Home / ಕಥೆ / ಜನಪದ / ಅಳಬೇಕೆಂದರೆ

ಅಳಬೇಕೆಂದರೆ

ಒಂದು ಗಂಡು ಒಂದು ಹೆಣ್ಣು ಭೂಮಿಯ ಮೇಲೆ ಮೊದಲು ಹುಟ್ಟಿದರು. ಅವರಿಂದ ಆರಂಭವಾಯಿತು ಮಾನವ ಸಂತಾನ ಬೆಳೆಯಲಿಕ್ಕೆ. ಹೆಣ್ಣು-ಗಂಡು
ಮಕ್ಕಳು ಹುಟ್ಟಿದರು. ಮಕ್ಕಳಿಂದ ಮಕ್ಕಳಾದರು. ಮೊಮ್ಮಕ್ಕಳು ಮರಿಮಕ್ಕಳು ಆದರು. ಮೊಮ್ಮಕ್ಕಳ ಮರಿಮಕ್ಕಳೂ ಹುಟ್ಟಿಕೊಂಡರು. ಹುಟ್ಟಿದವರೆಲ್ಲ ಬೆಳೆದು ದೊಡ್ಡವರಾದರು; ದೊಡ್ಡವರು ಮುದುಕರಾದರು. ಮನುಷ್ಯಕೋಟಿ ಬೆಳೆದೇ ಬೆಳೆಯಿತು. ಎಲ್ಲಿ ನೋಡಿದರೂ ಹುಟ್ಟಿದ ಒಸಗೆಯೇ. ಏನು ಕೇಳಿದರೂ ಹುಟ್ಟಿದ ಸುದ್ದಿಯೇ. ಸುಖ ಸಂತೋಷಗಳಲ್ಲಿಯೇ ಮಾನವ ಸಂತಾನವು ವಾಸಿಸತೊಡಗಿತು.

ವಿಶಾಲವಾದ ಮನೆತನ. ಮನೆತನದಲ್ಲಿ ಎಣಿಸಲಿಕ್ಕಾಗದಷ್ಟು ಜನ. ಹಗಲು ಹೊತ್ತಿನಲ್ಲಿ ಹೆಣ್ಣು ಗಂಡು ಎನ್ನದೆ, ಹುಡುಗ ಬಾಲಿಕೆ ಎನ್ನದೆ ಎಲ್ಲರೂ ಅಡವಿ ಸೇರಿ ತಂತಮ್ಮ ಕೆಲಸದಲ್ಲಿ ತೊಡಗುವರು. ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳನ್ನು ಆಡಿಸುತ್ತ ಒಬ್ಬ ಅಜ್ಜಿ ಮನೆಯಲ್ಲಿ ಉಳಕೊಳ್ಳುವಳು.

ಸುಖಸಂತೋಷಗಳನ್ನೇ ಉಣ್ಣುತ್ತ ಬಂದ ಅಜ್ಜಿಗೆ ಏಕೋ ಬೇಸರವೆನಿಸಿತು. ಎದೆ ಜಡವಾಯಿತು. ಮನಸ್ಸು ಹಗುರಾಗುವುದಕ್ಕೆ ಉಪಾಯವೇನೆಂದು ಚಿಂತಿಸತೊಡಗಿದಳು.  ಬಾಲಕರೆಲ್ಲ ಆಡುತ್ತ ಎಲ್ಲಿಲ್ಲಿಯೋ ಹೋಗಿದ್ದರು. ಅಜ್ಜಿಗೊಂದು ಯುಕ್ತಿ ಹೊಳೆಯಿತು. ಹಿಟ್ಟಿನಿಂದ ಒಂದು ಕೂಸು ಮಾಡಿ, ಅದು
ಸತ್ತುಹೋಯಿತೆಂದು ಬಗೆದು, ಕ್ಷಣ ಹೊತ್ತು ಅತ್ತುಬಿಟ್ಟರೆ ಮನಸ್ಸು ಹಗುರಾಗುವದೆಂದು ಯೋಚಿಸಿದಳು.

