Home / ಕಥೆ / ಜನಪದ / ಅಳಬೇಕೆಂದರೆ

ಅಳಬೇಕೆಂದರೆ

ಒಂದು ಗಂಡು ಒಂದು ಹೆಣ್ಣು ಭೂಮಿಯ ಮೇಲೆ ಮೊದಲು ಹುಟ್ಟಿದರು. ಅವರಿಂದ ಆರಂಭವಾಯಿತು ಮಾನವ ಸಂತಾನ ಬೆಳೆಯಲಿಕ್ಕೆ. ಹೆಣ್ಣು-ಗಂಡು
ಮಕ್ಕಳು ಹುಟ್ಟಿದರು. ಮಕ್ಕಳಿಂದ ಮಕ್ಕಳಾದರು. ಮೊಮ್ಮಕ್ಕಳು ಮರಿಮಕ್ಕಳು ಆದರು. ಮೊಮ್ಮಕ್ಕಳ ಮರಿಮಕ್ಕಳೂ ಹುಟ್ಟಿಕೊಂಡರು. ಹುಟ್ಟಿದವರೆಲ್ಲ ಬೆಳೆದು ದೊಡ್ಡವರಾದರು; ದೊಡ್ಡವರು ಮುದುಕರಾದರು. ಮನುಷ್ಯಕೋಟಿ ಬೆಳೆದೇ ಬೆಳೆಯಿತು. ಎಲ್ಲಿ ನೋಡಿದರೂ ಹುಟ್ಟಿದ ಒಸಗೆಯೇ. ಏನು ಕೇಳಿದರೂ ಹುಟ್ಟಿದ ಸುದ್ದಿಯೇ. ಸುಖ ಸಂತೋಷಗಳಲ್ಲಿಯೇ ಮಾನವ ಸಂತಾನವು ವಾಸಿಸತೊಡಗಿತು.

ವಿಶಾಲವಾದ ಮನೆತನ. ಮನೆತನದಲ್ಲಿ ಎಣಿಸಲಿಕ್ಕಾಗದಷ್ಟು ಜನ. ಹಗಲು ಹೊತ್ತಿನಲ್ಲಿ ಹೆಣ್ಣು ಗಂಡು ಎನ್ನದೆ, ಹುಡುಗ ಬಾಲಿಕೆ ಎನ್ನದೆ ಎಲ್ಲರೂ ಅಡವಿ ಸೇರಿ ತಂತಮ್ಮ ಕೆಲಸದಲ್ಲಿ ತೊಡಗುವರು. ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳನ್ನು ಆಡಿಸುತ್ತ ಒಬ್ಬ ಅಜ್ಜಿ ಮನೆಯಲ್ಲಿ ಉಳಕೊಳ್ಳುವಳು.

ಸುಖಸಂತೋಷಗಳನ್ನೇ ಉಣ್ಣುತ್ತ ಬಂದ ಅಜ್ಜಿಗೆ ಏಕೋ ಬೇಸರವೆನಿಸಿತು. ಎದೆ ಜಡವಾಯಿತು. ಮನಸ್ಸು ಹಗುರಾಗುವುದಕ್ಕೆ ಉಪಾಯವೇನೆಂದು ಚಿಂತಿಸತೊಡಗಿದಳು.  ಬಾಲಕರೆಲ್ಲ ಆಡುತ್ತ ಎಲ್ಲಿಲ್ಲಿಯೋ ಹೋಗಿದ್ದರು. ಅಜ್ಜಿಗೊಂದು ಯುಕ್ತಿ ಹೊಳೆಯಿತು. ಹಿಟ್ಟಿನಿಂದ ಒಂದು ಕೂಸು ಮಾಡಿ, ಅದು
ಸತ್ತುಹೋಯಿತೆಂದು ಬಗೆದು, ಕ್ಷಣ ಹೊತ್ತು ಅತ್ತುಬಿಟ್ಟರೆ ಮನಸ್ಸು ಹಗುರಾಗುವದೆಂದು ಯೋಚಿಸಿದಳು.

