Home / ಕಥೆ / ಜನಪದ / ಪಿಸುಣನಿಗೆ ಉಪಕಾರ

ಪಿಸುಣನಿಗೆ ಉಪಕಾರ

ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ ಮುಳ್ಳು ಕಲ್ಲು ತುಳಿಯುತ್ತ ತೋಟದ ಬೇಲಿಯಲ್ಲಿಯೇ ಸಾಗಿದ್ದನು – “ಯಾರಾದರೂ ನನ್ನನ್ನು ಹಾದಿಗೆ ಹಚ್ಚಿರಪ್ಪೋ. ನಾನು ಕಣ್ಣು ಕಾಣದ ಕುರುಡ. ಮುಳ್ಳುಬೇಲಿಯಲ್ಲಿ ಹೋಗಿ ಬೀಳುತ್ತೇನೆ. ಒಂದಿಷ್ಟು “ಪುಣ್ಯ ಕಟ್ಟಿಕೊಳ್ಳಿರೆಪ್ಪ ಪುಣ್ಯಾತ್ಮಯಾ” ಎಂದು ಹಲಬುತ್ತಿದ್ದನು.

ಕುರುಡನ ಸ್ಥಿತಿಯನ್ನು ಕಂಡು ಗಂಡನು ಕನಿಕರಿಸಿ ಹೆಂಡತಿಗೆ ಹೇಳಿದನು “ಆ ಮುದುಕನ ಕೈ ಹಿಡಿದು ದಾರಿಗೆ ಹಚ್ಚು.”

ಗಂಡನಪ್ಪಣೆಯಂತೆ ಹೆಂಡತಿಯು ಕುರುಡನ ಕೈಹಿಡಿದು ಮೆಲ್ಲನೆ ಹೊರಳಿಸಿ ಸರಿದಾರಿಗೆ ಹಚ್ಚಿ, ಕೈಬಿಡಬೇಕೆಂದರೆ ಕುರುಡನು ಕೈಬಿಡದೆ ಕೂಗಿಕೊಳ್ಳತೊಡಗಿದನು – “ನನ್ನ ಹೆಂಡತಿ ನೋಡಿರೋ ಅಪ್ಪಾ ಈಕೆ. ನನ್ನ ಕೈಬಿಟ್ಟು ಇನ್ನಾವನೋ ಗೆಳೆಯನ ಕೂಡ ಓಡಿಹೋಗಬೇಕೆನ್ನುತ್ತಾಳೆ. ನ್ಯಾಯ ಮಾಡಿರೋ ಅಪ್ಪಾ ಕುರುಡನದು” ಎನ್ನುತ್ತಾ ಗಟ್ಟಿಯಾಗಿ ಬೊಬ್ಬಿಟ್ಟನು. ಜನ ನೆರೆಯಿತು.

ತನ್ನ ಹೆಂಡತಿಯನ್ನು ಕುರುಡನ ಕೈಯೊಳಗಿಂದ ಬಿಡಿಸಿಕೊಳ್ಳಲು ಗಂಡನು ಪ್ರಯತ್ನಿಸಿದರೆ ಮತ್ತಿಷ್ಟು ಬೊಬ್ಬಾಟವೇ ಆಗತೊಡಗಿತು. ಆಕೆ ತನ್ನ ಹೆಂಡತಿಯೆಂದು ಕುರುಡ ಹೇಳುವನು ; ನನ್ನ ಹೆಂಡತಿಯೆಂದು ಆತ ಹೇಳುವನು. ಆತನು ನನ್ನ ಗಂಡನೆಂದು ಹೆಂಡತಿ ಹೇಳಿದೆರೆ, ತನ್ನನ್ನು ಬಿಟ್ಟು ಹೊರಟಿದ್ದರಿಂದ ಹಾಗೆ ಹೇಳುತ್ತಾಳೆಂದು ಕುರುಡನ ಕೂಗಾಟ.

