Home / ಕಥೆ / ಜನಪದ / ಸೊಸೆಗೇನು ಅಧಿಕಾರ ?

ಸೊಸೆಗೇನು ಅಧಿಕಾರ ?

ಸೆರಗಿನಿಂದ ಕೈ‌ಒರಸಿಕೊಂಡು ದಾರಿಯಲ್ಲಿ ಬರುತ್ತಿದ್ದ ನೀಲಜ್ಜಿಯನ್ನು ಕಂಡು ಸಂಗಮ್ಮ ಕೇಳಿದಳು – “ಎಲ್ಲಿಗೆ ಹೋಗಿದ್ದೆ ನೀಲಜ್ಜಿ ?”

“ನಿಮ್ಮ ಮನೆಗೆ ಹೋಗಿದ್ದೆ. ಮುಕ್ಕು ಮಜ್ಜಿಗೆ ಸಿಕ್ಕಾವೆಂದು ?”

“ಏನಂದರು ?” ಸಂಗಮ್ಮನ ಪ್ರಶ್ನೆ.

“ಮಜ್ಜಿಗೆ ಆಗಿಲ್ಲವೆಂದರು” ನೀಲಜ್ಜಿಯ ಪಡಿನುಡಿ.

“ಯಾರು ಹೇಳಿದರು ಹೀಗೆ ?”

“ನಿನ್ನ ಸೊಸೆ ನಿಂಬೆಕ್ಕ.”

“ಆಕೆಗೇನು ಅಧಿಕಾರ ಹಾಗೆ ಹೇಳಲಿಕ್ಕೆ. ಬಾನನ್ನೊಡನೆ” ಎಂದಳು ಸಂಗಮ್ಮ.

ಸಂಗಮ್ಮ ಮುಂದೆ ಮುಂದೆ, ನೀಲಜ್ಜಿ ಹಿಂದೆ ಹಿಂದೆ. ಹತ್ತುಮಾರು ಹೋಗುವಷ್ಟರಲ್ಲಿ ಮನೆ ಬಂತು. ಸಂಗಮ್ಮ ಬಿರಬಿರನೆ ತಲೆವಾಗಿಲು ಹೊಕ್ಕು ಪಡಸಾಲೆಯನ್ನು ಏರಿದಳು. ನೀಲಜ್ಜಿಯು ಮೆಲ್ಲನೆ ನಡೆದು ಬಂದು ಮೆಟ್ಟುಗಟ್ಟೆಯ ಬಳಿ ನಿಂತುಕೊಂಡಳು.

“ತಾ ಇಲ್ಲಿ. ಮಜ್ಜಿಗೆ ಒಯ್ಯುವುದಕ್ಕೆ ಏನು ತಂದಿರುವಿ?” ಎನ್ನುತ್ತ ಸಂಗವ್ವನು ಆಕೆ ಕೊಟ್ಟ ಚಿಕ್ಕ ಗಡಿಗೆಯನ್ನು ತೆಗೆದುಕೊಂಡು ಅಡಿಗೆ ಮನೆ ಹೊಕ್ಕಳು. ಸಂಗಮ್ಮನು ಮರಳಿ ಬರುವ ದಾರಿಯನ್ನೇ ಮಿಕಿಮಿಕಿ ನೋಡುತ್ತ ನೀಲಜ್ಜಿ ನಿಂತುಕೊಳ್ಳುವಷ್ಟರಲ್ಲಿ ಸಂಗಮ್ಮ ಹೊರಕ್ಕೆ ಬಂದೇ ಬಿಟ್ಟಳು. “ನಿನ್ನ ಮಕ್ಕಳ ಹೊಟ್ಟೆ ತಣ್ಣಗಾಗಲಿ ಸಂಗೂ” ಎಂದು ನೀಲಜ್ಜಿ ಹರಕೆ ನುಡಿಯಾಡುತ್ತಿರುವಾಗಲೇ ಸಂಗಮ್ಮ –

“ಇಗಾ ಅಜ್ಜಿ. ಈ ಹೊತ್ತು ಮಜ್ಜಿಗೆ ಆಗಿಲ್ಲ” ಎನ್ನುತ್ತ ಆಕೆಯ ಗಡಿಗೆಯನ್ನು ಇದ್ದಕ್ಕಿದ್ದ ಹಾಗೆ ಒಪ್ಪಿಸಿದಳು. “ಅಯಽ ! ಅದೇ ಮಾತು ಖರೇ ಅಯ್ತಲ್ಲ” ಎನ್ನುತ್ತ ನೀಲಜ್ಜಿ ತನ್ನ ಮನೆಯ ಹಾದಿ ಹಿಡಿದಳು.

ಮಜ್ಜಿಗೆ ಆಗಿಲ್ಲವೆಂದು ಹೇಳುವುದಕ್ಕೆ ಸೊಸೆಗೇನು ಅಧಿಕಾರ ? ಆ ಮಾತನ್ನು ಅತ್ತೆಯಾದವಳೇ ಹೇಳಬೇಕು ಅಲ್ಲವೇ ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...