Home / ಕಥೆ / ಜನಪದ / ಸೇವಕನ ಸಂಬಳವೇಕೆ ಕಡಿಮೆ?

ಸೇವಕನ ಸಂಬಳವೇಕೆ ಕಡಿಮೆ?

ಒಂದೂರಿನಲ್ಲಿ ಒಬ್ಬ ರಾಜ, ಅವನಿಗೊಬ್ಬ ಪ್ರಧಾನಿ ಹಾಗೂ ಒಬ್ಬ ಸೇವಕ ಇದ್ದರು. ಸೇವಕನು ತನ್ನನ್ನು ಪ್ರಧಾನಿಯೊಡನೆ ಹೋಲಿಸಿಕೊಂಡು ಹಲವು ಬಗೆಯಾಗಿ ಚಿಂತಿಸುತ್ತಿದ್ದನು – “ತನ್ನ ಸಂಬಳ ಹತ್ತೆಂಟು ರೂಪಾಯಿ ಮಾತ್ರ. ಪ್ರಧಾನಿಯ ಸಂಬಳ ಬೊಗಸೆ ಬೊಗಸೆ. ತನ್ನ ಕೆಲಸ ಓಡಾಟದ್ದು, ಪ್ರಧಾನಿಯದು ಸ್ವಸ್ಥ ಕುಳಿತುಕೊಳ್ಳುವುದು. ಈ ಭೇದಭಾವವೇಕೆ ?”

ರಾಜನನ್ನು ಕೇಳಿಯೇಬಿಟ್ಟನು ಸೇವಕನು – “ಹಗುರು ಕೆಲಸಮಾಡುವ ಪ್ರಧಾನಿಯ ಸಂಬಳ ಲೆಕ್ಕ ತಪ್ಪಿ; ಶ್ರಮದ ಕೆಲಸಮಾಡುವ ನನ್ನ ಸಂಬಳ ಹತ್ತೆಂಟು ಟಿಗಳಿ. ಹೀಗೇಕೆ?”

“ನಿನ್ನ ಕೆಲಸ ಶ್ರಮದ್ದು. ಪ್ರಧಾನಿಯ ಕೆಲಸ ಹಗುರು. ಆದರೂ ಅಷ್ಟು ಸಂಬಳ ಅವನಿಗೆ ಕೊಡಲೇಬೇಕಾಗುತ್ತದೆ. ಶ್ರಮದ ಕೆಲಸವಾದರೂ ನಿನ್ನ ಸಂಬಳ ಕಡಿಮೆ ಅಲ್ಲ- ಆದರೂ ನಿನಗೆ ಅಸಮಾಧಾನವೆನಿಸುತ್ತಿದ್ದರೆ ಇನ್ನೂ ನಾಲ್ಕು ರೂಪಾಯಿ ಹೆಚ್ಚಿಗೆ ಕೊಡಿಸುತ್ತೇನೆ. ಆಯಿತೇ” ಎಂದನು ರಾಜ.

ಸೇವಕನ ತಲೆಯೊಳಗಿನ ಗುಂಗೇ ಇಳಿಯಲೊಲ್ಲದು. ಅಷ್ಟು ದೊಡ್ಡ ಸಂಬಳ ಪ್ರಧಾನಿಗೇಕೆ ?

ರಾಜನು ಒಂದು ದಿನ ಬೇಟೆಗೆ ಹೊರಟನು. ಜೊತೆಗೆ ಪ್ರಧಾನಿ ಹಾಗೂ ಸೇವಕ ಇರತಕ್ಕವರೇ. ಬೇಟೆಯನ್ನರಸುತ್ತ ಹೋದೇ ಹೋದರು. ಒಂದು ಹೊಳೆ ಕಾಣಿಸಿತು. ಕೈಕಾಲು ತೊಳಕೊಂಡು ಹೊಳೆಯ ದಂಡೆಯಲ್ಲಿರುವ ಒಂದು ಮರದ ನೆರಳಿಗೆ ಕುಳಿತು ಕೊಂಡರು.

