Home / ಕಥೆ / ಜನಪದ / ಕೊನೆಯಾಶೆ

ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು.

ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ ಹಣಿಯದೆ ಕಾಯಿಲೆಯು ದಿನದಿನಕ್ಕೆ ಅಸಾಧ್ಯವಾಗುತ್ತಲೇ ಬಂದಿತು. ಯಜಮಾನನು ಬಿದ್ದಲ್ಲಿಯೇ ಬಿದ್ದುಕೊಳ್ಳುವ ಸ್ಥಿತಿಯು ಪ್ರಾಪ್ತವಾಯಿತು. ಮಾತನಾಡುವುದಕ್ಕೆ ತ್ರಾಣವಿಲ್ಲದಂತಾಯಿತು. ಕೊನೆಗೆ ಮಾತೂ ನಿಂತುಹೋದವು. ಸನ್ನೆಯಿಂದಲೇ ಹೇಳಲು ಕೇಳಲು ತೊಡಗಿದರು. ತಂದೆಯ ದುರವಸ್ಥೆ ಕಂಡು, ಮಕ್ಕಳೆಲ್ಲ ಸುತ್ತಲು ನೆರೆದು ಕುಳಿತು – “ನನಗೇನು ಹೇಳುತ್ತೀ” ಎಂದು ಕಣ್ಣೀರು ಸುರಿಸತೊಡಗಿದರು. ತಂದೆಗೆ ಮಾತಾಡಲು ಸಾಧ್ಯವಿರದಿದ್ದರೂ ಸ್ಮೃತಿಯಿತ್ತು. ಆದ್ದರಿಂದ ಕೈಸನ್ನೆಯಿಂದಲೇ ಅವರಿಗೆ ಸಾಂತ್ವನ ಹೇಳಿದನು. ಮರುಕ್ಷಣದಿಂದಲೇ ಬೆರಳಿನಿಂದ ಸೂಚಿಸುತ್ತ ಏನೋ ತೋರಿಸಹತ್ತಿದನು. ಮಕ್ಕಳಿಗೆ ಅನುಮಾನವಾಯಿತು – “ಹುಗಿದಿಟ್ಟ ದ್ರವ್ಯವನ್ನೇ ತೋರಿಸುತ್ತಾನೋ ಏನೋ” ಎಂದು. ತಂದೆಯ ಅಭಿಪ್ರಾಯವನ್ನು ಸರಿಯಾಗಿ ತಿಳಕೊಳ್ಳುವ ಆಸೆಯುಂಟಾಯಿತು ಅವರಿಗೆ. ಅದಕ್ಕೇನು ಮಾಡುವುದು? ಅದೆಷ್ಟು ಹಣ ಖರ್ಚಾದರೂ ಚಿಂತೆಯಿಲ್ಲ. ಒಂದು ಕ್ಷಣದ ಮಟ್ಟಗಾದರೂ ಆತನು ಎದ್ದು ಕುಳಿತು ಮಾತಾಡುವಷ್ಟು ತ್ರಾಣಬರುವಂತೆ ಉಪಾಯ ಮಾಡಲೇಬೇಕೆಂದು ಯೋಚಿಸಿ, ಬಲ್ಲವರ ಬಳಿಗೆ ಓಡಿಹೋಗಿ ಕೇಳಿಕೊಂಡರು.

ನೂರಿನ್ನೂರು ರೂಪಾಯಿ ಖರ್ಚುಮಾಡಿ. ವೈದ್ಯರ ಬಳಿಯಲ್ಲಿರುವ ಒಂದು ಮಾತ್ರೆಯನ್ನು ತಂದು, ತೇದು. ಆಸನ್ನ ಮರಣನಾದ ತಂದೆಯ ನಾಲಗೆಗೆ ಸವರಿದರು. ಅದರ ಪರಿಣಾಮವಾಗಿ ರೋಗಿಯು ಚೇತರಿಸಿಕೊಂಡು ಎದ್ದು ಕುಳಿತನು. ಅಲಕ್ಕನೇ ಸ್ಮರಣಶಕ್ತಿ ಸುಳಿದು ಬಂದಿತು. ಬಾಯಿಗೆ ಮಾತು ಬಂದವು. ಮಕ್ಕಳು ಹಿಗ್ಗಿ ತಂದೆಗೆ ಕೇಳಿದರು – “ಆಗಲೇ ಕೈಮಾಡಿ ಎನೋ ಸೂಚಿಸುತ್ತಿದ್ದೆಯಲ್ಲ ! ಏನು ಹೇಳಬೇಕೆಂದು ಮಾಡಿದ್ದೀ.”

“ಅಹುದೇ ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಯ ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ.”

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕರುಳಿದನು. ಬಾಯಲ್ಲಿ ನೀರು ಹನಿಸುವಷ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚು ಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು ? ಮೊಂಡ ಕಸಬರಿಗೆ ಮಾತ್ರ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...