Home / ಕಥೆ / ಜನಪದ / ಅಳಬೇಕೆಂದರೆ

ಅಳಬೇಕೆಂದರೆ

ಒಂದು ಗಂಡು ಒಂದು ಹೆಣ್ಣು ಭೂಮಿಯ ಮೇಲೆ ಮೊದಲು ಹುಟ್ಟಿದರು. ಅವರಿಂದ ಆರಂಭವಾಯಿತು ಮಾನವ ಸಂತಾನ ಬೆಳೆಯಲಿಕ್ಕೆ. ಹೆಣ್ಣು-ಗಂಡು
ಮಕ್ಕಳು ಹುಟ್ಟಿದರು. ಮಕ್ಕಳಿಂದ ಮಕ್ಕಳಾದರು. ಮೊಮ್ಮಕ್ಕಳು ಮರಿಮಕ್ಕಳು ಆದರು. ಮೊಮ್ಮಕ್ಕಳ ಮರಿಮಕ್ಕಳೂ ಹುಟ್ಟಿಕೊಂಡರು. ಹುಟ್ಟಿದವರೆಲ್ಲ ಬೆಳೆದು ದೊಡ್ಡವರಾದರು; ದೊಡ್ಡವರು ಮುದುಕರಾದರು. ಮನುಷ್ಯಕೋಟಿ ಬೆಳೆದೇ ಬೆಳೆಯಿತು. ಎಲ್ಲಿ ನೋಡಿದರೂ ಹುಟ್ಟಿದ ಒಸಗೆಯೇ. ಏನು ಕೇಳಿದರೂ ಹುಟ್ಟಿದ ಸುದ್ದಿಯೇ. ಸುಖ ಸಂತೋಷಗಳಲ್ಲಿಯೇ ಮಾನವ ಸಂತಾನವು ವಾಸಿಸತೊಡಗಿತು.

ವಿಶಾಲವಾದ ಮನೆತನ. ಮನೆತನದಲ್ಲಿ ಎಣಿಸಲಿಕ್ಕಾಗದಷ್ಟು ಜನ. ಹಗಲು ಹೊತ್ತಿನಲ್ಲಿ ಹೆಣ್ಣು ಗಂಡು ಎನ್ನದೆ, ಹುಡುಗ ಬಾಲಿಕೆ ಎನ್ನದೆ ಎಲ್ಲರೂ ಅಡವಿ ಸೇರಿ ತಂತಮ್ಮ ಕೆಲಸದಲ್ಲಿ ತೊಡಗುವರು. ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳನ್ನು ಆಡಿಸುತ್ತ ಒಬ್ಬ ಅಜ್ಜಿ ಮನೆಯಲ್ಲಿ ಉಳಕೊಳ್ಳುವಳು.

ಸುಖಸಂತೋಷಗಳನ್ನೇ ಉಣ್ಣುತ್ತ ಬಂದ ಅಜ್ಜಿಗೆ ಏಕೋ ಬೇಸರವೆನಿಸಿತು. ಎದೆ ಜಡವಾಯಿತು. ಮನಸ್ಸು ಹಗುರಾಗುವುದಕ್ಕೆ ಉಪಾಯವೇನೆಂದು ಚಿಂತಿಸತೊಡಗಿದಳು.  ಬಾಲಕರೆಲ್ಲ ಆಡುತ್ತ ಎಲ್ಲಿಲ್ಲಿಯೋ ಹೋಗಿದ್ದರು. ಅಜ್ಜಿಗೊಂದು ಯುಕ್ತಿ ಹೊಳೆಯಿತು. ಹಿಟ್ಟಿನಿಂದ ಒಂದು ಕೂಸು ಮಾಡಿ, ಅದು
ಸತ್ತುಹೋಯಿತೆಂದು ಬಗೆದು, ಕ್ಷಣ ಹೊತ್ತು ಅತ್ತುಬಿಟ್ಟರೆ ಮನಸ್ಸು ಹಗುರಾಗುವದೆಂದು ಯೋಚಿಸಿದಳು.