ಹೊಳೆಯ ಆಚೆಯಲ್ಲಿ ಜನರ ಗುಂಪು ಕೂಡಿದಂತೆ ಕಾಣಿಸಲು, ರಾಜನಲ್ಲಿ ಕುತೂಹಲ ಹುಟ್ಟಿತು. ಸೇವಕನಿಗೆ ಹೇಳಿದನು – “ಆಚೆಯ ದಡಕ್ಕೆ ಹೋಗಿ ಅವರಾರು, ತಿಳಕೊಂಡು ಬಾ”.

ಸೇವಕನು ಹೊಳೆದಾಟಿ ಆಚೆಯ ತೀರವನ್ನು ಸೇರಿ, ಆ ಜನರ ಗುಂಪಿನ ಬಳಿ ಹೋಗಿ ಮಾತನಾಡಿಸಿ ಬಂದು ರಾಜನಿಗೆ ಹೇಳಿದನು – “ಅವರು ವೇಷಗಾರರಂತೆ.” “ಅವರ ಊರು ಯಾವುದಂತೆ ?” ರಾಜ ಕೇಳಿದನು. “ಅದನ್ನು ಕೇಳಲಿಲ್ಲ ದೊರೆಗಳೇ. ಓಡುತ್ತ ಹೋಗಿ ಕೇಳಿಕೊಂಡು ಬರುವೆ” ಎಂದವನೇ ಅತ್ತ ಓಡಿದನು ಸೇವಕ. ಮರಳಿ ಬಂದ ರಾಜನಿಗೆ ತಿಳಿಸಿದನು – “ಅವರು ಶ್ರೀಶೈಲ ಕಡೆಯವರಂತೆ.” “ಹೀಗೋ ? ಇಲ್ಲಿ ಇನ್ನೂ ಎಷ್ಟು ದಿವಸ ಇರುವರಂತೆ ?” ರಾಜನ ಪ್ರಶ್ನೆ. ಅದನ್ನು ಕೇಳುವುದಕ್ಕೆ ಸೇವಕನು ಮತ್ತೆ ಹೊಳೆದಾಟಿದನು. ಇನ್ನೂ ನಾಲ್ಕಾರುದಿನ ಇಲ್ಲಿಯೇ ಇರುವರೆಂಬ ಸಮಾಚಾರ ತಂದನು.

“ನಮ್ಮ ಊರಿಗೆ ಬರುವರೇ ?” ಮತ್ತೊಂದು ಪ್ರಶ್ನೆ ರಾಜನದು. ಅದನ್ನು ತಿಳಿಯಲು ಸೇವಕನು ಹೋಗಿ ಬಂದನು. “ರಾಜನ ಅಪ್ಪಣೆಯಾದರೆ ಬರುವರಂತೆ” ಎಂದು ಸೇವಕನು ಬಿನ್ನಯಿಸಿದನು.

“ಅವರು ಯಾವ ಸೋಗು ಹಾಕುತ್ತಾರೆ ? ಅವರು ಅಪೇಕ್ಷಿಸುವ ಪ್ರತಿಫಲ ಎಂಥದು ? ನಮ್ಮ ರಾಜಧಾನಿಯಲ್ಲಿಯೇ ಅವರು ನೆಲಸಬೇಕಾದರೆ ನಾವು ಯಾವ ಸೌಕರ್ಯ ಒದಗಿಸಬೇಕು ?” – ಮೊದಲಾದ ಸಂಗತಿಗಳನ್ನು ತಿಳಕೊಳ್ಳುವ ಸಲುವಾಗಿ ಸೇವಕನು ಹಲವು ಸಾರೆ ಓಡಾಡಬೇಕಾಯಿತು. ಆತನು ದಣಿದುಹೋದನೇ ಹೊರತು ರಾಜನಿಗೆ ಬೇಕಾದ ಸಂಪೂರ್ಣ ಮಾಹಿತಿ ತರಲಿಲ್ಲ.

