Home / ಕಥೆ / ಜನಪದ / ಬಟ್ಟಲ್ಯಾತಕ್ಕ ಕೆನಿ ತಿನ್ಲಕ್ಕ

ಬಟ್ಟಲ್ಯಾತಕ್ಕ ಕೆನಿ ತಿನ್ಲಕ್ಕ

ಗಂಡಹೆಂಡಿರು ಮಾತಾಡಿಕೊಂಡು ಒಂದು ಹಿಂಡುವ ಎಮ್ಮೆಯನ್ನು ಕೊಂಡುತಂದರು. ಹಾಲಿಗೆ ಹೆಪ್ಪು ಹಾಕಿ, ಬೆಣ್ಣೆ ತುಪ್ಪ ಮಾಡಿ ಮಾರಿಕೊಂಡರೆ ಕೈಯಲ್ಲಿ ಹಣವೂ ಆಗುವದೆಂದು ಗಂಡನು ಹೆಂಡತಿಗೆ ಸೂಚನೆಮಾಡಿದನು. ಅದಕೈ ಹೆಂಡತಿ ಸೈ ಎಂದಳು.

ಕೆಂಡದ ಮೇಲಿಟ್ಟು ಹಾಲು ಕಾಸಿದರೆ, ಅಂಗೈಗಡುತರ ಕೆನೆ ಹೊರಡುವದು. ಆದರೆ ಅದನ್ನು ನೋಡಿದರೆ ಹೆಂಡತಿಯ ಜೀವ ಅದನ್ನು ತಿನ್ನುವುದಕ್ಕೆ ಎಳಸುವದು. ಅಲ್ಪಸ್ವಲ್ಪ ತಿಂದರೆ ಸಾಕಾಗುವಂಥವಲ್ಲ ಕೆನೆ. ಅದನ್ನು ಇಡಿಯಾಗಿ ತಿಂದು, ಹಾಲಿಗೆ ಕೆನೆಯೇ ಹೊರಡುವದಿಲ್ಲವೆಂದು ಗಂಡನಿಗೆ ಹೇಳುವಳು. ಎಮ್ಮೆ ಹೆಡಸಿನದಲ್ಲ, ಬರಿ ಹಾಲಿನದು – ಎಂದು ತಪ್ಪು ಎಮ್ಮೆಯ ಮೇಲೆ ಹಾಕುವಳು.

ಗಂಡನು, ತಮಗೆ ಎಮ್ಮೆ ಮಾರಿದವರಲ್ಲಿ ಹೋಗಿ ಕೇಳಿದ – “ಹೆಡಸು ಹಯನಿಗೆ ಮಿಗಿಲಾದ ಎಮ್ಮೆಯೆಂದು ನಮಗೆ ಭರವಸೆ ಹೇಳಿದಿರಿ. ಈಗ ಕೆನೆಯೇ ಹೊರಡುವದಿಲ್ಲವೆಂದು ನನ್ನ ಹೆಂಡತಿ ಹೇಳುತ್ತಿದ್ದಾಳೆ. ನೀವು ಸುಳ್ಳು ಹೇಳಿ ಎಮ್ಮೆ ಕೊಡಬಾರದಿತ್ತು, ನೆರೆಯವರಿಗೆ.”

ಆ ರೈತನ ಹೆಂಡತಿ ಹಯನು ಮಾಡಬಲ್ಲಳು. ಆ ಕೆಲಸದಲ್ಲಿ ಬಲ್ಲಿದಳು. ಮಾರಿದ ಎಮ್ಮೆಯ ಹಯನವನ್ನು ಸಹ ಈ ಮುಂಚೆ ಮಾಡಿದ್ದಳು. ಆಕೆ ಹೇಳಿದಳು – “ತಮ್ಮಾ, ನಿನ್ನ ಹೆಂಡತಿ ಹೇಳುವುದು ಸುಳ್ಳು. ಹಾಲು ಚನ್ನಾಗಿ ಕಾಸಿ ಅಂಗೈಗಡುತರ ಕೆನೆ ತೆಗೆದು ತೋರಿಸಲೇನು ನಿನಗೆ? ನಿಮ್ಮಲ್ಲಿಯೂ ಕೆನೆ ಹೊರಡುತ್ತಿರಬಹುದು. ಆದರೆ ಅದನ್ನು ನಿನ್ನ ಹೆಂಡತಿ ಅದೆಂತು ಇಲ್ಲದಾಗಿಸುತ್ತಾಳೋ ನೋಡು.”

“ಹೇಗೆ ನೋಡಲಿ ?”