ಮೆತ್ತಿಗೆಯೊಳಗಿಂದ ಬೊಗಸೆ ಕಡೆಲೆತೆಗೆದು ಬೀಸಿ ಹಿಟ್ಟುಮಾಡಿದಳು. ಆ ಹಿಟ್ಟನ್ನು ನೀರಲ್ಲಿ ಕಲೆಸಿ ಕಣಕಮಾಡಿದಳು. ಆ ಕಣಕದಿಂದ ಒಂದು ಗೊಂಬೆ ಮಾಡಿ ಮುಗಿಸುವುದರಲ್ಲಿದ್ದಳು. ಅಷ್ಟರಲ್ಲಿ ಆಡಹೋದ ಬಾಲಕರೆಲ್ಲರೂ ಒಬ್ಬೊಬ್ಬರಾಗಿ ಬಂದರು. “ಅಜ್ಜೀ, ನನಗೆ ತಿನ್ನಲು ಬೆಲ್ಲ” ಎಂದು ಒಂದು ಹುಡುಗ ಕೇಳಿದರೆ, ಇನ್ನೊಂದು – “ಅಜ್ಜೀ ನನಗೆ ಉಣ್ಣಲು ರೊಟ್ಟಿ” ಬೇಡುತ್ತದೆ. ಒಂದು ನೀರು ಕೇಳುತ್ತದೆ. ಇನ್ನೊಂದು ಮಮ್ಮ ಅನ್ನುತ್ತದೆ. “ರೊಟ್ಟಿಗೆ ಬೆಣ್ಣೆ ಸವರು,” “ಅನ್ನಕ್ಕೆ ಮೊಸರು ಕಲೆಸು” ಎನ್ನುತ್ತ ಅಜ್ಜಿಯನ್ನು ಜಗ್ಗಾಡಿ ಎಬ್ಬಿಸಿದವು. ಆಕೆಯ ಸೆರಗು ಒಂದು ಹಿಡಿದಿದೆ, ಕೈ ಮತ್ತೊಂದು ಹಿಡಿದಿದೆ. ಹಿಂದೆ ನೂಕುವುದು ಒಂದು, ಮುಂದೆ ಎಳೆಯುವುದು ಬೇರೊಂದು. ಎಲ್ಲ ಕೂಡಿ ಅಜ್ಜಿಯನ್ನು ಅಡಿಗೆ ಮನೆಗೆ ಕರೆದೊಯ್ದವು.

“ನಂಗೂ ಅಜ್ಜಿ, ಉಪ್ಪಿನಕಾಯಿ” ಎಂದು ತೊದಲುತ್ತ ಇನ್ನೊಂದು ಕೂಸು ತಪ್ಪುಹೆಜ್ಜೆ ಹಾಕುತ್ತ ಅಜ್ಜಿಯ ಬಳಿಗೆ ಬಂದಿತು. “ಇದಾವ ಹೊಸದನಿ” ಎಂದು ಅಜ್ಜಿ ನೋಡಿದರೆ, ಕಡಲೆ ಹಿಟ್ಟಿನ ಗೊಂಬೆ, ಜೀವತಳೆದು ಎದ್ದು ಬಂದಿದೆ! ಆಶ್ಚರ್ಯವೆನಿಸಿತು ಅಜ್ಜಿಗೆ.

“ಗೊಂಬೆಯ ಹೆಣವನ್ನು ಮುಂದಿರಿಸಿಕೊಂಡು ಅತ್ತು ಕಣ್ಣೀರು ಸುರಿದು ಮನಸ್ಸು ಹಗುರಮಾಡಿಕೊಳ್ಳಬೇಕೆಂದರೆ ಹಿಟ್ಟಿನ ಗೊಂಬೆಯೂ ಜೀವಂತವಾಗಬೇಕೆ? ಅಳುವುದು ನನ್ನ ದೈವದಲ್ಲಿಲ್ಲ” ಎಂದುಕೊಂಡಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...