ಪ್ರಧಾನಿಯನ್ನು ಕರೆಯಿಸಿ ರಾಜನು ಹೇಳಿದನು – “ಹೊಳೆಯಾಚೆಗೆ ಕಾಣಿಸುವ ಗುಂಪು ಏತಕ್ಕಾಗಿ ನೆರೆದಿದೆ ? ಅವರಾರು ? ಅವರ ಉದ್ದೇಶವೇನು, ತಿಳಕೊಂಡು ಬರಬೇಕು.”

“ಆಗಲಿ ದೊರೆಗಳೇ” ಎಂದು ವಂದಿಸಿ ಪ್ರಧಾನಿಯು ಹೊಳೆಯಾಚೆಗಿನ ತೀರಕ್ಕೆ ತೆರಳಿದನು. ಒಂದೆರಡು ಗಳಿಗೆಯಲ್ಲಿ ಬಂದು ತಾನು ತಂದ ಸಮಾಚಾರವನ್ನೆಲ್ಲ ರಾಜನಿಗೆ ಬಿನ್ನಯಿಸಿದನು –

“ಅವರು ಶ್ರೀಶೈಲಕಡೆಯವರು. ವೇಷಗಾರರು. ಹೆಣ್ಣು ಗಂಡು ಕೂಡಿ ಹನ್ನೊಂದು ಜನರಿದ್ದಾರೆ. ಈ ಊರಲ್ಲಿ ನಾಲ್ಕಾರು ದಿನವಿದ್ದು ಮುಂದಿನೂರಿಗೆ
ಹೊರಡುವದರಲ್ಲಿದ್ದರು. ನಮ್ಮೂರಿಗೆ ಬರಲು ತಿಳಿಸಿದ್ದೇನೆ. ದಶಾವತಾರಗಳ ಸೋಗು ಹಾಕುವರಂತೆ. ನಾಲ್ಕು ಕೂರಿಗೆ ಹೊಲ, ಹನ್ನೆರಡು ಅಂಕಣದ ಮನೆ ಕೊಟ್ಟರೆ, ನಮ್ಮೂರವರಾಗಿಯೇ ಉಳಿಯುತ್ತೇವೆಂದು ಹೇಳಿದರು. ಅಪ್ಪಣೆಯಾದರೆ ಈಗಲೇ ಬಂದು ದೊರೆಗಳನ್ನು ಕಾಣುವರಂತೆ.

ಪ್ರಧಾನಿಯು ಒದಗಿಸಿದ ಸಂಗತಿಗಳನ್ನು ಕೇಳಿಕೊಂಡ ಬಳಿಕ, ರಾಜನಿಗೆ ಹೆಚ್ಚು ತಿಳುಕೊಳ್ಳುವ ಅಗತ್ಯವೇ ಉಳಿಯಲಿಲ್ಲ. ಸೇವಕನನ್ನು ಕರೆದು ರಾಜನು ಹೇಳಿದನು –

“ನೋಡಿದೆಯಾ ? ನೀನು ಹತ್ತೆಂಟು ಸಾರೆ ಎಡತಾಕಿ ಮಾಹಿತಿ ತಂದರೂ ಅಪೂರ್ಣವಾಗಿಯೇ ಉಳಿಯಿತು. ಪ್ರಧಾನಿಯು ಒಂದೇ ಸಾರೆ ಹೋಗಿ ಬಂದರೆ, ಯಾವ ಸಂಗತಿಯನ್ನೂ ಉಳಿಸಿಕೊಂಡು ಬರಲಿಲ್ಲ. ಅದಕ್ಕಾಗಿಯೇ ಆತನ ಸಂಬಳ ಅಷ್ಟು, ನಿನ್ನ ಸಂಬಳ ಇಷ್ಟೇ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...