Home / ಕಥೆ / ಜನಪದ / ಕೊನೆಯಾಶೆ

ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು.

ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ ಹಣಿಯದೆ ಕಾಯಿಲೆಯು ದಿನದಿನಕ್ಕೆ ಅಸಾಧ್ಯವಾಗುತ್ತಲೇ ಬಂದಿತು. ಯಜಮಾನನು ಬಿದ್ದಲ್ಲಿಯೇ ಬಿದ್ದುಕೊಳ್ಳುವ ಸ್ಥಿತಿಯು ಪ್ರಾಪ್ತವಾಯಿತು. ಮಾತನಾಡುವುದಕ್ಕೆ ತ್ರಾಣವಿಲ್ಲದಂತಾಯಿತು. ಕೊನೆಗೆ ಮಾತೂ ನಿಂತುಹೋದವು. ಸನ್ನೆಯಿಂದಲೇ ಹೇಳಲು ಕೇಳಲು ತೊಡಗಿದರು. ತಂದೆಯ ದುರವಸ್ಥೆ ಕಂಡು, ಮಕ್ಕಳೆಲ್ಲ ಸುತ್ತಲು ನೆರೆದು ಕುಳಿತು – “ನನಗೇನು ಹೇಳುತ್ತೀ” ಎಂದು ಕಣ್ಣೀರು ಸುರಿಸತೊಡಗಿದರು. ತಂದೆಗೆ ಮಾತಾಡಲು ಸಾಧ್ಯವಿರದಿದ್ದರೂ ಸ್ಮೃತಿಯಿತ್ತು. ಆದ್ದರಿಂದ ಕೈಸನ್ನೆಯಿಂದಲೇ ಅವರಿಗೆ ಸಾಂತ್ವನ ಹೇಳಿದನು. ಮರುಕ್ಷಣದಿಂದಲೇ ಬೆರಳಿನಿಂದ ಸೂಚಿಸುತ್ತ ಏನೋ ತೋರಿಸಹತ್ತಿದನು. ಮಕ್ಕಳಿಗೆ ಅನುಮಾನವಾಯಿತು – “ಹುಗಿದಿಟ್ಟ ದ್ರವ್ಯವನ್ನೇ ತೋರಿಸುತ್ತಾನೋ ಏನೋ” ಎಂದು. ತಂದೆಯ ಅಭಿಪ್ರಾಯವನ್ನು ಸರಿಯಾಗಿ ತಿಳಕೊಳ್ಳುವ ಆಸೆಯುಂಟಾಯಿತು ಅವರಿಗೆ. ಅದಕ್ಕೇನು ಮಾಡುವುದು? ಅದೆಷ್ಟು ಹಣ ಖರ್ಚಾದರೂ ಚಿಂತೆಯಿಲ್ಲ. ಒಂದು ಕ್ಷಣದ ಮಟ್ಟಗಾದರೂ ಆತನು ಎದ್ದು ಕುಳಿತು ಮಾತಾಡುವಷ್ಟು ತ್ರಾಣಬರುವಂತೆ ಉಪಾಯ ಮಾಡಲೇಬೇಕೆಂದು ಯೋಚಿಸಿ, ಬಲ್ಲವರ ಬಳಿಗೆ ಓಡಿಹೋಗಿ ಕೇಳಿಕೊಂಡರು.

ನೂರಿನ್ನೂರು ರೂಪಾಯಿ ಖರ್ಚುಮಾಡಿ. ವೈದ್ಯರ ಬಳಿಯಲ್ಲಿರುವ ಒಂದು ಮಾತ್ರೆಯನ್ನು ತಂದು, ತೇದು. ಆಸನ್ನ ಮರಣನಾದ ತಂದೆಯ ನಾಲಗೆಗೆ ಸವರಿದರು. ಅದರ ಪರಿಣಾಮವಾಗಿ ರೋಗಿಯು ಚೇತರಿಸಿಕೊಂಡು ಎದ್ದು ಕುಳಿತನು. ಅಲಕ್ಕನೇ ಸ್ಮರಣಶಕ್ತಿ ಸುಳಿದು ಬಂದಿತು. ಬಾಯಿಗೆ ಮಾತು ಬಂದವು. ಮಕ್ಕಳು ಹಿಗ್ಗಿ ತಂದೆಗೆ ಕೇಳಿದರು – “ಆಗಲೇ ಕೈಮಾಡಿ ಎನೋ ಸೂಚಿಸುತ್ತಿದ್ದೆಯಲ್ಲ ! ಏನು ಹೇಳಬೇಕೆಂದು ಮಾಡಿದ್ದೀ.”

“ಅಹುದೇ ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಯ ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ.”

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕರುಳಿದನು. ಬಾಯಲ್ಲಿ ನೀರು ಹನಿಸುವಷ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚು ಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು ? ಮೊಂಡ ಕಸಬರಿಗೆ ಮಾತ್ರ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...