Home / ಕಥೆ / ಜನಪದ / ಅಳಬೇಕೆಂದರೆ

ಅಳಬೇಕೆಂದರೆ

ಒಂದು ಗಂಡು ಒಂದು ಹೆಣ್ಣು ಭೂಮಿಯ ಮೇಲೆ ಮೊದಲು ಹುಟ್ಟಿದರು. ಅವರಿಂದ ಆರಂಭವಾಯಿತು ಮಾನವ ಸಂತಾನ ಬೆಳೆಯಲಿಕ್ಕೆ. ಹೆಣ್ಣು-ಗಂಡು
ಮಕ್ಕಳು ಹುಟ್ಟಿದರು. ಮಕ್ಕಳಿಂದ ಮಕ್ಕಳಾದರು. ಮೊಮ್ಮಕ್ಕಳು ಮರಿಮಕ್ಕಳು ಆದರು. ಮೊಮ್ಮಕ್ಕಳ ಮರಿಮಕ್ಕಳೂ ಹುಟ್ಟಿಕೊಂಡರು. ಹುಟ್ಟಿದವರೆಲ್ಲ ಬೆಳೆದು ದೊಡ್ಡವರಾದರು; ದೊಡ್ಡವರು ಮುದುಕರಾದರು. ಮನುಷ್ಯಕೋಟಿ ಬೆಳೆದೇ ಬೆಳೆಯಿತು. ಎಲ್ಲಿ ನೋಡಿದರೂ ಹುಟ್ಟಿದ ಒಸಗೆಯೇ. ಏನು ಕೇಳಿದರೂ ಹುಟ್ಟಿದ ಸುದ್ದಿಯೇ. ಸುಖ ಸಂತೋಷಗಳಲ್ಲಿಯೇ ಮಾನವ ಸಂತಾನವು ವಾಸಿಸತೊಡಗಿತು.

ವಿಶಾಲವಾದ ಮನೆತನ. ಮನೆತನದಲ್ಲಿ ಎಣಿಸಲಿಕ್ಕಾಗದಷ್ಟು ಜನ. ಹಗಲು ಹೊತ್ತಿನಲ್ಲಿ ಹೆಣ್ಣು ಗಂಡು ಎನ್ನದೆ, ಹುಡುಗ ಬಾಲಿಕೆ ಎನ್ನದೆ ಎಲ್ಲರೂ ಅಡವಿ ಸೇರಿ ತಂತಮ್ಮ ಕೆಲಸದಲ್ಲಿ ತೊಡಗುವರು. ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳನ್ನು ಆಡಿಸುತ್ತ ಒಬ್ಬ ಅಜ್ಜಿ ಮನೆಯಲ್ಲಿ ಉಳಕೊಳ್ಳುವಳು.

ಸುಖಸಂತೋಷಗಳನ್ನೇ ಉಣ್ಣುತ್ತ ಬಂದ ಅಜ್ಜಿಗೆ ಏಕೋ ಬೇಸರವೆನಿಸಿತು. ಎದೆ ಜಡವಾಯಿತು. ಮನಸ್ಸು ಹಗುರಾಗುವುದಕ್ಕೆ ಉಪಾಯವೇನೆಂದು ಚಿಂತಿಸತೊಡಗಿದಳು.  ಬಾಲಕರೆಲ್ಲ ಆಡುತ್ತ ಎಲ್ಲಿಲ್ಲಿಯೋ ಹೋಗಿದ್ದರು. ಅಜ್ಜಿಗೊಂದು ಯುಕ್ತಿ ಹೊಳೆಯಿತು. ಹಿಟ್ಟಿನಿಂದ ಒಂದು ಕೂಸು ಮಾಡಿ, ಅದು
ಸತ್ತುಹೋಯಿತೆಂದು ಬಗೆದು, ಕ್ಷಣ ಹೊತ್ತು ಅತ್ತುಬಿಟ್ಟರೆ ಮನಸ್ಸು ಹಗುರಾಗುವದೆಂದು ಯೋಚಿಸಿದಳು.

