Home / ಕಥೆ / ಜನಪದ / ಪಿಸುಣನಿಗೆ ಉಪಕಾರ

ಪಿಸುಣನಿಗೆ ಉಪಕಾರ

ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ ಮುಳ್ಳು ಕಲ್ಲು ತುಳಿಯುತ್ತ ತೋಟದ ಬೇಲಿಯಲ್ಲಿಯೇ ಸಾಗಿದ್ದನು – “ಯಾರಾದರೂ ನನ್ನನ್ನು ಹಾದಿಗೆ ಹಚ್ಚಿರಪ್ಪೋ. ನಾನು ಕಣ್ಣು ಕಾಣದ ಕುರುಡ. ಮುಳ್ಳುಬೇಲಿಯಲ್ಲಿ ಹೋಗಿ ಬೀಳುತ್ತೇನೆ. ಒಂದಿಷ್ಟು “ಪುಣ್ಯ ಕಟ್ಟಿಕೊಳ್ಳಿರೆಪ್ಪ ಪುಣ್ಯಾತ್ಮಯಾ” ಎಂದು ಹಲಬುತ್ತಿದ್ದನು.

ಕುರುಡನ ಸ್ಥಿತಿಯನ್ನು ಕಂಡು ಗಂಡನು ಕನಿಕರಿಸಿ ಹೆಂಡತಿಗೆ ಹೇಳಿದನು “ಆ ಮುದುಕನ ಕೈ ಹಿಡಿದು ದಾರಿಗೆ ಹಚ್ಚು.”

ಗಂಡನಪ್ಪಣೆಯಂತೆ ಹೆಂಡತಿಯು ಕುರುಡನ ಕೈಹಿಡಿದು ಮೆಲ್ಲನೆ ಹೊರಳಿಸಿ ಸರಿದಾರಿಗೆ ಹಚ್ಚಿ, ಕೈಬಿಡಬೇಕೆಂದರೆ ಕುರುಡನು ಕೈಬಿಡದೆ ಕೂಗಿಕೊಳ್ಳತೊಡಗಿದನು – “ನನ್ನ ಹೆಂಡತಿ ನೋಡಿರೋ ಅಪ್ಪಾ ಈಕೆ. ನನ್ನ ಕೈಬಿಟ್ಟು ಇನ್ನಾವನೋ ಗೆಳೆಯನ ಕೂಡ ಓಡಿಹೋಗಬೇಕೆನ್ನುತ್ತಾಳೆ. ನ್ಯಾಯ ಮಾಡಿರೋ ಅಪ್ಪಾ ಕುರುಡನದು” ಎನ್ನುತ್ತಾ ಗಟ್ಟಿಯಾಗಿ ಬೊಬ್ಬಿಟ್ಟನು. ಜನ ನೆರೆಯಿತು.

ತನ್ನ ಹೆಂಡತಿಯನ್ನು ಕುರುಡನ ಕೈಯೊಳಗಿಂದ ಬಿಡಿಸಿಕೊಳ್ಳಲು ಗಂಡನು ಪ್ರಯತ್ನಿಸಿದರೆ ಮತ್ತಿಷ್ಟು ಬೊಬ್ಬಾಟವೇ ಆಗತೊಡಗಿತು. ಆಕೆ ತನ್ನ ಹೆಂಡತಿಯೆಂದು ಕುರುಡ ಹೇಳುವನು ; ನನ್ನ ಹೆಂಡತಿಯೆಂದು ಆತ ಹೇಳುವನು. ಆತನು ನನ್ನ ಗಂಡನೆಂದು ಹೆಂಡತಿ ಹೇಳಿದೆರೆ, ತನ್ನನ್ನು ಬಿಟ್ಟು ಹೊರಟಿದ್ದರಿಂದ ಹಾಗೆ ಹೇಳುತ್ತಾಳೆಂದು ಕುರುಡನ ಕೂಗಾಟ.

