Home / ಕಥೆ / ಜನಪದ / ತಾಯಕೊಂದ ಪಾಪ

ತಾಯಕೊಂದ ಪಾಪ

ಒಬ್ಬಾಕೆ ಹೆಣ್ಣು ಮಗಳಿದ್ದಳು. ಆಕೆ ನೀರು ಹೊಯ್ದುಕೊಂಡಿದ್ದಳು. ಅವರ ಮನೆಯಲ್ಲಿ ನಾಯಿಯೂ ಗಬ್ಬವಾಗಿತ್ತು. ತವರು ಮನೆಯವರು ಬುತ್ತಿತಂದರು. ನಾಯಿ ತನ್ನಲ್ಲೇ ಅಂದುಕೊಂಡಿತು – ಈಕೆ ಉಂಡ ಒಂದು ಅಗುಳಾದರೂ ನನಗೆ ಹಾಕಿದರೆ ಅದನ್ನೇ ನಾನು ತಿನ್ನುತ್ತೇನೆ. ಆದರೆ ಆ ಹೆಣ್ಣುಮಗಳದೇ ಒಂದು ಛಲ – ಈ ನಾಯಿಗೆ ಯಾಕೆ ಹಾಕಲಿ ತಿನ್ನಲಿಕ್ಕೆ? ಅದು ಹೀಗೇ ಉಪವಾಸ ಬೀಳಲಿ – ಎಂದು, ಎಮ್ಮೆಗೆ ಮುಸುರಿ ನೀರುಮಾಡಿ ಕುಡಿಸಿದಳು.

ನಾಯಿಗೆ ಸಂತಾಪವಾಗುತ್ತದೆ. ನನ್ನ ಮರಿ ಅವಳಿಗೆ ಹುಟ್ಟಲಿ, ಅವಳ ಕೂಸು ನನಗೆ ಹುಟ್ಟಲಿ – ಎಂದು ಅವಳಿಗೆ ಶಪಿಸುತ್ತದೆ. ಮುಂದೆ ಒಂಬತ್ತು ತಿಂಗಳು ತುಂಬಿದಾಗ ನಾಯಿಗೆ ಅವಳಿಜವಳಿ ಹೆಂಗೂಸು ಹುಟ್ಟಿದವು. ಹೆಣ್ಣುಮಗಳಿಗೆ ಎರಡು ನಾಯಕುನ್ನಿಗಳು ಹುಟ್ಟಿದವು.

ಒಂದು ತಗ್ಗಿನಲ್ಲಿ ನಾಯಿ ಈದಿತ್ತು. ಯಾರದೋ ಮನೆಯಿಂದ ರೊಟ್ಟಿಯನ್ನು ಕದ್ದುಕೊಂಡು ತಂದಿತು. ಇನ್ನೊಂದು ಮನೆಯಿಂದ ಅಂಗಿ ಕುಲಾಯಿ ಕದ್ದುಕೊಂಡು ತಂದಿತು. ಹೂಗಾರರ ತೋಟಕ್ಕೆ ಹೋಗಿ ಅವರು ಯಾರಿಂದಲೋ ಬೇಡಿತಂದ ಮುತ್ತಿನ ಕುಲಾಯಿ ಎತ್ತಿಕೊಂಡು ತಂದಿತು. ಅವಳಿಜವಳಿ ಹೆಣ್ಣುಮಕ್ಕಳು ಬೆಳೆದು
ದೊಡ್ಡವರಾದರು.

ಪ್ರಧಾನಿಯೊಡನೆ ರಾಜನು ಸಂಚಾರಕ್ಕೆ ಹೊರಟಿದ್ದನು. ಪ್ರಧಾನಿಯ ಕಣ್ಣು ಆ ಇಬ್ಬರ ಮೇಲೆಯೂ ಬಿದ್ದಿತು. ರಾಜನಿಗೆ ಹೇಳುತ್ತಾನೆ – “ಹುಡುಗಿಯರು ಚೆಲುವಾಗಿದ್ದಾರೆ. ಗವಿಯೊಳಗೆ ಇರುವರಂತೆ. ನೋಡೋಣ ಬನ್ನಿ.”

