟಿಬುತ್ತಿ ಮಾಡಿಟ್ಟಳು. ಗಂಡನು ಒಂದು ಬಾಡಿಗೆಯ ಕುದುರೆ ತಂದನು. ಬೆಳಗಾಗುವ ಮೊದಲು ಗಂಡಹೆಂಡರು ಹೊರಟುಬಿಟ್ಟರು. ಸರತಿಯಿಂದ ಕುದುರೆ ಹತ್ತುತ್ತ ಸಾಗಿದ್ದರಿಂದ ಮಧ್ಯಾಹ್ನವಾಗುತ್ತ ಬಂದರೂ ಅವರಿಗೆ ದಣಿವಾಗಲಿಲ್ಲ. ಇನ್ನೇನು, ನೀರು-ನೆರಳು ನೋಡಿ ಊಟ ತೀರಿಸಬೇಕೆಂದು ದಾರಿಯ ಬದಿಯಲ್ಲಿರುವ ಒಂದು ತೋಟವನ್ನು ಕಂಡು ಅಲ್ಲಿಳಿದರು.

ತೋಟಕ್ಕೊಂದು ಬಾವಿಯಿತ್ತು. ಆದರೆ ಅದೆಷ್ಟು ಆಳವಾಗಿ ಅಗೆಸಿದರೂ ಬಾವಿಗೆ ನೀರೇ ಬಿದ್ದಿಲ್ಲವೆಂದು ತಿಳಿಯಿತು. ಏನಿದ್ದರೂ ದಾರಿಕಾರರು ಉಂಡು ನೀರು ಕುಡಿದು ತಣಿಯಲಿಕ್ಕೆ ಯಾವ ತೊಂದರೆಯೂ ಇರಲಿಲ್ಲ. ಗಂಡನಾದವನು ತಂಬಿಗೆ ತೆಗೆದುಕೊಂಡು ಕೈಕಾಲಿಗೆ ಹೋದನು. ಹೆಂಡತಿ ಬಾವಿಯ ಬಳಿಗೆ ಹೋಗಿ ನಾಲ್ಕು ಮೆಟ್ಟುಗಲ್ಲುಗಳನ್ನಿಳಿದು ಬಾಗಿನಿಂತು ನೀರು ನೋಡಿದಳು. ಆಕೆಯ ದೃಷ್ಟಿಬಿದ್ದ ಮುಕ್ಕು ನೀರೇ ಅದೇ ನಿಮಿಷದಿಂದ ಏರತೊಡಗಿ ಕ್ಷಣಾರ್ಧದಲ್ಲಿ ಮೆಟ್ಟುಗಟ್ಟೆಯನ್ನು ಮುಳುಗಿಸಿಬಿಟ್ಟಿತು. ಅದನ್ನು ಕಂಡು ಅಲ್ಲಿಯೇ ಬಾವಿಯ ಮೇಲೆ ಆಡುತ್ತ ಕುಳಿತ ಇಬ್ಬರು ಬಾಲಕರು, ಬಾವಿಗೆ ನೀರು ಬ೦ದ ಸಂತೋಷದ ಸುದ್ದಿಯನ್ನು ಹೇಳುವುದಕ್ಕೆ ಮನೆಗೆ ಓಡಿದರು.

ಒಂದರ್ಧಗಳಿಗೆ ಕಳೆಯುವಷ್ಟರಲ್ಲಿ ಮನೆಯೊಡತಿ ಹಿರಿಹಿರಿಹಿಗ್ಗಿನಿಂದ ಗಾಡಿ ಹೂಡಿಸಿಕೊಂಡು ತನ್ನಿಬ್ಬರು ಮಕ್ಕಳೊಡನೆ ತೋಟಕ್ಕೆ ಬಂದೇಬಿಟ್ಟಳು, ಅವರು ಪರಸ್ಪರ ಪರಿಚಯದವರೂ ಅಲ್ಲ. ಒಬ್ಬರನ್ನೊಬ್ಬರು ಕಂಡಿದ್ದು ಸಹ ಅಂದೇ. ಆದರೆ ಆ ಹೆಣ್ಣುಮಗಳ ಕಾಲ್ಗುಣದಿಂದ ತಮ್ಮ ತೋಟದ ಬಾವಿಗೆ ನೀರು
ಬಂದವೆಂಬ ಅತಿಹರ್ಷದಿಂದ ತೋಟದೊಡತಿ ಗಾಡಿಯಿಂದ ಇಳಿದವಳೇ – “ತಂಗೀ, ಯಾವಾಗ ಬಂದಿರಿ” ಎಂದು ಅಪ್ಪಿಕೊಂಡಳು.

“ಅಕ್ಕ ! ಹಾಲು ಹರಿದಂತೆ ಒಗೆತನ ಹರಿದುಹೊರಟಿದೆ” ಎಂದಳೀಕೆ.

“ಕಳಿಸಿದ ಗಳಿಗೆ ಜೋಕೆಯಾಗಿದೆಯೋ” ಎಂದಳಾ ಅಕ್ಕ.

ಆ ಅಕ್ಕತಂಗಿಯರ ಅಕ್ಕರೆಯ ಸಂದರ್ಶನವನ್ನು ಕಂಡು ಗಂಡನು ಮೂಕವಿಸ್ಮಿತನಾದನು. ತನ್ನ ಹೆಂಡತಿ ಹೇಳಿದ್ದರಲ್ಲಿ ಎಷ್ಟೂ ಅವಾಸ್ತವವಿಲ್ಲ ಎಂದು
ಮನಗಂಡನು.

ತೋಟದೊಡತಿಯು ಪ್ರವಾಸಿಗರಾಗಿ ಬಂದ ಆ ದ೦ಪತಿಗಳ ಬುತ್ತಿಗಂಟು ಬಿಚ್ಚಿಗೊಡದೆ ಕರೆದೂಯ್ದಳು. ತಂಗಿಯನ್ನು ಎರಡು ದಿನ ತನ್ನಲ್ಲಿಟ್ಟುಕೊಂಡು ಅಕ್ಕನು ವಿಧವಿಧದ ಪಕ್ವಾನ್ನಗಳನ್ನುಣಿಸಿ, ರೇಶಿಮೆ – ಜರತಾರಿಯ ಸೀರೆ ಕುಪ್ಪಸಗಳ ಉಡುಗೊರೆಯನ್ನು ಮಾಡಿ, ಎತ್ತಿನ ಬಂಡಿಯಲ್ಲಿ ಕುಳ್ಳರಿಸಿ ಆಕೆಯ ಊರಿಗೆ ಕಳಿಸಿದಳು.

ಗಂಡನ ಸಂಶಯವು ದೂರವಾಗಿದ್ದರಿ೦ದ ಅವರಿಬ್ಬರೂ ಮೊದಲಿಗಿಂತ ಹೆಚ್ಚು ಸುಖದಿಂದ ಬಾಳ್ವೆಮಾಡತೊಡಗಿದರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...