Home / ಕಥೆ / ಜನಪದ / ಪಿಸುಣನಿಗೆ ಉಪಕಾರ

ಪಿಸುಣನಿಗೆ ಉಪಕಾರ

ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ ಮುಳ್ಳು ಕಲ್ಲು ತುಳಿಯುತ್ತ ತೋಟದ ಬೇಲಿಯಲ್ಲಿಯೇ ಸಾಗಿದ್ದನು – “ಯಾರಾದರೂ ನನ್ನನ್ನು ಹಾದಿಗೆ ಹಚ್ಚಿರಪ್ಪೋ. ನಾನು ಕಣ್ಣು ಕಾಣದ ಕುರುಡ. ಮುಳ್ಳುಬೇಲಿಯಲ್ಲಿ ಹೋಗಿ ಬೀಳುತ್ತೇನೆ. ಒಂದಿಷ್ಟು “ಪುಣ್ಯ ಕಟ್ಟಿಕೊಳ್ಳಿರೆಪ್ಪ ಪುಣ್ಯಾತ್ಮಯಾ” ಎಂದು ಹಲಬುತ್ತಿದ್ದನು.

ಕುರುಡನ ಸ್ಥಿತಿಯನ್ನು ಕಂಡು ಗಂಡನು ಕನಿಕರಿಸಿ ಹೆಂಡತಿಗೆ ಹೇಳಿದನು “ಆ ಮುದುಕನ ಕೈ ಹಿಡಿದು ದಾರಿಗೆ ಹಚ್ಚು.”

ಗಂಡನಪ್ಪಣೆಯಂತೆ ಹೆಂಡತಿಯು ಕುರುಡನ ಕೈಹಿಡಿದು ಮೆಲ್ಲನೆ ಹೊರಳಿಸಿ ಸರಿದಾರಿಗೆ ಹಚ್ಚಿ, ಕೈಬಿಡಬೇಕೆಂದರೆ ಕುರುಡನು ಕೈಬಿಡದೆ ಕೂಗಿಕೊಳ್ಳತೊಡಗಿದನು – “ನನ್ನ ಹೆಂಡತಿ ನೋಡಿರೋ ಅಪ್ಪಾ ಈಕೆ. ನನ್ನ ಕೈಬಿಟ್ಟು ಇನ್ನಾವನೋ ಗೆಳೆಯನ ಕೂಡ ಓಡಿಹೋಗಬೇಕೆನ್ನುತ್ತಾಳೆ. ನ್ಯಾಯ ಮಾಡಿರೋ ಅಪ್ಪಾ ಕುರುಡನದು” ಎನ್ನುತ್ತಾ ಗಟ್ಟಿಯಾಗಿ ಬೊಬ್ಬಿಟ್ಟನು. ಜನ ನೆರೆಯಿತು.

ತನ್ನ ಹೆಂಡತಿಯನ್ನು ಕುರುಡನ ಕೈಯೊಳಗಿಂದ ಬಿಡಿಸಿಕೊಳ್ಳಲು ಗಂಡನು ಪ್ರಯತ್ನಿಸಿದರೆ ಮತ್ತಿಷ್ಟು ಬೊಬ್ಬಾಟವೇ ಆಗತೊಡಗಿತು. ಆಕೆ ತನ್ನ ಹೆಂಡತಿಯೆಂದು ಕುರುಡ ಹೇಳುವನು ; ನನ್ನ ಹೆಂಡತಿಯೆಂದು ಆತ ಹೇಳುವನು. ಆತನು ನನ್ನ ಗಂಡನೆಂದು ಹೆಂಡತಿ ಹೇಳಿದೆರೆ, ತನ್ನನ್ನು ಬಿಟ್ಟು ಹೊರಟಿದ್ದರಿಂದ ಹಾಗೆ ಹೇಳುತ್ತಾಳೆಂದು ಕುರುಡನ ಕೂಗಾಟ.