ರಾಜನೊಂದಿಗೆ ಗವಿಗೆ ಹೋಗಿ, ಅಲ್ಲಿ ಇಬ್ಬರೂ ಅಕ್ಕತಂಗಿಯರನ್ನು ಮಾತನಾಡಿಸುತ್ತಾನೆ – “ತಂಗೆಂದಿರೇ, ನಿಮ್ಮೂರು ಯಾವುದು ? ನಿಮ್ಮ ತಾಯಿಯ ಹೆಸರೇನು?”

“ಇದೇ ನಮ್ಮೂರು. ನಾಯಿಯೇ ನಮ್ಮ ತಾಯಿ” ಎಂದವರ ಮರುನುಡಿ.

“ನಮ್ಮೊಡನೆ ಬರುವಿರಾ?” ಎಂದು ಪ್ರಧಾನಿ ಕೇಳಲಿ, ಹಿರಿಯಳು – “ಬರುವೆನು ನಡೆಯಿರಿ” ಅನ್ನುತ್ತಾಳೆ. “ಈಗ ಹೋಗೂದು ಬೇಡ. ಅವ್ವ ಬಂದ ಬಳಿಕ ಅವಳನ್ನು ಕೇಳಿ ಹೋಗಾರಿ” ಎಂದು ಕಿರಿಯವಳು ಅಂದಳು. ಆದರೆ ಹಿರಿಯವಳು ಹೊರಟೇಬಿಡುತ್ತಾಳೆ, “ನೀನೊಬ್ಬಾಕೆ ಹೋದಮೇಲೆ ನಾಯೇಕೆ ಇರಬೇಕಿಲ್ಲಿ” ಎಂದು ಕಿರಿಯವಳೂ ಹೊರಟಳು.

ಅಕ್ಕತಂಗಿಯರು ರಾಜನ ಮನೆಯವರೆಗೆ ಮುತ್ತುಗಳನ್ನು ಚೆಲ್ಲುತ್ತ ಹೋದರು. ಸಣ್ಣಾಕೆ ಪ್ರಧಾನಿಯನ್ನೂ, ದೊಡ್ಡಾಕೆ ರಾಜನನ್ನೂ ಲಗ್ನವಾದರು. ಮುತ್ತು ಅರಮನೆಗೆ ಬರುವತನಕ ಸಾಕಾದವು. ಮುಂದೆ ಪ್ರಧಾನಿಯ ಮನೆಯವರೆಗೆ ಮುತ್ತು ಚೆಲ್ಲಲಿಕ್ಕಾಗಲಿಲ್ಲ.

ನಿತ್ಯದಂತೆ ನಾಯಿ ತೋಟಕ್ಕೆ ಬಂತು. ಆದರೆ ಹೆಣ್ಣುಮಕ್ಕಳಿಬ್ಬರೂ ಇರಲಿಲ್ಲ. ಗಾಬರಿಯಾಗಿ ಮುತ್ತು ಚೆಲ್ಲಿದ ದಾರಿಹಿಡಿದು ಅರಮನೆಯವರೆಗೆ ಹೋಯಿತು.
ದೊಡ್ಡಾಕೆ ಈಗ ರಾಣಿಯಾಗಿದ್ದಾಳೆ. ಆದರೆ ನಾಲ್ಕು ಜನರ ಮುಂದೆ ನಾಯಿಗೆ ತಾಯಿ ಅನ್ನಲಿಕ್ಕೆ ತಯಾರಿಲ್ಲ. ತಾಯಿಯ ಗುರುತು ಹಿಡಿದರೂ ಅದನ್ನು ಹೊಡೆದು ಹಾಕಬೇಕೆಂದು ವಿಚಾರಿಸಿದಳು. ರಾಜನು ಸಹ ಹಾಗೇ ಆಗಲೆಂದು ಹೇಳಿ, ನಾಯಿಯನ್ನು ಹೊಡೆದು ತಗ್ಗಿನಲ್ಲಿ ಹಾಕಿಸಿಬಿಟ್ಟನು. ನಾಯಿಯನ್ನು ಹೊಡೆದು ಹಾಕಿದ ಹೆಣ್ಣು ಮಗಳು ಅದೆಷ್ಟು ಪಾಪಿ ಎಂದು ಜನ ಮಾತಾಡಿತು.