ಮೆತ್ತಿಗೆಯೊಳಗಿಂದ ಬೊಗಸೆ ಕಡೆಲೆತೆಗೆದು ಬೀಸಿ ಹಿಟ್ಟುಮಾಡಿದಳು. ಆ ಹಿಟ್ಟನ್ನು ನೀರಲ್ಲಿ ಕಲೆಸಿ ಕಣಕಮಾಡಿದಳು. ಆ ಕಣಕದಿಂದ ಒಂದು ಗೊಂಬೆ ಮಾಡಿ ಮುಗಿಸುವುದರಲ್ಲಿದ್ದಳು. ಅಷ್ಟರಲ್ಲಿ ಆಡಹೋದ ಬಾಲಕರೆಲ್ಲರೂ ಒಬ್ಬೊಬ್ಬರಾಗಿ ಬಂದರು. “ಅಜ್ಜೀ, ನನಗೆ ತಿನ್ನಲು ಬೆಲ್ಲ” ಎಂದು ಒಂದು ಹುಡುಗ ಕೇಳಿದರೆ, ಇನ್ನೊಂದು – “ಅಜ್ಜೀ ನನಗೆ ಉಣ್ಣಲು ರೊಟ್ಟಿ” ಬೇಡುತ್ತದೆ. ಒಂದು ನೀರು ಕೇಳುತ್ತದೆ. ಇನ್ನೊಂದು ಮಮ್ಮ ಅನ್ನುತ್ತದೆ. “ರೊಟ್ಟಿಗೆ ಬೆಣ್ಣೆ ಸವರು,” “ಅನ್ನಕ್ಕೆ ಮೊಸರು ಕಲೆಸು” ಎನ್ನುತ್ತ ಅಜ್ಜಿಯನ್ನು ಜಗ್ಗಾಡಿ ಎಬ್ಬಿಸಿದವು. ಆಕೆಯ ಸೆರಗು ಒಂದು ಹಿಡಿದಿದೆ, ಕೈ ಮತ್ತೊಂದು ಹಿಡಿದಿದೆ. ಹಿಂದೆ ನೂಕುವುದು ಒಂದು, ಮುಂದೆ ಎಳೆಯುವುದು ಬೇರೊಂದು. ಎಲ್ಲ ಕೂಡಿ ಅಜ್ಜಿಯನ್ನು ಅಡಿಗೆ ಮನೆಗೆ ಕರೆದೊಯ್ದವು.

“ನಂಗೂ ಅಜ್ಜಿ, ಉಪ್ಪಿನಕಾಯಿ” ಎಂದು ತೊದಲುತ್ತ ಇನ್ನೊಂದು ಕೂಸು ತಪ್ಪುಹೆಜ್ಜೆ ಹಾಕುತ್ತ ಅಜ್ಜಿಯ ಬಳಿಗೆ ಬಂದಿತು. “ಇದಾವ ಹೊಸದನಿ” ಎಂದು ಅಜ್ಜಿ ನೋಡಿದರೆ, ಕಡಲೆ ಹಿಟ್ಟಿನ ಗೊಂಬೆ, ಜೀವತಳೆದು ಎದ್ದು ಬಂದಿದೆ! ಆಶ್ಚರ್ಯವೆನಿಸಿತು ಅಜ್ಜಿಗೆ.

“ಗೊಂಬೆಯ ಹೆಣವನ್ನು ಮುಂದಿರಿಸಿಕೊಂಡು ಅತ್ತು ಕಣ್ಣೀರು ಸುರಿದು ಮನಸ್ಸು ಹಗುರಮಾಡಿಕೊಳ್ಳಬೇಕೆಂದರೆ ಹಿಟ್ಟಿನ ಗೊಂಬೆಯೂ ಜೀವಂತವಾಗಬೇಕೆ? ಅಳುವುದು ನನ್ನ ದೈವದಲ್ಲಿಲ್ಲ” ಎಂದುಕೊಂಡಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...