ಮೆತ್ತಿಗೆಯೊಳಗಿಂದ ಬೊಗಸೆ ಕಡೆಲೆತೆಗೆದು ಬೀಸಿ ಹಿಟ್ಟುಮಾಡಿದಳು. ಆ ಹಿಟ್ಟನ್ನು ನೀರಲ್ಲಿ ಕಲೆಸಿ ಕಣಕಮಾಡಿದಳು. ಆ ಕಣಕದಿಂದ ಒಂದು ಗೊಂಬೆ ಮಾಡಿ ಮುಗಿಸುವುದರಲ್ಲಿದ್ದಳು. ಅಷ್ಟರಲ್ಲಿ ಆಡಹೋದ ಬಾಲಕರೆಲ್ಲರೂ ಒಬ್ಬೊಬ್ಬರಾಗಿ ಬಂದರು. “ಅಜ್ಜೀ, ನನಗೆ ತಿನ್ನಲು ಬೆಲ್ಲ” ಎಂದು ಒಂದು ಹುಡುಗ ಕೇಳಿದರೆ, ಇನ್ನೊಂದು – “ಅಜ್ಜೀ ನನಗೆ ಉಣ್ಣಲು ರೊಟ್ಟಿ” ಬೇಡುತ್ತದೆ. ಒಂದು ನೀರು ಕೇಳುತ್ತದೆ. ಇನ್ನೊಂದು ಮಮ್ಮ ಅನ್ನುತ್ತದೆ. “ರೊಟ್ಟಿಗೆ ಬೆಣ್ಣೆ ಸವರು,” “ಅನ್ನಕ್ಕೆ ಮೊಸರು ಕಲೆಸು” ಎನ್ನುತ್ತ ಅಜ್ಜಿಯನ್ನು ಜಗ್ಗಾಡಿ ಎಬ್ಬಿಸಿದವು. ಆಕೆಯ ಸೆರಗು ಒಂದು ಹಿಡಿದಿದೆ, ಕೈ ಮತ್ತೊಂದು ಹಿಡಿದಿದೆ. ಹಿಂದೆ ನೂಕುವುದು ಒಂದು, ಮುಂದೆ ಎಳೆಯುವುದು ಬೇರೊಂದು. ಎಲ್ಲ ಕೂಡಿ ಅಜ್ಜಿಯನ್ನು ಅಡಿಗೆ ಮನೆಗೆ ಕರೆದೊಯ್ದವು.

“ನಂಗೂ ಅಜ್ಜಿ, ಉಪ್ಪಿನಕಾಯಿ” ಎಂದು ತೊದಲುತ್ತ ಇನ್ನೊಂದು ಕೂಸು ತಪ್ಪುಹೆಜ್ಜೆ ಹಾಕುತ್ತ ಅಜ್ಜಿಯ ಬಳಿಗೆ ಬಂದಿತು. “ಇದಾವ ಹೊಸದನಿ” ಎಂದು ಅಜ್ಜಿ ನೋಡಿದರೆ, ಕಡಲೆ ಹಿಟ್ಟಿನ ಗೊಂಬೆ, ಜೀವತಳೆದು ಎದ್ದು ಬಂದಿದೆ! ಆಶ್ಚರ್ಯವೆನಿಸಿತು ಅಜ್ಜಿಗೆ.

“ಗೊಂಬೆಯ ಹೆಣವನ್ನು ಮುಂದಿರಿಸಿಕೊಂಡು ಅತ್ತು ಕಣ್ಣೀರು ಸುರಿದು ಮನಸ್ಸು ಹಗುರಮಾಡಿಕೊಳ್ಳಬೇಕೆಂದರೆ ಹಿಟ್ಟಿನ ಗೊಂಬೆಯೂ ಜೀವಂತವಾಗಬೇಕೆ? ಅಳುವುದು ನನ್ನ ದೈವದಲ್ಲಿಲ್ಲ” ಎಂದುಕೊಂಡಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...