Home / ಕಥೆ / ಜನಪದ / ರುಚಿಗಾರ ಸವಿಗಾರ

ರುಚಿಗಾರ ಸವಿಗಾರ

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು.

ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್ತು ನೂಲುತ್ತ ಕುಳಿತಳು. ಅಂದು ಸೋಮವಾರ. ಆಕೆಗೆ ಒಪ್ಪೊತ್ತು. ಸಂಜೆಯ ಊಟವಿರಲಿಲ್ಲ. ನೂಲುವುದು ಸಾಕಾದ ಬಳಿಕ ರಾಟಿಯನ್ನು ಒತ್ತಟ್ಟಿಗೆ ಸರಿಸಿಟ್ಟು, ಕೈ ಬಾಯಿ ತೊಳಕೊಂಡು, ನೀರು ಕುಡಿಯುವುದಕ್ಕೆ ಅಣಿಯಾದಳು. ಆಕೆಯ ಬಾಯಲ್ಲಿ ಹಲ್ಲು ಇರಲಿಲ್ಲ. ಕಾಳು ನುರಿಸುವದಕ್ಕೆ ಆಗದೆ ಅಬಡು ಜಬಡು ತಿಂದು ನೀರು ಕುಡಿಯುತ್ತ – “ಏನು ಹೋದೆಯೋ ನನ್ನ ರುಚಿಗಾರ, ನನ್ನ ಸವಿಗಾರ” ಎಂದು ಮೈಮರೆತು ನುಡಿದಳು.

ಆ ಮಾತು ನೆರೆಮನೆಯವರಿಗೆ ಕೇಳಿಸಿತು. – “ಈಕೆ ಯಾರೊಡನೆ ಮಾತಾಡುತ್ತಿದ್ದಾಳೆ? ಅವನೆಂಥ ರುಚಿಗಾರ ಸವಿಗಾರ ಇದ್ದಿರಬಹುದು ಈಕೆಗೆ” ಎಂದು ಸಂಶಯ ಪಟ್ಟರು.

“ಅಜ್ಜೀ, ನೀನು ಯಾರೊಡನೆ ಮಾತಾಡುತ್ತಿರುವಿ ?” ಎಂಬ ದನಿ ನೆರೆಮನೆಯವರಿಂದ ಕೇಳಿ ಬಂತು.

“ನಾನಾರೊಡನೆ ಮಾತಾಡಲೆವ್ವ! ನನಗಾರಿದ್ದಾರೆ ?”

“ರುಚಿಗಾರ ಸವಿಗಾರ ಅಂದೆಯಲ್ಲ, ಯಾರು ಅವರು ?” ನೆರೆಮನೆಯಿಂದ ಬಂದ ಪ್ರಶ್ನೆ.

“ಇನ್ನೆಲ್ಲಿಯ ರುಚಿಗಾರ. ಇನ್ನೆಲ್ಲಿಯ ಸವಿಗಾರ ! ಹೋಗಿಬಿಟ್ಟು ಬಹಳ ದಿನಗಳಾದವು” ಮುದುಕಿಯ ಮರುನುಡಿ.

“ಹಳೆ ಗೆಳೆತನದ ನೆನಪಾದಂತೆ ತೋರುತ್ತದೆ ಮುದುಕಿಗೆ” ಎಂದುಕೊಂಡಿದ್ದಾಳೆ ನೆರೆಯವಳು. “ಹೋದವರು ಮರಳಿ ಬರಲಾರರು ಅಜ್ಜೀ. ನಾವೂ ಒಮ್ಮೆ ಅದೇ ಹಾದಿಯಲ್ಲಿ ಹೋಗತಕ್ಕವರೇ ಅಲ್ಲವೇ ?” ಎಂದಳು.

“ನಾನು ಹುಚ್ಚಿ ಸತ್ತವರನ್ನು ನೆನೆಯಲಿಲ್ಲ. ಬಿದ್ದು ಹೋದ ಹಲ್ಲುಗಳನ್ನು ನೆನಪಿಸಿಕೊಂಡು ಹಾಗೆ ನುಡಿದೆ – ಏನು ಹೋದೆಯೋ ನನ್ನ ರುಚಿಗಾರ – ಸವಿಗಾರ ಎಂದು.” ಮುದುಕಿ ಅರ್ಥವನ್ನು ಸ್ಪಷ್ಟಗೊಳಿಸಿದಳು.

“ಅಹುದೇ ಅಜ್ಜಿ ? ನಾನು ಬೇರೆಯೇ ತಿಳಿದಿದ್ದೆನಲ್ಲ !” ಎಂದು ನೆರೆಯವಳು ವಿಷಯವನ್ನು ಪೂರ್ತಿಗೊಳಿಸಿದಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...