“ನಾನು ಎರಡು ಗೊಂಬೆ ಮಾಡಿಕೊಡುತ್ತೇನೆ. ಅವುಗಳಲ್ಲಿ ಒಂದನ್ನು ಹಾಲ ಗಡಿಗೆಯಿಡುವಲ್ಲಿ, ಇನ್ನೊಂದು ಪಾತ್ರೆಪಗಡೆ ಇಡುವಲ್ಲಿ ಗಟ್ಟಿಯಾಗಿ ನೆಡು. ಅದರಿಂದ ತಾನೇ ಹೊರಬೀಳುತ್ತದೆ ಇದ್ದ ಸಂಗತಿ” ಎಂದಳು ಆ ರೈತನ ಹೆಂಡತಿ.

ಅವೆರಡು ಗೊಂಬೆಗಳನ್ನು ತಂದು ಗಂಡನು ಸರಿಯಾದ ಸ್ಥಳಗಳಲ್ಲಿ ಗಟ್ಟಿಯಾಗಿ ನಿಲ್ಲಿಸಿದನು. ಹೆಂಡತಿ ಎಂದಿನಂತೆ ಹಾಲಗಡಿಗೆಯನ್ನು ತೆಗೆದುಕೊಂಡು ಕೆನೆ ತಿನ್ನಬೇಕೆಂದು, ಪಾತ್ರೆ ತೆಗೆದುಕೊಳ್ಳಲು ಕೈ ಚಾಚಿದಾಗ ಅಲ್ಲಿ ನಿಲ್ಲಿಸಿದ ಗೊಂಬೆ – “ಬಟ್ಟಲ್ಯಾತಕ್ಕ” ಎಂದು ಕೇಳಿತು. ಅತ್ತ ಕಡೆಗೆ ಕಿವಿಕೊಡದೆ ಹಾಲಗಡಿಗೆಯ ಬಳಿಗೆ ಬಂದಾಗ – “ಹಾಲು ಕೆನಿ ತಿನ್ಲಕ್ಕ” ಎಂದಿತು ಇನ್ನೊಂದು ಗೊಂಬೆ. ಅಷ್ಟಕ್ಕೆ ಬಿಡಲಿಲ್ಲ ಆ ಗೊಂಬೆಗಳು.

ಒಂದು ಕೇಳುವುದು – “ಬಟ್ಟಲ್ಯಾತಕ್ಕ ?”

ಇನ್ನೊಂದು ಕೇಳುವುದು – “ಕೆನಿತಿನ್ಲಕ್ಕ.”

ಈ ಕ್ರಮ ನಡೆದೇ ನಡೆಯಲು ಹೆಂಡತಿ ಹುಚ್ಚು ಹಿಡಿದಂತೆ ನಿಂತುಬಿಟ್ಟಳು. ಅದೇ ಹೊತ್ತಿಗೆ ಅಕಸ್ಮಾತ್ ಗಂಡ ಬರಲು ಆಕೆ, ಗೊಂಬೆಗಳ ಸಲುವಾಗಿ ದೂರು ಹೇಳಿದಳು – “ನೋಡಿರಿ. ಈ ಗೊಂಬೆಗಳು ಸುಳ್ಳುಸುಳ್ಳೇ ಕೂಗಾಟ ಎಬ್ಬಿಸಿವೆ. ಬಟ್ಟಲ್ಯಾತಕ್ಕ ಅನ್ನುತ್ತದೆ ಒಂದು. ಕೆನಿತಿನ್ಲಕ್ಕ ಅನ್ನುತ್ತದೆ ಇನ್ನೊಂದು, ಅವುಗಳನ್ನು ಕಿತ್ತೊಗೆಯಿರಿ.”

“ಇರಲಿ ಬಿಡು. ಅವೇನು ಮಾಡುತ್ತವೆ ನಿನಗೆ ?”

ತರುವಾಯ ಹಾಲು ಕಾಸಿದರೆ ಕೆನೆ ಬರತೊಡಗಿತು. ಕಡಿದರೆ ಮುದ್ದೆ ಮುದ್ದೆ ಬೆಣ್ಣೆ; ಕಾಸಿದರೆ ತಂಬಿಗೆ ತಂಬಿಗೆ ತುಪ್ಪ. ಅದನ್ನು ಕಂಡು ಗಂಡನು ಹಿಗ್ಗಿ -“ಹೆಂಡತಿ ಚೆನ್ನಾಗಿ ಮಾಡುವಳು ಹಯನ” ಎಂದು ಹೊಗಳತೊಡಗಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...