ಆ ನ್ಯಾಯ ಚಾವಡಿಯ ಕಟ್ಟೆಯೇರಿತು. ಅಲ್ಲಿಯೂ ಬಗೆಹರಿಯಲಿಲ್ಲ. ಬಳಿಕ ಗೌಡನು ಸಿಟ್ಟಗೇರಿ ಆ ಮೂವರನ್ನೂ ಮೂರು ಬೇರೆ ಬೇರೆ ಕೋಣೆಗಳಲ್ಲಿ ಹಾಕಿಸಿ ಒಂದೆಂದು ಕೋಣೆಯ ಮುಂದೆ ಒಬ್ಬೊಬ್ಬ ಓಲೆಕಾರನನ್ನು ಕಾವಲಿಟ್ಟನು.

ಮರುದಿವಸ ಗೌಡನು ಆ ಮೂವರೂ ಕಾವಲುಗಾರನನ್ನು ಬೇರೆ- ಬೇರೆಯಾಗಿ ಕರೆಯಿಸಿಕೊಂಡು, ಒಳಗಿದ್ದವರು ಒಡನುಡಿಯುತ್ತಿದ್ದ ಮಾತುಗಳಾವವೆಂದು ಕೇಳಿದನು. ಅವರು ಕ್ರಮವಾಗಿ ಹೀಗೆ ಹೇಳಿದರು –

ಕುರುಡನ ಕೋಣೆಯ ಕಾವಲುಗಾರ – “ಮನಸ್ಸಿನಂತೆ ಮಹಾದೇವ ! ಮನಸ್ಸಿನಂತೆ ಮಹಾದೇವ ! ಎನ್ನುತ್ತ ಕುಣಿದಾಡುತ್ತಿದ್ದನು ಆ ಕುರುಡ.”

ಹೆಂಗಸಿನ ಕೋಣೆಯ ಕಾವಲುಗಾರ – “ಗಂಡನಪ್ಪಣೆ ಮೀರಬಾರದೆಂದು ತಂದೆಗೆ ಸಮಾನನಾದ ಆ ಕುರುಡ ಮುದುಕನ ಕೈಹಿಡಿದು ಸರಿದಾರಿಗೆ ಹಚ್ಚಿದರೆ, ‘ಹೆಂಡತಿ  ಕೈಕೊಸರಿಕೊಂಡು  ಓಡಿಹೋಗುವಳೋ  ಅಪ್ಪಾ’ ಎಂದು ಹೊಯ್ಕೊಂಡರೆ ನಾನೇನು ಹಣೆಹಣೆ ಗಟ್ಟಿಸಿಕೊಳ್ಳಲಾ ? ಎಂಥ ವೇಳೆ ತಂದೆಯೋ ದೇವರೇ” ಎನ್ನುತ್ತ ಆಕೆ ಬೆಳತನಕ ಗೋಳಾಡಿ ಅತ್ತಳು.

ಗಂಡನ ಕೋಣೆಯ ಕಾವಲುಗಾರ – “ಆ ಕುರುಡನನ್ನು ನೋಡಿ ನನಗೇಕೆ ದಯೆ ಬಂದಿತೋ ಏನೋ. ಆತನಿಗೆ ಸರಿದಾರಿಗೆ ಹಚ್ಚುವ ಕೆಲಸವನ್ನು ಹೆಂಡತಿಗೆ ಹೇಳದೆ ನಾನೇ ಮಾಡಿದ್ದರೆ ಎಷ್ಟು ಚೆನ್ನಾಗಿತ್ತಲ್ಲ!” ಎಂದು ಗಳಿಗೆಗೊಮ್ಮೆ ಮಿಡುಕುತ್ತಿದ್ದನು.

ಆ ಎಲ್ಲ ಹೇಳಿಕೆಗಳನ್ನು, ಕೇಳಿ ಗೌಡನು, ಆ ಹೆಣ್ಣು ಮಗಳು ಕುರುಡನ ಹೆಂಡತಿ ಅಲ್ಲವೆಂದು ನಿರ್ಣಯಿಸಿ ಆಕೆಯನ್ನು ಆಕೆಯ ಗಂಡನೊಡನೆ ಕಳಿಸಿದನು.

ಕುರುಡ ಮುದುಕನನ್ನು ಬಯ್ದು ಬೆದರಿಸಿ ಊರಹೊರಗೆ ಹಾಕಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...