ಆ ನ್ಯಾಯ ಚಾವಡಿಯ ಕಟ್ಟೆಯೇರಿತು. ಅಲ್ಲಿಯೂ ಬಗೆಹರಿಯಲಿಲ್ಲ. ಬಳಿಕ ಗೌಡನು ಸಿಟ್ಟಗೇರಿ ಆ ಮೂವರನ್ನೂ ಮೂರು ಬೇರೆ ಬೇರೆ ಕೋಣೆಗಳಲ್ಲಿ ಹಾಕಿಸಿ ಒಂದೆಂದು ಕೋಣೆಯ ಮುಂದೆ ಒಬ್ಬೊಬ್ಬ ಓಲೆಕಾರನನ್ನು ಕಾವಲಿಟ್ಟನು.

ಮರುದಿವಸ ಗೌಡನು ಆ ಮೂವರೂ ಕಾವಲುಗಾರನನ್ನು ಬೇರೆ- ಬೇರೆಯಾಗಿ ಕರೆಯಿಸಿಕೊಂಡು, ಒಳಗಿದ್ದವರು ಒಡನುಡಿಯುತ್ತಿದ್ದ ಮಾತುಗಳಾವವೆಂದು ಕೇಳಿದನು. ಅವರು ಕ್ರಮವಾಗಿ ಹೀಗೆ ಹೇಳಿದರು –

ಕುರುಡನ ಕೋಣೆಯ ಕಾವಲುಗಾರ – “ಮನಸ್ಸಿನಂತೆ ಮಹಾದೇವ ! ಮನಸ್ಸಿನಂತೆ ಮಹಾದೇವ ! ಎನ್ನುತ್ತ ಕುಣಿದಾಡುತ್ತಿದ್ದನು ಆ ಕುರುಡ.”

ಹೆಂಗಸಿನ ಕೋಣೆಯ ಕಾವಲುಗಾರ – “ಗಂಡನಪ್ಪಣೆ ಮೀರಬಾರದೆಂದು ತಂದೆಗೆ ಸಮಾನನಾದ ಆ ಕುರುಡ ಮುದುಕನ ಕೈಹಿಡಿದು ಸರಿದಾರಿಗೆ ಹಚ್ಚಿದರೆ, ‘ಹೆಂಡತಿ  ಕೈಕೊಸರಿಕೊಂಡು  ಓಡಿಹೋಗುವಳೋ  ಅಪ್ಪಾ’ ಎಂದು ಹೊಯ್ಕೊಂಡರೆ ನಾನೇನು ಹಣೆಹಣೆ ಗಟ್ಟಿಸಿಕೊಳ್ಳಲಾ ? ಎಂಥ ವೇಳೆ ತಂದೆಯೋ ದೇವರೇ” ಎನ್ನುತ್ತ ಆಕೆ ಬೆಳತನಕ ಗೋಳಾಡಿ ಅತ್ತಳು.

ಗಂಡನ ಕೋಣೆಯ ಕಾವಲುಗಾರ – “ಆ ಕುರುಡನನ್ನು ನೋಡಿ ನನಗೇಕೆ ದಯೆ ಬಂದಿತೋ ಏನೋ. ಆತನಿಗೆ ಸರಿದಾರಿಗೆ ಹಚ್ಚುವ ಕೆಲಸವನ್ನು ಹೆಂಡತಿಗೆ ಹೇಳದೆ ನಾನೇ ಮಾಡಿದ್ದರೆ ಎಷ್ಟು ಚೆನ್ನಾಗಿತ್ತಲ್ಲ!” ಎಂದು ಗಳಿಗೆಗೊಮ್ಮೆ ಮಿಡುಕುತ್ತಿದ್ದನು.

ಆ ಎಲ್ಲ ಹೇಳಿಕೆಗಳನ್ನು, ಕೇಳಿ ಗೌಡನು, ಆ ಹೆಣ್ಣು ಮಗಳು ಕುರುಡನ ಹೆಂಡತಿ ಅಲ್ಲವೆಂದು ನಿರ್ಣಯಿಸಿ ಆಕೆಯನ್ನು ಆಕೆಯ ಗಂಡನೊಡನೆ ಕಳಿಸಿದನು.

ಕುರುಡ ಮುದುಕನನ್ನು ಬಯ್ದು ಬೆದರಿಸಿ ಊರಹೊರಗೆ ಹಾಕಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...