ಮೆತ್ತಿಗೆಯೊಳಗಿಂದ ಬೊಗಸೆ ಕಡೆಲೆತೆಗೆದು ಬೀಸಿ ಹಿಟ್ಟುಮಾಡಿದಳು. ಆ ಹಿಟ್ಟನ್ನು ನೀರಲ್ಲಿ ಕಲೆಸಿ ಕಣಕಮಾಡಿದಳು. ಆ ಕಣಕದಿಂದ ಒಂದು ಗೊಂಬೆ ಮಾಡಿ ಮುಗಿಸುವುದರಲ್ಲಿದ್ದಳು. ಅಷ್ಟರಲ್ಲಿ ಆಡಹೋದ ಬಾಲಕರೆಲ್ಲರೂ ಒಬ್ಬೊಬ್ಬರಾಗಿ ಬಂದರು. “ಅಜ್ಜೀ, ನನಗೆ ತಿನ್ನಲು ಬೆಲ್ಲ” ಎಂದು ಒಂದು ಹುಡುಗ ಕೇಳಿದರೆ, ಇನ್ನೊಂದು – “ಅಜ್ಜೀ ನನಗೆ ಉಣ್ಣಲು ರೊಟ್ಟಿ” ಬೇಡುತ್ತದೆ. ಒಂದು ನೀರು ಕೇಳುತ್ತದೆ. ಇನ್ನೊಂದು ಮಮ್ಮ ಅನ್ನುತ್ತದೆ. “ರೊಟ್ಟಿಗೆ ಬೆಣ್ಣೆ ಸವರು,” “ಅನ್ನಕ್ಕೆ ಮೊಸರು ಕಲೆಸು” ಎನ್ನುತ್ತ ಅಜ್ಜಿಯನ್ನು ಜಗ್ಗಾಡಿ ಎಬ್ಬಿಸಿದವು. ಆಕೆಯ ಸೆರಗು ಒಂದು ಹಿಡಿದಿದೆ, ಕೈ ಮತ್ತೊಂದು ಹಿಡಿದಿದೆ. ಹಿಂದೆ ನೂಕುವುದು ಒಂದು, ಮುಂದೆ ಎಳೆಯುವುದು ಬೇರೊಂದು. ಎಲ್ಲ ಕೂಡಿ ಅಜ್ಜಿಯನ್ನು ಅಡಿಗೆ ಮನೆಗೆ ಕರೆದೊಯ್ದವು.

“ನಂಗೂ ಅಜ್ಜಿ, ಉಪ್ಪಿನಕಾಯಿ” ಎಂದು ತೊದಲುತ್ತ ಇನ್ನೊಂದು ಕೂಸು ತಪ್ಪುಹೆಜ್ಜೆ ಹಾಕುತ್ತ ಅಜ್ಜಿಯ ಬಳಿಗೆ ಬಂದಿತು. “ಇದಾವ ಹೊಸದನಿ” ಎಂದು ಅಜ್ಜಿ ನೋಡಿದರೆ, ಕಡಲೆ ಹಿಟ್ಟಿನ ಗೊಂಬೆ, ಜೀವತಳೆದು ಎದ್ದು ಬಂದಿದೆ! ಆಶ್ಚರ್ಯವೆನಿಸಿತು ಅಜ್ಜಿಗೆ.

“ಗೊಂಬೆಯ ಹೆಣವನ್ನು ಮುಂದಿರಿಸಿಕೊಂಡು ಅತ್ತು ಕಣ್ಣೀರು ಸುರಿದು ಮನಸ್ಸು ಹಗುರಮಾಡಿಕೊಳ್ಳಬೇಕೆಂದರೆ ಹಿಟ್ಟಿನ ಗೊಂಬೆಯೂ ಜೀವಂತವಾಗಬೇಕೆ? ಅಳುವುದು ನನ್ನ ದೈವದಲ್ಲಿಲ್ಲ” ಎಂದುಕೊಂಡಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...