ಅದೇ ಊರಲ್ಲಿ ಸಣ್ಣಮಗಳೂ ಇದ್ದಳು. ತಂಬಿಗೆ ತಗೊಂಡು ಹೊರಟಾಗ, ತಗ್ಗಿನಲ್ಲಿ ಬಿದ್ದದ್ದು ತನ್ನ ತಾಯಿಯೇ ಎಂದು ಗುರುತಿಸಿದಳು. ನಾಯಿಯ ಎಲುವುಗಳನ್ನೆಲ್ಲ ಸಂಗ್ರಹಿಸಿ ತಂದು ಸಂದುಕಿನಲ್ಲಿಟ್ಟಳು.

ದಿನ ಕಳೆದಂತೆ ರಾಜನ ಸಂಪತ್ತೆಲ್ಲ ನಾಶವಾಗಿ ಹೋಯಿತು. ಪ್ರಧಾನಿಯ ಪರಿಸ್ಥಿತಿಯು ಮಾತ್ರ ಉತ್ತಮವಾಯಿತು. ಸಂದುಕಿನಲ್ಲಿಟ್ಟ ಎಲುವುಗಳೆಲ್ಲ ಬಂಗಾರದ ಚಡಿ ಹಾಕಲಾರಂಭಿಸಿದವು. ಒಂದೊಂದು ಬಂಗಾರದ ಚಡಿಯನ್ನು ಹೊರಗೊಯ್ದು ತಮಗೆ ಬೇಕಾದ ಸಾಮಾನು ತರಹತ್ತಿದರು. ಸುಖ ಸಮೃದ್ಧಿ ತುಂಬಿ ಹೊರಸೂಸತೊಡಗಿತು.

ಅಕ್ಕನು ತಂಗಿಯ ಮನೆಗೆ ಹೋದಾಗ “ನಿಮ್ಮ ಈ ಸಂಪತ್ತಿಗೇನು ಕಾರಣ” ಎಂದು ಕೇಳುತ್ತಾಳೆ.

“ನೀ ಹೊಡಿಸಿ ಹಾಕಿಸಿದಂಥ ನಮ್ಮ ತಾಯಿಯ ಎಲುವುಗಳನ್ನೆಲ್ಲ ತಂದು ಸಂದುಕಿನಲ್ಲಿ ಇಟ್ಟೆ. ಅವು ದಿನಾಲು ಒಂದು ಬಂಗಾರದ ಚಡಿ ಕೊಟ್ಟವು” ಎಂದು ಹೇಳಿದಳು ತಂಗಿ.

ಅಕ್ಕ ತನ್ನ ಮನೆಗೆ ಹೋಗಿ, ಯಾವುದೋ ನಾಯಿಯನ್ನು ತರಿಸಿ ಹೊಡಿಸುತ್ತಾಳೆ. ಅದರ ಎಲುವುಗಳನ್ನೆಲ್ಲ ಮನೆಗೊಯ್ದು ಇಡುತ್ತಾಳೆ. ಮುಂದೆ ಕೆಲವೊಂದು ದಿನಗಳ ತರುವಾಯ ನೋಡುವಲ್ಲಿ ಆ ಎಲುವುಗಳೆಲ್ಲ ಪುಡಿಪುಡಿಯಾಗಿದ್ದವು. ಅಲ್ಲದೆ ಕೊಳೆತು ಹುಳು ತುಂಬಿದ್ದವು.

“ನೀನು ತಾಯಿಯನ್ನು ಕೊಂದು ಪಾಪಮಾಡಿದೆ. ಅದರ ಫಲವನ್ನು ನೀನೇ ಉಣ್ಣಬೇಕಾಗುತ್ತದೆ.” ಎಂದು ನಾಲ್ಕು ಜನರು ಬುದ್ದಿ ಹೇಳಿದರು ಆಕೆಗೆ.

*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...