ಆ ನ್ಯಾಯ ಚಾವಡಿಯ ಕಟ್ಟೆಯೇರಿತು. ಅಲ್ಲಿಯೂ ಬಗೆಹರಿಯಲಿಲ್ಲ. ಬಳಿಕ ಗೌಡನು ಸಿಟ್ಟಗೇರಿ ಆ ಮೂವರನ್ನೂ ಮೂರು ಬೇರೆ ಬೇರೆ ಕೋಣೆಗಳಲ್ಲಿ ಹಾಕಿಸಿ ಒಂದೆಂದು ಕೋಣೆಯ ಮುಂದೆ ಒಬ್ಬೊಬ್ಬ ಓಲೆಕಾರನನ್ನು ಕಾವಲಿಟ್ಟನು.

ಮರುದಿವಸ ಗೌಡನು ಆ ಮೂವರೂ ಕಾವಲುಗಾರನನ್ನು ಬೇರೆ- ಬೇರೆಯಾಗಿ ಕರೆಯಿಸಿಕೊಂಡು, ಒಳಗಿದ್ದವರು ಒಡನುಡಿಯುತ್ತಿದ್ದ ಮಾತುಗಳಾವವೆಂದು ಕೇಳಿದನು. ಅವರು ಕ್ರಮವಾಗಿ ಹೀಗೆ ಹೇಳಿದರು –

ಕುರುಡನ ಕೋಣೆಯ ಕಾವಲುಗಾರ – “ಮನಸ್ಸಿನಂತೆ ಮಹಾದೇವ ! ಮನಸ್ಸಿನಂತೆ ಮಹಾದೇವ ! ಎನ್ನುತ್ತ ಕುಣಿದಾಡುತ್ತಿದ್ದನು ಆ ಕುರುಡ.”

ಹೆಂಗಸಿನ ಕೋಣೆಯ ಕಾವಲುಗಾರ – “ಗಂಡನಪ್ಪಣೆ ಮೀರಬಾರದೆಂದು ತಂದೆಗೆ ಸಮಾನನಾದ ಆ ಕುರುಡ ಮುದುಕನ ಕೈಹಿಡಿದು ಸರಿದಾರಿಗೆ ಹಚ್ಚಿದರೆ, ‘ಹೆಂಡತಿ  ಕೈಕೊಸರಿಕೊಂಡು  ಓಡಿಹೋಗುವಳೋ  ಅಪ್ಪಾ’ ಎಂದು ಹೊಯ್ಕೊಂಡರೆ ನಾನೇನು ಹಣೆಹಣೆ ಗಟ್ಟಿಸಿಕೊಳ್ಳಲಾ ? ಎಂಥ ವೇಳೆ ತಂದೆಯೋ ದೇವರೇ” ಎನ್ನುತ್ತ ಆಕೆ ಬೆಳತನಕ ಗೋಳಾಡಿ ಅತ್ತಳು.

ಗಂಡನ ಕೋಣೆಯ ಕಾವಲುಗಾರ – “ಆ ಕುರುಡನನ್ನು ನೋಡಿ ನನಗೇಕೆ ದಯೆ ಬಂದಿತೋ ಏನೋ. ಆತನಿಗೆ ಸರಿದಾರಿಗೆ ಹಚ್ಚುವ ಕೆಲಸವನ್ನು ಹೆಂಡತಿಗೆ ಹೇಳದೆ ನಾನೇ ಮಾಡಿದ್ದರೆ ಎಷ್ಟು ಚೆನ್ನಾಗಿತ್ತಲ್ಲ!” ಎಂದು ಗಳಿಗೆಗೊಮ್ಮೆ ಮಿಡುಕುತ್ತಿದ್ದನು.

ಆ ಎಲ್ಲ ಹೇಳಿಕೆಗಳನ್ನು, ಕೇಳಿ ಗೌಡನು, ಆ ಹೆಣ್ಣು ಮಗಳು ಕುರುಡನ ಹೆಂಡತಿ ಅಲ್ಲವೆಂದು ನಿರ್ಣಯಿಸಿ ಆಕೆಯನ್ನು ಆಕೆಯ ಗಂಡನೊಡನೆ ಕಳಿಸಿದನು.

ಕುರುಡ ಮುದುಕನನ್ನು ಬಯ್ದು ಬೆದರಿಸಿ ಊರಹೊರಗೆ ಹಾಕಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...